Categories
ಸಿನಿ ಸುದ್ದಿ

ಕಣ್ಣೇ ಅಧಿರಿಂದಿ ಅಂತ ಹಾಡಿದ ಗಾಯಕಿ ಮಂಗ್ಲಿ ಕನ್ನಡಕ್ಕೆ ಬಂದ್ರು ; ಕರಿಯ ಐ ಲವ್‌ ಯು ಸಿನಿಮಾಗೆ ಧ್ವನಿ ಕೊಟ್ರು…

“ಕಣ್ಣೇ ಅಧಿರಿಂದಿ…
ಬಹುಶಃ ಈ ಹಾಡು ಕೇಳದವರಿಲ್ಲ. ಇಂಥದ್ದೊಂದು ಸೂಪರ್‌ ಹಿಟ್‌ ಹಾಡಿಗೆ ಧ್ವನಿಯಾಗಿದ್ದು ಗಾಯಕಿ ಮಂಗ್ಲಿ. ದರ್ಶನ್‌ ಅಭಿನಯದ “ರಾಬರ್ಟ್”‌ ಚಿತ್ರದ ತೆಲುವು ಅವರತಣಿಕೆಗೆ “ಕಣ್ಣೇ ಅಧಿರಿಂದಿ..” ಹಾಡು ಹಾಡಿ ಕನ್ನಡಿಗರ ಮನವನ್ನೂ ಗೆದ್ದಿದ್ದ ಮಂಗ್ಲಿ, ಕನ್ನಡದಲ್ಲಿ ಹಾಡೋದು ಯಾವಾಗ ಎಂಬ ಪ್ರಶ್ನೆ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಮಂಗ್ಲಿ ಒಳ್ಳೆಯ ಗಾಯಕಿ. ಇವರ ಈ ಗಾಯನದ ಹಿಂದೆ ದೊಡ್ಡ ಕಥೆಯೇ ಇದೆ. ತಮ್ಮ ಕಂಠದಿಂದಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ಮಂಗ್ಲಿ, “ರಾಬರ್ಟ್” ಚಿತ್ರಕ್ಕೆ ಹಾಡಿದ ಆ ಹಾಡು, ನಿಜಕ್ಕೂ ದೊಡ್ಡ ಹೆಸರು ತಂದುಕೊಟ್ಟಿದೆ. ಇನ್ನು, “‘ರಾಬರ್ಟ್” ಸಿನಿಮಾದ ತೆಲುಗು ವರ್ಷನ್ ಪ್ರೀ ರಿಲೀಸ್ ಕಾರ್ಯಕ್ರಮದಲ್ಲೂ ಮಂಗ್ಲಿ ವೇದಿಕೆಯಲ್ಲಿ “ಕಣ್ಣೇ ಅಧಿರಿಂದಿ” ಹಾಡು ಹಾಡುವ ಮೂಲಕ ಮೆಚ್ಚುಗೆ ಪಡೆದಿದ್ದರು.

ಈಗಲೂ ಈ ಹಾಡು ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಇಂಥದ್ದೊಂದು ಹಾಡು ಹಾಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರವಾಗಿರುವ ಮಂಗ್ಲಿ, ಕನ್ನಡದಲ್ಲೊಂದು ಹಾಡು ಹಾಡಿದ್ದಾರೆ. “ಕರಿಯಾ ಐ ಲವ್ ಯು” ಎಂಬ ಚಿತ್ರದ ಹಾಡಿಗೆ ಧ್ವನಿಯಾಗಿದ್ದಾರೆ ಕೂಡ.

ಅಂದಹಾಗೆ, ಚಿತ್ರದ “ಬಿಟ್ ಬಂದ್ ಹಳ್ಳಿಯಿಂದ ಬಿಟ್ಯಾಕ್ ಬಂದೆ…” ಎನ್ನುವ ಹಾಡನ್ನು ಹಾಡಿದ್ದಾರೆ. ಲೋಕೇಶ್‌ ಸಂಗೀತ ನೀಡಿರುವ ಈ ಹಾಡಿಗೆ ಗಾಯಕ ನವೀನ್ ಸಜ್ಜು ಕೂಡ ಸಾಥ್‌ ನೀಡಿದ್ದಾರೆ. ಚಿತ್ರದ ನಾಯಕ ಮಂಜುನಾಥ್‌, ಈ ಗಾಯಕಿಯನ್ನು ಕನ್ನಡಕ್ಕೆ ಕರೆತಂದಿದ್ದಾರೆ. ಈಗಾಗಲೇ ಸಾಂಗ್‌ ರೆಕಾರ್ಡಿಂಗ್ ಮುಗಿದಿದೆ. ಹಾಡು ಕೂಡ ಚೆನ್ನಾಗಿ ಮೂಡಿಬಂದಿರುವ ಖುಷಿ ಚಿತ್ರತಂಡಕ್ಕಿದೆ.

Categories
ಸಿನಿ ಸುದ್ದಿ

ನಟಿ ಎಸ್ಟರ್‌ ನರೋನ್ಹಾ ಈಗ ಸಂಗೀತ ನಿರ್ದೇಶಕಿ! ದಿ ವೇಕೆಂಟ್‌ ಹೌಸ್‌ ಮೂಲಕ ಡೈರೆಕ್ಟರ್‌ ಎನಿಸಿಕೊಂಡ ಶ್ರೇಯಸ್‌ ಚಿಂಗ

ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಎಂಟ್ರಿಯಾದರೆ ಮುಗೀತು. ಒಂದು ವಿಭಾಗದಲ್ಲಿ ಕಲಿತವರು ಮೆಲ್ಲನೆ ಒಂದೊಂದೇ ವಿಭಾಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇಲೇಳಬೇಕು, ಗುರುತಿಸಿಕೊಂಡು ಏನಾದರೊಂದು ಸಾಧನೆ ಮಾಡಬೇಕು ಅನ್ನುವ ಛಲ ಬಂದೇ ಬರುತ್ತೆ. ಈ ನಿಟ್ಟಿನಲ್ಲಿ ಯುವ ನಟ ಶ್ರೇಯಸ್‌ ಚಿಂಗ ಕೂಡ ಸೇರಿದ್ದಾರೆ.

