Categories
ಸಿನಿ ಸುದ್ದಿ

ಸ್ಟಾರೇ ನಮ್ಮನೆ ದೇವ್ರು! ಕಾಲು ಕಳಕೊಂಡ್ರೂ ಯುವರತ್ನ ಮೇಲಿನ ಪ್ರೀತಿ ಕಮ್ಮಿಯಾಗಲಿಲ್ಲ; ದೇವ್ರಿಗೆ ಹರಿಕೆ ತೀರಿಸಿದ ಕಿಚ್ಚನ ಅಭಿಮಾನಿ – ಸಲಗ ಗೆಲುವಿಗೆ ಟ್ಯಾಟೋ ಹಾಕಿಸಿಕೊಂಡ ಫ್ಯಾನ್ ಇದು ಪ್ರೀತಿಯ ಅಭಿಮಾನ

ಅದೇನೋ ಗೊತ್ತಿಲ್ಲ. ಈ ಸಿನಿಮಾನೇ ಹಾಗೆ. ಇದೊಂದು ಮ್ಯಾಜಿಕ್‌ಲೋಕ. ಭಾವಗಳನ್ನು ಬೆಸೆಯುವ ಕಲೆ ಈ ಸಿನಿಮಾಗಿದೆ. ನೋವು-ನಲಿವುಗಳ ಸಂಗಮ ಇಲ್ಲಿದ್ದರೂ, ಸದಾ ಉತ್ಸಾಹ ತುಂಬುವ ಕೆಲಸ ಸಿನಿಮಾ ಮಾಡುತ್ತೆ ಅಂದರೆ ನಂಬಲೇಬೇಕು. ಹೌದು, ಫ್ಯಾನ್ಸ್‌ ಇಲ್ಲದೆ ಸ್ಟಾರ್ಸ್‌ ಇಲ್ಲ. ಸಿನಿಮಾಗಳಿಲ್ಲದೆ ಅಭಿಮಾನಿಗಳಿಲ್ಲ. ಅಷ್ಟರ ಮಟ್ಟಿಗೆ ಬೆಸೆದಿರುವ ಸಿನಿಮಾ ರಂಗವಿದು. ಅದೊಂದು ರೀತಿ ಸ್ಟಾರ್‌ಗಳಿಗೂ, ಅಭಿಮಾನಿಗಳಿಗೂ ಇರುವ ಅವಿನಾಭಾವ ಸಂಬಂಧ. ಅದೆಷ್ಟೋ ಸಿನಿಮಾಗಳು ಒಡೆದ ಮನಸ್ಸುಗಳನ್ನು ಒಂದು ಮಾಡಿವೆ. ದೂರವಾದ ಗೆಳೆಯರನ್ನು ಒಂದುಗೂಡಿಸಿವೆ. ಊರಿಗೆ ಊರೇ ಒಗ್ಗೂಡಿ ದುಡಿಮೆ ಮಾಡುವಂತಹ ಸಂದೇಶವನ್ನ ಸಾರಿವೆ. ಸಮಾಜದಲ್ಲಿ ಬದಲಾವಣೆ ತರುವಂತಹ ಕೆಲಸ ಕೂಡ ಕೆಲವು ಸಿನಿಮಾಗಳಿಂದ ಆಗಿದೆ ಅನ್ನೋದು ವಿಶೇಷ.

ಇಲ್ಲಿ ಪ್ರತಿಯೊಬ್ಬ ನಟರಿಗೂ ತನ್ನದೇ ಅಭಿಮಾನಿ ಬಳಗವಿದೆ. ಅವರಿಗೆ ತಮ್ಮ ಪ್ರೀತಿಯ ಹೀರೋ ಅಂದರೆ ಸಾಕು, ಪ್ರಾಣ ಕೊಡುವಷ್ಟರ ಮಟ್ಟಿಗೆ ಪ್ರೀತಿ ತೋರುತ್ತಾರೆ. ಈಗಾಗಲೇ ಅಂತಹ ಅನೇಕ ಘಟನೆಗಳು ಕಣ್ಣೆದುರಿಗಿವೆ. ಅಂತಹ ಅಭಿಮಾನಿಗಳ ಅಭಿಮಾನ ಕುರಿತು ಹೇಳೋದಾದರೆ, ಅದೆಷ್ಟೋ ಹಿರೋಗಳನ್ನು ಪೂಜಿಸುವ ಫ್ಯಾನ್ಸ್‌ ಇದ್ದಾರೆ. ಎದೆ ಮೇಲೆ, ಕೈ ಮೇಲೆ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದವರೂ ಇದ್ದಾರೆ. ಇನ್ನೇನು ಸಾವು-ಬದುಕಿನ ಜೊತೆ ಹೋರಾಡುವ ಅದೆಷ್ಟೋ ಫ್ಯಾನ್ಸ್‌, ನಾವು ಸಾಯುವ ಮುನ್ನ ನನ್ನ ಹೀರೋನನ್ನು ನೋಡಬೇಕು ಅಂತ ಹಠ ಹಿಡಿದು ದರ್ಶನ ಭಾಗ್ಯ ಪಡೆದವರೂ ಇದ್ದಾರೆ. ಅಂತಹ ಅಭಿಮಾನಿಗಳ ಪ್ರೀತಿಗೆ ಸೋತು ಹೋಗುವ ಸ್ಟಾರ್‌ನಟರು ಕೂಡ ತಮ್ಮ ಫ್ಯಾನ್ಸ್‌ ಆಸೆ ಈಡೇರಿಸಿರುವ ಉದಾಹರಣೆಗೆ ಲೆಕ್ಕವಿಲ್ಲ.‌

ಇತ್ತೀಚೆಗಷ್ಟೇ ಮೈಸೂರಿನ ಪುನೀತ್‌ ರಾಜಕುಮಾರ್‌ ಅಭಿಮಾನಿಯೊಬ್ಬ ಮೃತಪಟ್ಟಿದ್ದ. ಆತನಿಗೆ ಪುನೀತ್‌ ಅಂದರೆ ಎಲ್ಲಿಲ್ಲದ ಪ್ರೀತಿ. ಪುನೀತ್‌ ಸಿನಿಮಾ ನೋಡಬೇಕು ಅಂದುಕೊಂಡಿದ್ದ ಆಕಸ್ಮಿಕವಾಗಿ ಇಹಲೋಕ ತ್ಯಜಿಸಿದ್ದ. ಮಗ ಆಸೆಯಂತೆ, ಅವನ ಫೋಟೋ ಸಮೇತ ಚಿತ್ರಮಂದಿರಕ್ಕೆ ಬಂದು ಅವನಿಗೂ ಒಂದು ಟಿಕೆಟ್‌ ತೆಗೆಸಿ “ಯುವರತ್ನ” ಸಿನಿಮಾ ನೋಡಿದ ಪೋಷಕರ ಉದಾಹರಣೆ ಕಣ್ಣ ಮುಂದಿದೆ. ಈಗ ತನ್ನ ಕಾಲು ಕಳೆದುಕೊಂಡು, ಹಾಸಿಗೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಪುನೀತ್‌ ಅವರ ಅಪ್ಪಟ ಅಭಿಮಾನಿಯೊಬ್ಬ “ಯುವರತ್ನ” ಸಿನಿಮಾ ನೋಡಲೇಬೇಕು ಅಂತ ಹಠ ಹಿಡಿದು, ಸಿನಿಮಾ ನೋಡಿ ಭಾವುಕನಾಗಿದ್ದಾನೆ. ಅಷ್ಟೇ ಅಲ್ಲ, ಮನೆಗೆ ಬಂದವನೇ, “ಯುವರತ್ನ” ಚಿತ್ರದ ಫೀಲ್‌ ದ ಪವರ್‌ ಹಾಡಿಗೆ ಪುನೀತ್‌ ಅವರಂತೆಯೇ ಒಂದೇ ಕಾಲಲ್ಲಿ ಸ್ಟೆಪ್‌ ಹಾಕಿ ಖುಷಿಪಟ್ಟಿದ್ದಾನೆ.‌

