Categories
ಸಿನಿ ಸುದ್ದಿ

ದಿಗಂತ್ ಸಿನಿಮಾಗೆ ರಂಗಿತರಂಗ ಬೆಡಗಿ ಎಂಟ್ರಿ: ಎಡಗೈ ಅಪಘಾತಕ್ಕೆ ಕಾರಣ ಚಿತ್ರಕ್ಕೆ ರಾಧಿಕಾ ನಾರಾಯಣ್ ಬಂದ್ರು…

ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ಇದು. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ದರು. ಇದೀಗ ಮತ್ತೊಂದು ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ. ಮತ್ತೊಬ್ಬ ಸ್ಟಾರ್ ನಟಿ ಈ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

ರಂಗಿತರಂಗ ನಟಿ ರಾಧಿಕಾ ನಾರಾಯಣ್ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಾಗಿದೆ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಸಿನಿಮಾದಲ್ಲಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.

ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇ. 80ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

Categories
ಸಿನಿ ಸುದ್ದಿ

ದುಬೈನಲ್ಲಿ ಕನ್ನಡ ಕಹಳೆ: ನವೆಂಬರ್ 19ರಂದು ಅರಬ್ಬರ ನಾಡಲ್ಲಿ ವಿಶ್ವ ಕನ್ನಡ ಹಬ್ಬ…

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡಿಗರು ದುಬೈ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ದುಬೈನಲ್ಲಿ ‘ವಿಶ್ವ ಕನ್ನಡ ಹಬ್ಬ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವೆಂಬರ್ 19ರಂದು ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಈ ಬಾರಿಯ ‘ವಿಶ್ವ ಕನ್ನಡ ಹಬ್ಬ’ದ ಲೋಗೋ ಬಿಡುಗಡೆಯಾಗಿದ್ದು , ಕಾರ್ಯಕ್ರಮದ ಸಿದ್ದತೆಯೂ ಭರದಿಂದ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಟಿ. ಶಿವಕುಮಾರ ನಾಗರ ನವಿಲೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ರು. ಪತ್ರಿಕಾಗೋಷ್ಠಿಯಲ್ಲಿ ನಟಿ ಪ್ರೇಮ, ನಟ ವಸಿಷ್ಠ ಸಿಂಹ ಹಾಗೂ ಇತರರು ಪಾಲ್ಗೊಂಡಿದ್ದರು.

ನವೆಂಬರ್ 19ರಂದು ದುಬೈನಲ್ಲಿ ನಡೆಯುವ ‘ವಿಶ್ವ ಕನ್ನಡ ಹಬ್ಬ’ ವಿಶೇಷ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜರಾದ ಯಧುವೀರ ಚಾಮರಾಜ ಒಡೆಯರ್, ನಟ ಶಿವರಾಜ್ ಕುಮಾರ್, ಮಹರ್ಷಿ ಡಾ.ಆನಂದ್ ಗುರೂಜಿ, ನಟಿಯರಾದ ಭವ್ಯ, ಸುಧಾರಾಣಿ, ಶೃತಿ, ಪ್ರೇಮಾ, ಮೇಘ ಶೆಟ್ಟಿ ವಿಜಯ ರಾಘವೇಂದ್ರ ಹಾಗೂ ಮುಖ್ಯ ಅತಿಥಿಯಾಗಿ ನಟ ವಸಿಷ್ಠ ಸಿಂಹ ಪಾಲ್ಗೊಳ್ಳುತ್ತಿದ್ದಾರೆ.

