Categories
ಸಿನಿ ಸುದ್ದಿ

ಜೇಮ್ಸ್‌ ದಾಖಲೆ ಗಳಿಕೆ! ಶೀಘ್ರವೇ ಸೇರಲಿದೆ ನೂರು ಕೋಟಿ ಕ್ಲಬ್…‌

ಡಾ.ಪುನೀತ್‌ ರಾಜಕುಮಾರ್‌ ಅವರ ಜೇಮ್ಸ್‌ ಚಿತ್ರಕ್ಕ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಯಾವ ಕನ್ನಡ ಸಿನಿಮಾಗಳಿಗೂ ಸಿಗದಂತಹ ಅದ್ಭುತ ಓಪನಿಂಗ ಜೇಮ್ಸ್‌ ಚಿತ್ರಕ್ಕೆ ಸಿಕ್ಕಿದೆ. ಬೆಂಗಳೂರಲ್ಲೇ ರಿಲೀಸ್‌ ಮುನ್ನ ಸುಮಾರು ಒಂದು ಕೋಟಿ ರೂ. ಮೌಲ್ಯದ ಟೆಕೆಟ್‌ ಸೇಲ್‌ ಆಗಿತ್ತು ಅನ್ನೋದು ವಿಶೇಷ. ಬೆಂಗಳೂರು ಮಾತ್ರವಲ್ಲ, ರಾಜ್ಯಾದ್ಯಂತ ಕೂಡ ಚಿತ್ರ ಅದ್ಧೂರಿಯಾಗಿಯೇ ಓಪನಿಂಗ್‌ ಕಂಡಿದೆ. ಜೇಮ್ಸ್‌ ಗಳಿಕೆಯಲ್ಲಿ ಕನ್ನಡದ ಎಲ್ಲಾ ಸಿನಿಮಾಗಳ ದಾಖಲೆ ಮುರಿಯುತ್ತದೆ ಎಂಬ ಲೆಕ್ಕಾಚಾರವನ್ನುಗಾಂಧಿನಗರ ಮಂದಿ ಹಾಕಿದ್ದರು. ಮೊದಲ ದಿನ ಶೇ.೯೦ಕ್ಕೂ ಹೆಚ್ಚ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. ಪರ ರಾಜ್ಯ ಮತ್ತು ವಿದೇಶಗಳಲ್ಲೂ ಜೇಮ್ಸ್‌ ಚಿತ್ರಕ್ಕೆ ಅದ್ಭುತ ಓಪನಿಂಗ್‌ ಸಿಕ್ಕಿದೆ.

ಹಾಗಾದರೆ, ಜೇಮ್ಸ್‌ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು? ಈ ಪ್ರಶ್ನೆ ಸಹಜವಾಗಿಯೇ ಹರಿದಾಡುತ್ತಿದೆ. ಜೇಮ್ಸ್‌ ಸಿನಿಮಾ ಮೊದಲ ದಿನ ಸುಮಾರು 33 ಕೋಟಿ ರೂ.ಗೂ ಹೆಚ್ಚು ಮೊತ್ತದ ಗಳಿಕೆ ಪಡೆದಿದೆ ಎಂದು ಹೇಳಲಾಗುತ್ತಿದೆ. ಇದು ಪುನೀತ್ ರಾಜಕುಮಾರ್‌ ಅವರ ಕೊನೆಯ ಚಿತ್ರ ಅನ್ನುವ ಕಾರಣಕ್ಕೆ ಎಲ್ಲೆಡೆಯಿಂದಲೂ ಅಭಿಮಾನಿಗಳು ಚಿತ್ರ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 33 ಕೋಟಿ ಕೋಟಿ ಗಳಿಕೆಯಾಗಿದ್ದು, ಹೊರ ರಾಜ್ಯ ಹಾಗು ವಿದೇಶಗಳಲ್ಲೂ ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. ಅವೆಲ್ಲದರ ಗಳಿಕೆಯನ್ನು ಸೇರಿಸಿ ಅಂದಾಜಿಸಿದರೆ ಮೊದಲ ದಿನದ ಗಳಿಕೆ ಸುಮಾರು 45 ಕೋಟಿಯಷ್ಟು ಆಗಬಹುದು.

ಮೊದಲ ದಿನ ಕರ್ನಾಟಕದಲ್ಲಿ 33 ಕೋಟಿಯಷ್ಟು ಗಳಿಕೆ ಕಂಡಿರುವ ‘ಜೇಮ್ಸ್’ ಈ ವಾರ ಮತ್ತಷ್ಟು ಗಳಿಕೆ ಮಾಡಲಿದೆ. ಹಾಗೆ ನೋಡಿದರೆ ಮುಂದಿನ ಮೂರು ದಿನಗಳಲ್ಲಿ ಸುಮಾರು 70 ಕೋಟಿ ಗಳಿಕೆ ದಾಟಬಹುದು ಎಂದು ಅಂದಾಜಿಸಲಾಗುತ್ತಿದೆ. ‘ಜೇಮ್ಸ್’ ಚಿತ್ರ ಬಿಡುಗಡೆ ಆಗಿದ್ದರಿಂದ ಯಾವೊಂದು ಸಿನಿಮಾ ಕೂಡ ಸ್ಪರ್ಧೆಗೆ ಬಂದಿಲ್ಲ. ಹಾಗಾಗಿ ಗಳಿಕೆಯಲ್ಲಿ ಹೊಸ ದಾಖಲೆ ಬರೆಯಬಹುದು ಎನ್ನಲಾಗುತ್ತಿದೆ. ಆದಷ್ಟು ಬೇಗ ಜೇಮ್ಸ್ ನೂರು ಕೋಟಿ ಕ್ಲಬ್ ಸೇರಿದರೂ ಅಚ್ಚರಿಯಿಲ್ಲ. ಅದೇನೆ ಇರಲಿ, ಜೇಮ್ಸ್‌ ಕನ್ನಡದಲ್ಲಿ ಗ್ರಾಂಡ್‌ ಓಪನಿಂಗ್‌ ಪಡೆದಿದೆ. ನಿಜಕ್ಕೂ ಅದೊಂದು ದೊಡ್ಡ ದಾಖಲೆಯೇ ಸರಿ. ಇತ್ತೀಚಿನ ವರ್ಷಗಳಲ್ಲಿ ಯಾವ ಸಿನಿಮಾಗಳು ಸಹ ಈ ಮೊಟ್ಟದ ಓಪನಿಂಗ್‌ ಪಡೆದುಕೊಂಡಿರಲಿಲ್ಲ.

Categories
ರಿ ವಿವ್ಯೂ ಸಿನಿ ಸುದ್ದಿ

ಗೆಳೆತನ + ಪ್ರೀತಿ + ದೇಶಾಭಿಮಾನ = ಜೇಮ್ಸ್!

  • ವಿಜಯ್‌ ಭರಮಸಾಗರ

ಚಿತ್ರ ವಿಮರ್ಶೆ: ಜೇಮ್ಸ್‌

ನಿರ್ದೇಶನ: ಚೇತನ್‌ ಕುಮಾರ್‌
ನಿರ್ಮಾಣ: ಕಿಶೋರ್‌ ಪತ್ತಿಕೊಂಡ
ತಾರಾಗಣ : ಪುನೀತ್‌ ರಾಜಕುಮಾರ್‌, ಪ್ರಿಯಾ ಆನಂದ್‌, ಶ್ರೀಕಾಂತ್‌, ಶರತ್‌, ಅನುಪ್ರಭಾಕರ್‌,ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ಅವಿನಾಶ್‌ ಇತರರು.

ವಿಲನ್:‌ “ನನ್‌ ಜೊತೆ ಕಾಂಪಿಟೇಟ್‌ ಮಾಡಿರೋರು ಯಾರೂ ಗೆದ್ದಿರೋ ರೆಕಾರ್ಡ್ಸೇ ಇಲ್ಲ…
ಹೀರೋ: ನನಗೆ ಮೊದಲಿನಿಂದಲೂ ರೆಕಾರ್ಡ್ಸ್‌ ಬ್ರೇಕ್ ಮಾಡಿ‌ ಅಭ್ಯಾಸ…