ಅಂದಹಾಗೆ, ಆ ಅಭಿಮಾನಿಯ ಹೆಸರು ಪುನೀತ್‌ ಮದುರೆ. ಜಗಳೂರಿನಲ್ಲಿ ಬೆಸ್ಕಾಂ ಮೆಕ್ಯಾನಿಕ್‌೧ ಆಗಿರುವ ಲೋಕೇಶ್‌ಅವರ ಪುತ್ರನೀತ. ೨೧ ವರ್ಷದ ಪುನೀತ್‌ ಐಟಿಐ ಮುಗಿಸಿ, ಜಾಬ್‌ ಕೋರ್ಸ್‌ ಮಾಡುತ್ತಿದ್ದ. ಕಳೆದ ವರ್ಷ ಮಾರ್ಚ್‌ನಲ್ಲಿ ಕಲ್ಲು ತುಂಬಿದ್ದ ಲಾರಿಯೊಂದು ಈ ಪುನೀತ್‌ ಮದುರೆ ಮೇಲೆ ಹರಿದು ಹೋಗಿದೆ. ಈ ಘಟನೆಯಿಂದ ಪುನೀತ್‌ ಕಾಲಿಗೆ ತೀವ್ರ ಪೆಟ್ಟು ಬಿದ್ದು, ಮಣಿಪಾಲ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ೪೮ ದಿನಗಳ ಕಾಲ ಚಿಕಿತ್ಸೆ ಕೊಡಿಸಿದರೂ ಆತನ ಕಾಲು ಮಾತ್ರ ಉಳಿಯಲಿಲ್ಲ. ಬಲಗಾಲನ್ನು ಕಟ್‌ ಮಾಡುವಂತಹ ಸ್ಥಿತಿ ಬಂತು. ತನ್ನ ಬಲಗಾಲು ಕಳೆದುಕೊಂಡಿದ್ದ ಪುನೀತ್‌, ಒಂದು ವರ್ಷ ಕಾಲ ಎಲ್ಲಿಗೂ ಹೋಗದೆ ಮನೆಯಲ್ಲೇ ಇದ್ದರು. ಆದರೆ, “ಯುವರತ್ನ” ಸಿನಿಮಾ ರಿಲೀಸ್‌ ಡೇಟ್ ಅನೌನ್ಸ್‌ ಯಾವಾಗ ಆಯ್ತೋ‌, ಆಗಿನಿಂದ ಸಿನಿಮಾ ನೋಡಲೇಬೇಕು ಅಂತ ನಿರ್ಧರಿಸಿದರು. ರಿಲೀಸ್‌ ದಿನ ಸಿನಿಮಾ ನೋಡೋಕೆ ಹಠ ಮಾಡಿದರು. ಮನೆಯಲ್ಲಿ ಕೊರೊನಾ ಇದೆ, ಅದರಲ್ಲೂ ವಿಶ್ರಾಂತಿ ಅಗತ್ಯವಿದೆ ಅಂದರೂ, ಕೇಳದೆ, ಟಿಕೆಟ್‌ ತರಿಸಿಕೊಂಡು “ಯುವರತ್ನ” ಸಿನಿಮಾ ನೋಡಿ ಖುಷಿಗೊಂಡಿದ್ದಾರೆ. ತನ್ನ ಹೆಸರೂ ಪುನೀತ್ ಆಗಿದ್ದರಿಂದಲೇ ಚಿಕ್ಕಂದಿನಿಂದಲೂ ಪುನೀತ್‌ ಅಭಿಮಾನಿ ನಾನು ಅನ್ನುತ್ತಲೇ ಇದ್ದ ಪುನೀತ್‌, ಈಗ ಕಾಲು ಕಳಕೊಂಡ ನೋವಲ್ಲಿದ್ದರೂ, ಸಿನಿಮಾ ನೋಡಿ ಆ ನೋವು ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಭಿಮಾನ ಅಂದರೆ ಇದೇ ಅಲ್ಲವೇ?

ಇದು ಪುನೀತ್‌ ಫ್ಯಾನ್‌ ಕಥೆಯಾದರೆ, ಕಿಚ್ಚ ಸುದೀಪ್‌ ಅಭಿಮಾನಿ ಕಥೆ ಕೂಡ ಇನ್ನೂ ವಿಶೇಷವಾಗಿದೆ. ಬಾಳೆ ಹಣ್ಣಿನ ಮೇಲೆ ಕೋಟಿಗೊಬ್ಬ ಹೆಸರು ಬರೆದ ಅಭಿಮಾನಿ ದೇವರಿಗೆ ಹರಿಕೆ ತೀರಿಸಿ ಸಿನಿಮಾ ಗೆಲ್ಲಬೇಕೆಂದು ದೇವರಿಗೆ ಕೈ ಮುಗಿದಿದ್ದಾನೆ. ಅಭಿನಯ ಚಕ್ರವರ್ತಿ ಅಂತಲೇ ಜನ ಪ್ರಿಯತೆ ಪಡೆದ ನಟ ಕಿಚ್ಚ ಸುದೀಪ್‌ ಅವರೇನು ಕಮ್ಮಿ ಇಲ್ಲ. ಲಕ್ಷಾಂತರ ಅಪಾರ ಅಭಿಮಾನಿ ಬಳಗವನ್ನ ಹೊಂದಿರುವ ಸ್ಟಾರ್‌ ನಟ. ಅವರ ಹೆಸರಲ್ಲೇ ಲೆಕ್ಕವಿಲ್ಲದಷ್ಟು ಅಭಿಮಾನಿ ಸಂಘಗಳಿವೆ. ಅವೇ ಸಾಕು ಅವರ ಅಭಿಮಾನಿಗಳ ಅಭಿಮಾನಕ್ಕೆ. ಅವರೆಲ್ಲ ಸುದೀಪ್‌ ಅಂದ್ರೆ ಹೊತ್ತು ಮೆರೆಯುತ್ತಾರೆ. ರಾತ್ರೋರಾತ್ರಿ ಆರಡಿ ಕಟೌಟ್‌ ಕಟ್ಟಿ, ಅದಕ್ಕೆ ಹಾಲಿನ ಅಭಿಷೇಕ ಮಾಡುತ್ತಾರೆ. ದೇವರಂತೆ ಆರಾಧಿಸುತ್ತಾರೆ. ಅವರ ಪಾಲಿಗೆ ಸುದೀಪ್‌ ಅಂದ್ರೆ ದೇವರು. ಇದು ಉತ್ಪ್ರೇಕ್ಷೆ ಎನಿಸಿದರೂ ಸತ್ಯ. ಅವರೆಲ್ಲ ಈಗ ಕೋಟಿಗೊಬ್ಬ ೩ ಚಿತ್ರದ ನಿರೀಕ್ಷೆಯಲ್ಲಿದ್ದಾರೆ. ಆ ಚಿತ್ರದ ರಿಲೀಸ್‌ದಿನವನ್ನೇ ಕಾಯುತ್ತಿದ್ದಾರೆ.

ಈ ವರ್ಷಕ್ಕೆ ಸುದೀಪ್‌ ಅಭಿನಯದ ಸಿನಿಮಾಗಳ ಪೈಕಿ ಮುಂಚೆ ಬರಬೇಕಿರುವ ಸಿನಿಮಾ ಕೋಟಿಗೊಬ್ಬ ೩ . ಈಗಾಗಲೇ ಇದರ ರಿಲೀಸ್‌ ಡೇಟ್‌ ಕೂಡ ಅನೌನ್ಸ್‌ ಆಗಿದ್ದು ನಿಮಗೂ ಗೊತ್ತು. ಆದ್ರೆ ಈಗ ಕೊರೋನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗಿದೆ. ಹಾಗಾಗಿ ಕೋಟಿಗೊಬ್ಬ ೩ ರಿಲೀಸ್‌ ಡೇಟ್‌ ಹೆಚ್ಚು ಕಡಿಮೆ ಆಗುವ ಸಾಧ್ಯತೆಗಳು ಇವೆ. ಇಷ್ಟಾಗಿಯೂ ಕಿಚ್ಚನ ಫ್ಯಾನ್ಸ್‌ ಕ್ರೇಜ್‌ ಮಾತ್ರ ಕಮ್ಮಿ ಆಗಿಲ್ಲ. ಕೋಟಿಗೊಬ್ಬ ೩ ಬುರುವುದು ಇನ್ನಾವಾಗೋ ಗೊತ್ತಿಲ್ಲ. ಆದ್ರೂ ಅದರ ನೆಕ್ಟ್‌ ಲೆವೆಲ್‌ ಕ್ರೇಜ್‌ ಶುರುವಾಗಿದೆ. ಕಿಚ್ಚನ ಅಭಿಮಾನಿಯೊಬ್ಬ ದೇವರಿಗೆ ಬಾಳೆ ಹಣ್ಣಿನ ಹರಿಕೆ ಹೊತ್ತುಕೊಂಡು, ಅದರ ಮೇಲೆ ಕೋಟಿಗೊಬ್ಬ ೩ ಅಂತ ಬರೆದು, ಹರಕೆ ತೀರಿಸಿಕೊಂಡಿದ್ದಾನೆ. ಓಹೋ…, ದೇವರೇ.. ನನ್ನ ನೆಚ್ಚಿನ ನಟನ ಚಿತ್ರ ಭರ್ಜರಿ ಯಶಸ್ಸು ಕಾಣಲಿ. ದೊಡ್ಡ ಗೆಲುವು ಕಾಣಲಿ ಅಂತೆಲ್ಲ ಆತ ಬೇಡಿಕೊಂಡು ಸ್ಟಾರ್‌ ಮೇಲಿನ ಅಭಿಮಾನ ಮೆರೆಯುತ್ತಾನೆಂದರೆ, ಅವರಿಗೆಲ್ಲ ಸ್ಟಾರ್‌ ಅಂದ್ರೆ ಮನೆ ದೇವ್ರು ಅಲ್ಲವೇ? ಇಂತಹ ಅದೆಷ್ಟೋ ಫ್ಯಾನ್ಸ್‌ ಇದ್ದಾರೆ. ಅವರೆಲ್ಲರಿಗೂ ಸುದೀಪ್‌ ಅಂದ್ರೆ ಪ್ರಾಣ.