ಇವರೊಬ್ಬರೇ ಅಲ್ಲ, ಇವರೊಂದಿಗೆ ನಟಿ ಎಸ್ಟರ್‌ ನರೋನ್ಹಾ ಕೂಡ ಸೇರಿದ್ದಾರೆ ಅನ್ನೋದು ಈ ಹೊತ್ತಿನ ವಿಶೇಷ. ಹೌದು, ನಟನಾಗಿ ಮೂರು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಶ್ರೇಯಸ್‌ ಚಿಂಗ ಈಗ ಮೊದಲ ಬಾರಿಗೆ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ನಟಿಯಾಗಿದ್ದ ಎಸ್ಟರ್‌ ನರೋನ್ಹಾ ಅವರು ಕೂಡ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಅಂದಹಾಗೆ, ಶ್ರೇಯಸ್‌ ಚಿಂಗ ನಿರ್ದೇಶನದ ಚಿತ್ರಕ್ಕೆ “ದಿ ವೇಕೆಂಟ್‌ ಹೌಸ್‌” ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರ ಕನ್ನಡದ ಜೊತೆಯಲ್ಲಿ ಕೊಂಕಣಿ ಭಾಷೆಯಲ್ಲೂ ತಯಾರಾಗುತ್ತಿದೆ ಎಂಬುದು ವಿಶೇಷ.

ಚಿತ್ರವನ್ನು ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್‌ ಮೂಲಕ ಜಾನೆಟ್‌ ನೊರೊನ್ಹಾ ನಿರ್ಮಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಏಪ್ರಿಲ್‌ ೫ರಂದು ಚಿತ್ರದ ಫಸ್ಟ್‌ಲುಕ್‌ ರಿಲೀಸ್‌ ಆಗಿದೆ.
ನಿರ್ದೇಶಕ ಶ್ರೇಯಸ್‌ ಚಿಂಗ ಅವರು ನಟನೆ ಜೊತೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಅವರು ಸುಮಾರು 150೦ಕ್ಕೂ ಹೆಚ್ಚು ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಅವರಿಗೆ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಂಬಿಕೆ ಇದೆ. ಇನ್ನು ನಟಿ ಎಸ್ಟರ್‌ ನರೋನ್ಹಾ ಅವರಿಗೂ ಇದು ಮೊದಲ ಸಂಗೀತ ನಿರ್ದೇಶನದ ಅನುಭವ. ಅವರಿಗೂ ಒಳ್ಳೆಯ ಕಥೆ ಇರುವ ಚಿತ್ರಕ್ಕೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ.

ನಿರ್ಮಾಪಕ ಜಾನೆಟ್‌ ನೊರೊನ್ಹಾ ಅವರಿಗೆ ಇದು ಮೂರನೇ ನಿರ್ಮಾಣದ ಸಿನಿಮಾ. ಈ ಹಿಂದೆ ಅವರು “ಸೋಫಿಯಾ ಎ ಡ್ರೀಮ್‌ ಗರ್ಲ್”‌ ಎಂಬ ಸಿನಿಮಾ ಮಾಡಿದ್ದರು. ಇದಕ್ಕೆ 2018ರಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ನಂತರ ಜಾಕಿಶ್ರಾಫ್ ಮತ್ತು ಎಸ್ಟರ್ ನೊರೊನ್ಹಾ ನಟಿಸಿದ “ಕಾಂತಾರ್” ೆಂಬ ಕೊಂಕಣಿ ಸಿನಿಮಾ ಕೂಡ ನಿರ್ಮಿಸಿದ್ದರು. ವಿದೇಶದಲ್ಲಿ ಈ ಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಕ್ಕಿತ್ತು. ಈಗ “ದಿ ವೇಕೆಂಟ್‌ ಹೌಸ್‌” ಸಿನಿಮಾ ಮಾಡಿದ್ದಾರೆ. ಚಿತ್ರಕ್ಕೆ ಎಸ್ಟರ್‌ ನರೋನ್ಹಾ ಅವರು ಸಂಗೀತದ ಜೊತೆ ಸಾಹಿತ್ಯ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ನಿರ್ದೇಶಕರೂ ಇಲ್ಲಿ ನಿರ್ದೇಶನದ ಜೊತೆ ಮಾತುಗಳನ್ನು ಪೋಣಿಸಿದ್ದಾರೆ. ವಿಜಯ್‌ ರಾಜ್‌ ಸಂಕಲನವಿದೆ. ಸದ್ಯ ಮೊದಲ ಪೋಸ್ಟರ್‌ ರಿಲೀಸ್‌ ಆಗಿದ್ದು, ಇಷ್ಟರಲ್ಲೇ ಸಿನಿಮಾದ ಪೂರ್ಣ ಮಾಹಿತಿ ಕೊಡುವುದಾಗಿ ನಿರ್ದೇಶಕ ಶ್ರೇಯಸ್‌ ಚಿಂಗ ಹೇಳಿದ್ದಾರೆ.

Categories
ಸಿನಿ ಸುದ್ದಿ

ಏಪ್ರಿಲ್‌ 5ರಿಂದ ಮದಗಜ ಚಿತ್ರೀಕರಣ ಶುರು ನಾಲ್ಕನೇ ಹಂತದ ಶೂಟಿಂಗ್‌ಗೆ ಟೀಮ್‌ ರೆಡಿ

ಶ್ರೀಮುರಳಿ ಅಭಿನಯದ “ಮದಗಜ” ಏಪ್ರಿಲ್‌ 5ರಿಂದ ಶುರುವಾಗಲಿದೆ. ಉಮಾಪತಿ ನಿರ್ಮಾಣದ ಈ ಚಿತ್ರದ ಚಿತ್ರೀಕರಣದ ನಾಲ್ಕನೇ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ದೊಡ್ಡ ಮಟ್ಟದ ಬಜೆಟ್‌ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಬೃಹತ್ ನಾಲ್ಕು ಸೆಟ್‌ಗಳಲ್ಲಿ “ಫೈಟ್ಸ್” ಮತ್ತು “ಇಂಟ್ರೊಡಕ್ಷನ್ ಸಾಂಗ್” ಶೂಟಿಂಗ್‌ ನಿರಂತರವಾಗಿ ನಡೆಯಲಿದೆ.

ಚಿತ್ರೀಕರಣ ಸತತವಾಗಿ ನಡೆಯಲಿದೆ. ಈಗಾಗಲೇ ಎಲ್ಲೆಡೆ “ಮದಗಜ” ಚಿತ್ರದ್ದೇ ಸುದ್ದಿ. ಅದಕ್ಕೆ ಕಾರಣ, ಅವರ ಹುಟ್ಟು ಹಬ್ಬಕ್ಕೆ ಈಗಾಗಲೇ ಬಿಡುಗಡೆಯಾದ ಸಖತ್ ಟೀಸರ್‌ಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸಿಕ್ಕಿದ್ದು, ಚಿತ್ರಕ್ಕೆ ಮಹೇಶ್‌ ಕುಮಾರ್‌ ನಿರ್ದೇಶಕರು. ಉಮಾಪತಿ ನಿರ್ಮಾಣವಿದೆ. ಚಿತ್ರಕ್ಕೆ ನವೀನ್‌ ಕುಮಾರ್‌ ಕ್ಯಾಮೆರಾ ಹಿಡಿದರೆ, ರವಿ ಬಸ್ರೂರು ಸಂಗೀತವಿದೆ.