ಇದು ಜೇಮ್ಸ್‌ ಚಿತ್ರದಲ್ಲಿ ಬರೋ ಖಡಕ್ ಡೈಲಾಗ್.‌ ವಿಲನ್‌ ಹೇಳೋ ಡೈಲಾಗ್‌ಗೆ,‌ ಹೀರೋ ಕೌಂಟರ್‌ ಇದು. ಹೌದು, ಒಂದೇ ಮಾತಲ್ಲಿ ಹೇಳುವುದಾದರೆ ಜೇಮ್ಸ್‌ ಅದ್ಧೂರಿಯ ಜೊತೆಗೆ ಒಂದೊಳ್ಳೆಯ ಸಂದೇಶ ಇರುವ ಸಿನಿಮಾ. ಇಡೀ ಸಿನಿಮಾದ ಜೀವಾಳ ಪುನೀತ್.‌ ಸಿನಿಮಾ ನೋಡಿದವರಿಗೆ ಪುನೀತ್‌ ಹೊರತಾಗಿ ಬೇರೇನೂ ಅಲ್ಲಿ ಕಾಣಿಸೋದೇ ಇಲ್ಲ. ಅಷ್ಟರ ಮಟ್ಟಿಗೆ ಸಿನಿಮಾವನ್ನು ಆವರಿಸಿಕೊಂಡಿದ್ದಾರೆ. ಇಲ್ಲಿ ಏನಿದೆ ಅನ್ನುವುದಕ್ಕಿಂತ ಏನಿಲ್ಲ ಅಂತ ಕೇಳಬೇಕು! ಹೌದು, ಒಂದು ಭರಪೂರ ಭೋಜನ ಎಷ್ಟೊಂದು ಅದ್ಭುತ ಎನಿಸುತ್ತೋ ಅಷ್ಟೊಂದು ಕಲರ್‌ ಫುಲ್‌ ಸಿನಿಮಾ ಇದು ಅಂದರೆ ತಪ್ಪಿಲ್ಲ. ಇಲ್ಲಿ ಗೆಳೆತನವಿದೆ. ಪ್ರೀತಿ ಇದೆ. ದ್ವೇಷ, ಅಸೂಯೆ ಹೆಚ್ಚಾಗಿಯೇ ಇದೆ. ಅದೆಲ್ಲಕ್ಕಿಂತಲೂ ಹೆಚ್ಚಾಗಿ ದೇಶಾಭಿಮಾನದ ಕಿಚ್ಚು ಇದೆ. ನೋಡುಗರಿಗೆ ದೇಶಭಕ್ತಿ ಮತ್ತಷ್ಟು ಹೆಚ್ಚಿದರೂ ಅಚ್ಚರಿ ಇಲ್ಲ. ಅಷ್ಟರಮಟ್ಟಿಗೆ ಜೇಮ್ಸ್‌ ಹತ್ತಿರವಾಗುವ ಸಿನಿಮಾ.

ಪುನೀತ್‌ ಸಿನಿಮಾಗಳೆಂದರೆ ಅಲ್ಲಿ ಮನರಂಜನೆ ಹೇರಳವಾಗಿರುತ್ತೆ. ಅಂಥದ್ದೊಂದು ಅದ್ಭುತ ಮನರಂಜನೆಗೆ ಇಲ್ಲಿ ಮೋಸವಿಲ್ಲ. ಇದೊಂದು ಪಕ್ಕಾ ಆಕ್ಷನ್‌ ಪ್ಯಾಕ್ಡ್‌ ಸಿನಿಮಾ. ಮೊದಲರ್ಧ ಸಾಗುವುದೇ ಗೊತ್ತಾಗುವುದಿಲ್ಲ. ಅಪ್ಪು ಅವರ ಖದರ್‌ ಏನೆಂಬುದನ್ನು ಹಿಂದಿನ ಸಿನಿಮಾಗಳಲ್ಲಿ ನೋಡಿರುವ ಫ್ಯಾನ್ಸ್‌ ಇಲ್ಲಿ ಅವರ ಹೊಸ ರೂಪವನ್ನು ಕಾಣಬಹುದು. ಸಿನಿಮಾದುದ್ದಕ್ಕೂ ಚಾಲೆಂಜಿಂಗ್‌ ಎನಿಸುವ ಮತ್ತು ಅಷ್ಟೇ ರಿಸ್ಕ್‌ ಎನಿಸುವ ದೃಶ್ಯಗಳಿವೆ. ಇವೆಲ್ಲವೂ ನೋಡುಗರನ್ನು ಸೀಟಿನ ತುದಿಮೇಲೆ ಕೂರಿಸಿಬಿಡುತ್ತವೆ. ಸಿನಿಮಾದ ಹೈಲೈಟ್‌ ಅಂದರೆ, ಮತ್ತದೇ ಸ್ಟಂಟ್.‌ ಜೇಮ್ಸ್‌ ನೋಡುವಾಗ, ಹೊಸ ಫೀಲ್‌ ಸಿಗೋದು ಗ್ಯಾರಂಟಿ. ಆ ಸಿನಿಮಾದ ರಿಚ್‌ನೆಸ್‌ ಆಗಬಹುದು, ಗುಣಮಟ್ಟ ಇರಬಹುದು, ನೋಡುಗರ ಕಣ್ಣಿಗೆ ಹಬ್ಬ. ಮೊದಲಿಗೆ ಇಲ್ಲಿ ಒಂದೊಳ್ಳೆಯ ಕಥೆ ಇದೆ. ಅದನ್ನು ಅಷ್ಟೇ ಚೆನ್ನಾಗಿಯೇ ನಿರ್ದೇಶಕರು ನಿರೂಪಿಸಿದ್ದಾರೆ. ಚಿತ್ರಕಥೆ ಚಿತ್ರದ ವಿಶೇಷತೆಗಳಲ್ಲೊಂದು. ಇನ್ನು, ಸಿನಿಮಾದಲ್ಲಿ ಖಡಕ್‌ ಡೈಲಾಗ್‌ಗಳೂ ಇವೆ. ಕಚಗುಳಿ ಎನಿಸುವ ಮಾತುಗಳೂ ಇವೆ. ಅದರೊಟ್ಟಿಗೆ ಆಗಾಗ ಮನ ಮಿಡಿಯೋ ದೃಶ್ಯಗಳೂ ಇವೆ. ದೇಶಾಭಿಮಾನ ಹೆಚ್ಚಿಸುವಂತಹ ಸಂದರ್ಭದ ದೃಶ್ಯಗಳೂ ಇವೆ.

ಒಂದು ನೀಟ್‌ ಸಿನಿಮಾಗೆ ಏನೆಲ್ಲಾ ಇರಬೇಕೋ ಆ ಎಲ್ಲಾ ಕ್ವಾಲಿಟೀಸ್‌ ಜೇಮ್ಸ್‌ ಚಿತ್ರದಲ್ಲಿದೆ. ಮೊದಲಿಗೆ ಇಲ್ಲಿ ಮನಸ್ಸಿಗೆ ನಾಟೋದು ಸಿನಿಮಾದ ಆಶಯ. ಹಾಗೆಯೇ ಕಣ್ಣಿಗೆ ಕಾಣೋದು ಅದ್ಧೂರಿತನ ಮತ್ತು ಗುಣಮಟ್ಟ. ಚಿತ್ರದ ಪ್ರತಿ ಪಾತ್ರಗಳನ್ನು ಪೋಣಿಸಿರುವ ರೀತಿ. ಇವೆಲ್ಲದರ ಜೊತೆಗೆ ಮುಖ್ಯವಾಗಿ ಪದೇ ಪದೇ ಇಷ್ಟವಾಗೋದು ಸಿನಿಮಾದ ಸಂಗೀತ. ಇಲ್ಲಿ ಗುನುಗುವ ಹಾಡುಗಳೂ ಇವೆ. ಕಥೆಗೆ ಪೂರಕವಾಗಿರುವಂತಹ ಹಿನ್ನೆಲೆ ಸಂಗೀತವೂ ಇದೆ. ಇವು ಸಿನಿಮಾದ ವೇಗವನ್ನು ಮತ್ತಷ್ಟು ಹೆಚ್ಚಿಸಿವೆ. ಇನ್ನು, ಇಂತಹ ಚಿತ್ರಗಳಿಗೆ ಸಂಕಲನ ಕೂಡ ಮುಖ್ಯ. ಅದಿಲ್ಲಿ ಎದ್ದು ಕಾಣುತ್ತದೆ. ಪ್ರತಿ ಫ್ರೇಮ್‌ ಕೂಡ ಬ್ಯೂಟಿಫುಲ್‌ ಫ್ಲವರ್‌ನಂತಿವೆ. ಆಕ್ಷನ್‌ ಇದ್ದರೂ, ಚೆಂದದ ಗೆಳೆತನವೇ ಇಲ್ಲಿ ಕಾಡುತ್ತದೆ. ಸಿನಿಮಾ ನೋಡುವ ಮಂದಿ ಎಲ್ಲೋ ಒಂದು ಕಡೆ ಭಾವುಕರಾಗುತ್ತಾರೆ. ಅದಕ್ಕೆ ಕಾರಣ, ದೇಶಾಭಿಮಾನದ ಡೈಲಾಗ್‌ಗಳು ಮತ್ತು ನಾಯಕನ ಹೋರಾಟದ ಶ್ರಮ. ಇಲ್ಲಿ ಯಾವ ದೃಶ್ಯವೂ ವಿನಾಕಾರಣ ಎನ್ನುವಂತಿಲ್ಲ. ಕಣ್ಣಿಗೆ ಹಬ್ಬದಷ್ಟೇ ಅಂದವಾಗಿರುವ ಸಿನಿಮಾದಲ್ಲಿ ಯಾವುದನ್ನೂ ತೆಗಳುವಂಥದ್ದಿಲ್ಲ. ಒಟ್ಟಾರೆ ಜೇಮ್ಸ್‌ ಒಂದು ವರ್ಗಕ್ಕೆ ಸೀಮಿತವಾದ ಸಿನಿಮಾವಂತೂ ಅಲ್ಲ. ಎಲ್ಲರೂ ಪ್ರೀತಿಯಿಂದ “ಅಪ್ಪುʼವಂತಹ ಸಿನಿಮಾ ಅನ್ನುವುದಕ್ಕೆ ಇಲ್ಲಿ ನಾನಾ ಕಾರಣಗಳಿವೆ. ಅದನ್ನು ತಿಳಿಯುವುದಕ್ಕಾದರೂ ಒಂದೊಮ್ಮೆ ಜೇಮ್ಸ್‌ ನೋಡಿ ಜೈ ಅಂದು ಬಿಡಿ.