ಇನ್ನು ದುನಿಯಾ ವಿಜಯ್‌ ಫ್ಯಾನ್‌ ಕಥೆ ಕೂಡ ವಿಭಿನ್ನ. ಸಲಗ ಶತದಿನಕ್ಕಾಗಿ ಟ್ಯಾಟೋ ಹಾಕಿಸಿಕೊಂಡ ಅಭಿಮಾನಿ ಇದ್ದಾನೆ. ಸಲಗ ಯಶಸ್ಸು ಕಾಣಬೇಕು ಅಂತ ಶಿಲಾಶಾಸನ ಮಾದರಿ ಮಾಡಿದ ಫ್ಯಾನ್ ಕೂಡ ಇದ್ದಾನೆ. ಗೋವಾ ಕನ್ನಡಿಗನೊಬ್ಬ ಸಲಗ ಟ್ಯಾಟೋ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾನೆ. ಉತ್ತರ ಕರ್ನಾಟಕ ಮೂಲದ ಹನುಮಂತ ಎಂಬ ಹುಡುಗ, ಗೋವಾದಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

ಆತನಿಗೆ ದುನಿಯಾ ವಿಜಯ್‌ ಅಂದರೆ ಪ್ರೀತಿ. ವಿಜಯ್‌ ಅವರಂತೆ ಹನುಮಂತ ಕೂಡ ತನ್ನ ತಂದೆ ತಾಯಿಯನ್ನು ಪ್ರೀತಿಯಿಂದ ಆರಾಧಿಸುತ್ತಿದ್ದಾನೆ. ವಿಜಯ್‌ ಮೊದಲ ನಿರ್ದೇಶನದ ಸಲಗ ಸಿನಿಮಾ ಯಶಸ್ವಿಯಾಗಲಿ ಎಂದು ಸಲಗ ಟೈಟಲ್‌ ಅನ್ನು ತನ್ನ ಕೈ ಮೇಲೆ ಟ್ಯಾಟೋ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾನೆ.‌

ದುನಿಯಾ ವಿಜಯ್ ಮತ್ತೊಬ್ಬ‌ ಅಭಿಮಾನಿಯದ್ದು ಇನ್ನೊಂದು ಕಥೆ. ಚಿತ್ರ ಯಶಸ್ವಿಯಾಗಲೆಂದು ಸಲಗ ಶಾಸನ ಬರೆದು ಅಭಿಮಾನ ತೋರಿದ್ದಾನೆ. ವೀರೇಶ್‌ ಆಚಾರ್‌ ಎಂಬಾತ, ಯಾರೂ ಮಾಡದಿರುವ ಕೆಲಸ ಮಾಡಿದ್ದಾರೆ. ಪುರಾತನ ಶಿಲಾ ಶಾಸನದ ಮಾದರಿಯಲ್ಲಿ ಸಲಗ ಶಾಸನ ರಚನೆ ಮಾಡಿ ಎಲ್ಲರ ಮನಗೆದ್ದ ಅಭಿಮಾನಿಯನ್ನು ದುನಿಯಾ ವಿಜಯ್‌ ಕೂಡ ಕೊಂಡಾಡಿದ್ದಾರೆ. ಅದೇನೆ ಇರಲಿ, ಅಭಿಮಾನಿಗಳ ಅಭಿಮಾನ ವಿಭಿನ್ನವಾಗಿಯೇ ಇರುತ್ತೆ. ಅದರಂತೆ ಸ್ಟಾರ್‌ನಟರು ಕೂಡ ತಮ್ಮ ಪ್ರೀತಿಯ ಅಭಿಮಾನಿಗಳನ್ನು ಅಷ್ಟೇ ಪ್ರೀತಿಯಿಂದ ಮಾತಾಡಿಸುವ ಮೂಲಕ ಅವರ ಅಭಿಮಾನವನ್ನು ಕೊಂಡಾಡುತ್ತಿದ್ದಾರೆ. ಕನ್ನಡದ ಅನೇಕ ನಟರ ಅಭಿಮಾನಿಗಳು ಕೂಡ ತಮ್ಮದೇ ಶೈಲಿಯಲ್ಲಿ ಅಭಿಮಾನ ತೋರುವ ಮೂಲಕ ತಮ್ಮೊಳಗೆ ವಿಶೇಷ ಖುಷಿ ಪಡುತ್ತಿದ್ದಾರೆ. ಇಂತಹ ಅಭಿಮಾನಿಗಳಿಗೆ ಸ್ಟಾರೇ ಅವರ ಮನೆ ದೇವರಾದರೆ, ಸ್ಟಾರ್‌ಗಳಿಗೆ ಅಭಿಮಾನಿಗಳೇ ನಮ್ಮನೆ ದೇವ್ರು ಅನ್ನೋದಂತೂ ಸತ್ಯ.

Categories
ಸಿನಿ ಸುದ್ದಿ

ವೀಲ್ ಚೇರ್ ರೋಮಿಯೋನ ಸ್ಪೆಷಲ್‌ ಲವ್‌ ಸ್ಟೋರಿ -ಇದು ವಿಕಲಚೇತನ, ವೇಶ್ಯೆ ನಡುವಿನ ಪ್ರೀತಿ ಗೀತಿ ಇತ್ಯಾದಿ…!

ರೋಡ್‌ ರೋಮಿಯೋ‌ ಬಗ್ಗೆ ಸಹಜವಾಗಿ ಎಲ್ಲರಿಗೂ ಗೊತ್ತೇ ಇರುತ್ತೆ. ಆದರೆ, ವೀಲ್‌ ಚೇರ್‌ ರೋಮಿಯೋ ಬಗ್ಗೆ ಬಹಳಷ್ಟು ಮಂದಿಗೆ ಗೊತ್ತಿರಲಿಕ್ಕಿಲ್ಲ. ಇಲ್ಲೊಬ್ಬ ವೀಲ್‌ ಚೇರ್‌ ರೋಮಿಯೋ ಬಗ್ಗೆ ಹೇಳಲೇಬೇಕು. ಇದು ಸಿನಿಮಾ ವಿಷಯ. ವಿಕಲಚೇತನನೊಬ್ಬನ ಲವ್‌ ಸ್ಟೋರಿ ಇಲ್ಲಿದೆ. ಹೌದು, ಇದೊಂದು ವೀಲ್‌ ಚೇರ್‌ ರೋಮಿಯೋ ಸಿನಿಮಾ.

ಕಾಲಿಲ್ಲದ ವ್ಯಕ್ತಿಯೊಬ್ಬ ವೀಲ್‌ ಚೇರ್‌ ಮೇಲೆ ಕುಳಿತು ತನ್ನ ಪ್ರೀತಿಗಾಗಿ ಪರಿತಪಿಸೋ ಕಥೆ ಇಲ್ಲಿದೆ. ಈ ಚಿತ್ರ ಈಗ ರಿಲೀಸ್‌ಗೂ ಸಜ್ಜಾಗಿದೆ. ಅದಕ್ಕೂ ಮುನ್ನ, ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಎಲ್ಲೆಡೆಯಿಂದಲೂ ಮೆಚ್ಚುಗೆ ಪಡೆಯುತ್ತಿದೆ. ಅಗಸ್ತ್ಯ ಕ್ರಿಯೇಷನ್ ಬ್ಯಾನರ್‌ನಲ್ಲಿ ವೆಂಕಟಾಚಲ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್‌ನಲ್ಲಿ ಮನುಷ್ಯನ ಚಿಂತನಾ ಲಹರಿಗಳನ್ನು ಒಂದೊಂದಾಗಿ ಬಿಚ್ಚಿಡುವ ಪ್ರಯತ್ನ ಮಾಡಲಾಗಿದೆ.
ಜಿ.ನಟರಾಜ್‌ ಈ ಸಿನಿಮಾದ ನಿರ್ದೇಶಕರು. ಕಥೆ ಕೂಡ ಇವರದೇ. ಇನ್ನು, ಇಲ್ಲಿ ನಾಯಕಿಯಾಗಿ ಮಯೂರಿ ಕಾಣಿಸಿಕೊಂಡಿದ್ದಾರೆ. ಅವರದು ಇಲ್ಲಿ ಸ್ಪೆಷಲ್‌ ಪಾತ್ರ. ಅದು ಕಣ್ಣು ಕಾಣದ ವೇಶ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಮ್ ಚೇತನ್ ಹೀರೋ ಆಗಿ ನಟಿಸಿದ್ದಾರೆ.

ಅವರಿಲ್ಲಿ ವೇಶ್ಯೆಯನ್ನು ಪ್ರೀತಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವೀಲ್‌ಚೇರ್‌ನಲ್ಲಿ ಕುಳಿತು ಪ್ರೀತಿಗಾಗಿ ಪರಿತಪಿಸುವ ವ್ಯಕ್ತಿಯಾಗಿ ನಟಿಸಿದ್ದಾರೆ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಕಥೆ. ಇಲ್ಲೂ ಒಂದಿಷ್ಟು ಫೈಟಿಂಗ್ ದೃಶ್ಯಗಳಿವೆ. ಹೀರೋ ತಾನು ಪ್ರೀತಿಸುವ ವೇಶ್ಯೆಯನ್ನು ಆರಾಧಿಸುತ್ತಾನೆ. ಇದನ್ನು ತಿಳಿದ ತಂದೆ ತನ್ನ ಮಗನ ಮನಸ್ಸನ್ನು ಪರಿವರ್ತಿಸಲು ಪ್ರಯತ್ನ ಮಾಡುತ್ತಾನೆ. ಮುಂದೇನಾಗುತ್ತೆ ಅನ್ನೋದು ಚಿತ್ರದ ಕಥೆ. ಹಾಗಂತ ಇಲ್ಲಿ ಯಾವುದೇ ಧ್ವಂದಾರ್ಥವಿಲ್ಲ. ಶೀಲವಂತರ ಶೀಲದ ಕುರಿತು ಸಿನಿಮಾ ಮೂಡಿ ಬಂದಿದೆ. ಆದರಿಲ್ಲಿ ಅಂಧ ವೇಶ್ಯೆ ಕುರಿತ ಸಿನಿಮಾ. ಹಾಗಂತ ಎಲ್ಲೂ ಅಶ್ಲೀಲತೆ ಇಲ್ಲಿಲ್ಲ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂಬುದು ಚಿತ್ರತಂಡದ ಮಾತು.

ಹಿರಿಯ ನಟ ಸುಚೇಂದ್ರ ಪ್ರಸಾದ್ ಕೂಡ ಸಿನಮಾ ಬಗ್ಗೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ. ಒಳ್ಳೆಯ ಕಥಾಹಂದರ ಇರುವಂತಹ ಚಿತ್ರವಿದು ಎಂಬುದು ಅವರ ಮಾತು. ರಂಗಾಯಣ ರಘು ಇಲ್ಲೊಂದು ವಿಶೇಷ ಪಾತ್ರ ಮಾಡಿದ್ದಾರೆ.ಬಿ‌ಜೆ ಭರತ್ ಸಂಗೀತವಿದೆ. ಗಿರೀಶ್ ಶಿವಣ್ಣ ಸೇರಿದಂತೆ ಹಲವು ಕಲಾವಿದರು ಇಲ್ಲಲಿದ್ದಾರೆ.