Categories
ಸಿನಿ ಸುದ್ದಿ

ಸಿನಿಮಂದಿ ಬದುಕಲ್ಲಿ ಕೊರೋನಾ ಎಂಬ ಹೆಮ್ಮಾರಿ ನರ್ತನ – ಆತಂಕದಲ್ಲಿ ಇಡೀ ಕನ್ನಡ ಚಿತ್ರೋದ್ಯಮ

ಚಿತ್ರರಂಗದ ಪಾಡು ಮುಂದೇನು? ಅರೇ, ಇದೆಂಥಾ ಮಾತು ಎಂಬ ಪ್ರಶ್ನೆ ಎದುರಾದರೆ ಅಚ್ಚರಿ ಏನಿಲ್ಲ. ಆದರೆ, ಈಗಿನ ವಾಸ್ತವತೆಯನ್ನು ನೋಡಿದಾಗ, ಚಿತ್ರರಂಗದ ಪಾಡು ಏನಾಗಬಹುದು ಎಂಬ ಆತಂಕ ಖಂಡಿತ ಕಾಡದೇ ಇರದು. ಕನ್ನಡ ಚಿತ್ರರಂಗ ಈಗ ಅಕ್ಷರಶಃ ಕುಗ್ಗಿ ಹೋಗಿದೆ. ಮೊದಲೇ ಕೊರೊನಾ ಹೊಡೆತದಿಂದ ತತ್ತರಿಸಿದ್ದ ಸಿನಿಮಾ ಉದ್ಯಮ, ಇತ್ತೀಚೆಗಷ್ಟೇ ಚೇತರಿಸಿಕೊಳ್ಳುವ ಪ್ರಯತ್ನದಲ್ಲಿತ್ತು. ಅದರ ಬೆನ್ನಲ್ಲೇ ಈಗ ಪುನಃ ಅರ್ಧ ಭರ್ತಿ ಆದೇಶವೂ ಹೊರಬಿದ್ದಿದೆ. ಮೊದಲೇ ನಲುಗಿದ್ದ ಕನ್ನಡ ಚಿತ್ರರಂಗ, ಈಗ ಮತ್ತಷ್ಟು ನಲುಗಿ ಹೋಗುವುದಂತೂ ನಿಜ. ಕೊರೊನಾ ಎರಡನೇ ಅಲೆಯ ಅಬ್ಬರ ಜೋರಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡು ಟಫ್‌ರೂಲ್ಸ್‌ಮಾಡಿದ್ದೇನೋ ನಿಜ. ಎಂಟು ಪ್ರಮುಖ ಜಿಲ್ಲೆಗಳಲ್ಲಿ ಈ ಆದೇಶ ಹೊರಬಿದ್ದಿದೆ. ಚಿತ್ರರಂಗಕ್ಕೂ ಇದರ ಬಿಸಿ ತಟ್ಟಿದೆ. ಈ ನಿರ್ಧಾರದಿಂದ ಚಿತ್ರೋದ್ಯಮ ಏನೆಲ್ಲಾ ಸಂಕಷ್ಟ ಎದುರಿಸುತ್ತೆ ಅನ್ನೋದೇ ಸದ್ಯ ಎದುರಿಗಿರುವ ಪ್ರಶ್ನೆ.

ಚಿತ್ರರಂಗವನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದವರ ಸ್ಥಿತಿಯಂತೂ ಹೇಳತೀರದು. ಇಲ್ಲಿ ಕೋಟಿ ನಿರ್ಮಾಪಕರು, ಸ್ಟಾರ್‌ನಿರ್ದೇಶಕರು, ಸ್ಟಾರ್‌ನಟರಿಂದ ಹಿಡಿದು ಕಟ್ಟ ಕಡೆಯ ಕಾರ್ಮಿಕರೂ ಇದ್ದಾರೆ. ಈಗ ಅವರೆಲ್ಲರೂ ಒಂದೇ ದೋಣಿಯಲ್ಲಿರುವಂತಹ ಪರಿಸ್ಥಿತಿ ಬಂದೊದಗಿದೆ. ಲಾಕ್‌ಡೌನ್‌ಸಂದರ್ಭದಲ್ಲಂತೂ ಚಿತ್ರರಂಗದಲ್ಲಿ ದುಡಿಮೆ ಮಾಡುವವರ ಪರಿಸ್ಥಿತಿ ಡೋಲಾಯಮಾನವಾಗಿತ್ತು. ಮೆಲ್ಲೆನೆ ಉಸಿರಾಡಲು ಅವಕಾಶ ಸಿಕ್ತು ಅಂತ ನಿಟ್ಟುಸಿರು ಬಿಡುವ ಹೊತ್ತಲೇ ಪುನಃ ಅದಕ್ಕೆ ಬ್ರೇಕ್‌ಬಿತ್ತು. ಇದರಿಂದ ಈಗ ಅಕ್ಷರಶಃ ಚಿತ್ರರಂಗದ ಅನೇಕರು ಬೀದಿಗೆ ಬರುವಂತಹ ಸ್ಥಿತಿ ಎದುರಾಗುತ್ತಿದೆ. ಇದು ಹೀಗೆ ಮುಂದುವರೆದರೆ, ಖಂಡಿತವಾಗಿಯೂ ಕನ್ನಡ ಚಿತ್ರರಂಗ ದೊಡ್ಡ ಆತಂಕದ ಅಲೆಯನ್ನು ಎದುರಿಸಬೇಕಾಗುತ್ತೆ. ಚಿತ್ರರಂಗವನ್ನು ನಂಬಿದ ಸಾವಿರಾರು ಕುಟುಂಬಗಳಿವೆ. ಲಕ್ಷಾಂತರ ಜನರಿದ್ದಾರೆ. ಎಲ್ಲಾ ನಿರ್ಮಾಣ, ನಟನೆ, ನಿರ್ದೇಶನ, ಕಾಸ್ಟ್ಯೂಮ್‌, ಪ್ರೊಡಕ್ಷನ್ಸ್‌, ಮೇಕಪ್‌, ಟ್ರಾನ್ಸ್‌ಪೋರ್ಟ್‌ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡುವ ಸಿನಿಮಂದಿ ಬದುಕು ಮೂರಾಬಟ್ಟೆಯಾಗುವಂತಹ ಭೀತಿಯಲ್ಲಿದೆ. ಕೊರೊನಾ ತಂದಿಟ್ಟ ಆತಂಕದಿಂದಾಗಿ ಇಲ್ಲಿ ಅನ್ನದಾತ ಎನಿಸಿಕೊಂಡವರೂ ಕೂಡ ಒದ್ದಾಡಿದ ಉದಾಹರಣೆಗೇನೂ ಕಮ್ಮಿ ಇಲ್ಲ.