ಕಥೆ ಏನು?
ಚಿತ್ರದ ನಾಯಕ ಸಂತೋಷ್‌ (ಪುನೀತ್‌ ರಾಜಕುಮಾರ್)‌ ಒಬ್ಬ ಸೋಲ್ಜರ್.‌ ದೇಶ ಅಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ ಮತ್ತು ಗೌರವ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ವ್ಯಕ್ತಿತ್ವ. ಚಿಕ್ಕಂದಿನಲ್ಲೇ ಘಟನೆಯೊಂದರಲ್ಲಿ ಐದು ಫ್ಯಾಮಿಲಿಗಳನ್ನು ಕಳೆದುಕೊಳ್ಳುವ ಐವರು ಹುಡುಗರು ಅನಾಥರಾಗುತ್ತಾರೆ. ಅಲ್ಲೊಬ್ಬ ಮಿಲಿಟರಿ ಅಧಿಕಾರಿ ಅನಾಥರಾಗಿ ಅಳುವ ಆ ಹುಡುಗರ ಕಣ್ಣೀರು ಒರೆಸಿ, ಅವರ ಗೆಳೆತನಕ್ಕೆ ಸಾಕ್ಷಿಯಾಗುತ್ತಾರೆ. ಅಲ್ಲಿಂದ ಸಿನಿಮಾ ಇನ್ನೊಂದು ಘಟ್ಟಕ್ಕೆ ತಲುಪುತ್ತೆ. ಆ ಐವರು ಗೆಳೆಯರು ಚೆನ್ನಾಗಿ ಓದಿಕೊಂಡು ಉನ್ನತ ಹುದ್ದೆ ಅಲಂಕರಿಸುತ್ತಾರೆ. ಆ ಪೈಕಿ ಸಂತೋಷ್‌ ಮೇಜರ್‌ ಆಗಿ ದೇಶ ಸೇವೆಗೆ ನಿಲ್ಲುತ್ತಾರೆ. ಹೀಗಿರುವಾಗ, ಆ ಮೇಜರ್‌ ಸಂತೋಷ್‌ನ ನಾಲ್ವರು ಗೆಳೆಯರು ಹಾಗು ಕುಟುಂಬ, ಮಕ್ಕಳನ್ನು ಹತ್ಯೆ ಮಾಡಲಾಗುತ್ತೆ. ಯಾಕೆ ಅನ್ನುವುದಕ್ಕೆ ಒಂದು ಕಾರಣವೂ ಇದೆ. ಆ ಕಾರಣ ಹೇಳುವುದಕ್ಕಿಂತ ಅದನ್ನು ತೆರೆ ಮೇಲೆ ನೋಡಬೇಕು. ನಂತರದಲ್ಲಿ ಆ ಮೇಜರ್‌ ಯಾಕೆ ರೆಬೆಲ್‌ ಆಗ್ತಾನೆ ಅನ್ನೋದಕ್ಕೆ ಬಲವಾದ ಕಾರಣವೂ ಇದೆ. ಇಲ್ಲಿ ಒಬ್ಬಿಬ್ಬರು ವಿಲನ್‌ಗಳಿಲ್ಲ. ರಾಶಿ ರಾಶಿ ವಿಲನ್‌ಗಳಿದ್ದಾರೆ. ಅವರೆಲ್ಲರನ್ನೂ ಒಬ್ಬ ಸೋಲ್ಜರ್‌ ಬಗ್ಗು ಬಡಿಯುತ್ತಾನೆ. ಅಂಥದ್ದೊಂದು ದೊಡ್ಡ ಕ್ರೈಮ್‌ ಹಿನ್ನೆಲೆಯ ವಿಲನ್‌ಗಳಿಗೂ ಆ ಸೋಲ್ಜರ್‌ಗು ಏನು ನಂಟು ಎಂಬುದಕ್ಕೂ ಸಿನಿಮಾ ನೋಡಲೇಬೇಕು.

ತಾಂತ್ರಿಕತೆ ಹೇಗಿದೆ?
ಒಂದು ಸಿನಮಾಗೆ ಮುಖ್ಯವಾಗಿ ಬೇಕಿರೋದು ಕಥೆ. ಅದರ ಜೊತೆಗೆ ಗುಣಮಟ್ಟ. ಇಲ್ಲಿ ಛಾಯಾಗ್ರಹಣ ಅಲ್ಟಿಮೇಟ್‌ ಆಗಿದೆ. ಸಂಗೀತ ಕೂಡ ಖುಷಿ ಕೊಡುತ್ತದೆ. ಸಿನಿಮಾ ಸ್ಪೀಡ್‌ ಆಗಿ ಹೋಗುತ್ತೆ ಅಂದರೆ ಅದಕ್ಕೆ ಕತ್ತರಿ ಪ್ರಯೋಗವೂ ಕಾರಣ. ಇನ್ನು, ದೊಡ್ಡ ದೊಡ್ಡ ಸೆಟ್‌ಗಳು ಕೂಡ ಅದ್ಧೂರಿತನಕ್ಕೆ ಸಾಕ್ಷಿಯಾಗಿವೆ. ಪರಭಾಷೆ ಸಿನಿಮಾಗಳನ್ನು ನೋಡಿ ಹಾಗೆ, ಹೀಗೆ ಅನ್ನುವ ಮಂದಿಗೆ ಜೇಮ್ಸ್‌ ತಕ್ಕ ಉತ್ತರ ನೀಡಿದೆ. ಇಲ್ಲಿ ಎಲ್ಲವೂ ಹೈಫೈ. ಪ್ರತಿ ಪಾತ್ರಗಳನ್ನೂ ಸ್ಟೈಲಿಶ್‌ ಆಗಿಯೇ ತೋರಿಸಲಾಗಿದೆ. ಎಷ್ಟು ವೆಪನ್ಸ್‌ಗಳಿವೆಯೋ ಅಷ್ಟೇ ಪಾತ್ರಗಳೂ ಇಲ್ಲಿ ಬಂದು ಹೋಗುತ್ತವೆ. ಇಲ್ಲಿ ಮುಖ್ಯವಾಗಿ ಹೇಳಬೇಕಾದ್ದೆಂದರೆ, ಅದು ಸ್ಟಂಟ್ಸ್.‌ ಜೇಮ್ಸ್‌ ಅನ್ನುವ ಶೀರ್ಷಿಕೆಗೆ ತಕ್ಕಂತೆ ಕಥೆ, ಪಾತ್ರವಿದೆ. ಅದಕ್ಕೆ ತಕ್ಕಂತೆಯೇ ಆಕ್ಷನ್‌ ಸೀಕ್ವೆನ್ಸ್‌ ಕೂಡ ಇದೆ. ಒಂದೊಂದು ಫೈಟ್‌ ಕೂಡ ಅದ್ಧೂರಿಯಾಗಿವೆ. ಜೊತೆಗೆ ರಿಸ್ಕೀ ಸ್ಟಂಟ್‌ ಎಂಥವರನ್ನೂ ಅಬ್ಬಬ್ಬಾ ಅನಿಸುವಷ್ಟರ ಮಟ್ಟಿಗೆ ಸ್ಟಂಟ್‌ ಮಾಸ್ಟರ್‌ಗಳ ಕೆಲಸ ಎದ್ದು ಕಾಣುತ್ತದೆ. ಸ್ಟಂಟ್ಸ್‌ ಇಲ್ಲಿ ಎಕ್ಸಲೆಂಟ್‌ ಅನ್ನೋದೇ ವಿಶೇಷ. ಕಾಸ್ಟ್ಯೂಮ್ಸ್‌ ಬಗ್ಗೆ ಹೇಳಲೇಬೇಕು. ಪ್ರತಿ ಪಾತ್ರಗಳೂ ಇಲ್ಲಿ ರಿಚ್! ಒಟ್ಟಾರೆ, ಜೇಮ್ಸ್‌ ತಾಂತ್ರಿಕತೆಯಲ್ಲೂ ಶ್ರೀಮಂತ ಎಂಬುದನ್ನು ಸಾಬೀತುಪಡಿಸಿದೆ.