ನಟ ವಸಿಷ್ಠ ಸಿಂಹ ಮಾತನಾಡಿ, ನಾವೆಲ್ಲರೂ ಕನ್ನಡ ಬೆಳೆಯಬೇಕು, ಕನ್ನಡ ಬಳಸಬೇಕು ಎಂದು ಹೇಳುತ್ತೇವೆ. ಆದರೆ, ಅದಕ್ಕಾಗಿ ಹಲವಾರು ಜೀವಗಳು ನಿರಂತರವಾಗಿ ದುಡಿಯುತ್ತಿವೆ‌ ಹಾಗೂ ದುಡಿದಿದ್ದಾರೆ. ಅವರನ್ನೆಲ್ಲ ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಗೌರವ ನೀಡುತ್ತಿದೆ. ಈ ಕನ್ನಡ ಹಬ್ಬಕ್ಕೆ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಂತರಾಷ್ಟ್ರೀಯ ರಾಯಭಾರಿಯಾಗಿ ನನ್ನನ್ನು ಭಾಗವಹಿಸಬೇಕು ಎಂದು ಹೇಳಿದಾಗ ತುಂಬಾ ಹಿರಿಮೆ ಅನಿಸಿತು. ಈ ರೀತಿಯ ಕಾರ್ಯಕ್ರಮದಿಂದ ವಿಚಾರಗಳ ವಿನಿಮಯ ಆಗುತ್ತೆ. ಈ ಕಾರ್ಯಕ್ರಮ ಬಹಳ ವಿಶೇಷವಾಗಿರುತ್ತೆ ಎಂದು ನಂಬಿದ್ದೇನೆ. ಎಲ್ಲರೂ ನವೆಂಬರ್ ಒನ್ ಕನ್ನಡಿಗರಾಗದೇ ನಂಬರ್ ಒನ್ ಕನ್ನಡಿಗರಾಗೋಣ ಎಂದರು ವಸಿಷ್ಠ ಸಿಂಹ.

ದುಬೈನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರೋದು ತುಂಬಾ ಖುಷಿಯ ವಿಚಾರ. ಹಲವು ಕಲಾವಿದರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಕ್ಕಾಗಿ ಶಿವಕುಮಾರ್ ಅವರಿಗೆ ಧನ್ಯವಾದ ಎಂದು ನಟಿ ಪ್ರೇಮ ತಿಳಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇರುವ ಬೇರೆ ಬೇರೆ ಕಲೆಯ ಆಯ್ದ ಕಲಾವಿದರನ್ನು ದುಬೈಗೆ ಕರೆದುಕೊಂಡು ಹೋಗಿ ನಮ್ಮ ಕಲೆಯನ್ನು ಅಲ್ಲಿ ಪರಿಚಯಿಸುವ ಹಾಗೂ ಅವರನ್ನು ಗೌರವಿಸುವ ಉದ್ದೇಶವನ್ನು ಇದು ಒಳಗೊಂಡಿದೆ.

ಕನ್ನಡವನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮ ಮೂಲ ಕನ್ನಡಿಗರು ಹಾಗೂ ಅನಿವಾಸಿ ಕನ್ನಡಿಗರ ಬೆಸುಗೆಯಾಗಿದೆ. ಹಿರಿಯ ಪತ್ರಕರ್ತರಿಗೆ ಹಾಗೂ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಪ್ರಶಸ್ತಿಯನ್ನು ಕೂಡ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಡಾ. ಟಿ. ಶಿವಕುಮಾರ ನಾಗರ ನವಿಲೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

