ಮೋಹನ ಮುರಳಿ ಜೊತೆ ಸ್ವಪ್ನ ಸುಂದರಿ! ಕನ್ನಡದಲ್ಲಿ ಗಟ್ಟಿ ನೆಲೆಯೂರುವ ಆಸೆ : ಮಂಗಳೂರು ಬೆಡಗಿಯ ಬಿಂದಾಸ್ ಮಾತುಕತೆ

ಕನ್ನಡ ಚಿತ್ರರಂಗದಲ್ಲಿ ಬಣ್ಣದ ಕನಸು ಹೊತ್ತು ಬರುವವರಿಗೇನು ಕಮ್ಮಿ ಇಲ್ಲ. ದಿನ ಕಳೆದಂತೆ ಇಲ್ಲಿ ನೂರಾರು ಪ್ರತಿಭೆಗಳ ಆಗಮನವಾಗುತ್ತಲೇ ಇದೆ. ಗಂಧದಗುಡಿಯಲ್ಲಿ ಗಟ್ಟಿನೆಲೆ ಕಾಣಬೇಕೆಂಬ ಬಯಕೆ ಎಲ್ಲರಲ್ಲೂ ಇದೆ. ಅಂಥದ್ದೊಂದು ಬಯಕೆ, ಹಂಬಲ ಹೊತ್ತು ಬಂದ ಯುವ ನಟಿಯರ ಪೈಕಿ ಸ್ವಪ್ನ ಎಂಬ ಹಾಲುಗಲ್ಲದ ಹುಡುಗಿಯೂ ಒಬ್ಬಳು.

ಹೌದು, ಸ್ವಪ್ನ ಕನ್ನಡಕ್ಕೆ ಹೊಸ ಹುಡುಗಿಯಲ್ಲ. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ಸಿಕ್ಕ ಪಾತ್ರಗಳ ಮೂಲಕ ಗಮನಸೆಳೆದವರು. ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸಿದರೂ, ಸ್ವಪ್ನ ಅವರು ಆಯ್ಕೆಯಲ್ಲಿ ಎಚ್ಚರ ತಪ್ಪಲಿಲ್ಲ. ಇದುವರೆಗೂ ಮಾಡಿದ ಸಿನಿಮಾಗಳ ಪಾತ್ರಗಳ ಮೇಲೆ ಸ್ವಪ್ನಗೆ ಖುಷಿ ಇದೆ. ಈಗ ನಾಯಕಿಯಾಗಿ ನಟಿಸಿರುವ ಆರೇಳು ಸಿನಿಮಾಗಳು ಬಿಡುಗಡೆಯ ಹೊಸ್ತಿಲಲ್ಲಿವೆ.

ಸ್ವಪ್ಪ ನಾಯಕಿಯಾಗಿ ಅಭಿನಯಿಸಿರುವ ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಈಗ ಬಿಡುಗಡೆಯ ತಯಾರಿಯಲ್ಲಿದೆ. ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಸಿನಿಮಾ ಬಗ್ಗೆ ಸ್ವಪ್ನ ಅವರಿಗೆ ಅತೀವ ವಿಶ್ವಾಸ. ಕಾರಣ ಸಿನಿಮಾ ಕಥೆ ಹಾಗು ಗಟ್ಟಿ ಪಾತ್ರ. ಈ ಕುರಿತು ‘ಸಿನಿ ಲಹರಿ’ ಜೊತೆ ಸ್ವಪ್ನ ತಮ್ಮ ಸಿನಿ
ಜರ್ನಿ ಕುರಿತು ಮಾತಾಡಿದ್ದಾರೆ.

ಓವರ್ ಟು ಸ್ವಪ್ನ…

‘ನಾನು ಮೂಲತಃ ಮಂಗಳೂರಿನ ಹುಡುಗಿ. ತಂದೆ ಮಂಗಳೂರಿನವರು. ತಾಯಿ ಉತ್ತರ ಕರ್ನಾಟಕದವರು. ಹುಬ್ಬಳ್ಳಿ ಸಮೀಪದ ನವಲಗುಂದದಲ್ಲೇ ಹೆಚ್ಛು ಆಡಿ, ಓದಿ‌ ಬೆಳೆದವಳು.

ಬೆಳ್ಳಿಪರದೆಗೆ ಬರಲು ಕಾರಣ?