ಯಾರು ಹೇಗೆ?
ಇಲ್ಲಿ ಪುನೀತ್‌ ರಾಜಕುಮಾರ್‌ ಅವರು ಇಡೀ ಚಿತ್ರವನ್ನು ಆವರಿಸಿಕೊಂಡಿದ್ದಾರೆ. ಒಬ್ಬ ಗೆಳೆಯನಾಗಿ, ಪ್ರೇಮಿಯಾಗಿ, ದೇಶ ಕಾಯುವ ಯೋಧನಾಗಿ ಇಷ್ಟವಾಗುತ್ತಾರೆ. ಡ್ಯಾನ್ಸ್‌ ಮತ್ತು ಫೈಟ್‌ನಲ್ಲಿ ಎಂದಿಗಿಂತಲೂ ಖುಷಿ ಕೊಡುತ್ತಾರೆ. ಇನ್ನು, ಅವರ ಖಡಕ್‌ ಮಾತುಗಳಿಗೆ ಶಿವರಾಜಕುಮಾರ್‌ ಧ್ವನಿಯಾಗಿದ್ದಾರೆ. ಎಲ್ಲೂ ಕೂಡ ಪುನೀತ್‌ ಧ್ವನಿ ಮಿಸ್ಸೇ ಇಲ್ಲ ಎಂಬಂತೆ ಆ ಧ್ವನಿ ಸೆಟ್‌ ಆಗಿರೋದು ಇನ್ನೊಂದು ವಿಶೇಷ. ಪ್ರಿಯಾ ಆನಂದ್‌ ಸಿಕ್ಕ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಉಳಿದಂತೆ ಶರತ್‌ ಕುಮಾರ್‌, ಶ್ರೀಕಾಂತ್‌,ಮುಖೇಶ್‌ ರಿಷಿ, ಆದಿತ್ಯ ಮೆನನ್‌, ರಣಗಾಯಣ ರಘು, ಸಾಧುಕೋಕಿಲ, ಅವಿನಾಶ್‌, ಯಶ್‌ ಶೆಟ್ಟಿ, ವಜ್ರಾಂಗ್‌ ಶೆಟ್ಟಿ, ಶೈನ್‌ ಶೆಟ್ಟಿ, ತಿಲಕ್‌, ಚಿಕ್ಕಣ್ಣ ತಮ್ಮ ಪಾತ್ರಗಳಲ್ಲಿ ಜೀವಿಸಿದ್ದಾರೆ. ಶಿವರಾಜಕುಮಾರ್‌ ಕೂಡ ಇಲ್ಲಿ ಇರುವಷ್ಟು ಕಾಲ ಇಷ್ಟವಾಗುತ್ತಾರೆ. ರಾಘವೇಂದ್ರ ರಾಜಕುಮಾರ್‌ ಪಾತ್ರ ಕೂಡ ಗಮನಸೆಳೆಯುತ್ತದೆ. ಯಾವ ಪಾತ್ರವೂ ಇಲ್ಲಿ ವೇಸ್ಟ್‌ ಎನಿಸದಂತೆ, ಎಲ್ಲವನ್ನೂ ಅಚ್ಚುಕಟ್ಟಾಗಿಯೇ ತೋರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ.

ಕೊನೆ ಮಾತು: ಕಣ್ಣು, ಕಿವಿ ಮತ್ತು ಹೃದಯಕ್ಕೆ ಹತ್ತಿರವಾಗುವ ಸಿನಿಮಾ.

Categories
ಸಿನಿ ಸುದ್ದಿ

ಮ್ಯಾನ್ಷನ್‌ ಹೌಸ್‌ ಹಿಡಿದ ನವೀನ್‌ ಸಜ್ಜು! ಗಾಯಕನ ಹೀರೋಯಿಸಂ ಶುರು ಗುರು…

ಗಾಯಕ ಕಮ್‌ ಸಂಗೀತ ನಿರ್ದೇಶಕ ನವೀನ್‌ ಸಜ್ಜು ಅವರು ಹೀರೋ ಆಗಿರುವ ವಿಷಯ ಗೊತ್ತೇ ಇದೆ. ಅವರ ಹೊಸ ಚಿತ್ರಕ್ಕೆ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಅಷ್ಟಕ್ಕೂ ನವೀನ್‌ ಸಜ್ಜು ಅವರ ಸಿನಿಮಾ ಹೆಸರೇನು? ಅದಕ್ಕೆ ಉತ್ತರ, “ಮ್ಯಾನ್ಷನ್‌ ಹೌಸ್‌ ಮುತ್ತು” ಈ ಚಿತ್ರದ ಶೀರ್ಷಿಕೆ ಕೇಳಿದಾಕ್ಷಣ ನೆನಪಾಗೋದೇ ಎಣ್ಣೆ! ಹೌದು, ಈಗಾಗಲೇ ನವೀನ್‌ ಸಜ್ಜು ಅವರು “ಎಣ್ಣೆ ನಮ್ದು ಊಟ ನಿಮ್ದು” ಎಂದು ಹಾಡಿ ಕುಣಿದಿದ್ದಾರೆ. ಈಗ ಅವರೇ “ಮ್ಯಾನ್ಷನ್‌ ಹೌಸ್‌ ಮುತ್ತು” ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಇದೊಂದು ಕಾಮಿಡಿ ಕಮ್‌ ಮೆಲೊ ಡ್ರಾಮ ಸಿನಿಮಾ. ಈ ಸಿನಿಮಾಗೆ ಕುಮಾರ್‌ ನಿರ್ದೇಶಕರು. ಈ ಹಿಂದೆ ಇವರು “ಕೆಮಿಸ್ಟ್ರಿ ಆಫ್‌ ಕರಿಯಪ್ಪ” ಮಾಡಿದ್ದರು. ಅವರ ಎರಡನೇ ಸಿನಿಮಾ “ಕ್ರಿಟಿಕಲ್‌ ಕೀರ್ತನೆಗಳು” ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದು, ಏಪ್ರಿಲ್‌ ವೇಳೆಗೆ ಬರಲಿದೆ. ಈಗ ನವೀನ್‌ ಸಜ್ಜು ಅವರಿಗಾಗಿ “ಮ್ಯಾನ್ಷನ್‌ ಹೌಸ್‌ ಮುತ್ತು” ಎಂಬ ಸಿನಿಮಾ ಮಾಡುತ್ತಿದ್ದಾರೆ. ಇವರಿಗೆ ಕೇಸರಿ ಫಿಲ್ಮ್‌ ಕ್ಯಾಪ್ಚರ್‌ ನಿರ್ಮಾಣ ಸಂಸ್ಥೆ ಸಾಥ್‌ ನೀಡಿದ್ದು, ಚಿತ್ರವನ್ನು ನಿರ್ಮಿಸುತ್ತಿದೆ.

ತಮ್ಮ ಸಿನಿಮಾ ಕುರಿತು ಹೇಳುವ ನಿರ್ದೇಶಕ ಕುಮಾರ್‌, “ಮ್ಯಾನ್ಷನ್‌ ಹೌಸ್‌ ಮುತ್ತು” ಚಿತ್ರದ ಚಿತ್ರೀಕರಣ ಬಹುತೇಕ ಮಡಿಕೇರಿ ಸುತ್ತಮುತ್ತ ನಡೆದಿದೆ. ನನ್ನ ಈ ಹಿಂದಿನ ಸಿನಿಮಾ “ಕೆಮಿಸ್ಟ್ರಿ ಆಫ್‌ ಕರಿಯಪ್ಪ” ಬೇರೆ ಜಾನರ್‌ ಸಿನಿಮಾ ಆಗಿತ್ತು. ಇನ್ನು,ಮ “ಕ್ರಿಟಿಕಲ್‌ ಕೀರ್ತನೆಗಳು” ಕೂಡ ಹೊಸ ಬಗೆಯ ಕಥೆ ಇರುವ ಸಿನಿಮಾ. “ಮ್ಯಾನ್ಷನ್‌ ಹೌಸ್‌ ಮುತ್ತು” ಕೂಡ ಈಗಿನ ಟ್ರೆಂಡ್‌ಗೆ ಇರುವ ಚಿತ್ರ. ಇದೊಂದು ರೀತಿ ಪ್ರಕೃತಿ ಜೊತೆ ಸಾಗುವ ಮತ್ತು ಪ್ರಕೃತಿಯನ್ನು ಅನುಭವಿಸುವ ಚಿತ್ರ. ಹೊಸದೊಂದು ರೆವಿಲ್ಯೂಷನ್‌ ವಿಷಯ ಇಲ್ಲಿದೆ. ಇನ್ನು ಯಥಾ ಪ್ರಕಾರ ನನ್ನ ಸಿನಿಮಾದಲ್ಲಿ ಮಾತುಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಇಲ್ಲೂ ಅದು ಮುಂದುವರೆದಿದೆ.