Categories
ಸಿನಿ ಸುದ್ದಿ

ಖಾಸಗಿ ಪುಟದಲ್ಲೊಂದು ಸ್ಪೆಷಲ್ ಲವ್ ಸ್ಟೋರಿ: ನವೆಂಬರ್ 18ಕ್ಕೆ ರಿಲೀಸ್…

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

‘ಖಾಸಗಿ ಪುಟಗಳು’ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ವಿಶ್ವ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ನಾಯಕಿ ಶ್ವೇತ ಡಿಸೋಜ ಮಾತನಾಡಿ ಹಿಂದಿಯಲ್ಲಿ ‘ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಪಾತ್ರದಲ್ಲಿ ನಟಿಸಿದ್ದೇನೆ. ಇನೋಸೆಂಟ್ ಹಾಗೂ ಮೆಚೋರ್ಡ್ ಎರಡು ಶೇಡ್ ನಲ್ಲಿ ಕಾಣಸಿಗಲಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ಕಿರುಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂಬ ಆಸೆಯಿತ್ತು. ನಾಯಕ ನಟನಾಗಿ ಇದು ನನ್ನ ಮೊದಲ ಸಿನಿಮಾ. ಒಂದು ತಂಡವಾಗಿ ಎಲ್ಲರೂ ಈ ಸಿನಿಮಾವನ್ನು ಮಾಡಿದ್ದೇವೆ. ನವೆಂಬರ್ 18ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಹರಸಬೇಕು ಎಂದು ನಾಯಕ ವಿಶ್ವ ಹೇಳಿದರು.

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮಾತನಾಡಿ ಸಂತೋಷ್ ಶ್ರೀಕಂಠಪ್ಪ ಅವರಿಗೆ ಇರುವ ಸಿನಿಮಾ ಪ್ರೀತಿ ನೋಡಿ ಈ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ, ಕೆ. ಕಲ್ಯಾಣ್, ಪ್ರಮೋದ್ ಮರವಂತೆ, ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ಬರೆದಿದ್ದಾರೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಹೊಸಬರನ್ನು ಬೆಳೆಸಿ ಎಂದರು.

ಚೇತನ್ ದುರ್ಗಾ, ನಂದಕುಮಾರ್,ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಬಿ.ಜಿ.ಎಂ ಮಾಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಆವರ್ತ ಸಿನಿಮಾ ಹಾಡಿಗೆ ತಾರಾ ಸಾಥ್: ಇದು ವೇಮಗಲ್ ಜಗನ್ನಾಥ್ ಚಿತ್ರ…

ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ದಂತಹ ಅದ್ಭುತ ಚಿತ್ರವನ್ನು ಕೊಟ್ಟ ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಆವರ್ತ”.

ಇತ್ತೀಚಿಗೆ ಈ ಚಿತ್ರದ ಹಾಡುಗಳನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು.

ನನ್ನ ಮೊದಲ ಚಿತ್ರ “ತುಳಸಿದಳ”. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು.
ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಹಾರೈಸಿದರು.

ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ ಜಯ್ ಚಂದ್ರ ಹೇಳಿದರು. ಸಿ.ಓ.ಡಿ ಅಧಿಕಾರಿ ಪಾತ್ರಧಾರಿ ಧನ್ವಿತ್ ಹಾಗೂ ನಾಯಕಿ ನಯನ “ಆವರ್ತ” ಚಿತ್ರದ ಬಗ್ಗೆ ಮಾತನಾಡಿದರು.

ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿದೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ದರ್ಶನ್ ಕ್ರಾಂತಿಗೆ ಡಿಜಿಟಲ್ ಹೊಸ ಕ್ರಾಂತಿ!

ಇದು ದರ್ಶನ್ ಕ್ರಾಂತಿ ಸಿನಿಮಾ ಮಾತುಕತೆ ಸಮಯ…

ಅಬ್ಬಾ… ಇಷ್ಟೊಂದ್ ಡಿಜಿಟಲ್ ಮೀಡಿಯಾನಾ? ಇಂಥದ್ದೊಂದು ಪ್ರಶ್ನೆ ಎದುರಾದರೆ ಅಚ್ಚರಿ ಬೇಡ. ನಿಜ, ಇದು ‘ಕ್ರಾಂತಿ’ ಚಿತ್ರದ ಡಿಜಿಟಲ್ ಪ್ರೆಸ್ ಮೀಟ್ ಸಮಯ. ಕಿಕ್ಕಿರಿದಿದ್ದ ಡಿಜಿಟಲ್ ಪ್ರೆಸ್ ಮೀಟ್ ಇದು. ಸ್ಯಾಟಲೈಟ್ ಚಾನೆಲ್ ಹಾವಳಿ ಅಂದುಕೊಂಡವರಿಗೆ ಡಿಜಿಟಲ್ ಮೀಡಿಯಾದ್ದು ಎಂಥಾ ಹಾವಳಿ ಸ್ವಾಮಿ ಅನ್ನೋದನ್ನು ಇಲ್ಲಿ ಸೇರಿರೋ… ಡಿಜಿಟಲ್ ಮೀಡಿಯಾ ಸಾಕ್ಷಿ….