ಈ ಕಲರ್‌ಫುಲ್‌ದುನಿಯಾದಲ್ಲಿ ಬಣ್ಣ ಬಣ್ಣದ ಕನಸು ಕಟ್ಟಿಕೊಂಡಿದ್ದ ಅದೆಷ್ಟೋ ಮಂದಿ ಮೊಗದಲ್ಲಿ ಆತಂಕದ ಛಾಯೆ ಮೂಡಿದೆ. ಕಳೆದ ಒಂದು ವರ್ಷದಿಂದಲೂ ಇದೇ ಅತಂತ್ರ ಪರಿಸ್ಥಿತಿಯಲ್ಲಿರುವ ಚಿತ್ರರಂಗಕ್ಕೆ ಮತ್ತೆ ದೊಡ್ಡ ಹೊಡೆತ ಬಿದ್ದಿರುವುದನ್ನು ನೋಡಿದರೆ, ಅಂತಿಮ ಹಂತ ತಲುಪುವ ಸೂಚನೆಯೇನೋ ಎಂಬಂತೆ ಭಾಸವಾಗುತ್ತಿದೆ.
ಈಗಷ್ಟೇ ಚಿತ್ರರಂಗ ಚೇತರಿಸಿಕೊಳ್ಳುತ್ತಿತ್ತು. ಕಳೆದ ವರ್ಷ ಇದೇ ತಿಂಗಳಲ್ಲಿ ಕೊರೊನಾ ಒಕ್ಕರಿಸಿ ಆತಂಕ ಸೃಷ್ಟಿಸಿತ್ತಲ್ಲದೆ, ಲಾಕ್‌ಡೌನ್‌ಗೂ ಕಾರಣವಾಗಿ ಎಲ್ಲರ ಬದುಕನ್ನೇ ಬರಡಾಗಿಸಿತ್ತು. ಈಗ ಮತ್ತದೇ ಆತಂಕ ಶುರುವಾಗುತ್ತಿದೆ! ಅರ್ಧ ಭರ್ತಿ ಆದೇಶದಿಂದ ಚಿತ್ರರಂಗ ಮತ್ತೆ ಮೊದಲಿನಂತಾಗಲು ವರ್ಷಗಳೇ ಬೇಕಾಗಬಹುದೇನೋ? ಕಳೆದ ಒಂದು ವರ್ಷದ ಕೊರೊನಾ ಹೊಡೆತಕ್ಕೆ ಇನ್ನೂ ಚಿತ್ರರಂಗ ಚೇತರಿಸಿಕೊಂಡಿಲ್ಲ. ಮತ್ತೆ ಕೊರೊನಾ ಹಾವಳಿ ಎದುರಾಗಿ ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ಚಿತ್ರರಂಗವನ್ನೇ ನಂಬಿದವರ ಪಾಡು ಅತಂತ್ರದಲ್ಲಿರುವುದಂತೂ ಸತ್ಯ.

“ರಾಬರ್ಟ್‌” ಚಿತ್ರ ಬಿಡುಗಡೆ ನಂತರ ಚಿತ್ರರಂಗದ ಮೊಗದಲ್ಲಿ ಮಂದಹಾಸ ಮೂಡಿತ್ತು. ಮತ್ತೆ ಆ ದಿನಗಳಿಗೆ ಚಿತ್ರರಂಗ ಮರಳುತ್ತೆ ಎಂಬ ಲೆಕ್ಕಾಚಾರವೂ ಜೋರಾಗಿತ್ತು. ಆ ಚಿತ್ರದ ಬಳಿಕ ಪುನೀತ್‌ರಾಜಕುಮಾರ್‌ಅಭಿನಯದ “ಯುವರತ್ನ” ರಿಲೀಸ್‌ಆಯ್ತು. ಎಲ್ಲೆಡೆ ಮೆಚ್ಚುಗೆ ಪಡೆಯುತ್ತಿದ್ದಂತೆಯೇ ಪುನಃ, ಅರ್ಧ ಭರ್ತಿ ಆದೇಶ ಹೊರಬಿತ್ತು. “ಯುವರತ್ನ” ಬಳಿಕ ಅದೆಷ್ಟೋ ಸಿನಿಮಾಗಳು ಚಿತ್ರಮಂದಿರಕ್ಕೆ ಬರಲು ಉತ್ಸಾಹ ತೋರಿದ್ದವು. ವರ್ಷಗಟ್ಟಲೆ ಕಾದಿದ್ದ ಸಿನಿಮಾಗಳಿಗೆ ಸರ್ಕಾರದ ಈ ಆದೇಶದಿಂದ ಆಘಾತವಾಗಿದ್ದು ಸುಳ್ಳಲ್ಲ. ಸಾಲ ಸೂಲ ಮಾಡಿ ಸಿನಿಮಾ ಮಾಡಿದ್ದ ಅನೇಕ ಹೊಸ ನಿರ್ಮಾಪಕರು, ಹೇಗೋ ರಿಲೀಸ್‌ಮಾಡಿ, ಬದುಕಿ ಬಿಡೋಣ ಅಂದುಕೊಂಡಿದ್ದರು. ಈಗ ನೋಡಿದರೆ, ಅದಕ್ಕೂ ಕಲ್ಲು ಬಿದ್ದಂತಾಗಿದೆ. ಮೂಲಗಳ ಪ್ರಕಾರ ೩೫೦ ಕ್ಕೂ ಹೆಚ್ಚು ಚಿತ್ರಗಳು ರಿಲೀಸ್‌ಗೆ ರೆಡಿಯಾಗಿವೆ. ಈ ಇಷ್ಟೂ ಚಿತ್ರಗಳ ಬಜೆಟ್‌ಲೆಕ್ಕ ಹಾಕಿದರೆ, ಸಾವಿರ ಕೋಟಿ ಮೀರುತ್ತೆ.