ನವೀನ್‌ ಸಜ್ಜು ಅವರು ಪಾತ್ರಕ್ಕೆ ಏನೆಲ್ಲ ಬೇಕೋ ಅದೆಲ್ಲವನ್ನೂ ನೀಡಿದ್ದಾರೆ. ಒಂದು ರೀತಿ ಇಡೀ ಸಿನಿಮಾದ ಮುಖ್ಯ ಆಕರ್ಷಣೆ ಅವರು ಎನ್ನುವ ನಿರ್ದೇಶಕ ಕುಮಾರ್‌, ಚಿತ್ರಕ್ಕೆ ನವೀನ್‌ಕುಮಾರ್‌ ಚೆಲ್ಲ ಛಾಯಾಗ್ರಹಣ ಮಾಡಿದರೆ, ನವೀನ್‌ ಸಜ್ಜುಅವರೇ ಇಲ್ಲಿ ಸಂಗೀತ ನೀಡಲಿದ್ದಾರೆ. ವೆಂಕಟೇಶ್‌ ಯುಡಿ ಸಂಕಲನವಿದೆ. ಉಳಿದಂತೆ ಚಿತ್ರದಲ್ಲಿ ಬೆಲ್‌ ಬಾಟಂ ಸತೀಶ್‌, ಗಿರೀಶ್‌, ಸಮೀಕ್ಷಾ, ವಿಜೇತ್‌ ಸೇರಿದಂತೆ ಹಲವು ಕಲಾವಿದರು ಇದ್ದಾರೆ. “ಮ್ಯಾನ್ಷನ್‌ ಹೌಸ್‌ ಮುತ್ತು” ಒಂದೊಳ್ಳೆಯ ಥ್ರಿಲ್ಲರ್‌ ಕಾಮಿಡಿ ಸಿನಿಮಾ. ಹಾಸ್ಯದ ಜೊತೆಗೆ ಒಂದಷ್ಟು ಸಂದೇಶ ಸಾರುವ ಅಂಶಗಳೂ ಇವೆ ಎನ್ನುತ್ತಾರೆ ಕುಮಾರ್.‌

Categories
ಸಿನಿ ಸುದ್ದಿ

ಕಾಶ್ಮೀರದಲ್ಲಿ ಧ್ರುವ ಸರ್ಜಾ ಸ್ಟಂಟ್!‌ ಚಳಿಯಲ್ಲಿ ಮಾರ್ಟಿನ್ ಸಖತ್ ಆ್ಯಕ್ಷನ್…

ಎ.ಪಿ. ಅರ್ಜುನ್‌ ನಿರ್ದೇಶನದ ಅದ್ಧೂರಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಧ್ರುವ ಸರ್ಜಾ, ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡುತ್ತಿದ್ದಾರೆ. ಅದು ಮಾರ್ಟಿನ್. ವಾಸವಿ ಎಂಟರ್ ಪ್ರೈಸಸ್ ಮೂಲಕ ಉದಯ್ ಕೆ.ಮೆಹ್ತಾ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರದ ಚಿತ್ರೀಕರಣ ಈಗ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ಒಂದು ವಾರದಿಂದ ನಡೆಯುತ್ತಿದೆ.


ಕಳೆದ 8 ದಿನಗಳಿಂದ ಕಾಶ್ಮೀರದಲ್ಲಿ ಮೈನಸ್ 7 ಡಿಗ್ರಿ ತಾಪಮಾನ ಇರುವ ಲೊಕೇಶನ್ ಗಳಲ್ಲಿ ಚಿತ್ರತಂಡ ಶೂಟಿಂಗ್ ನಡೆಸುತ್ತಿದೆ. ಕಾಶ್ಮೀರದ ಐಸ್ ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್ ಗಳನ್ನು ಅಲ್ಲಿ ಚಿತ್ರೀಕರಿಸಲಾಗುತ್ತಿದೆ. ಈ ಚಿತ್ರೀಕರಣದಲ್ಲಿ ನಾಯಕ ಧೃವಸರ್ಜಾ, ನಾಯಕಿ ವೈಭವಿ ಶಾಂಡಿಲ್ಯ, ಚಿಕ್ಕಣ್ಣ ಹಾಗೂ ಸಹ ಕಲಾವಿದರುಗಳು ಭಾಗವಹಿಸಿದ್ದಾರೆ. ಆಕ್ಷನ್ ಸೀನ್ ಜೊತೆಗೆ ಮಾತಿನಭಾಗ ಸೇರಿದಂತೆ ಚಿತ್ರದ ಪ್ರಮಖವಾದ ದೃಶ್ಯಗಳನ್ನು ಅಲ್ಲಿ ಸೆರೆ ಹಿಡಿಯಲಾಗುತ್ತಿದೆ.

ಇನ್ನೂ 8 ದಿನಗಳ ಕಾಲ ಅಲ್ಲೇ ಶೂಟಿಂಗ್ ನಡೆಸಲಿರುವ ಮಾರ್ಟಿನ್ ಚಿತ್ರತಂಡ ಒಟ್ಟು 16 ದಿನಗಳ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದೆ.
ಆ್ಯಕ್ಷನ್, ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಅವರು ಹೊಸ ಮಾದರಿಯ ಮೇಕಿಂಗ್ ಟ್ರೈ ಮಾಡಿದ್ದಾರೆ.

ಎಲ್ಲಾ ಭಾಗಕ್ಕೂ ಸಲ್ಲುವ ಕಥೆ ಇದಾಗಿರುವುದರಿಂದ, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ‌ ಮಾರ್ಟಿನ್ ಚಿತ್ರ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ದೊಡ್ಡ ಹೆಸರು ಮಾಡಿರುವ ಮಣಿಶರ್ಮಾ ಅವರು ಸಂಗೀತ ನೀಡುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನವಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ತಾಜ್‌ಮಹಲ್‌ ಹಾಡಿಗೆ ಶ್ರೀಮುರಳಿ ಜೈ; ರೋರಿಂಗ್‌ ಸ್ಟಾರ್ ಸಾಂಗ್‌ ರಿಲೀಸ್‌

ದೇವರಾಜ್ ಕುಮಾರ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ತಾಜ್ ಮಹಲ್ 2” ಚಿತ್ರದ ಹಾಡುಗಳನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

“ನೀನು ಎಷ್ಟು ಕಷ್ಟಪಟ್ಟೆ ಎಂಬುದು ಮುಖ್ಯವಲ್ಲ. ತೆರೆ ಮೇಲೆ ನೀನು ಪ್ರೇಕ್ಷಕರಿಗೆ ಏನು ತೋರಿಸಿ, ಅವರ ಮನ ಗೆಲ್ಲುತ್ತೀಯಾ ಎನ್ನುವುದು ಮುಖ್ಯ ಎಂದು ಶ್ರೀಮುರಳಿ ಅವರು ಹಿಂದೊಮ್ಮೆ ಹೇಳಿದ್ದರು. ಆ ಮಾತೇ ನನಗೆ ಸ್ಪೂರ್ತಿ. ನಾಯಕಿಯಾಗಿ ಸಮೃದ್ಧಿ ಶುಕ್ಲ ಅಭಿನಯಿಸಿದ್ದಾರೆ. ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ. ಮನ್ವರ್ಷಿ ನವಲಗುಂದ ಹಾಡುಗಳನ್ನು ಬರೆದಿದ್ದಾರೆ ಹಾಗೂ ತಮ್ಮದೇ ಹೊಸ ಸಂಸ್ಥೆಯ ಮೂಲಕ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ವಿಕ್ರಮ್ ಸೆಲ್ವ ಸಂಗೀತವಿದೆ. ಜೂನ್ ನಲ್ಲಿ ಚಿತ್ರ ಬಿಡುಗಡೆ ಮಾಡು ವುದಾಗಿ ನಿರ್ದೇಶಕ ಕಮ್ ನಾಯಕ ದೇವರಾಜ್ ಕುಮಾರ್ ಹೇಳಿದರು.

ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ, ಭಾ.ಮ.ಹರೀಶ್ , ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ವಿಜಯ್ ಸಿಂಹ, ವಿಕ್ಟರಿ ವಾಸು, ಭಾ.ಮ.ಗಿರೀಶ್, ಸುನೀಲ್ ಇತರರು ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಹಾಡುಗಳನ್ನು ಬರೆದಿರುವ ಮನ್ವರ್ಷಿ ನವಲಗುಂದ ಹಾಡುಗಳ ಹಾಗೂ ಹಾಡಿದವರ ಬಗ್ಗೆ ಮಾಹಿತಿ ನೀಡಿದರು.

Categories
ರಿ ವಿವ್ಯೂ ಸಿನಿ ಸುದ್ದಿ

ಡಿಯರ್‌ ಸತ್ಯನ ಮರ್ಡರ್‌ ಸ್ಟೋರಿ!

ಚಿತ್ರ ವಿಮರ್ಶೆ

ರೇಟಿಂಗ್ : /45

ಚಿತ್ರ : ಡಿಯರ್ ಸತ್ಯ
ನಿರ್ದೇಶಕ : ಶಿವಗಣೇಶ್
ನಿರ್ಮಾಣ : ಪರ್ಪಲ್ ರಾಕ್ ಎಂಟರ್ ಟೈನರ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋ
ತಾರಾಗಣ : ಆರ್ಯನ್ ಸಂತೋಷ್, ಅರ್ಚನಾ ಕೊಟ್ಟಿಗೆ, ಅರುಣಾ ಬಾಲರಾಜ್ , ಅಶ್ವಿನ್ ರಾವ್ , ರಂಗಿತರಂಗ ಅರವಿಂದ್ ಇತರರು.

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಮರ್ಡರ್‌ ಮಿಸ್ಟ್ರಿ ಸಿನಿಮಾಗಳು ಬಂದಿವೆ. ಆ ಸಾಲಿಗೆ ಡಿಯರ್‌ ಸತ್ಯ ಕೂಡ ಒಂದು. ಆದರೆ, ಇದೊಂದು ವಿಭಿನ್ನ ಕಥಾಹಂದರದ ಸಿನಿಮಾ. ಇಲ್ಲಿ ನವಿರಾದ ಪ್ರೀತಿ ಇದೆ, ಅಪ್ಪುಗೆಯ ಗೆಳೆತನವಿದೆ. ತಾಯಿಯ ಮಮಕಾರವಿದೆ. ಒಂದಷ್ಟು ದ್ವೇಷ, ಅಸೂಯೆ ಕೂಡ ಇಲ್ಲಿದೆ. ಒಟ್ಟಾರೆ ಒಂದೇ ಮಾತಲ್ಲಿ ಹೇಳುವುದಾದರೆ, ಡಿಯರ್‌ ಸತ್ಯ ಹೊಸದೊಂದು ಫೀಲ್‌ ಕೊಡುವ ಸಿನಿಮಾ. ಒಂದಷ್ಟು ಭಾವುಕತೆಯ ಜೊತೆಯಲ್ಲೇ ಸಾಗುವ ಚಿತ್ರ ನೋಡುಗರ ಕಣ್ಣಾಲಿಗಳನ್ನು ಒದ್ದೆ ಮಾಡಿಬಿಡುತ್ತದೆ.