ದರ್ಶನ್ ಹಿಂದೆ ನನಗೆ ಸೋಶಿಯಲ್ ಮೀಡಿಯಾ ಸಾಕು ಅಂದಿದ್ದರು. ಸ್ಯಾಟಲೈಟ್ ಬದಿಗೊತ್ತಿ ಡಿಜಿಟಲ್ ಮೀಡಿಯಾಗೆ ಜೈ ಅಂದಿದ್ದರು. ಆ ಪರಿಣಾಮನೇ ಇಂದು ಡಿಜಿಟಲ್ ಮೀಡಿಯಾ ಪ್ರೆಸ್ ಮೀಟ್ ನೂಕು ನುಗ್ಗಲು…

Categories
ಸಿನಿ ಸುದ್ದಿ

ಹೊಸ ಸಿನಿಮಾ ಒಪ್ಪಿಕೊಂಡ ರಾಗಿಣಿ: ಇದು ಶಂಕರ್ ನಿರ್ದೇಶನದ ಚಿತ್ರ

ತೆರೆಗೆ ಬರಲು ಸಿದ್ದವಾಗಿರುವ ವಿಭಿನ್ನ ಕಥಾಹಂದರದ “ಶಂಭೋ ಶಿವ ಶಂಕರ” ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ಇದೀಗ ಹೊಸ ಸಿನಿಮಾಗೆ ಸಜ್ಜಾಗುತ್ತಿದ್ರ್ದ್ದಾರೆ. ತಮ್ಮ ಹಿಂದಿನ ಸಿನಿಮಾ ಬಿಡುಗಡೆ ಮೊದಲೇ ಅವರು, ರಾಗಿಣಿ ಅಭಿನಯದ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ .

ಸದ್ಯ ಇವರಿಬ್ಬರ ಕಾಂಬಿನೇಷನ್ ಸಿನಿಮಾ ಸೆಟ್ಟೇರಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನೂತನ ಚಿತ್ರದ ಚಿತ್ರೀಕರಣ ನವೆಂಬರ್ ನಲ್ಲಿ ಶುರುವಾಗಲಿದೆ ಎಂಬುದು ನಿರ್ದೇಶಕರ ಮಾತು. ಇದು ಯಾವ ನಿರ್ಮಾಣ ಸಂಸ್ಥೆಯಲ್ಲಿ ತಯಾರಾಗುತ್ತಿದೆ.

ಯಾರೆಲ್ಲ ಕಲಾವಿದರು ಹಾಗೂ ತಂತ್ರಜ್ಞರು ಇರಲಿದ್ದಾರೆ ಡಂಬ ವಿಷಯ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸುವುದಾಗಿ ಅವರು ಹೇಳಿದ್ದಾರೆ.

Categories
ಸಿನಿ ಸುದ್ದಿ

ಮತ್ತೆ ಮಾಯಾಮೃಗ! ಟಿ.ಎನ್.ಸೀತಾರಾಮ್ ಮತ್ತೆ ಬಂದ್ರು… ಅ. 31 ರಿಂದ ಸಿರಿ ಕನ್ನಡದಲ್ಲಿ ಧಾರಾವಾಹಿ

ಎರಡು ದಶಕಗಳ ಹಿಂದೆ ಪ್ರಸಾರವಾಗುತ್ತಿದ್ದ ಟಿ.ಎನ್ ಸೀತಾರಾಮ್ ನಿರ್ದೇಶನದ
“ಮಾಯಾಮೃಗ” ಧಾರಾವಾಹಿ ವಿಶ್ವದಾದ್ಯಂತ ಹೆಸರು ಮಾಡಿತ್ತು. ಈಗ ಆ ಧಾರಾವಾಹಿಯ ‌ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಇದೇ ಅಕ್ಟೋಬರ್ 31 ರ ಸೋಮವಾರ ರಾತ್ರಿ 9 ಗಂಟೆಗೆ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಲಿದೆ.