ಇಲ್ಲಿ ಹಣ ಹಾಕಿ ಹಣ ತೆಗೆಯುತ್ತೇನೆ ಅನ್ನೋದು ಕಷ್ಟದ ಮಾತು. ಹೋಗಲಿ ಹಾಕಿದ ಹಣ ತೆಗೆಯೋಣ ಅಂತಂದುಕೊಂಡರೂ, ಕೊರೊನಾ ಹೊಡೆತ ಕೊಟ್ಟಿದೆ. ಹೇಗೋ ಬಂದಷ್ಟು ಬರಲಿ ಅಂದುಕೊಂಡು ರಿಲೀಸ್‌ಗೆ ಸಜ್ಜಾಗಿದ್ದರೂ, ಅರ್ಧ ಭರ್ತಿ ಆದೇಶ ಮತ್ತಷ್ಟು ನರಳುವಂತೆ ಮಾಡಿಬಿಟ್ಟಿದೆ. ಹೇಗೋ ಒಂದಷ್ಟು ಸಿನಿಮಾಗಳು ಚಿತ್ರೀಕರಣ ಶುರುಮಾಡಿದ್ದವು. ಈಗ ಶೂಟಿಂಗ್‌ಮಾಡೋಕೂ ಹಿಂದೆ ಮುಂದೆ ನೋಡುವಂತಹ ಸ್ಥಿತಿ ಬಂದೊದಗಿದೆ. ಹೇಗೋ ಚಿತ್ರೀಕರಣ ಶುರುವಾಯ್ತು ಅಂತ ಕಾರ್ಮಿಕ ವಲಯ ಸಂಭ್ರಮದಲ್ಲೇ ಇತ್ತು. ಆದರೀಗ, ಅವರ ಅನ್ನಕ್ಕೂ ಕುತ್ತು ಬರುವಂತಾಗಿದೆ. ಅವರ ಗೋಳಿನ ದನಿ ಮಾತ್ರ ಅಲ್ಲೇ ಗಿರಕಿಹೊಡೆಯುವಂತಾಗಿದೆ.

ಅದೇನೆ ಇರಲಿ, ಸರ್ಕಾರದ ಈ ಕ್ರಮದಿಂದ ಸಿನಿಮಾಗಳಿಗೆ ಪೆಟ್ಟು ಕೊಟ್ಟಿದ್ದಷ್ಟೇ ಅಲ್ಲ, ನಿರ್ಮಾಪಕರನ್ನೂ ಹೈರಾಣಾಗಿಸಿದೆ. ಚಿತ್ರಮಂದಿರಗಳಲ್ಲಿ ದುಡಿಯುವ ಕೈಗಳು ಹಿಜುಕಿಕೊಳ್ಳುವಂತಾಗಿದೆ. ಈಗಷ್ಟೇ ಚಿತ್ರಮಂದಿರಗಳತ್ತ ಜನರು ದಾಪುಗಾಲು ಇಡುತ್ತಿದ್ದರು. ಈ ಬೆನ್ನಲ್ಲೇ ಪುನಃ ಚಿತ್ರಮಂದಿರಗಳಿಗೆ ಅರ್ಧ ಭರ್ತಿ ಎಂಬ ನಿರ್ಧಾರದಿಂದ ಇಡೀ ಚಿತ್ರೋದ್ಯಮವೇ ದಿಕ್ಕು ತೋಚದಂತಾಗಿ ಕುಳಿತಿದೆ. ಈಗಾಗಲೇ ಒಂದು ವರ್ಷದಿಂದ ಕಾದು ಸೋತು, ಸಣ್ಣಗಾಗಿರುವ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದವು. ಈಗ ಆ ಚಿತ್ರಗಳ ಬಿಡುಗಡೆ ದಿನಾಂಕ ಕೂಡ ಮುಂದೆ ಹೋಗುತ್ತಿವೆ. ಕೋಟಿ ಹಣ ಹಾಕಿ ನಿರ್ಮಿಸಿದ್ದ ನಿರ್ಮಾಪಕ ಕೂಡ ಮತ್ತಷ್ಟು ದಿನ ಒದ್ದಾಡುವಂತಹ ಸ್ಥಿತಿ ಬಂದೊದಗಿದೆ. “ಯುವರತ್ನ” ಮೇಲೇಳುವ ಹೊತ್ತಲ್ಲೇ ಈ ನಿರ್ಧಾರ ಹೊರಬಂದಿದೆ.

“ಕೋಟಿಗೊಬ್ಬ 3”, “ಸಲಗ”, ”ಕೆಜಿಎಫ್‌″, “ಕೃಷ್ಣ ಟಾಕೀಸ್‌”, “ಭಜರಂಗಿ” ಸೇರಿದಂತೆ ಹಲವು ಚಿತ್ರಗಳು ಬಿಡುಗಡೆ ದಿನವನ್ನು ಘೋಷಿಸಿದ್ದವು. ಈಗ ಅನಿವಾರ್ಯ ಎಂಬಂತೆ ಮಂದಕ್ಕೆ ಹೋದರೂ ಅಚ್ಚರಿ ಇಲ್ಲ. ಒಂದು ವೇಳೆ ಈ ನಿರ್ಧಾರ ಮತ್ತಷ್ಟು ಕಠಿಣಗೊಂಡರೆ, ಸಿನಿಮಾರಂಗದ ಪಾಡೇನು, ಸ್ಟಾರ್‌ಚಿತ್ರಗಳ ಜೊತೆಗೆ ಸಣ್ಣಪುಟ್ಟ ಚಿತ್ರಗಳ ದೊಡ್ಡ ಪಟ್ಟಿಯೂ ಇದೆ. ಆ ಎಲ್ಲಾ ಸಿನಿಮಾ ನಿರ್ಮಾಪಕರ ಸ್ಥಿತಿ ಏನಾಗಬೇಡ? ಚಿತ್ರರಂಗವನ್ನೇ ನಂಬಿದವರ ಬದುಕು ಹೇಗಾಗಬೇಡ? ಒಂದು ಸಿನಿಮಾ ಮಾಡುವ ಕಷ್ಟ, ನಿರ್ಮಾಪಕರಿಗಷ್ಟೇ ಗೊತ್ತು. ಎಲ್ಲಿಂದಲೋ ಹಣ ತಂದು, ಸಾಲ ಮಾಡಿ, ಬಡ್ಡಿ ಕಟ್ಟಿ, ಸಿನಿಮಾ ಮಾಡುತ್ತಾನೆ. ಆದರೆ, ಆ ಹಣ ಹಿಂದಿರುಗುತ್ತದೆ ಎಂಬ ಯಾವ ಗ್ಯಾರಂಟಿಯೂ ಇಲ್ಲಿರೋದಿಲ್ಲ. ಒಂದು ಸಿನಿಮಾ ಶುರುವಾದರೆ, ನೂರಾರು ಕುಟುಂಬ ಬದುಕು ಕಟ್ಟಿಕೊಳ್ಳುತ್ತೆ. ಆದರೆ, ಸಿನಿಮಾ ನಿರ್ಮಾಪಕನಿಗೇ ದೊಡ್ಡ ಪೆಟ್ಟು ಬಿದ್ದರೆ, ಅಂತಹ ಕುಟುಂಬಗಳೂ ಹೊಡೆತ ತಿನ್ನುತ್ತವೆ. ಇನ್ನೇನು ರಿಲೀಸ್‌ಗೆ ಸಜ್ಜಾಗುತ್ತಿರುವ ಹೊತ್ತಿಗೆ ಮತ್ತೊಂದು ಆತಂಕದ ತೂಗುಕತ್ತಿ ನೇತಾಡುತ್ತಿರುವುದು ನಿಜಕ್ಕೂ ಬೇಸರದ ವಿಷಯ. ಮತ್ತದೇ ಭಯ ಹುಟ್ಟಿಸುತ್ತಿರುವ ಕೊರೊನಾ, ಚಿತ್ರರಂಗದವರ ಬಣ್ಣವನ್ನು ಅಳಿಸದಂತಿರಲಿ ಎಂಬುದೇ ಸಿನಿಲಹರಿಯ ಆಶಯ.