ಕಥೆ ತುಂಬಾನೇ ಸರಳ. ಆದರೆ, ನಿರ್ದೇಶಕ ಶಿವಗಣೇಶ್‌ ಅವರ ನಿರೂಪಣೆ ಇಲ್ಲಿ ಹೈಲೈಟ್.‌ ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್‌ಗಳಿವೆ. ಅದಕ್ಕೆ ಕಾರಣ, ಮತ್ತದೇ ಸ್ಕ್ರೀನ್‌ ಪ್ಲೇ. ಚಿತ್ರದ ಹೀರೋ ತಾನು ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸುತ್ತಾನೆ. ಆದರೆ, ಆತ ಮಾಡಿದ ತಪ್ಪಾದರೂ ಏನು? ಈ ಪ್ರಶ್ನೆಗೆ ಉತ್ತರ ಒಂದೊಮ್ಮೆ ಸಿನಿಮಾ ನೋಡಲೇಬೇಕು. ಸಿನಿಮಾ ರಿವರ್ಸ್‌ ಸ್ಕ್ರೀನ್‌ ಪ್ಲೇನಲ್ಲಿ ಸಾಗುತ್ತ ಹೋಗುತ್ತೆ. ಆಗಾಗ ಫ್ಲ್ಯಾಷ್ ಬ್ಯಾಕ್ ಸ್ಟೋರಿ ಚಿತ್ರದ ವೇಗಕ್ಕೊಂದು ಕಾರಣವಾಗುತ್ತದೆ. ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರ. ಹಾಗಂತ, ಹೊಡಿ ಬಡಿ ಕಡಿ ಇದ್ದರೂ, ಇಲ್ಲೊಂದು ನಿಷ್ಕಲ್ಮಷ ಪ್ರೀತಿ ಇದೆ. ಆಪ್ತವೆನಿಸೋ ಗೆಳೆತನವಿದೆ. ಮಧ್ಯಮವರ್ಗದ ತಾಯಿ ಮಗನ ಬಾಂಧವ್ಯದ ಬೆಸುಗೆಯೂ ಇದೆ. ಹೀರೋ ಇಲ್ಲಿ ಫುಡ್‌ ಡೆಲಿವರಿ ಬಾಯ್ ಕೆಲಸ ಮಾಡುತ್ತಲೇ ತನ್ನ ಸುಂದರ ಬದುಕು ಕಟ್ಟಿಕೊಂಡಾತ. ಅವನಿಗೆ ಅರಿವಿಲ್ಲದೆಯೇ ಹುಡುಗಿಯೊಬ್ಬಳ ಮೊದಲ ನೋಟಕ್ಕೆ ಪ್ರೀತಿ ಹುಟ್ಟಿಸಿಕೊಳ್ಳುತ್ತಾನೆ. ತನ್ನ ಬದುಕನ್ನು ಸುಂದರವಾಗಿಸಿಕೊಳ್ಳಬೇಕು ಎಂಬ ಕನಸು ಕಾಣುವ ಹೀರೋ, ತನ್ನ ಪ್ರೀತಿಯನ್ನೂ ಸಹ ಕಾಪಾಡಿಕೊಂಡು, ಅವಳನ್ನು ಕೈ ಹಿಡಿದು ಬದುಕಬೇಕೆಂದು ಆಸೆಪಡುವ ಹೀರೋಗೆ ಅದು ಸಾಧ್ಯವಾಗುವುದಿಲ್ಲ. ಯಾಕೆ ಅನ್ನೋದು ಸಸ್ಪೆನ್ಸ್.‌

ತಾನು ಪ್ರೀತಿಸುವ ಹುಡುಗಿಯನ್ನು ಇನ್ನೇನು ತನ್ನ ತಾಯಿಗೆ ಪರಿಚಯಿಸಿ, ಮದುವೆ ಆಗಬೇಕು ಅಂದುಕೊಳ್ಳುವ ನಾಯಕನ ಬದುಕಲ್ಲಿ ಒಂದು ಘೋರ ಘಟನೆ ನಡೆದು ಹೋಗುತ್ತದೆ. ಅದೇ ಇಡೀ ಚಿತ್ರದ ಹೈಲೈಟ್.‌ ಆ ಘಟನೆ ಬಳಿಕ ಏನೆಲ್ಲಾ ನಡೆಯುತ್ತೆ ಅನ್ನೋದೇ ಸಿನಿಮಾದ ವಿಶೇಷ. ಸಿನಿಮಾದಲ್ಲೊಂದು ಕೊಲೆಯಾಗುತ್ತೆ. ಆ ಕೊಲೆ ನಾಯಕನ ಮೇಲೆ ಹೋಗುತ್ತೆ. ಅಲ್ಲಿಂದ ಹೊರಬಂದು, ಆ ಕೊಲೆಗಾರರು ಯಾರು ಅನ್ನುವುದನ್ನು ಹೀರೋ ಕಂಡು ಹಿಡಿಯುತ್ತಾನೆ. ಆ ಬಳಿಕ ಏನೆಲ್ಲಾ ನಡೆದು ಹೋಗುತ್ತೆ ಎಂಬ ಕುತೂಹಲ ಇದ್ದರೆ, ಸಿನಿಮಾ ನೋಡಬಹುದು. ಇಷ್ಟಕ್ಕೂ ಆ ಕೊಲೆ ಯಾರದ್ದು? ಯಾರು ಮಾಡುತ್ತಾರೆ? ನಾಯಕ ಅವರ ಮೇಲೆ ಸೇಡು ತೀರಿಸಿಕೊಳ್ಳುತ್ತಾನೋ ಇಲ್ಲವೋ ಅನ್ನೋದು ಕಥೆ.

ಇನ್ನು, ಚಿತ್ರದ ಟೆಕ್ನಿಕಲ್‌ ವಿಷಯಕ್ಕೆ ಬರುವುದಾದರೆ, ಚಿತ್ರದ ಕ್ಯಾಮೆರಾ ಕೆಲಸ ಸೊಗಸಾಗಿದೆ. ಶ್ರೀಧರ್‌ ವಿ.ಸಂಭ್ರಮ್‌ ಅವರ ಸಂಗೀತ ಇಲ್ಲಿ ಮಾತಾಡುವಂತಿದೆ. ಎರಡು ಹಾಡುಗಳು ಗುನುಗುವಂತಿವೆ. ಇನ್ನು, ಚಿತ್ರದ ಸಂಕಲನ ಕೆಲಸ ಕೂಡ ಚಿತ್ರದ ವೇಗಕ್ಕೆ ಹೆಗಲು ಕೊಟ್ಟಿವೆ. ನಾಯಕ ಆರ್ಯನ್ ಸಂತೋಷ್ ಈ ಚಿತ್ರದ ಮೂಲಕ ಎಂದಿಗಿಂತಲೂ ಲುಕ್‌ ಆಗಿ ಕಾಣುತ್ತಾರೆ. ಅಷ್ಟೇ ಆ್ಯಂಗ್ರಿ ಯಂಗ್ ಮ್ಯಾನ್ ಆಗಿಯೂ ಕಾಣಿಸಿಕೊಂಡಿದ್ದಾರೆ. ತಮಗೆ ಸಿಕ್ಕ ಪಾತ್ರವನ್ನು ಲವ್ಲಿಯಾಗಿಯೇ ನಿರ್ವಹಿಸಿದ್ದಾರೆ. ಡ್ಯಾನ್ಸ್‌ ಮತ್ತು ಫೈಟ್‌ ವಿಚಾರದಲ್ಲಿ ಇಷ್ಟವಾಗುತ್ತಾರೆ. ಇನ್ನು, ನಾಯಕಿ ಅರ್ಚನಾ ಕೊಟ್ಟಿಗೆ ಅವರು ಸಹ ಸ್ಕ್ರೀನ್‌ ಮೇಲೆ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ. ಕೆಲವು ಕಡೆ ಇನ್ನಷ್ಟು ಎಫರ್ಟ್‌ ಬೇಕಿತ್ತು ಎನಿಸುತ್ತದೆ. ತಾಯಿಯಾಗಿ ಅರುಣಾ ಬಾಲರಾಜ್ ಇರುವಷ್ಟು ಹೊತ್ತು ಇಷ್ಟವಾಗುತ್ತಾರೆ. ಗುರುರಾಜ್ ಹೊಸಕೋಟೆ , ಪಾಪಣ್ಣ, ಸೇರಿದಂತೆ ಒಂದಷ್ಟು ಹೊಸ ಬಗೆಯ ಪಾತ್ರಗಳಿಲ್ಲಿ ಗಮನಸೆಳೆಯುತ್ತವೆ.