ನನ್ನನ್ನು ಸಂಪರ್ಕಿಸಿದ ಸಿರಿ ಕನ್ನಡ ವಾಹಿನಿಯ ಸಂಜಯ್ ಶಿಂಧೆ, ತಮ್ಮ ವಾಹಿನಿಗಾಗಿ ಧಾರಾವಾಹಿಯೊಂದನ್ನು ನಿರ್ದೇಶಿಸುವಂತೆ ಕೇಳಿದರು. ನಾನು‌ “ಮಾಯಾಮೃಗ” ಧಾರಾವಾಹಿ ಮುಂದುವರೆಸೋಣ “ಮತ್ತೆ ಮಾಯಾಮೃಗ” ಹೆಸರಿನಿಂದ ಎಂದು ಹೇಳಿದೆ. ಅವರು ಸಂತೋಷದಿಂದ ಒಪ್ಪಿಕೊಂಡರು. ಆಗ ನಿರ್ದೇಶನ ವಿಭಾಗದಲ್ಲಿ ನಾನು, ಪಿ.ಶೇಷಾದ್ರಿ ಹಾಗೂ ನಾಗೇಂದ್ರ ಶಾ ಇದ್ದೆವು. ಈಗಲೂ ನಾವು ಮೂವರು ಸೇರಿ “ಮತ್ತೆ ಮಾಯಾಮೃಗ” ನಿರ್ದೇಶಿಸುತ್ತಿದ್ದೇವೆ.

ಕಥಾ ವಿಸ್ತರಣೆಯಲ್ಲಿ ನನ್ನ ‌ಮಗಳು ಅಶ್ವಿನಿ ಹಾಗೂ ಪ್ರಹ್ಲಾದ್ ನಮ್ಮೊಂದಿಗಿದ್ದಾರೆ. 23 ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ನಾನು ಸೇರಿದಂತೆ ಹಲವರಿಗೆ ವಯಸ್ಸಾಗಿದೆ. “ಮಾಯಾಮೃಗ” ದಲ್ಲಿ ಅಭಿನಯಿಸಿದ್ದ ವೈಶಾಲಿ ಕಾಸರವಳ್ಳಿ ಹಾಗೂ ಅನೇಕ ಕಲಾವಿದರು ನಮ್ಮೊಂದಿಗಿಲ್ಲ. ಹಳೆಯ ಕಲಾವಿದರು ಹಾಗೂ ಈಗಿನ ಹೊಸ ಕಲಾವಿದರ ಸಮಾಗಮದಲ್ಲಿ “ಮತ್ತೆ ಮಾಯಾಮೃಗ” ಮೂಡಿಬರಲಿದೆ. “ಬದುಕು ಬದಲಾಗಬಹುದು ಆದರೆ ಭಾವಗಳಲ್ಲ” ಎಂಬ ವಾಕ್ಯದೊಂದಿಗೆ ಎಂದು ಟಿ.ಎನ್ ಸೀತಾರಾಮ್ ವಿವರಣೆ ನೀಡಿದರು.