Categories
ಸಿನಿ ಸುದ್ದಿ

ಹರ ಹರ ಮಹಾದೇವ!! ಸ್ಟಾರ್‌ಗಳದ್ದು ಹೆಂಗೋ ಬಿಡಿ, ಹೊಸಬರ ಸಿನಿಮಾಗೆ ಮುಂದೆ ದೇವರೇ ದಿಕ್ಕು…!?

ಚಿತ್ರೋದ್ಯಮದ ಪರಿಸ್ಥಿತಿ ಈಗ ಅಷ್ಟು ಸುಲಭವಿಲ್ಲ. ಮುಂದೇನೋ ಆಗುತ್ತೆ, ಎಲ್ಲವೂ ಸರಿ ಹೋಗುತ್ತೆ, ಮತ್ತೆ ಹಳೇ ದಿನಗಳು ಬಂದೇ ಬರುತ್ತವೆ ಅಂತೆಲ್ಲ ನಂಬ್ಕೊಂಡು ರಿಲೀಸ್‌ಗೆ ರೆಡಿ ಇರುವ ಹೊಸಬರ ಸಿನಿಮಾಗಳ ಪರಿಸ್ಥಿತಿ ಮುಂದೆಯೂ ಶೋಚನೀಯ. ಅದಂತೂ ಗ್ಯಾರಂಟಿ. ಹಾಗಂತ ಭವಿಷ್ಯ ಹೇಳಬೇಕಿಲ್ಲ. ಜ್ಯೋತಿಷಿಗಳ ಬಳಿಗೂ ಹೋಗಬೇಕಿಲ್ಲ. ಮುಂದಿರುವ ಸಂಕಷ್ಟಗಳೇ ಇದಕ್ಕೆ ಸಾಕ್ಷಿ.

2020 ಎಂಬ ಕರಾಳ ವರ್ಷದ ಅಧ್ಯಾಯ ಮುಗಿದು, 2021 ಆದ್ರೂ ಸರಿಹೋಗುತ್ತೆ ಅನ್ನೋ ನಿರೀಕ್ಷೆಯಲ್ಲಿತ್ತು ಚಿತ್ರರಂಗ. ಈಗ ಅದು ಕೂಡ ಹುಸಿಯಾಗುತ್ತಿದೆ. ಈಗಲೇ ಮೂರು ತಿಂಗಳು ಕಳೆದೇ ಹೋಗಿದೆ. ಈಗಲೂ ಕೊರೊನಾ ಅಬ್ಬರ ನಿಂತಿಲ್ಲ. ದಿನೇ ದಿನೆ ಈ ಮಹಾಮಾರಿಯ ಅಟ್ಟಹಾಸ ಹೆಚ್ಚುತ್ತಿದೆ . ಮತ್ತೆ ಲಾಕ್‌ ಡೌನ್‌ ಆಗಬಹುದೆನ್ನುವ ಆತಂಕದ ನಡುವೆ ಚಿತ್ರಮಂದಿರಗಳಲ್ಲಿನ ಹಂಡ್ರೆಡ್‌ ಪರ್ಸೆಂಟ್‌ ಆಕ್ಯುಪೆನ್ಸಿ ಈಗ ಶೇ.50 ಕ್ಕೆ ಬಂದಿದೆ. “ಯುವರತ್ನ” ಚಿತ್ರತಂಡದ ಹೋರಾಟದೊಂದಿಗೆ ಸಿಕ್ಕಿದ್ದ ನಿಟ್ಟುಸಿರು ಕೂಡ ಮುಗಿದು ಹೋಗಿದೆ. ಬೇರೆ ದಾರಿ ಇಲ್ಲ. “ಯುವರತ್ನ” ಅಮಜಾನ್‌ ಪ್ರೈಮ್‌ ಗೂ ಬಂದಾಗಿದೆ. \

ಅದರಾಚೆ ಮುಂದೆ ಬರಬೇಕಾಗಿದ್ದ ಹೊಸಬರ ಸಿನಿಮಾಗಳ ಪಾಡೇನು? ದಾರಿಯಂತೂ ಇಲ್ಲ. ಎಲ್ಲವೂ ಹರ ಹರ ಮಹಾದೇವ!
ಈ ಜಗತ್ತೇ ಈಗ ಒಂಥರ ಜಡ್ಡುಗಟ್ಟಿದೆ. ಇನ್ನಾರೋ ನಮ್ಮ ಪರವಾಗಿ ಮಾತನಾಡಲಿ ಅಂತ ಕಾಯುತ್ತಿರುತ್ತದೆ. ಚಿತ್ರರಂಗದವರು ಕೂಡ ಅದರಿಂದ ಹೊರತಾಗುಳಿದಿಲ್ಲ. ಇಲ್ಲಿ ಬಲಾಢ್ಯರು ಮಾತನಾಡುತ್ತಾರೆ. ಪ್ರಭಾವಿಗಳು ಹೇಗೋ ಲಾಭಿ ಮಾಡುತ್ತಾರೆ. ತಾವು ಬದುಕುವ ದಾರಿಗಳನ್ನು ತಾವು ಕಂಡುಕೊಳ್ಳುತ್ತಾರೆ. ಆದರೆ ಹೊಸಬರು, ಅಸಹಾಯಕರು ತಾವಾಯಿತು ತಮ್ಮ ಪಾಡಾಯಿತು ಅಂತ ಕುಳಿತು ಈಗ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆನ್ನುವುದು ಸುಳ್ಳಲ್ಲ.


ಒಂದು ಅಂದಾಜಿನ ಪ್ರಕಾರ ಈ ವರ್ಷಕ್ಕೆ ರಿಲೀಸ್‌ಗೆ ಅಂತ ಸರಿ ಸುಮಾರು 400ಕ್ಕೂ ಹೆಚ್ಚು ಚಿತ್ರಗಳು ಕಾದಿವೆ. ಈ ಪೈಕಿ 300ಕ್ಕೂ ಹೆಚ್ಚು ಚಿತ್ರಗಳು ಸೆನ್ಸಾರ್‌ ಮುಗಿಸಿವೆ. ಇದರಲ್ಲಿ ಹೆಚ್ಚು ಕಡಿಮೆ ಅರ್ಧದಷ್ಟು ಸ್ಟಾರ್‌ ಚಿತ್ರಗಳು, ಒಂದಷ್ಟು ಗುರುತಿಸಿಕೊಂಡ ನಟರ ಸಿನಿಮಾಗಳೇ. ಇಲ್ಲವೇ ಚಿತ್ರರಂಗ ಗೊತ್ತಿದ್ದವರ ಸಿನಿಮಾಗಳೇ ಅಂತಿಟ್ಟುಕೊಳ್ಳಿ, ಉಳಿದವರೆಲ್ಲ ಹೊಸಬರು. ಅವರಿಗೆ ಇಲ್ಲೇನು ಮಾಡಬೇಕು, ಹೇಗೆ ಬಿಡುಗಡೆ ಮಾಡಬೇಕು, ಹಾಕಿದ ಬಂಡವಾಳ ವಾಪಾಸ್‌ ಪಡೆದುಕೊಳ್ಳುವುದಕ್ಕೆ ಯಾರನ್ನು ಹಿಡಿಯಬೇಕು ಅಂತೆಲ್ಲ ಗೊತ್ತೇ ಇಲ್ಲ. ಅವರಿಗೆ ಈಗ ಕೊರೋನಾ ಅನ್ನೋದು ದೊಡ್ಡ ಅಘಾತವಂತೂ ಹೌದು.

ಒಂದು ಸಿನಿಮಾ ರಿಲೀಸ್‌ಗೆ ರೆಡಿಯಾದರೆ ಅದು ಏನಿಲ್ಲ ಅಂದರೂ ಐದಾರು ತಿಂಗಳಲ್ಲಿ ಚಿತ್ರ ಮಂದಿರಕ್ಕೆ ಬಂದು ಬಿಡಬೇಕು. ಯಾಕಂದ್ರೆ ರೆಡಿ ಮಾಡಿಟ್ಟುಕೊಂಡು, ಬೇಕಾದಾಗ ಮಾರಿಕೊಳ್ಳುವುದಕ್ಕೆ ಅದೇನು ಮಣ್ಣಿನ ಮಡಿಕೆ ಅಲ್ಲ. ಒಂದು ಸಿನಿಮಾದ ಕಥಾವಸ್ತು ಕಾಲ, ಸಂದರ್ಭ, ಸನ್ನಿವೇಶಗಳನ್ನು ಅವಲಂಬಿಸಿರುತ್ತೆ ಅನ್ನೋದು ಎಷ್ಟು ಸತ್ಯವೋ ಹಾಗೆಯೇ, ಮುಂದೆ ಬರುವ ಸಿನಿಮಾಗಳ ಅಂಕೆ ಸಂಖ್ಯೆಗಳ ಮೇಲೂ ಅದರ ಭವಿಷ್ಯ ನಿಂತಿರುತ್ತದೆ. ಅದೇ ಕಾರಣಕ್ಕೆ ತುರ್ತಾಗಿ ಬರಬೇಕಾದ ಸಂದರ್ಭಕ್ಕೂ ಸಿನಿಮಾಗಳ ಮೇಲೆ ಕೊರೋನಾ ಎಂಬ ಮಹಾಮಾರಿ ಅಡ್ಡಾಗಿ ನಿಂತಿದೆ.