Categories
ಸಿನಿ ಸುದ್ದಿ

ಆಸ್ಕರ್‌ ಕೃಷ್ಣ ಹೊಸ ಕೃತ್ಯ! ರೋರಿಂಗ್ ಸ್ಟಾರ್ ಶ್ರೀಮುರಳಿ ಶೀರ್ಷಿಕೆ ಅನಾವರಣ

ಆಸ್ಕರ್ ಕೃಷ್ಣ ನಟಿಸಿ, ನಿರ್ದೇಶಿಸಿ, ಗೌತಮ್ ರಾಮಚಂದ್ರ ಅವರೊಡನೆ ಸೇರಿ ನಿರ್ಮಿಸುತ್ತಿರುವ ಹೊಸ ಚಿತ್ರ “ಕೃತ್ಯ” ಶೀರ್ಷಿಕೆಯನ್ನು ರೋರಿಂಗ್ ಸ್ಟಾರ್ “ಶ್ರೀಮುರಳಿ” ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರತಂಡದೊಂದಿಗೆ ಹಿರಿಯ ನಿರ್ಮಾಪಕರಾದ, ಭಾ.ಮ ಹರೀಶ್, ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ನಿರ್ಮಾಪಕರುಗಳಾದ ಭಾ.ಮ ಗಿರೀಶ್, ನರಸಿಂಹರಾಜು ಜೊತೆಯಲ್ಲಿದ್ದರು.

ಸುನಿಲ್ ಕುಮಾರ್, ವಿಜಯ ಕುಮಾರ್ ಸಿಂಹ, ಟಿಪ್ಪುವರ್ಧನ್ ಇನ್ನಿತರರು ಉಪಸ್ಥಿತರಿದ್ದರು. ಚಿತ್ರದ ಉಳಿದ ವಿವರಗಳನ್ನು ಹಂತ ಹಂತವಾಗಿ ವಿವರಿಸುವುದಾಗಿ ನಿರ್ದೇಶಕ ಆಸ್ಕರ್ ಕೃಷ್ಣ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಪುನೀತ್ ರಾಜ್ ಕುಮಾರ್ ಬಯೋಗ್ರಫಿ ‘ನೀನೇ ರಾಜಕುಮಾರ’ ಬಿಡುಗಡೆ ಮಾಡಿದ ಸುದೀಪ್; ಇದು ಡಾ.ಶರಣು ಹುಲ್ಲೂರು ಕೃತಿ

ಅತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ್’ ಕೃತಿಯನ್ನು ಹೆಸರಾಂತ ನಟ ಕಿಚ್ಚ ಸುದೀಪ್ ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದೆ ಅನ್ನೋದು ವಿಶೇಷ.

ಕೃತಿಯ ಬಿಡುಗಡೆ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ’ ಎಂದರು. ಅಲ್ಲದೇ ‘ಯಾವತ್ತಿಗೂ ನಾನು ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದರು.

ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು.

ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು ಮತ್ತು ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.
ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ.

ಪುನೀತ್ ಅವರ ಹುಟ್ಟು ಹಬ್ಬದ ದಿನಕ್ಕೆ ಈ ಕೃತಿ ಬಂದಿದೆ. ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.

Categories
ಸಿನಿ ಸುದ್ದಿ

ಧನ್ವೀರ್‌ ಹೊಸ ಸಿನಿಮಾಗೆ ಚಾಲನೆ; ವಾಮನ ಚಿತ್ರೀಕರಣ ಶುರು ಗುರು…

ಬಜಾರ್ ಸಿನಿಮಾ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದ ಶೋಕ್ದಾರ್ ಧನ್ವೀರ್ ಸದ್ಯ ಬೈ ಟು ಲವ್ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಬೈ ಟು ಲವ್ ಸಕ್ಸಸ್ ಯಾತ್ರೆ ಮುಗಿಸಿಕೊಂಡು ಇದೀಗ ಹೊಸ ಸಿನಿಮಾದತ್ತ ಮುಖ ಮಾಡಿದ್ದಾರೆ. ಹೌದು, ಅವರೀಗ “ವಾಮನ” ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು ಗೊತ್ತೇ ಇದೆ. ಅದಕ್ಕೆ ಕತ್ತಿ ಮಾರಮ್ಮ ದೇಗುಲದಲ್ಲಿ ಮಂಗಳವಾರ ಸರಳವಾಗಿ ಮುಹೂರ್ತ ನಡೆದಿದೆ.

ಧನ್ವೀರ್ ಗೌಡ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಸಂಕ್ರಾಂತಿ ಹಬ್ಬದ ಪ್ರಯುಕ್ತ ವಾಮನ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಬಿಟ್ಟರೆ, ಬೇರೆ ಅಪ್ ಡೇಟ್ ಸಿಕ್ಕಿರಲಿಲ್ಲ. ಇದೀಗ ವಾಮನ ಸಿನಿಮಾದ ಮುಹೂರ್ತ ಸರಳವಾಗಿ ದೇವನಹಳ್ಳಿಯ ಕತ್ತಿ ಮಾರಮ್ಮ ದೇಗುಲದಲ್ಲಿ ನೆರವೇರಿದೆ.

ವಾಮನ ಸಿನಿಮಾದ ಮುಹೂರ್ತದ ನಂತರ ಚಿತ್ರತಂಡ ಶೂಟಿಂಗ್ ಗೆ‌ ಮುನ್ನುಡಿ ಬರೆದಿದೆ. ಬೆಂಗಳೂರಿನಲ್ಲಿಯೇ‌ ಮೊದಲ ಹಂತದ ಶೂಟಿಂಗ್ ನಡೆಸುತ್ತಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಅಗಿರುವ ಶಂಕರ್ ರಾಮನ್ ವಾಮನ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಕ್ವಿನಾಕ್ಸ್ ಗೋಬಲ್ ಎಂಟರ್ ಟ್ರೈನ್ಮೆಂಟ್ ಪ್ರೊಡಕ್ಷನ್ ನಡಿ ಚೇತನ್ ಕುಮಾರ್ ಸಿನಿಮಾ ನಿರ್ಮಿಸುತ್ತಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಅಪ್ಪು ಎಂಬ ಮಹಾನುಭಾವ! ಸಂಭ್ರಮ್‌ ಸ್ಟುಡಿಯೋಸ್‌ ಮೂಲಕ ಗೀತ ನಮನ

ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್‌ ರಾಜಕುಮಾರ್‌ ಅವರು ನಮ್ಮೊಂದಿಗಿಲ್ಲ. ಆದರೆ, ಅವರು ಬಿಟ್ಟು ಹೋದ ಆದರ್ಶ ಮತ್ತು ಮಾನವೀಯ ಮೌಲ್ಯಗಳಿವೆ. ಆ ಮೂಲಕ ಅವರಿನ್ನೂ ಜೀವಂತವಾಗಿದ್ದಾರೆ. ಅಪ್ಪು ಅವರ ನೆನಪಲ್ಲಿ ಈಗಾಗಲೇ ಹಲವು ಗೀತೆಗಳು ಹೊರಬಂದಿವೆ. ಬರುತ್ತಲೂ ಇವೆ. ಮಾರ್ಚ್‌ 17 ರಂದು ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ನಡುವೆಯೇ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಶ್ರೀಧರ್‌ ವಿ.ಸಂಭ್ರಮ್‌ ಅವರು ತಮ್ಮ ಹೊಸ ಸಂಭ್ರಮ್‌ ಸ್ಟುಡಿಯೋಸ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಅಪ್ಪು ಅವರಿಗೊಂದು ವಿನೂತನ ಎನಿಸುವ ಗೀತೆಯನ್ನು ರಿಲೀಸ್‌ ಮಾಡಿದ್ದಾರೆ

ಹೌದು, ಸಂಗೀತ ನಿರ್ದೇಶಕ ಶ್ರೀಧರ್‌ ವಿ.ಸಂಭ್ರಮ್‌ ಅವರು, ಹಲವಾರು ವರ್ಷಗಳಿಂದಲೂ ಅನೇಕ ಹಿಟ್‌ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಸಾಕಷ್ಟು ಸೂಪರ್‌ ಹಿಟ್‌ ಸಾಂಗ್‌ ನೀಡಿದ್ದಾರೆ. ಇಷ್ಟು ವರ್ಷಗಳ ಕಾಲ ಸಂಗೀತ ಯಾನ ನಡೆಸಿರುವ ಶ್ರೀಧರ್‌ ಸಂಭ್ರಮ್‌ ಇದೀಗ ತಮ್ಮದೇ ಆದ ಯುಟ್ಯೂಬ್‌ ಚಾನೆಲ್‌ ಶುರುಮಾಡಿದ್ದಾರೆ. ಆಮೂಲಕ ಅವರೀಗ ಪುನೀತ್‌ ರಾಜಕುಮಾರ್‌ ಅವರಿಗಾಗಿಯೇ “ಮಹಾನುಭಾವ” ಎಂಬ ಗೀತೆ ಬಿಡುಗಡೆ ಮಾಡಿದ್ದಾರೆ. ಈ ಮಹಾನುಭಾವ ಹಲವು ವಿಶೇಷತೆಗಳನ್ನು ಹೊಂದಿದೆ. ಆ ಕುರಿತು ಸ್ವತಃ ಶ್ರೀಧರ್‌ ಸಂಭ್ರಮ್‌ ಹೇಳುವುದಿಷ್ಟು.

