ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಫಿಲ್ಮ್ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮನವಿ

ಕೊವಿಡ್ -19 ಲಾಕ್ ಡೌನ್ ಹಿನ್ನಲೆಯಲ್ಲಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್ ಡೌನ್ ಗೆ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಲಕ್ಷಾಂತರ ಕಾರ್ಮಿಕರು ದಿನಗೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರ ಕುಟುಂಬ ಇಂದು ಬೀದಿಗೆ ಬೀಳುವಂತಾಗಿದೆ. ಆದ್ದರಿಂದ ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು‌ ಮನವಿಯಲ್ಲಿ ಕೋರಿದ್ದಾರೆ.
2020ರ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6000ಕುಟುಂಬಗಳಿಗೆ ತಲಾ 3000 ರು. ಮೌಲ್ಯದ ದಿನಸಿ ಪಡಿತರ ರಿಲೆಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ. ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಟ ತಲಾ₹ 5000 ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಕನಿಷ್ಟ ಆಸರೆ ಆದಂತಾಗುತ್ತದೆ ಎಂದು ಅವರು ಕೋರಿದ್ದಾರೆ.
ನಿಯೋಗದಲ್ಲಿದ್ದ ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರು, ಚಿತ್ರೋದ್ಯಮ ಸಾಕಷ್ಟು ಮಂದಿನ ಕೋವಿಡ್ ಲಸಿಕೆ ಪಡೆದಿಲ್ಲ. ಕೆಲವರು ವಯಸ್ಸಿನ ಕಾರಣ ಸರದಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದೆ ಲಸಿಕೆ ಮೊದಲು ಡೋಸ್ ಪಡೆದಿರುವುದಿಲ್ಲ. ಆದ್ದರಿಂದ ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ ಅವರು ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ಮನವಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್ ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ಪುರಾಣಿಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡೆಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ, ವಿಶೇಷವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ನಿರ್ಮಾಪಕ ಸಂಘದ ಅಧ್ಯಕ್ಷರಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ.

Related Posts

error: Content is protected !!