Categories
ಸಿನಿ ಸುದ್ದಿ

ಬಣ್ಣ ನಂಬಿ ಬದುಕುವರ ಬಣ್ಣ ಅಳಿಸೋದು ಬೇಡ ಅಂದ್ರು ಶ್ರೀಮುರಳಿ! ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಅನ್ನೋದು ರೋರಿಂಗ್‌ ಸ್ಟಾರ್‌ ಕಳಕಳಿ

ಕೊರೊನಾ ಎರಡನೇ ಅಲೆ ಜೋರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿನ್ನೆಯಷ್ಟೇ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಟಫ್‌ ರೂಲ್ಸ್‌ ಜಾರಿ ಮಾಡಿದೆ. ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಚಿತ್ರರಂಗ ದೊಡ್ಡ ಧ್ವನಿ ಎತ್ತಿದೆ.
ಈ ಆದೇಶ ಹೊರಬರುತ್ತಿದ್ದಂತೆಯೇ ಚಿತ್ರರಂಗದ ಸ್ಟಾರ್‌ ನಟರಿಂದ ಹಿಡಿದು, ಚಿತ್ರೋದ್ಯಮದ ಎಲ್ಲರೂ ಒಕ್ಕೊರಲ ಧ್ವನಿ ಎತ್ತಿದ್ದಾರೆ. ಅಂತೆಯೇ ನಟ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರೂ ಕೂಡ ತಮ್ಮ ಟ್ವೀಟ್‌ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಅವರು ಮಾಡಿರುವ ಟ್ವೀಟ್‌ನಲ್ಲಿ “ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿರೋಧ ಇಲ್ಲ. ಇದು ಅಗತ್ಯ ಕೂಡ. ಸರ್ಕಾರ ಕೈಗೊಳ್ಳುವ ನಿರ್ಧಾರಗಳಲ್ಲಿ ಬಣ್ಣವನ್ನೇ ನಂಬಿ ಬದುಕುವರ “ಬಣ್ಣ” ಅಳಿಸೋದು ಬೇಡ ಎಂಬ ಮನವಿ ನಮ್ಮದು. ಕೊರೋನಾ ಎಚ್ಚರಿಕೆ ಕ್ರಮಗಳೊಂದಿಗೆಯೇ ಮನರಂಜಿಸುವ ಕೆಲಸ ಚಿತ್ರೋದ್ಯಮದಿಂದ ಆಗುತ್ತೆ ಎಂಬ ನಂಬಿಕೆ ಸರ್ಕಾರಕ್ಕೂ ಬರಲಿ” ಎಂದು ಹೇಳಿದ್ದಾರೆ.
ಅವರ ಈ ಟ್ವೀಟ್‌ಗೆ ಫ್ಯಾನ್ಸ್‌ ಸೇರಿದಂತೆ ಸಾಮಾಜಿಕ ವಲಯದಿಂದಲೂ ಮೆಚ್ಚುಗೆ ಸಿಕ್ಕಿದ್ದು, ಎಲ್ಲರೂ ಶ್ರೀಮುರಳಿ ಅವರ ಮಾತಿಗೆ ಧ್ವನಿಗೂಡಿಸಿದ್ದಾರೆ.


ಇನ್ನು, ಸಾಮಾಜಿಕ ತಾಣದಲ್ಲಿ ಮತ್ತೊಂದು ವಿಡಿಯೋ ಹರಿಬಿಟ್ಟಿರುವ ಶ್ರೀಮುರಳಿ, “ಮನಸು ಬಹಳ ಬೇಜಾರಾಗುತ್ತಿದೆ. ಈಗಷ್ಟೇ ಒಂದು ನ್ಯೂಸ್‌ ಕೇಳಿದೆ. ಮತ್ತೊಮ್ಮೆ ಶೇ.50ರಷ್ಟು ಆಕ್ಯುಪೆನ್ಸಿಗೆ ಅವಕಾಶ ಕೊಟ್ಟಿದ್ದಾರೆ ಅಂತ. ನಿನ್ನೆ ತಾನೇ “ಯುವರತ್ನ” ರಿಲೀಸ್‌ ಆಗಿದೆ. ಅದಕ್ಕೂ ಮುಂಚೆ “ರಾಬರ್ಟ್‌” ರಿಲೀಸ್‌ ಆಗಿದೆ. ಈ ವಾರ ಒಂದಷ್ಟು ಸಿನಿಮಾಗಳು ರಿಲೀಸ್‌ ಆಗಬೇಕಿದೆ. ಏನ್‌ ಮಾಡಬೇಕು ಸರ್.‌ ರಿಲೀಸ್‌ ಆಗಿರುವ ಸಿನಿಮಾಗಳ ಗತಿ ಏನಾಗಬೇಕು ಸರ್.‌ ಹಲವು ಸಂಸಾರಗಳು ಈ ವೃತ್ತಿಯನ್ನು ನಂಬಿ ಬದುಕುತ್ತಿದ್ದೇವೆ ಸರ್.‌ ನಮಗೆ ಬೇರೇನೂ ಗೊತ್ತಿಲ್ಲ ಸರ್.‌ ಜನರಿಗೆ ಅಳಿಸ್ತೀವಿ, ಇಲ್ಲ ನಗಸ್ತೀವಿ ಇಷ್ಟೇ ಸರ್‌ ಗೊತ್ತಿರೋದು. ಎಲ್ಲೋ ಒಂದು ಕಡೆ ನಿಜವಾಗಿಯೂ ನೋವಾಗುತ್ತಿದೆ ಸರ್.‌ ಏನ್‌ ಮಾಡಬೇಕು ನಿರ್ಮಾಪಕರು.