“ಅಪ್ಪು ಸರ್‌ ಅಂದರೆ, ಎಲ್ಲರಿಗೂ ಎಲ್ಲಿಲ್ಲದ ಪ್ರೀತಿ ಮತ್ತು ಗೌರವ. ಅಪ್ಪು ಸರ್‌ ಇಲ್ಲ ಅನ್ನುವುದನ್ನೂ ಸಹ ಊಹಿಸಿಕೊಳ್ಳಲಾಗುತ್ತಿಲ್ಲ. ಅವರು ಯಾವುದೇ ಕ್ಷಣದಲ್ಲಿ ಸಿಕ್ಕರೂ ಪ್ರೀತಿಯಿಂದಲೇ ಮಾತಾಡಿಸುತ್ತಿದ್ದರು. ಸದಾ ನಗುಮೊಗದಲ್ಲೇ ಇರುತ್ತಿದ್ದ ಅಪ್ಪು ಸರ್‌ ನಮ್ಮೊಂದಿಗಿಲ್ಲ. ಹಾಗಂತ ಆ ಭಾವನೆಯಲ್ಲೂ ನಾವಿಲ್ಲ. ಅವರ ಸದಭಿರುಚಿಯ ಸಿನಿಮಾಗಳ ಮೂಲಕ ಇಂದಿಗೂ ಜೀವಂತವಾಗಿದ್ದಾರೆ. ಅವರಿಗಾಗಿಯೇ ಒಂದೊಳ್ಳೆಯ ಗೀತೆ ಮಾಡಬೇಕು ಎಂಬ ಉದ್ದೇಶವಿತ್ತು.

ಕರುನಾಡಿಗರೆಲ್ಲರೂ ಅವರಿಲ್ಲದ ನೋವಲ್ಲಿದ್ದಾರೆ. ಹಾಗಂತ, ಪ್ರತಿನಿತ್ಯ ಆ ನೋವಲ್ಲೇ ಬಾಳುವುದಕ್ಕಾಗಲ್ಲ. ಅವರನ್ನು ಹಾಡಿನ ಮೂಲಕ ನೆನಪಿಸಿಕೊಳ್ಳುವಂತಾಗಬೇಕು ಎಂಬುದು ನಮ್ಮ ಆಲೋಚನೆ ಆಗಿತ್ತು. ಹಾಗಾಗಿಯೇ ಅವರನ್ನು ಹತ್ತಿರದಿಂದ ನೋಡಿದ್ದರಿಂದ, ಅವರ ಒಡನಾಟ ಇದ್ದುದರಿಂದ, ದೊಡ್ಮನೆ ಹುಡುಗನಾಗಿ ಹೇಗೆಲ್ಲಾ ಇದ್ದರು, ಏನೆಲ್ಲಾ ಮಾಡಿದ್ದರು, ಹೇಗೆಲ್ಲ ಪ್ರೀತಿ ತೋರುತ್ತಿದ್ದರು ಅನ್ನುವುದನ್ನೇ ಹಾಡಿನ ಮೂಲಕ ಹೇಳಲಾಗಿದೆ. ಅದೊಂದು ಅವರ ಮೇಲಿನ ಪ್ರೀತಿ ಮತ್ತು ಗೌರವಕ್ಕಾಗಿ ಮಾಡಿರುವ ಹಾಡಿದು” ಎಂದು ವಿವರ ಕೊಡುತ್ತಾರೆ ಶ್ರೀಧರ್‌ ವಿ.ಸಂಭ್ರಮ್.‌

ಇನ್ನು, ಈ ಹಾಡನ್ನು ನಿರ್ದೇಶಕ ಕಾಂತ ಕನ್ನಲ್ಲಿ ಬರೆದಿದ್ದಾರೆ. ಅವರ ಸಾಹಿತ್ಯಕ್ಕೆ ತಕ್ಕಂತೆ ನಾನು ಸಂಗೀತ ನೀಡಿದ್ದೇನೆ. ” ಆಕಾಶ ಭೂಮಿ ಹೇಳಿದೆ, ಊರಿಗೇ ನಮ್ಮೂರಿಗೆ ಮಹಾನುಭಾವ ನೀನಯ್ಯ… ನಾಡಿಗೆ ಕರುನಾಡಿಗೆ ಮಹಾನುಭಾವ ನೀನಯ್ಯ…” ಎಂದು ಶುರುವಾಗುವ ಗೀತೆ ಈಗಾಗಲೇ ಸಂಭ್ರಮ್‌ ಸ್ಟುಡಿಯೋಸ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಸಾಕಷ್ಟು ಜನ ಹಾಡನ್ನು ಮೆಚ್ಚಿಕೊಂಡಿದ್ದಾರೆ.

ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. ಇನ್ನು, ಹಾಡಲ್ಲಿ ವಿಶೇಷತೆಗಳಿವೆ. ಈ ಹಾಡಿಗೆ ಖ್ಯಾತ ಗಾಯಕರು ಧ್ವನಿಯಾಗಿದ್ದಾರೆ. ಬಾಲಿವುಡ್‌ ಗಾಯಕರಾದ ಸೋನು ನಿಗಮ್‌, ಶಂಕರ್‌ ಮಹದೇವನ್.‌ ವಿಜಯ ಪ್ರಕಾಶ್‌, ಕೈಲಾಶ್‌ ಕೇರ್ ಅವರು ಧ್ವನಿಯಾಗಿರುವುದು ವಿಶೇಷತೆಗಳಲ್ಲೊಂದು ನಿರ್ದೇಶಕ‌ ಕಾಂತ ಕನ್ನಲ್ಲಿ ಅವರ ಗೀತ ಸಾಹಿತ್ಯದ ಜೊತೆ ಪರಿಕಲ್ಪನೆಯೂ ಇದೆ. ಇನ್ನು, ಇಂಥದ್ದೊಂದು ಒಳ್ಳೆಯ ಹಾಡಿಗೆ ಸುನೀಲ್‌ ಬಿ.ಎನ್.‌ ಅವರು ನಿರ್ಮಾಣ ಮಾಡಿದ್ದಾರೆ ಎಂದು ಹೇಳುತ್ತಾರೆ ಶ್ರೀಧರ್‌ ವಿ.ಸಂಭ್ರಮ್.‌

“ಮಹಾನುಭಾವ” ಗೀತೆಯಿಂದ ಬರುವ ಆದಾಯವನ್ನು ಅಪ್ಪು ಸರ್‌ ಅವರ ಚಾರಿಟಿಗೆ ಕೊಡಬೇಕು ಎಂಬ ನಿರ್ಧಾರ ಮಾಡಲಾಗಿದೆ. ಯಾಕೆಂದರೆ, ಅಪ್ಪು ಸರ್‌ ಅವರು ಯಾರಿಗೂ ಗೊತ್ತಾಗದ ರೀತಿ ಹಲವು ಮಾನವೀಯ ಕೆಲಸ ಮಾಡಿದ್ದಾರೆ. ಅನೇಕರ ಕಷ್ಟಕ್ಕೆ ಮಿಡಿದಿದ್ದಾರೆ. ಹಾಗಾಗಿ, ಅವರ ನೆನಪಲ್ಲಿ ಮಾಡಿರುವ ಈ ಗೀತೆಯಿಂದ ಬರುವ ಆದಾಯವನ್ನು ಅವರ ಚಾರಿಟಿಗೆ ನೀಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ ಎನ್ನುವ ಶ್ರೀಧರ್‌ ಸಂಭ್ರಮ್‌, ಮುಂದಿನ ದಿನಗಳಲ್ಲಿ ನಮ್ಮ ಸಂಭ್ರಮ್‌ ಸ್ಟುಡಿಯೋಸ್‌ ಯುಟ್ಯೂಬ್‌ ಚಾನೆಲ್‌ ಮೂಲಕ ಹೊಸ ಪ್ರತಿಭಾವಂತರಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಇಲ್ಲಿ ಗೀತೆಗಳ ಜೊತೆಯಲ್ಲಿ ವಿಡಿಯೋ ಆಲ್ಬಂ ಕೂಡ ರಿಲೀಸ್‌ ಮಾಡಲಾಗುತ್ತದೆ. ಹೊಸಬರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂಬ ಉದ್ದೇಶದಿಂದಲೇ ನಾವು ನಾಗಭಾವಿಯಲ್ಲಿ ಸುಸಜ್ಜಿತ ಸ್ಟುಡಿಯೋ ನಿರ್ಮಾಣ ಮಾಡಿ, ಆ ಮೂಲಕ ಹೊಸಬರಿಗೆ ವೇದಿಕೆ ಕಲ್ಪಿಸುವ ಉದ್ದೇಶನ ನನ್ನದು. “ಮಹಾನುಭಾವ” ಗೀತೆ ಮೂಲಕ ನಮ್ಮ ಯುಟ್ಯೂಬ್‌ ಚಾನೆಲ್‌ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಒಳ್ಳೆಯ ಗೀತೆಗಳನ್ನೂ ಕೊಡುವ ಉದ್ದೇಶವಿದೆ ಎನ್ನುತ್ತಾರೆ ಶ್ರೀಧರ್.

error: Content is protected !!