ಶ್ವಾನ ಪ್ರೀತಿ ಕರೆಯಿತೋ! ಯಾವ ಮೋಹನ ಮುರಳಿ ಕರೆಯಿತು ಸಿನಿಮಾ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ

ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

“ಯಾವ ಮೋಹನ ಮುರಳಿ ಕರೆಯಿತು” ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ಭಿನ್ನ. ಭರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ ಸಿಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿರುತ್ತದೆ.

ಆ ಸಮಯದಲ್ಲಿ ಇವರಿಬ್ಬರ ನಡುವೆ ಮತ್ತೊಬ್ಬ ವ್ಯಕ್ತಿ ಪ್ರವೇಶಿಸುತ್ತಾನೆ. ನಂತರ ಏನಾಗುತ್ತದೆ ಎಂಬುದೆ ಚಿತ್ರದ ಕಥೆ. ಈಗಾಗಲೇ ಚಿತ್ರೀಕರಣ ಮುಗಿದು ಬಿಡುಗಡೆಗೆ ಸಿದ್ದವಾಗಿದೆ. ಮೂರು ಹಾಡುಗಳಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರವೆಂದರು ನಿರ್ದೇಶಕ ವಿಶ್ವಾಸ್ ಕೃಷ್ಣ.

ನಾನು ಉದ್ಯಮಿ‌. ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದೇನೆ. ಸಿನಿಮಾ ಬಗ್ಗೆ ಅಷ್ಟು ಗೊತ್ತಿಲ್ಲ. ಸಾಹಿತಿ ಗೌಸ್ ಫಿರ್ ಅವರ ಮೂಲಕ ನಿರ್ದೇಶಕರ ಪರಿಚಯವಾಯಿತು. ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದರು.



ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನಾ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ಹಾಗೂ ಸಂಗೀತ ನಿರ್ದೇಶಕ ಅನಿಲ್ ಸಿ ಜೆ ಚಿತ್ರದ ಕುರಿತು ಮಾತನಾಡಿದರು. ಪತ್ರಿಕಾಗೋಷ್ಠಿಗೆ ರಾಕಿ(ಶ್ವಾನ) ಕೂಡ ಆಗಮಿಸಿತ್ತು. ರಾಕಿ ಟ್ರೈನರ್ ಸ್ವಾಮಿ, ರಾಕಿಯ ದಿನಚರಿ ಬಗ್ಗೆ ವಿವರಣೆ ನೀಡಿದರು.

Related Posts

error: Content is protected !!