ಸದ್ಯಕ್ಕೆ ಸಭೆ, ಸಮಾರಂಭ ಬೇಡ. ಚಿತ್ರಮಂದಿರಗಳಲ್ಲಿ ಹಂಡ್ರೆಡ್‌ ಪರ್ಸೆಂಟ್‌ ಸೀಟು ಭರ್ತಿ ಬೇಡ ಅಂತೆನ್ನುವ ಸರ್ಕಾರಗಳಿಗೆ, ಲಕ್ಷಾಂತರ ಜನ ಸೇರಿಸಿ ಚುನಾವಣಾ ಪ್ರಚಾರ ಭಾಷಣ ಮಾಡುವ ಅಗತ್ಯ ಮಾತ್ರ ಬೇಕಿದೆ. ಇದನ್ನು ಜೋರಾಗಿ ಅಥವಾ ಗಟ್ಟಿಯಾಗಿ ಕೇಳುವ ಧೈರ್ಯವೇ ಯಾವ ರಂಗಕ್ಕೂ ಇಲ್ಲ. ಚಿತ್ರರಂಗಕ್ಕೆ ಮಾತ್ರವಲ್ಲ ಜನರಿಗೂ ಅದು ಬೇಡವಾಗಿದೆ. ಜನ ಇವತ್ತು ಕೇವಲ ವೀಕ್ಷಕರಾಗಿದ್ದಾರೆ. ಯಾರೋ ಮಾಡುವ ಪ್ರತಿಭಟನೆ, ಇಲ್ಲವೇ ಯಾರೋ ಮಾಡುವ ಸಿಡಿ ನೋಡಿಕೊಂಡು ವಿಕೃತ ಖುಷಿ ಪಡುವುದರಲ್ಲಿಯೇ ಬ್ಯುಸಿಯಾಗಿದ್ದಾರೆ. ಅದರಾಚೆ ವ್ಯವಸ್ಥೆ ಬಿಗಿ ಸರಳುಗಳು ತಮ್ಮನ್ನೇ ಹೇಗೆ ಬಂಧನಕ್ಕೆ ತಳ್ಳುತ್ತವೆ ಅನ್ನೋದನ್ನೇ ಮರೆತು ಬಿಟ್ಟಿದ್ದಾರೆ. ಇದರಿಂದ ಹೊರ ಬರುವುದಕ್ಕೆ ಕೊರೊನಾ ಹೋಗಬೇಕಾ? ಉದ್ಯಮ ಒಂದಾಗಿ ಈ ಪರಿಸ್ಥಿತಿಯನ್ನು ನಿಭಾಯಿಸಬೇಕಾ? ಉತ್ತರ ಕಂಡುಕೊಳ್ಳಬೇಕಿದೆ.

Categories
ಸಿನಿ ಸುದ್ದಿ

ಯುವರತ್ನ ಈಗ ನಿಮ್ಮ ಕೈಯಲ್ಲಿ! ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಂದೇ ಬಿಡ್ತು ಪವರ್‌ಸ್ಟಾರ್‌ ಚಿತ್ರ…

ಪುನೀತ್‌ ಅಭಿನಯದ “ಯುವರತ್ನ” ಚಿತ್ರ ಇದೀಗ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ನೋಡಬಹುದು! ಅರೇ, ಇದೇನಾಪ್ಪ ರಿಲೀಸ್‌ ಆಗಿ ವಾರವೂ ಕಳೆದಿಲ್ಲ, ಅದಾಗಲೇ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ “ಯುವರತ್ನ” ಚಿತ್ರ ಬಂತಾ ಎಂಬ ಪ್ರಶ್ನೆ ಎದುರಾದರೆ ಅಚ್ಚರಿ ಇಲ್ಲ. ಹೌದು, ಇದನ್ನು ಸ್ವತಃ ಹೊಂಬಾಳೆ ಫಿಲಂಸ್‌ ಘೋಷಿಸಿದೆ.

ಅಷ್ಟೇ ಅಲ್ಲ, ಅದಕ್ಕೊಂದು ಸ್ಪಷ್ಟನೆಯನ್ನೂ ನೀಡಿದೆ. “ಪ್ರಸ್ತುತ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು “ಯುವರತ್ನ” ಚಿತ್ರವನ್ನು ಚಿತ್ರಮಂದಿರಗಳಲ್ಲಿ ಹಾಗೂ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಲಭ್ಯವಿರುವಂತೆ ಮಾಡಲಾಗಿದೆ. ಚಿತ್ರಮಂದಿರ ಮೇಲಿರುವ ನಿರ್ಬಂಧನೆಗಳು, “ಯುವರತ್ನ” ಚಿತ್ರದ ಪೈರಸಿ ದಾಳಿ ಹಾಗೂ ಪ್ರೇಕ್ಷಕಕರ ಒತ್ತಾಯದ ಮೇರೆಗೆ ಅಮೇಜಾನ್ ಪ್ರೈಮ್‌ ವಿಡಿಯೋದಲ್ಲಿ “ಯುವರತ್ನ” ಚಿತ್ರವನ್ನು ಹಾಕಲಾಗಿದೆ. ನೀವು ತೋರಿದ ಅಭಿಮಾನ, ಬೆಂಬಲಕ್ಕೆ ನಾವು ಚಿರಋಣಿ. “ಯುವರತ್ನ” ಹೆಚ್ಚಿನ ಜನರಿಗೆ ದೇಶಾದ್ಯಂತ ಹಾಗೂ ವಿಶ್ವಾದ್ಯಂತ ತಲುಪಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇವೆʼ ಎಂದು ನಿರ್ಮಾಪಕ ವಿಜಯ್‌ ಕಿರಗಂದೂರು ಹೇಳಿದ್ದಾರೆ.


ಅದೇನೆ ಇರಲಿ, ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಒಂದೇ ವಾರಕ್ಕೆ ಸಿನಿಮಾ ಬಂದರೆ, ಚಿತ್ರಮಂದಿರಗಳ ಪಾಡೇನು? ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಸ್ಥಿತಿ ಹೇಗಾಗಬೇಡ? ಅಷ್ಟಕ್ಕೂ “ಯುವರತ್ನ” ಚಿತ್ರ ಚಿತ್ರಮಂದಿರಗಳಲ್ಲಿ ಉಳಿಯುವಂತಹ ಚಿತ್ರವೇ ಆಗಿದ್ದರೂ, ಈಗಲೇ ಯಾಕೆ ನಿರ್ಮಾಣ ಸಂಸ್ಥೆ ಅಮೇಜಾನ್‌ ಪ್ರೈಮ್‌ ವಿಡಿಯೋಗೆ ಸಿನಿಮಾ ಕೊಟ್ಟಿದೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳು ಮತ್ತು ಪ್ರೇಕ್ಷಕರಲ್ಲಿ ಗಿರಕಿ ಹೊಡೆಯುತ್ತಲೇ ಇದೆ. ಅದೇನೆ ಇದ್ದರೂ, ಸರ್ಕಾರದ ಶೇ.50ರಷ್ಟು ಆಸನ ಭರ್ತಿ ಅವಕಾಶದ ನಿರ್ಧಾರ ನಿಜಕ್ಕೂ ಸಿನಿಮಾ ಮಂದಿಯನ್ನು ಅತಂತ್ರ ಸ್ಥಿತಿಗೆ ತಳ್ಳಿರುವುದಂತೂ ನಿಜ. ಇಂತಹ ಪರಿಸ್ಥಿತಿಯಲ್ಲಿ ಯಾವ ಸ್ಟಾರ್‌ ಸಿನಿಮಾಗಳಿದ್ದರೂ, ಅದು ಸಮಸ್ಯೆ ಅಲ್ಲದೆ ಮತ್ತೇನು? ಈ ಪರಿಸ್ಥಿತಿ ಮುಂದೆಯೂ ಹೀಗೆ ಮುಂದುವರೆದರೆ, ಚಿತ್ರರಂಗದ ಗತಿ ಏನಾದೀತು? ಇವೆಲ್ಲವನ್ನೂ ನೆನಪಿಸಿಕೊಳ್ಳುವ ನಿರ್ಮಾಪಕರಂತೂ ಅಕ್ಷರಶಃ ಭಯದಲ್ಲಿದ್ದಾರೆ. ರಿಲೀಸ್‌ಗೆ ರೆಡಿಯಾಗಿದ್ದ ಚಿತ್ರಗಳೂ ಮುಂದಕ್ಕೆ ಹೋಗುತ್ತಿವೆ. ಇಂತಹ ವಾತಾವರಣದಲ್ಲಿ ಸಿನಿಮಾರಂಗ ಚೇತರಿಸಿಕೊಳ್ಳುತ್ತಿದ್ದರೂ, ಈಗ ಪುನಃ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿತ್ರಮಂದಿರಕ್ಕೆ ಶೇ.50ರಷ್ಟು ಭರ್ತಿ ಅವಕಾಶ ಕೊಟ್ಟ ನಿರ್ಧಾರದಿಂದ ಇನ್ನಷ್ಟು ಗೊಂದಲಕ್ಕೀಡಾಗಿರುವುದಂತೂ ಸತ್ಯ. ಮುಂದಿನ ದಿನಗಳಲ್ಲಿ ಕೊರೊನಾ ವಿರುದ್ಧ ಜಾಗೃತಗೊಂಡು, ಅಂತರ ಕಾಪಾಡಿಕೊಂಡು ಅದನ್ನು ತಡೆಗಟ್ಟದೇ ಹೋದರೆ, ಈಗಿರುವ ಸ್ಥಿತಿಗಿಂತಲೂ ಘೋರವಾದ ಸ್ಥಿತಿ ಎದುರಿಸಬೇಕಾದೀತು. ಒಂದು ವೇಳೆ ಕೊರೊನಾ ಅಲೆ ಜೋರಾಗಿಬಿಟ್ಟರಂತೂ, ಲಾಕ್‌ಡೌನ್‌ ಘೋಷಣೆ ಅನಿವಾರ್ಯವಾದೀತು. ಅಂತಹದ್ದಕ್ಕೆ ಅವಕಾಶ ಮಾಡಿಕೊಡದಿರುವುದೇ ಒಳಿತು. ಈ ಸಮಸ್ಯೆ ಆದಷ್ಟು ಬೇಗ ಮುಗಿದು, “ಆ ದಿನಗಳು” ಬೇಗ ಬರುವಂತಾಗಲಿ ಅನ್ನೋದೇ “ಸಿನಿಲಹರಿ” ಆಶಯ.