ಅಷ್ಟೊಂದು ಖರ್ಚು ಮಾಡಿ ಎಂಟರ್‌ಟೈನ್‌ಮೆಂಟ್‌ಗೋಸ್ಕರ ಸಿನಿಮಾ ಮಾಡಿದಾಗ ನಾವೆಲ್ಲಾ ಏನ್‌ ಆಗಬೇಕು ಸರ್.‌ ದಯವಿಟ್ಟು ಇದನ್ನು ವಾಪಸ್‌ ತಗೊಳ್ಳಿ. ದಯವಿಟ್ಟು ಶೇ.100 ಆಕ್ಯುಪೆನ್ಸಿಗೆ ಅವಕಾಶ ಕೊಡಿ ಸರ್.‌ ಇದು ನಮ್ಮ ಮನವಿ. ನೀವು ಇವತ್ತು ಇದನ್ನು ಮಾಡಲಿಲ್ಲವೆಂದರೆ, ಹಲವಾರು ಜನರು‌ ನಾಳೆ ಬೀದಿಗೆ ಬರುತ್ತಾರೆ. ಇನ್ನಷ್ಟು ಸಿನಿಮಾಗಳು ರಿಲೀಸ್‌ ಆಗುತ್ತವೆ. ವ್ಯಾಕ್ಸಿನೇಷನ್‌ ಬಂದಿದೆ ಸರ್.

ಎಲ್ಲರೂ ತಗೊಂಡು ಸೇಫ್‌ ಆಗ್ತಾರೆ. ನೀವೇ ಸಲಹೆ ಕೊಟ್ಟಿದ್ದೀರಿ. ಆದರೂ ಈ ನಿರ್ಧಾರದಿಂದ ಭಯ ಆಗುತ್ತಿದೆ. ಮತ್ತೊಮ್ಮೆ ಶೇ.100ರಷ್ಟು ಆಕ್ಯುಪೆನ್ಸಿ ಕೊಡಿ” ಎಂದು ಮನವಿ ಮಾಡಿದ್ದಾರೆ.
ಅದೇನೆ ಇರಲಿ, ಈಗ ಚಿತ್ರರಂಗದ ಸ್ಟಾರ್‌ ನಟರೆಲ್ಲರೂ ಒಗ್ಗಟ್ಟಾಗಿ ಮನವಿ ಮಾಡುತ್ತಿದ್ದಾರೆ. ಸರ್ಕಾರ ಕೂಡ ಈ ಬಗ್ಗೆ ಯೋಚಿಸಿ, ಚಿತ್ರರಂಗದ ಮನವಿಗೆ ಸ್ಪಂದಿಸುವುದೇ ಎಂದು ಕಾದು ನೋಡಬೇಕಿದೆ.

Categories
ಸೌತ್‌ ಸೆನ್ಸೇಷನ್

ಮಾಸ್ಟರ್‌ ಆಗ್ತಾರಾ ಸಲ್ಮಾನ್‌ ಖಾನ್? ಹಿಂದಿಗೆ ರಿಮೇಕ್‌ ಆಗಲಿದೆ ತಮಿಳಿನ ಹಿಟ್‌ ಸಿನ್ಮಾ ಮಾಸ್ಟರ್‌

‌ವಿಜಯ್ ಮತ್ತು ವಿಜಯ್ ಸೇತುಪತಿ ಅಭಿನಯಿಸಿರೋ “ಮಾಸ್ಟರ್” ಚಿತ್ರ ಹಿಂದಿ ರಿಮೇಕ್‌ಗಾಗಿ ಸಜ್ಜಾಗುತ್ತಿದೆ. ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಚಿತ್ರಕ್ಕೆ ಸೇರಿಸಲು ಟೀಮ್ ಮಾಸ್ಟರ್ ಉತ್ಸುಕರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ಮಾಸ್ಟರ್ ಮತ್ತು ಬ್ಯಾಡ್ಡಿ ಭವಾನಿ ಅವರ ಪ್ರಮುಖ ಪಾತ್ರಕ್ಕಾಗಿ “ಮಾಸ್ಟರ್” ತಂಡವು ನಟರನ್ನು ಸಂಪರ್ಕಿಸಲು ಮುಂದಾಗಿದೆ.

ತಮಿಳು ಮೂಲದ ಬಹಳಷ್ಟು ಅಂಶಗಳನ್ನು ಸರಿ ಹೊಂದುವಂತೆ ತಿರುಚಬೇಕಾಗಿರುವುದರಿಂದ “ಮಾಸ್ಟರ್” ತಂಡವು ಹಿಂದಿಯಲ್ಲಿ ಬೌಂಡ್ ಸ್ಕ್ರಿಪ್ಟ್‌ನೊಂದಿಗೆ ತನ್ನ ಬಳಿಗೆ ಬರಲು ಕಾಯುತ್ತಿದೆ.

ಸಲ್ಮಾನ್ ಖಾನ್ ಕೂಡ ಈ ಚಿತ್ರದ ವಿಷಯಗಳನ್ನು ಒಪ್ಪಿಕೊಂಡಿದ್ದು.‌‌ ತುಂಬಾ ಕಾತರರಾಗಿದ್ದಾರೆ ಅನ್ನೋದಂತು ಸತ್ಯ. ಆದರೆ, ಇದು ಯಾವಾಗ ಶುರುವಾಗುತ್ತೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಕಾದು ನೋಡಬೇಕಿದೆ.