ಇಷ್ಟಕ್ಕೂ ನನಗೆ ಸಿನಿಮಾಗೆ ಬರಬೇಕು ಅಂತ ಆಸೆಯೇನೂ ಇರಲಿಲ್ಲ. ಆದರೆ, ನನಗೆ ಒಬ್ಬರು ಸಿನಿಮಾ ವಿಚಾರದಲ್ಲೇ ಹರ್ಟ್ ಮಾಡಿದರು. ಅದೊಂದೇ ಕಾರಣಕ್ಕೆ ನಾನೇಕೆ ಇಲ್ಲಿ ಬಂದು ನಿಲ್ಲಬಾರದು ಅಂತ ಚಾಲೆಂಜ್ ಮಾಡಿ ಒಬ್ಬ ನಟಿಗೆ ಬೇಕಾದ ನಟನಾ ತರಬೇತಿ ಸೇರಿದಂತೆ ಸಿನಿಮಾಗೆ ಇರಬೇಕಾದ ಒಂದಷ್ಟು ಅರ್ಹತೆ ಪಡೆದು ಸಿನಿಮಾ ಪ್ರವೇಶಿಸಿದೆ. ಆರಂಭದಲ್ಲಿ ನಾನು ಮಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುವಾಗಲೇ ತುಳು ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ತು.

ಆದರೆ, ಆ ಸಿನಿಮಾ ನಿಂತು ಹೋಯ್ತು. ಅಲ್ಲೊಂದಷ್ಟು ಅವಮಾನಗಳೂ ಆದವು. ಕೊನೆಗೆ ನಾನು ನಟಿ ಆಗಲೇಬೇಕು ಅಂತ ಡಿಸೈಡ್ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಅವಕಾಶ ಹುಡುಕಿ ಬಂತು. ಮೊದಲು ‘ನಾನು ನನ್ನ ಹುಡುಗಿ’ ಎಂಬ ಸಿನಿಮಾದಲ್ಲಿ ನಟಿಸೋ ಚಾನ್ಸ್ ಸಿಕ್ತು ಆದರೆ, ಆ ಸಿನಿಮಾನೂ ನಿಂತು ಹೋಯ್ತು. ಅದೇ ಸಿನಿಮಾ ನಿರ್ದೇಶಕರು ಮತ್ತೊಂದು ಸಿನಿಮಾ ಮಾಡಿದ್ರು. ಅಲ್ಲಿ ನಟಿಸೋ ಅವಕಾಶ ಸಿಕ್ತು. ಅಲ್ಲಿಂದ ನನ್ನ ಸಿನಿಮಾ ಜರ್ನಿ ಶುರುವಾಯ್ತು.

ಈ ಸಿನಿಮಾರಂಗಕ್ಕೆ ಬಂದಿದ್ದು ಖುಷಿ ಇದೆ. ಕಲರ್ ಫುಲ್ ಜಗತ್ತು ಇದು. ಕಲರ್ ಫುಲ್ ಆಗಿಯೇ ಬದುಕು ಕಟ್ಟಿಕೊಳ್ಳಬೇಕು ಎಂಬ ಅದಮ್ಯ ಆಸೆ ಇದೆ. ಆರು ವರ್ಷಗಳ ಈ ಜರ್ನಿಯಲ್ಲಿ ಸಿನಿಮಾ ಸಾಕಷ್ಟು ಕಲಿಸಿಕೊಟ್ಟಿದೆ. ಒಳ್ಳೆಯ ಮತ್ತು ಕೆಟ್ಟ ಅನುಭವವೂ ಆಗಿದೆ. ಇಲ್ಲೀಗ ಗಟ್ಟಿನೆಲೆ ಕಾಣಬೇಕು ಅಂತ ನಿರ್ಧರಿಸಿದ್ದೇನೆ. ಈ ನಿಟ್ಟಿನಲ್ಲಿ ಒಳ್ಳೊಳ್ಳೆಯ ಕಥೆ ಮತ್ತು ಪಾತ್ರಗಳನ್ನು ಎದುರು ನೋಡುತ್ತಿದ್ದೇನೆ.