Categories
ಸಿನಿ ಸುದ್ದಿ

ಯುವರತ್ನ ವೀಕ್ಷಿಸಿದ ನಾಲ್ವರು ಶ್ರೀಗಳು; ಫೋನ್‌ನಲ್ಲಿ ಧನ್ಯವಾದ ತಿಳಿಸಿದ ಪುನೀತ್

‌ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ” ಚಿತ್ರ ನೋಡಿದವರೆಲ್ಲರೂ, ಒಂದೊಳ್ಳೆಯ ಸಂದೇಶವಿರುವ ಸಿನಿಮಾ ಎಂದಿದ್ದರು. ಸಾಕಷ್ಟು ಗಣ್ಯರು ಸಿನಿಮಾ ಕುರಿತು ಮಾತನಾಡಿದ್ದರು. ಈಗ ಸ್ವಾಮೀಜಿಗಳು ಕೂಡ “ಯುವರತ್ನ” ಸಿನಿಮಾ ನೋಡುವ ಮೂಲಕ ಇದೊಂದು ಸಂದೇಶ ಸಾರುವ ಸಿನಿಮಾ ಎಂದು ಹೇಳಿದ್ದಾರೆ. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕಾಗಿನೆಲೆಯ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಾಗೂ ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅವರು ಚಿತ್ರವನ್ನು ವೀಕ್ಷಿಸಿದ್ದಾರೆ.

“ಯುವರತ್ನ” ಸಿನಿಮಾವನ್ನು ನೋಡಲೇಬೇಕು ಎಂದು ಡಿವೈಎಸ್ಪಿ ನರಸಿಂಹ ತಾಮ್ರದ್ವಜ ಅವರ ಮನವಿ ಮೇರೆಗೆ ಶ್ರೀಗಳು ಸಿನಿಮಾ ನೋಡಿದ್ದಾರೆ.
“ಯುವರತ್ನ” ವೀಕ್ಷಿಸಿದ ಬಳಿಕ ವಚನಾನಂದ ಸ್ವಾಮೀಜಿ ಮಾತನಾಡಿ, “ರಾಜಕುಮಾರ” ಚಲನ ಚಿತ್ರ ನೋಡಿದ್ದ ನಮಗೆ, ಈ “ಯುವರತ್ನ”ದಲ್ಲೂ ಏನೋ ಹೊಸತು ಇರಲಿದೆ ಎನ್ನುವ ಆಸೆ ಗರಿಗೆದರಿತ್ತು. ಚಿತ್ರದ ಕಥಾಹಂದರ ನಮ್ಮನ್ನು ಸಿನಿಮಾದಲ್ಲಿ ಮುಳುಗುವಂತೆ ಮಾಡುವಲ್ಲಿ ಯಶಸ್ವಿಯಾಯಿತು. ಸಮಾಜದ ಮುಂಚೂಣಿಯ ಸ್ಥಾನದಲ್ಲಿರುವವರು ನೋಡಲೇಬೇಕಾದ ಸಿನಿಮಾ ಇದು. ಸರಕಾರಿ ಶಿಕ್ಷಣ ಕೇಂದ್ರಗಳು ಯಾಕಾಗಿ ಮುಚ್ಚುತ್ತಿವೆ. ಅದರ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವ ರೀತಿಯಲ್ಲಿ ಪ್ರಭಾವ ಬೀರುತ್ತವೆ.

ಯುವಕರು ದಾರಿ ತಪ್ಪುವ ಬಗೆ ಹೇಗೆ. ಹಾಗೂ ಮಕ್ಕಳ ಜೀವನದಲ್ಲಿ ಶಿಕ್ಷಕನ ಪಾತ್ರ ಏನು. ಈ ರೀತಿ ಹತ್ತು ಹಲವು ವಿಷಯಗಳನ್ನು ತಿಳಿಸುವ ಕಥಾ ಹಂದರ ಈ ಚಿತ್ರದಲ್ಲಿದೆ. ಸಮಾಜದ ಎಲ್ಲಾ ವರ್ಗದವರೂ ಕುಟುಂಬ ಸಮೇತರಾಗಿ ನೋಡಲೇ ಬೇಕಾದ ಚಲನಚಿತ್ರವಿದು. ನಮ್ಮ ಈಗಿನ ಬದುಕಿನ ಹಾಗೂ ಸಮಾಜದ ಪ್ರತಿಬಿಂಬ ಈ ಚಲನಚಿತ್ರದಲ್ಲಿದೆ.

ಇನ್ನು, ಜೀವನದಲ್ಲಿ ಮೊದಲ ಬಾರಿಗೆ ಮೂವರು ಪ್ರಮುಖ ಸ್ವಾಮೀಜಿಗಳೊಂದಿಗೆ ಚಿತ್ರ ನೋಡುವ ಭಾಗ್ಯ ನಮ್ಮದಾಗಿತ್ತು. ಅದಲ್ಲದೆ ಸ್ವತಃ ಪುನೀತ್‌ ರಾಜ್‌ಕುಮಾರ್‌ ಅವರು ನಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಚಲನಚಿತ್ರ ವೀಕ್ಷಿಸಿದ್ದಕ್ಕೆ ಧನ್ಯವಾದ ಹೇಳಿದ್ದು ಕೂಡ ವಿಶೇಷವಾಗಿತ್ತುʼ ಎಂದಿರುವ ಅವರು, ಪ್ರತಿಯೊಬ್ಬರೂ ನೊಡಲೇಬೇಕಾದ ಸಿನಿಮಾ ಇದಾಗಿದ್ದು, ಮಾಸ್ಕ್‌ ಧರಿಸಿ, ಸರ್ಕಾರದ ನಿಯಮ ಪಾಲಿಸಿ ಚಿತ್ರ ವೀಕ್ಷಿಸಬೇಕು ಎಂದು ವಚನಾನಂದ ಸ್ವಾಮಿ ಹೇಳಿದ್ದಾರೆ.

Categories
ಸಿನಿ ಸುದ್ದಿ

ಅನಾರೋಗ್ಯ ಮಗುವಿಗೆ ನೆರವಾದ ಶಿವಸೈನ್ಯ! ಫ್ಯಾನ್ಸ್‌ ಮಾಡಿದ ಕೆಲಸಕ್ಕೆ ಶಿವಣ್ಣ ಹೆಮ್ಮೆ

ಶಿವರಾಜಕುಮಾರ್‌ ಹೇಗೋ ಅವರ ಅಭಿಮಾನಿಗಳು ಕೂಡ ಹಾಗೆಯೇ. ಹೌದು, ಶಿವರಾಜಕುಮಾರ್‌ ಈಗಾಗಲೇ ಹಲವಾರು ಸಾಮಾಜಿಕ ಕೆಲಸ ಮಾಡಿದ್ದಾರೆ. ಅದೆಷ್ಟೋ ನೊಂದ ಜೀವಗಳಿಗೂ ಸಹಾಯಕ್ಕೆ ನಿಂತಿದ್ದಾರೆ. ಅವರಂತೆಯೇ, ಅವರ ಅಭಿಮಾನಿಗಳೂ ಸಹ ಹಲವು ಸಾಮಾಜಿಕ ಕಾರ್ಯ ಮಾಡುತ್ತಲೇ ಇದ್ದಾರೆ. ಈಗ ಶಿವರಾಜಕುಮಾರ್‌ ಅವರ ಶಿವಸೈನ್ಯ ಮತ್ತು ಶಿವು ಅಡ್ಡ ಬನಶಂಕರಿ ಫ್ಯಾನ್ಸ್‌ ಸೇರಿ ಖಾಯಿಲೆಯಿಂದ ಬಳಲುತ್ತಿದ್ದ ಮಗುವೊಂದರ ಪೋಷಕರಿಗೆ ಧನಸಹಾಯ ಮಾಡಿದ್ದಾರೆ.


ಇಷ್ಟಕ್ಕೂ ಆ ಅಭಿಮಾನಿಗಳು ಸಹಾಯ ಮಾಡಿದ್ದು, ಇತ್ತೀಚೆಗೆ ಶಿವಣ್ಣ ಪ್ರೀಮಿಯರ್‌ ಕ್ರಿಕೆಟ್‌ ಲೀಗ್‌ನಿಂದ ಸಂಗ್ರಹಿಸಿದ ಹಣ ಎಂಬುದು ವಿಶೇಷ. ಶಿವರಾಜಕುಮಾರ್‌ ಅಭಿಮಾನಿಗಳು, ಇತ್ತೀಚೆಗೆ ಶಿವರಾಜಕುಮಾರ್‌ ಅವರ ಮನೆಗೆ ತೆರಳಿ, ಶಿವರಾಜಕುಮಾರ್‌ ಅವರಿಂದಲೇ ಆ ಮಗುವಿನ ತಾಯಿಗೆ ಧನ ಸಹಾಯ ಮಾಡಿದೆ.

