ನಟ ಅನಿರುದ್ಧ್ , ಐದು ವರ್ಷಗಳ ನಂತರ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ನೂತನ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ ಎಂದು ಈ ಮೊದಲೇ ತಿಳಿಸಲಾಗಿತ್ತು.
ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ “chef ಚಿದಂಬರ” ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದ್ದಾರೆ.
ಅನಿರುದ್ಧ್ ಈ ಚಿತ್ರದಲ್ಲಿ ಶೆಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ತಿಂಗಳ ಹತ್ತರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ದ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನವಿದೆ.
ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದಲ್ಲಿ ನಟಿಸುತ್ತಿದ್ದಾರೆ.