ಇದು ಧಮ್ ಇರೋ ಸಿನಿಮಾ! ತಮಿಳು ನಿರ್ದೇಶಕರ ಕನ್ನಡ‌ ಚಿತ್ರ…

ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ “ಧಮ್” ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಹಾಗೂ ನಟ, ನಿರ್ದೇಶಕ ರವಿಕಿರಣ್ ಇದ್ದರು.

ನಾನು ಬಾಲನಟನಾಗಿ “ಹಾತಿ ಮೇರೆ ಸಾತಿ” ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು‌. ಅವರಿಗೆ ನಾನು ಕನ್ನಡ ಚಿತ್ರವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್ ಆಯ್ಕೆಯಾದರು. ಎರೀನ್ ಅಧಿಕಾರಿ ಈ ಚಿತ್ರದ ನಾಯಕಿ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ರಿಹಾನ್ ಅಹಮದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಳಯರಾಜ ಅವರ ಬಳಿ ಕಾರ್ಯ ನಿರ್ವಹಿಸಿರುವ ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ದೇಶಕ ವಿ.ಆರ್.ಆರ್.

ನನ್ನ ಸ್ನೇಹಿತನ ಮೂಲಕ ನಿರ್ದೇಶಕರ ಪರಿಚಯವಾಯಿತು. ವಿ.ಆರ್.ಆರ್ ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದು ಸಂತೋಷವಾಗಿದೆ. ನಾನು ಈ ಹಿಂದೆ “ರಂಗ್ ಬಿ ರಂಗಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ಎರಡನೇ ಚಿತ್ರ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಶ್ರೀಜಿತ್.

ನಾನು ಮೂಲತಃ ಬಂಗಾಲಿಯವಳು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಮೊದಲ ಚಿತ್ರ. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕಿ ಎರೀನ್ ಅಧಿಕಾರಿ.

ಚಿತ್ರದಲ್ಲಿ ನಟಿಸಿರುವ ನಾಗೇಶ್ವರರಾವ್, ಸಂಗೀತ ನೀಡಿರುವ ಜೀವವರ್ಷಿಣಿ “ಧಮ್” ಚಿತ್ರದ ಬಗ್ಗೆ ಮಾತನಾಡಿದರು.

Related Posts

error: Content is protected !!