ಶಿವಣ್ಣ ಪ್ರೀಮಿಯರ್ ಕ್ರಿಕೆಟ್ ಲೀಗ್ (SPL) ನಿಂದ ಸಂಗ್ರಹಿಸಿದ ಹಣವನ್ನು ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ನೀಡಿದ್ದು, ಖುಷಿ ಇದೆ ಎಂದು ಶಿವಸೈನ್ಯ ಮತ್ತು ಶಿವು ಅಡ್ಡ ಬನಶಂಕರಿ ಅಭಿಮಾನಿಗಳು ಹೇಳಿಕೊಂಡಿದ್ದಾರೆ. ಶಿವರಾಜಕುಮಾರ್‌ ಅವರೂ ಸಹ ಅಭಿಮಾನಿಗಳ ಈ ಕೆಲಸವನ್ನು ಮೆಚ್ಚಿದ್ದಾರೆ.

Categories
ಸಿನಿ ಸುದ್ದಿ

ಸಿಗದ ಮೋಕ್ಷ! ಕೊರೊನಾ ಹಾವಳಿ; ಹೊಸಬರ ಸಸ್ಪೆನ್ಸ್ ಥ್ರಿಲ್ಲರ್ ಬಿಡುಗಡೆ ಸದ್ಯಕ್ಕಿಲ್ಲ…

ಕನ್ನಡದಲ್ಲಿ ಹೊಸಬರೇ ಸೇರಿ ಮಾಡಿದ “ಮೋಕ್ಷ” ಚಿತ್ರ ಈಗಾಗಲೇ ಬಿಡುಗಡೆಯ ದಿನವನ್ನು ಘೋಷಿಸಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಏಪ್ರಿಲ್‌ ೧೬ರಂದು ರಾಜ್ಯಾದ್ಯಂತ ಬಿಡುಗಡೆ ಕಾಣಬೇಕಿತ್ತು. ಆದರೆ, ಕೊರೊನಾ ಭಯ ಹೆಚ್ಚಾಗಿದ್ದರಿಂದ ಚಿತ್ರತಂಡ, “ಮೋಕ್ಷ” ಚಿತ್ರದ ಬಿಡುಗಡೆಯನ್ನು ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಿದೆ.

ಹೌದು, ಈಗಾಗಲೇ ಟ್ರೇಲರ್ ಮೂಲಕ ಜೋರು ಸದ್ದು ಮಾಡಿರುವ ಸಸ್ಪೆನ್ಸ್ ಥ್ರಿಲ್ಲರ್ “ಮೋಕ್ಷ” ಚಿತ್ರ ಏಪ್ರಿಲ್ 16 ರಂದು ಬಿಡುಗಡೆ ಮಾಡಲು ನಿರ್ದೇಶಕ ಸಮರ್ಥ್‌ ನಾಯಕ್‌ ಅವರು ತಯಾರಾಗಿದ್ದರು. ರಾಜ್ಯದಲ್ಲಿ ಪುನಃ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ತೋರಿಸುತ್ತಿರುವುದರಿಂದ ಚಿತ್ರವನ್ನು ಸ್ವಲ್ಪ ದಿನಗಳ ಕಾಲ ಕಾದು ಆ ನಂತರ ಬಿಡುಗಡೆ ಮಾಡಲು ಯೋಚಿಸಿದ್ದಾಗಿ ಹೇಳಿದ್ದಾರೆ ನಿರ್ಮಾಪಕ ಕಮ್ ನಿರ್ದೇಶಕ ಸಮರ್ಥ್ ನಾಯಕ್.‌ ಚಿತ್ರದ ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ.

ಹಿನ್ನೆಲೆ ಸಂಗೀತ ಕಿಶನ್ ಮೋಹನ್‌ ಮಾಡಿದ್ದಾರೆ. ಗುರುಪ್ರಶಾಂತ್ ರೈ, ಜೋಮ್ ಜೋಸಫ್, ಕಿರಣ್ ಹಂಪಾಪುರ ಛಾಯಾಗ್ರಹಣ ಮಾಡಿದರೆ, ವರುಣ್ ಕುಮಾರ್ ಅವರ ಸಂಕಲನವಿದೆ. ಚಿತ್ರದಲ್ಲಿ ಮೋಹನ್ ಧನರಾಜ್ ಮತ್ತು ಆರಾಧ್ಯ ಲಕ್ಷ್ಮಣ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಉಳಿದಂತೆ ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ಇತರರು ಇದ್ದಾರೆ.

Categories
ಸಿನಿ ಸುದ್ದಿ

ಮದಗಜ ಶೂಟಿಂಗ್‌ ವೇಳೆ ಅವಘಡ: ಶ್ರೀಮುರಳಿ ಕಾಲಿಗೆ ಪೆಟ್ಟು- ಅಪಾಯದಿಂದ ಪಾರಾದ ರೋರಿಂಗ್‌ ಸ್ಟಾರ್

‌ಸಿನಿಮಾ ಅಂದರೆ ಬೆಳಕಲ್ಲಿ ಚಿತ್ರೀಕರಿಸಿ, ಕತ್ತಲಲ್ಲಿ ತೋರಿಸುವ ಪ್ರಕ್ರಿಯೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇಲ್ಲಿ ನಗುವಿನಷ್ಟೇ ನೋವು ಇದೆ. ಗೆಲುವಿನಷ್ಟೇ ಸೋಲು ಇದೆ. ಇಲ್ಲೀಗ ಹೇಳಹೊರಟಿರುವ ವಿಷಯ, ಹಲವು ನಟರು ಸಿನಿಮಾಗಳಲ್ಲಿ ಸಾಕಷ್ಟು ರಿಸ್ಕ್‌ ತೆಗೆದುಕೊಳ್ಳಲೇಬೇಕು. ಒಂದಷ್ಟು ಎಚ್ಚರ ತಪ್ಪಿದರೂ ಇಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಇತ್ತೀಚೆಗಷ್ಟೇ, ನಟ ಉಪೇಂದ್ರ ಅವರು “ಕಬ್ಜ” ಚಿತ್ರದ ಸಾಹಸ ಚಿತ್ರೀಕರಣದಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಫೈಟ್‌ ಸೀನ್‌ ವೇಳೆ, ಖಳನಾಯಕರ ಜೊತೆ ಹೊಡೆದಾಡುವಾಗ, ಆಕಸ್ಮಿಕವಾಗಿ ತಲೆಗೆ ಪೆಟ್ಟು ಬಿದ್ದಿತ್ತು. ಕ್ಷಣಾರ್ಧದಲ್ಲೇ ಅವರು ಚೇತರಿಸಿಕೊಂಡಿದ್ದರು. ಈಗ ನಟ ಶ್ರೀಮುರಳಿ ಅವರೂ ಕೂಡ ಸ್ಟಂಟ್‌ ಮಾಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಹೌದು, “ಮದಗಜ” ಚಿತ್ರದ ಚಿತ್ರೀಕರಣ ವೇಳೆ ಈ ಅವಘಡ ನಡೆದಿದೆ. ಕಂಠೀರವ ಸ್ಟುಡಿಯೋದಲ್ಲಿ “ಮದಗಜ” ಚಿತ್ರದ ಚಿತ್ರೀಕರಣ ಕಳೆದ ಎರಡು ದಿನಗಳಿಂದಲೂ ಜೋರಾಗಿಯೇ ನಡೆಯುತ್ತಿತ್ತು. ನಿರ್ದೇಶಕ ಮಹೇಶ್‌ ಕುಮಾರ್‌ ಅವರು, ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದರು. ಸಾಹಸ ನಿರ್ದೇಶಕ ಅರ್ಜುನ್ ಅವರು ಸಾಹಸ ನಿರ್ದೇಶನ ಮಾಡುತ್ತಿದ್ದರು. ರಾತ್ರಿ ವೇಳೆ ಚಿತ್ರೀಕರಣವಾಗಿದ್ದರಿಂದ ಮೊದಲ ದಿನದ ಚಿತ್ರೀಕರಣವಂತೂ ಜಾತ್ರೆಯೇ ಆಗಿತ್ತು. ಅಷ್ಟೊಂದು ಜೂನಿಯರ್‌ ಕಲಾವಿದರೊಂದಿಗೆ ಶ್ರೀಮುರಳಿ ಅವರು ಹೊಡೆದಾಡಿದ್ದರು.

ಎರಡನೇ ದಿನದ ಚಿತ್ರೀಕರಣ ಕೂಡ ಬಿರುಸಾಗಿಯೇ ನಡೆದಿತ್ತು. ಈ ವೇಳೆ ಅವರ ಕಾಲಿಗೆ ಪೆಟ್ಟು ಬಿದ್ದಿದೆ.‌ ರಾತ್ರಿಯೇ ಈ ಘಟನೆ ನಡೆದಿದ್ದರಿಂದ ತಕ್ಷಣವೇ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಶ್ರೀಮುರಳಿ ಅವರಿಗೆ ವೈದ್ಯರು ಸುಮಾರು ಹದಿನೈದು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ. ಸುಮಾರು 30 ಜನ ಖಳರೊಂದಿಗೆ ಫೈಟ್‌ ಮಾಡುವಾಗ ಈ ಘಟನೆ ಸಂಭವಿಸಿದೆ. ಫೈಟರ್‌ ಜಂಪ್‌ ಹೈಟ್‌ ಮಾಡಿದ್ದರಿಂದ ಮಂಡಿಯ ಕೆಳಗೆ ಜೋರಾಗಿ ಪೆಟ್ಟು ಬಿದ್ದಿದೆ.

ಈ ಘಟನೆ ನಂತರ ನಿರ್ದೇಶ ಮಹೇಶ್‌ ಕುಮಾರ್‌ ಅವರು, ತಕ್ಷಣವೇ ಶೂಟಿಂಗ್‌ ಪ್ಯಾಕಪ್‌ ಮಾಡಿದ್ದಾರೆ. ಅದೇನೆ ಇರಲಿ, ಶ್ರೀಮುರಳಿ ಅವರು, ತುಂಬಾನೇ ಶಿಸ್ತಿನ ನಟ, ಅಷ್ಟೇ ಶ್ರದ್ಧೆಯಿಂದಲೇ ಕೆಲಸ ಮಾಡುವವರು. ಆದಷ್ಟು ಬೇಗ ಚೇತರಿಸಿಕೊಂಡು ಪುನಃ “ಮದಗಜ” ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಾಗಲಿ ಎಂಬುದೇ “ಸಿನಿಲಹರಿ” ಆಶಯ.