ಆಗ “ಮಾಯಾಮೃಗ” ಮಾಡುತ್ತಿದ್ದಾಗ ನಮಗೆ ಅಂತ ಪೈಪೋಟಿ ಇರಲಿಲ್ಲ. ಧಾರಾವಾಹಿ ಸಂಖ್ಯೆ ತುಂಬಾ ಕಡಿಮೆ ಇರುತ್ತಿತ್ತು. ಈಗ ಎಲ್ಲಾ ವಾಹಿನಿಗಳಿಂದ ಸುಮಾರು ಅರವತ್ತಕ್ಕೂ ಅಧಿಕ ಧಾರಾವಾಹಿಗಳು ದಿನ ಪ್ರಸಾರವಾಗುತ್ತಿದೆ. ಇವುಗಳ ಮಧ್ಯೆ ನಾವು ಪ್ರೇಕ್ಷಕರನ್ನು ನಮ್ಮ ಧಾರಾವಾಹಿಯತ್ತ ಸೆಳೆಯುವ ದೊಡ್ಡ ಸವಾಲು ನಮ್ಮ ಮುಂದಿದೆ. ಜನ “ಮತ್ತೆ ಮಾಯಾಮೃಗ” ವನ್ನು ಮೆಚ್ಚಿಕೊಳ್ಳುವ ವಿಶ್ವಾಸವೂ ಇದೆ ಎಂದರು ಪಿ.ಶೇಷಾದ್ರಿ.

ನಾಗೇಂದ್ರ ಶಾ ಕೂಡ ಧಾರಾವಾಹಿ ಕುರಿತು ಒಂದಷ್ಟು ವಿಷಯ ಹಂಚಿಕೊಂಡರು.

ನಾವು ದುಡ್ಡಿಗಾಗಿ ಈ ಧಾರಾವಾಹಿ ಮಾಡುತ್ತಿಲ್ಲ. ಟಿ.ಎನ್ ಸೀತಾರಾಮ್ ಅವರಂತಹ ಉತ್ತಮ ನಿರ್ದೇಶಕರು ನಮ್ಮ ವಾಹಿನಿಗಾಗಿ ಧಾರಾವಾಹಿ ನಿರ್ದೇಶಿಸುತ್ತಿರುವುದೇ ನಮಗೆ ಹೆಮ್ಮೆ ಎನ್ನುತ್ತಾರೆ ವಾಹಿನಿಯ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ.


ಸಿರಿ ಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ‌ ಹಾಗೂ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಅನೇಕ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿದ್ದರು.

Categories
ಸಿನಿ ಸುದ್ದಿ

ಪುನೀತ ಪರ್ವ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಘೋಷಣೆ- ನವೆಂಬರ್ 1 ಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರದಾನ…

ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯ್ತಿಯನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಶುಕ್ರವಾರ ಅವರು ‘ಪುನೀತ ಪರ್ವ’ ಗಂಧದ ಗುಡಿ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಮಾಧ್ಯಮ ಜೊತೆ ಈ ವಿಷಯ ಹಂಚಿಕೊಂಡರು.

ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತ ಸಿನಿಮಾ ಆಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ ಎಂದರು.

ಅಪ್ಪು ಜನಮಾನಸದಲ್ಲಿ ಜೀವಂತವಾಗಿದ್ದಾರೆ; ಅಪ್ಪು ಅವರನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ ಎಂಬ ಭಾವನೆ ನಮ್ಮಲ್ಲಿದೆ‌. ಅವರು ದೇವತಾ ಮನುಷ್ಯ, ಅವರ ವ್ಯಕ್ತಿತ್ವಕ್ಕೆ ದೇವರ ಆಶೀರ್ವಾದವಿದೆ ಎಂದರು.

ಕರ್ನಾಟಕ ರತ್ನ ಪ್ರದಾನ…

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲಾ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ ಎಂದರು.

ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ ಅದೇ ರೀತಿ ಪುನೀತ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಕರ್ನಾಟಕ ರತ್ನ ಸಮಾರಂಭದ ಸಂಭ್ರಮವೂ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎಂದರು ಅವರು.

Categories
ಸಿನಿ ಸುದ್ದಿ

ಅಮೇಜಾನ್ ನಲ್ಲೂ ಡೊಳ್ಳು ಸೌಂಡು!

ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್. ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣವನ್ನು ಆರಂಭಿಸಿರುವ ಇವರು ನಿರ್ಮಾಣ ಮಾಡಿದ ಮೊದಲ ಸಿನಿಮಾದಲ್ಲೇ ಸಂಚಲನ ಸೃಷ್ಟಿಸಿದವರು. ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದುಕೊಂಡಿದೆ. ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿತ್ತು. ಹೀಗೆ ಎಲ್ಲರ ಹೆಮ್ಮೆಗೆ ಪಾತ್ರವಾದ ‘ಡೊಳ್ಳು’ ಸಿನಿಮಾ ಚಿತ್ರಮಂದಿರದಲ್ಲೂ ಸಿನಿ ಪ್ರೇಮಿಗಳ ಮನಗೆದ್ದಿತ್ತು. ಇದೀಗ ಒಟಿಟಿಗೂ ಲಗ್ಗೆ ಇಟ್ಟಿದ್ದು ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಗೊಂಡಿದೆ.

ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿಟ್ಟುಕೊಂಡು ಹೆಣೆದ ಕಥೆ ಈ ಚಿತ್ರದ ಜೀವಾಳ. ಒಡೆಯರ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣವಾದ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆಯುದರೊಂದಿಗೆ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳ ನಡುವೆ ಜಾನಪದ ಕಲೆಯ ಕಾಳಜಿ ಕುರಿತಾದ ಈ ಚಿತ್ರ ಸಾಗರ್ ಪುರಾಣಿಕ್ ನಿರ್ದೇಶನದ ಮೊದಲ ಸಿನಿಮಾ.

ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಒಳಗೊಂಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಎಂ ಸಂಗೀತವಿದೆ.

ಅಭಿಲಾಶ್ ಕಲಥಿ ಕ್ಯಾಮೆರಾ ನಿರ್ದೇಶನ, ಬಿ ಎಸ್ ಕೆಂಪರಾಜು ಸಂಕಲನ ಡೊಳ್ಳು ಚಿತ್ರಕ್ಕಿದೆ. ಚಿತ್ರಮಂದಿರದಲ್ಲಿ ಡೊಳ್ಳು ಸಿನಿಮಾ ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ನಲ್ಲಿ ನೋಡಬಹುದಾಗಿದೆ.

Categories
ಸಿನಿ ಸುದ್ದಿ

ಕನ್ನಡದ ಹೊಸ‌ ಕೆಡಿ! ಧ್ರುವ ಸರ್ಜಾಗೆ ಹೆಸರಿಟ್ಟ ಪ್ರೇಮ್: ನಯಾ ಸಿನಿಮಾ ಟೈಟಲ್ ರಿಲೀಸ್…

ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ‘ಜೋಗಿ’ ಪ್ರೇಮ್‌ ಕಾಂಬಿನೇಷನ್‌ನಲ್ಲಿ ಘೋಷಣೆ ಆಗಿದ್ದ ಸಿನಿಮಾಗೆ ‘ಕೆ ಡಿ’ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟೈಟಲ್ ಟೀಸರ್ ರಿಲೀಸ್ ಮಾಡಿ, ಚಿತ್ರತಂಡ ಈ ವಿಚಾರವನ್ನು ಹಂಚಿಕೊಂಡಿದೆ. ಬಾಲಿವುಡ್‌ ನಟ ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಟೈಟಲ್ ಟೀಸರ್ ರಿಲೀಸ್ ಆಗಮಿಸಿದ್ದ ಅವರು, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಕೆಜಿಎಫ್‌ 2’ ಚಿತ್ರದಲ್ಲಿ ಅಧೀರ ಪಾತ್ರ ಮಾಡಿದ್ದ ಸಂಜಯ್ ದತ್, ಇಲ್ಲಿ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಈ ಸಿನಿಮಾವು 1970ರಲ್ಲಿ ನಡೆದ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದೆ. ಬೆಂಗಳೂರಿನಲ್ಲಿ ನಡೆದ ಈ ಕಥೆ ರೋಚಕವಾಗಿದ್ದು, ನೈಜವಾಗಿ ತೆರೆಮೇಲೆ ತರುವ ಪ್ರಯತ್ನ ಮಾಡಲಿದ್ದೇನೆ. ಸದ್ಯ ‘ಕೆಡಿ’ ಎಂದು ಟೈಟಲ್ ಅನೌನ್ಸ್ ಮಾಡಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಹಾಗಾಗಿ, ಪರಭಾಷೆಯ ಕಲಾವಿದರು ಕೂಡ ಇರಲಿದ್ದಾರೆ. ಪಾತ್ರಕ್ಕೆ ಹೊಂದಿಕೆ ಆಗುವುದರಿಂದ ಅವರನ್ನು ಆಯ್ಕೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಅವರೆಲ್ಲ ಯಾರು ಎಂಬುದನ್ನು ಹೇಳಲಿದ್ದೇವೆ ಎಂದು ನಿರ್ದೇಶಕ ಪ್ರೇಮ್ ಹೇಳಿದರು.