ಬೇಸರ ಆಗಿದ್ದುಂಟು…

ಆರಂಭದಲ್ಲಿ ಸಿಕ್ಕ ಪಾತ್ರಗಳನ್ನು ಮಾಡುತ್ತಿದ್ದೆ. ಹೀರೋಯಿನ್ ಆಗುವ ತುಡಿತ ಇತ್ತು. ಆದರೆ, ಕೆಲ ನಿರ್ದೇಶಕರ ದೃಷ್ಟಿಯಲ್ಲಿ ನಾನು ಹೀರೋಯಿನ್ ಮೆಟೀರಿಯಲ್ ಆಗಿರಲಿಲ್ಲ. ಆಮೇಲೆ ಹೀರೋಯಿನ್ ಆಗಲೇಬೇಕು ಅಂತ ವರ್ಕೌಟ್ ಶುರು ಮಾಡಿದೆ. ಸಿನಿಮಾ ನಾಯಕಿ ಆಗುವ ಎಲ್ಲ ಅರ್ಹತೆ ಪಡದುಕೊಂಡೆ. ಅಲ್ಲಿಂದ ಮೂರ್ನಾಲ್ಕು ಸಿನಿಮಾಗಳಿಗೆ ನಾಯಕಿ ಅದೆ. ಒಮ್ಮೊಮ್ಮೆ ನನಗೆ ಈ ಇಂಡಸ್ಟ್ರಿ ಬೇಸರ ತರಿಸಿದ್ದು ನಿಜ. ಅವಕಾಶ ಮಿಸ್ ಆದಾಗೆಲ್ಲ ಬೇಜಾರು ಆಗುತ್ತಿತ್ತು. ಆದರೂ, ತಾಳ್ಮೆಯಿಂದಲೇ ಅವಕಾಶ ಪಡೆದೆ. 19 ಸಿನಿಮಾಗಳಲ್ಲಿ ಪಾತ್ರಗಳನ್ನು ಮಾಡುತ್ತ ಅನುಭವ ಪಡೆದೆ. ಈಗ ಆರು ಸಿನಿಮಾಗಳಲ್ಲಿ ನಾಯಕಿಯಾಗಿದ್ದೇನೆ. ‘ಡವ್ ಮಾಸ್ಟರ್’ ಸಿನಿಮಾ ಪಾತ್ರ ಚೆನ್ನಾಗಿದೆ. ಅಲ್ಲಿ ಕಥೆಯೇ ಹೈಲೆಟ್. ಇನ್ನು, ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಬಗ್ಗೆ ಹೇಳಲೇಬೇಕು. ಇದು ನನಗೆ ಮಾತ್ರವಲ್ಲ, ಇಡೀ ತಂಡಕ್ಕೆ ಒಳ್ಳೆಯ ಹೆಸರು ತಂದುಕೊಡುತ್ತೆ ಎಂಬ ಭವ್ಯ ಭರವಸೆ ಇದೆ.

ಈ ಚಿತ್ರ ಭಾವನೆಗಳ ಗುಚ್ಛ

‘ಯಾವ ಮೋಹನ‌ ಮುರಳಿ ಕರೆಯಿತು’ ಚಿತ್ರ ಇಷ್ಟ ಆಗೋಕೆ ಕಾರಣ ಕಥೆ ಮತ್ತು ಪಾತ್ರ. ಅಲ್ಲಿ ಎಮೋಷನ್ಸ್ ಇದೆ, ಭಾವನೆಗಳಿವೆ, ಭಾವುಕತೆ ಇದೆ, ಸಂಬಂಧಗಳ ಮೌಲ್ಯವಿದೆ. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯ ಗುಣ ಇದೆ. ನಾನಿಲ್ಲಿ ವಿಕಲಚೇತನ ಮಗಳ ತಾಯಿಯಾಗಿ ನಟಿಸಿದ್ದೇನೆ. ಅದೊಂದು ತೂಕದ ಪಾತ್ರ. ಇಡೀ ಸಿನಿಮಾದಲ್ಲಿ ಬದುಕಿನ ಅರ್ಥವಿದೆ. ಭಾವನೆಗಳ ಗುಚ್ಛವಿದೆ. ಅ ಕಾರಣಕ್ಕೆ ಈ ಸಿನಿಮಾಒಪ್ಪಿಕೊಂಡೆ. ಸದ್ಯ ಸಿನಿಮಾದ ಟೀಸರ್ ಮತ್ತು ಲಿರಿಕಲ್ ಸಾಂಗ್ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ.

ರಾಕಿ ಹವಾ ಜೋರು!

‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಸ್ಪೆಷಲ್ ಅಂದ್ರೆ ರಾಕಿ. ಇಡೀ ಚಿತ್ರದ ಕೇಂದ್ರ ಬಿಂದು ರಾಕಿ. ರಾಕಿ ಅಂದರೆ ಶ್ವಾನದ ಹೆಸರು. ನನ್ನ ಮಗಳು ಮತ್ತು ರಾಕಿ ನಡುವಿನ ಸಂಬಂಧ ಮತ್ತು ಅವರಿಬ್ಬರ ಬದುಕಿನ ಉತ್ಸಾಹವೇ ಜೀವಾಳ. ಶೂಟಿಂಗ್ ವೇಳೆ ನಾವುಗಳು ಟೇಕ್ ತೆಗೆದುಕೊಂಡರೆ, ರಾಕಿ ಮಾತ್ರ ಒಂದೇ ಟೇಕ್ ಓಕೆ ಮಾಡುತ್ತಿದ್ದ. ಸೋ ಆ ಕ್ಷಣಗಳೇ ಮರೆಯದ ಅನುಭವ. ಸಿನಿಮಾ ಶೂಟಿಂಗ್ ಅನಿಸಲಿಲ್ಲ ಫ್ಯಾಮಿಲಿ ಟ್ರಿಪ್ ಥರಾ ಇತ್ತು. ಅದಕ್ಕೆ ಕಾರಣ ಟೀಮ್ ಮತ್ತು ಪ್ರೊಡಕ್ಷನ್ ಹೌಸ್. ನಿರ್ಮಾಪಕ ಶರಣಪ್ಪ ಹಾಗು ನಿರ್ದೇಶಕ ವಿಶ್ವಾಸ್ ಕೊಟ್ಟ ಸಹಕಾರ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ.

ಖಳನಟಿ ಪಾತ್ರಕ್ಕೂ ರೆಡಿ

ನನಗೆ ಬಾಲಿವುಡ್ ನಟಿ ರೇಖಾ ಅವರು ರೋಲ್ ಮಾಡೆಲ್. ಇನ್ನು ನನಗೆ ಚಾಲೆಂಜ್ ಎನಿಸುವ ಪಾತ್ರ ಮಾಡುವಾಸೆ. ಅದರಲ್ಲೂ ವಿಲನ್ ಇದ್ದರಂತೂ ಓಕೆ. ಈಗಾಗಲೇ ಕ್ಲಾಂತ ಎಂಬ ಸಿನಿಮಾದಲ್ಲಿ ನಾನು ವಿಲನ್ ಪಾತ್ರ ಮಾಡಿದ್ದೇನೆ. ನಾಯಕಿಯಷ್ಟೇ ಪ್ರಬಲ ಪಾತ್ರವದು.

ಕನ್ನಡ ಮಾತ್ರವಲ್ಲ, ಪರಭಾಷೆ ಸಿನಿಮಾದಲ್ಲಿ ಒಳ್ಳೆಯ ಪಾತ್ರ ಕಂಟೆಂಟ್ ಇದ್ದರೆ ಅಲ್ಲೂ ಹೋಗೋಕೆ ರೆಡಿ. ಇನ್ನು, ನಟನೆ ಜೊತೆ ನಾನು ಹಾಡ್ತೀನಿ ಕೂಡ. ಅದರಲ್ಲೂ ಜನಪದ ಮಾತ್ರ. ಜೊತೆಗೆ ನಿರ್ದೇಶನದ ಮೇಲೂ ಒಲವಿದೆ. ಒಂದೆರೆಡು ಕಥೆ ಕೂಡ ಬರೆದಿಟ್ಟುಕೊಂಡಿದ್ದೇನೆ. ಆ ಟೈಮ್ ಗಾಗಿ ಕಾಯುತ್ತಿದ್ದೇನೆ.

ಈಗ ರಿಲೀಸ್ ಗೆ ಏಳು ಸಿನಿಮಾಗಳಿವೆ. ಒಂದಷ್ಟು ಕಥೆ ಕೇಳುತ್ತಿದ್ದೇನೆ. ಸದ್ಉ ಯಾವ ಮೋಹನ ಮುರಳಿ ಕರೆಯಿತು ಮೇಲೆ ಹೆಚ್ಚು ನಿರೀಕ್ಷೆ ಇದೆ.

Related Posts

error: Content is protected !!