Categories
ಸಿನಿ ಸುದ್ದಿ

ಕೊರೊನಾ ಲಸಿಕೆ ಹಾಕಿಸಿಕೊಂಡ ಪವರ್‌ಸ್ಟಾರ್;‌ ಕೊರೊನೊ ವಿರುದ್ಧ ಎಲ್ಲರೂ ಹೋರಾಡಿ, ಜಾಗೃತರಾಗಿರಿ ಎಂಬ ಸಂದೇಶ ಕೊಟ್ಟ ಪುನೀತ್

‌ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರೀಗ “ಯುವರತ್ನ” ಚಿತ್ರದ ಯಶಸ್ಸಿನಲ್ಲಿದ್ದಾರೆ. ಆ ಸಂಭ್ರಮದಲ್ಲಿರುವಾಗಲೇ ಅವರೀಗ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೌದು, ಸರ್ಕಾರ ೪೫ ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಹೇಳಿದ ಬೆನ್ನಲ್ಲೇ ಹಲವು ಗಣ್ಯರು ಕೂಡ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ವಿರುದ್ಧ ಎಲ್ಲರೂ ಜಾಗೃತರಾಗಿ ಹೋರಾಡಬೇಕು ಎಂದು ಮನವಿ ಮಾಡಿದ್ದರು. ಈಗಾಗಲೇ ಹಲವು ಸಿನಿಮಾ ನಿರ್ದೇಶಕರು, ನಿರ್ಮಾಪಕರು ಸಹ ಲಸಿಕೆ ಹಾಕಿಸಿಕೊಂಡು ಜಾಗೃತಿ ಮೂಡಿಸಿಕೊಳ್ಳುತ್ತಿದ್ದಾರೆ. ಈಗ ಪುನೀತ್‌ ರಾಜಕುಮಾರ್‌ ಅವರೂ ಕೂಡ ಸದಾಶಿವನಗರದ ಪಿಎಚ್‌ಸಿಯಲ್ಲಿ (ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ) ಕೊರೊನೊ ಲಸಿಕೆ ಹಾಕಿಸಿಕೊಂಡಿದ್ದಾರೆ.

ಈ ಮೂಲಕ ೪೫ ವರ್ಷ ಮೇಲ್ಪಟ್ಟವರೆಲ್ಲರೂ ಕೊರೊನೊ ಲಸಿಕೆ ಹಾಕಿಸಿಕೊಂಡು ಜಾಗೃತರಾಗಿರಿ ಎಂದು ಪುನೀತ್‌ ಮನವಿ ಮಾಡಿದ್ದಾರೆ.
ಪುನೀತ್‌ ಅಭಿನಯದ “ಯುವರತ್ನ” ಚಿತ್ರ ಸದ್ಯ ಹೌಸ್‌ಫುಲ್‌ ಪ್ರದರ್ಶನ ನಡೆಯುತ್ತಿದೆ. ಏಪ್ರಿಲ್‌ ೧ರಂದು ತೆರೆಕಂಡ ಸಿನಿಮಾಗೆ ಮರುದಿನವೇ ಶೇ.೫೦ರಷ್ಟು ಭರ್ತಿಗೆ ಸರ್ಕಾರ ಆದೇಶಿಸಿತ್ತು. ಇದನ್ನು ವಿರೋಧಿಸಿದ ಪುನೀತ್‌, ಶೇ.೧೦೦ರಷ್ಟು ಭರ್ತಿಗೆ ಮನವಿ ಮಾಡಿಕೊಂಡಿದ್ದರು. ಸಿಎಂ ಅವರನ್ನು ಭೇಟಿ ಮಾಡಿ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಕೂಡ ಮುಂಜಾಗ್ರತೆ ವಹಿಸಿಕೊಂಡೇ ಬರುತ್ತಿದ್ದಾರೆ.

ಚಿತ್ರಮಂದಿರಗಳಲ್ಲೂ ಕೂಡ ಎಚ್ಚರಿಕೆ ವಹಿಸಲಾಗಿದೆ. ಒಳ್ಳೆಯ ಸಿನಿಮಾ ನೋಡಲು ಬರುವ ಪ್ರೇಕ್ಷಕರಿಗೆ ಯಾವುದೇ ಸಮಸ್ಯೆ ಇಲ್ಲದಂತೆ ಚಿತ್ರಮಂದಿರಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ದಯವಿಟ್ಟು ಅವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಸರ್ಕಾರ, ಪುನಃ ಶೇ.೧೦೦ರಷ್ಟು ಭರ್ತಿಗೆ ಅವಕಾಶ ಕಲ್ಪಿಸಿತ್ತು.

Categories
ಸಿನಿ ಸುದ್ದಿ

ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಅವರ ತಾಯಿ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ ಪ್ರತಿಮಾ ದೇವಿ (88) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡದ ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್ ಬಾಬು, ನಟಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರ ತಾಯಿಯಾಗಿರುವ ಪ್ರತಿಮಾ ದೇವಿ ಅವರು, 1947ರಲ್ಲಿ “ಕೃಷ್ಣಲೀಲಾ” ಚಿತ್ರದಲ್ಲಿ ನಟಿಸುವ ಮೂಲಕ ವೃತ್ತಿ ಜೀವನ ಶುರುಮಾಡಿದರು. 1951ರಲ್ಲಿ ತೆರೆಕಂಡ ‘ಜಗನ್ಮೋಹಿನಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಜನಪ್ರಿಯಗೊಂಡರು. ಈ ಚಿತ್ರ ಕನ್ನಡದಲ್ಲಿ ಮೊದಲ ಶತದಿನ ಪೂರೈಸಿದ ಸಿನಿಮಾ ಎಂಬ ದಾಖಲೆ ಪಡೆದಿದೆ. ಡಾ. ರಾಜ್ ಕುಮಾರ್, ಡಾ. ವಿಷ್ಣುವರ್ಧನ್ ಅವರ ಸಿನಿಮಾಗಳಲ್ಲಿ ನಟಿಸಿದ್ದರು.

“ಶ್ರೀ ಶ್ರೀನಿವಾಸ ಕಲ್ಯಾಣ”, “ಚಂಚಲ ಕುಮಾರಿ”, “ಮುಟ್ಟಿದ್ದೆಲ್ಲಾ ಚಿನ್ನ”, “ಶಿವಶರಣೇ ನಂಬಿಯಕ್ಕ”, “ಮಂಗಳ ಸೂತ್ರ”, “ಧರ್ಮಸ್ಥಳ ಮಹಾತ್ಮೆ”, “ಪಾತಳಾ ಮೋಹಿನಿ”, “ನಾಗರಹಾವು”, “ರಾಮ ಶಾಮಾ ಭಾಮಾ” ಸೇರಿದಂತೆ ಸುಮಾರು 60 ಚಿತ್ರಗಳಲ್ಲಿ ಪ್ರತಿಮಾ ದೇವಿ ನಟಿಸಿದ್ದಾರೆ. ಮಹಾತ್ಮೆ ಪಿಕ್ಚರ್ಸ್ ಸಂಸ್ಥೆಯ ಸ್ಥಾಪಕರಾದ ಶಂಕರ್ ಸಿಂಗ್ ಅವರನ್ನು ವಿವಾಹವಾಗಿದ್ದ ಪ್ರತಿಮಾ ದೇವಿ ಅವರಿಗೆ ಎಸ್.‌ವಿ. ರಾಜೇಂದ್ರ ಸಿಂಗ್ ಬಾಬು, ಸಂಗ್ರಾಮ್‌ ಸಿಂಗ್‌, ಜಯರಾಜ್‌ ಸಿಂಗ್‌, ವಿಜಯಲಕ್ಷ್ಮಿ ಸಿಂಗ್ ಮಕ್ಕಳು.
ಸಂತಾಪ: ಮೃತರ ಸುದ್ದಿ ತಿಳಿದು ನಟಿ, ಸಂಸದೆ, ಸುಮಲತಾ ಅಂಬರೀಶ್‌, ಪುನೀತ್‌ ರಾಜಕುಮಾರ್‌ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು, ನಿರ್ಮಾಪಕ, ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್‌ ಅವರು ಕೂಡ “ಕನ್ನಡ ಚಿತ್ರರಂಗಕ್ಕೆ ‌ಕಲಾವಿದೆಯಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದ, ಖ್ಯಾತ ನಟಿ ಪ್ರತಿಮಾದೇವಿ ಅವರ ಪತಿ ಶಂಕರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ವರ್ಷವಿದು. ಇದೇ ಸಮಯದಲ್ಲಿ ಅವರು ನಿಧನರಾಗಿದ್ದು, ದುಖದ ಸಂಗತಿ.‌ ಕನ್ನಡ ಚಿತ್ರರಂಗಕ್ಕೆ ಇವರ ಕುಟುಂಬ ನೀಡಿರುವ ಕೊಡುಗೆ ಅಪಾರ. ಕನ್ನಡ ‌ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟಿ, ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಸೇರಿದಂತೆ ನಾಲ್ಕು ಮಕ್ಕಳನ್ನು ಪ್ರತಿಮಾ ದೇವಿ ಅವರು ಅಗಲಿದ್ದಾರೆ. ‌ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ‌ ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಹೇಳಿದ್ದಾರೆ.

error: Content is protected !!