ಮಚ್ಚು ಹಿಡಿದು ಖಡಕ್ ಆಗಿ ಪೋಸ್ ನೀಡಿರುವ ನಟ ಧ್ರುವ ಸರ್ಜಾ, ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಂಡಿದ್ದಾರಂತೆ. ಈಗಾಗಲೇ ಅವರು 7 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಧ್ರುವ ರೆಟ್ರೋ ಶೈಲಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಇದೊಂದು ಮಾಸ್ ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ಕಾಳಿದಾಸ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಪರಭಾಷೆಯ ಪತ್ರಕರ್ತರ ಎದುರು ತಮ್ಮ ಪರಿಚಯ ಮಾಡಿಕೊಂಡ ಧ್ರುವ, ನಾನಿನ್ನೂ ಕೇವಲ 5 ಸಿನಿಮಾ ಮಾಡಿರುವ ನಟ. ಇದು ನನ್ನ 6ನೇ ಸಿನಿಮಾ. ನಾನು ಹುಟ್ಟಿದ್ದು, ಆರನೇ ತಾರೀಖು. ನನ್ನ ಲಕ್ಕಿ ನಂಬರ್ ಆರು. ಹಾಗೆಯೇ ಇದು ನನ್ನ 6ನೇ ಚಿತ್ರ. ಇದಿನ್ನೂ ಆರಂಭ ಅಷ್ಟೇ. ಚಿತ್ರೀಕರಣಕ್ಕಾಗಿ ಕಾಯುತ್ತಿದ್ದೇನೆ’ ಎಂದು ಧ್ರುವ ಸರ್ಜಾ ಹೇಳಿದರು.

ಕೆ ಡಿ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ತಮಿಳು ಟೈಟಲ್ ಟೀಸರ್‌ಗೆ ವಿಜಯ್‌ ಸೇತುಪತಿ ಧ್ವನಿ ನೀಡಿದ್ದಾರೆ. ಮಲಯಾಳಂ ಟೈಟಲ್ ಟೀಸರ್‌ಗೆ ಮೋಹನ್‌ಲಾಲ್‌ ಹಾಗೂ ಹಿಂದಿ ಟೈಟಲ್ ಟೀಸರ್‌ಗೆ ಸಂಜಯ್‌ ದತ್‌ ಅವರು ಧ್ವನಿ ನೀಡಿದ್ದಾರೆ. ಕೆವಿನ್‌ ಪ್ರೊಡಕ್ಷನ್‌ನಲ್ಲಿ ಮೂಡಿ ಬರುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಪ್ರೇಮ್ ಅವರ 9ನೇ ಸಿನಿಮಾ ಈ ಕೆಡಿ. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಲಿದ್ದು, ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್‌ ಛಾಯಾಗ್ರಹಣ ಮಾಡಲಿದ್ದಾರೆ. ಬಹುತೇಕ ಸೆಟ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ದೊಡ್ಡ ದೊಡ್ಡ ಸೆಟ್‌ಗಳನ್ನು ಹಾಕಲಾಗುತ್ತಿದೆ.

error: Content is protected !!