Categories
ಸಿನಿ ಸುದ್ದಿ

ಕಬ್ಜ ಶೂಟಿಂಗ್ ವೇಳೆ ಅವಘಡ : ಉಪ್ಪಿ ತಲೆಗೆ ಬಿತ್ತು ಪೆಟ್ಟು ಅಪಾಯದಿಂದ ಪಾರಾದ ರಿಯಲ್‌ಸ್ಟಾರ್ ಉಪೇಂದ್ರ

ಚಿತ್ರೀಕರಣ ಸಮಯದಲ್ಲಿ ಆಗಾಗ ಒಂದಷ್ಟು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಇದು ಹೊಸದೇನಲ್ಲ. ಎಷ್ಟೋ ಸಲ, ಸಾಹಸ ಸನ್ನಿವೇಶಗಳಲ್ಲಿ ಇಂತಹ ಅವಘಡಗಳು ಸಂಭವಿಸುವುದುಂಟು. ಈಗ ಇಲ್ಲಿ ಹೇಳಹೊರಟಿರುವ ವಿಷಯ, “ಕಬ್ಜ’ ಚಿತ್ರದ್ದು. ಹೌದು, ಉಪೇಂದ್ರ ಅಭಿನಯದ “ಕಬ್ಜ” ಆರಂಭದಿಂದಲೂ ಜೋರು ಸದ್ದು ಮಾಡುತ್ತಲೇ ಇದೆ. ಈಗ ಮತ್ತೊಂದು ಸುದ್ದಿಗೂ ಕಾರಣವಾಗಿದೆ. ಹಾಗಂತ, ಅದು ಖುಷಿ ಪಡುವ ಸುದ್ದಿಯಲ್ಲ. ಬದಲಾಗಿ, ಬೇಸರ ಪಡುವ ಸುದ್ದಿ. ವಿಷಯ ಏನಪ್ಪಾ ಅಂದರೆ, ಉಪೇಂದ್ರ ಅವರು ಚಿತ್ರದ ಸಾಹಸ ದೃಶ್ಯದಲ್ಲಿ ನಟಿಸುತ್ತಿದ್ದರು. ಈ ವೇಳೆ, ವಿಲನ್ ಬೀಸಿದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಅವರ ತಲೆಗೆ ಬಿದ್ದ ಪರಿಣಾಮ, ಅವರಿಗೆ ಪೆಟ್ಟಾದ ಘಟನೆ ನಡೆದಿದೆ.

ಹೌದು, ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ “ಕಬ್ಜ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಸ್ಟಂಟ್ ಶೂಟಿಂಗ್ ಸಮಯದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ರಾಡ್ ತಗುಲಿ ಈ ಅವಘಡ ಸಂಭವಿಸಿದೆ. ಖಳನಾಯಕ ರಾಡ್ ನಿಂದ ಹೊಡೆಯುವ ಸನ್ನಿವೇಶದಲ್ಲಿ ಉಪೇಂದ್ರ ಅವರು ತಪ್ಪಿಸಿಕೊಳ್ಳಬೇಕಾಗಿತ್ತು.

ಈ ವೇಳೆ ಆಕಸ್ಮಿಕವಾಗಿಯೇ ಉಪ್ಪಿಗೆ ರಾಡ್ ತಾಗಿದೆ. ಅಲ್ಲಿದ್ದ ಚಿತ್ರತಂಡದವರು ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಹೆಚ್ಚು ಅಪಾಯ ಸಂಭವಿಸದ ಕಾರಣ, ಪುನಃ ಉಪೇಂದ್ರ ಅವರು ಸ್ಪಲ್ಪ ಹೊತ್ತು ಚೇತರಿಸಿಕೊಂಡ ಬಳಿಕ ಶೂಟಿಂಗ್ ನಿಲ್ಲಿಸದೆಯೇ ಅದೇ ಉತ್ಸಾಹದಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ದೇಶಕ ಆರ್.ಚಂದ್ರು ಅವರು, ಸ್ಥಳದಲ್ಲಿದ್ದು, ಉಪೇಂದ್ರ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಆ ನಂತರ ಒಂದಿಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಬಳಿಕ ಎಲ್ಲರೂ ಅದೇ ಉತ್ಸಾಹದಿಂದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ.

Categories
ಸಿನಿ ಸುದ್ದಿ

ಕನ್ನಡ‌ ಚಿತ್ರರಂಗಕ್ಕೆ ಅರ್ಧ ಶಾಕ್! ಸರ್ಕಾರದ ಈ ನಿರ್ಧಾರಕ್ಕೆ ನಟ ಪುನೀತ್ ಆಕ್ಷೇಪ!! ಕೂಡಲೇ ಶೇ.100ರಷ್ಟು ಭರ್ತಿಗೆ ಅವಕಾಶ ಕೊಡಿ ಎಂದ ಅಪ್ಪು

ಕನ್ನಡ‌ ಚಿತ್ರರಂಗಕ್ಕೆ ಈಗ ಮತ್ತೆ ಕೊರೊನಾ ಬಿಸಿ ತಟ್ಟುತ್ತಿದೆ. ಕೊರೊನೊ ಎರಡನೇ ಅಲೆ ಜೋರಾಗುತ್ತಿರುವಂತೆಯೇ ಕೊರೊನೊ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತಂತೆ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಹೀಗಾಗಿ ಟಫ್ ರೂಲ್ಸ್ ಜಾರಿ ಮಾಡಿದೆ. ಇದರಿಂದಾಗಿ ಕನ್ನಡ‌ಚಿತ್ರರಂಗಕ್ಕೂ ಸಮಸ್ಯೆ ಎದುರಾಗಿದೆ. ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಕೊಡಲಾಗಿದೆ. ಈ ನಿರ್ಬಂಧ ದಿಂದ ಇಡೀ ಚಿತ್ರೋದ್ಯಮವೇ ದಂಗಾಗಿದೆ. ಹಲವು ನಟರು, ನಿರ್ಮಾಪಕ, ನಿರ್ದೇಶಕರು ಕೂಡ ಸರ್ಕಾರದ ಈ‌ ನಿರ್ಧಾರಕ್ಕೆ ಆಕ್ಷೇಪಿಸಿದ್ದಾರೆ.

ಈಗಷ್ಟೇ ಕೊರೊನೊ ಸಮಸ್ಯೆ ತಿಳಿಯಾಗಿ ಮೆಲ್ಲನೆ ಚೇತರಿಸಿಕೊಳ್ಳುತ್ತಿರುವಂತೆಯೇ, ಈಗ ಟಫ್ ರೂಲ್ಸ್ ಜಾರಿಯಾಗಿದೆ. ಇದರಿಂದ ಪುನಃ ಸಿನಿರಂಗಕ್ಕೆ ದೊಡ್ಡ ಹೊಡೆತವೇ ಆಗಿದೆ ಎಂದು ಚಿತ್ರರಂಗದ ಹಲವರು ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿದ್ದಾರೆ. ಅತ್ತ ನಟ ಪುನೀತ್ ರಾಜಕಾರ್ ಅವರು ಸಹ ಫೇಸ್ ಬುಕ್ ಲೈವ್ ಮಾಡುವ ಮೂಲಕ

ಮನವಿ‌ ಮಾಡಿದ್ದು, ಶೇ.50ರಷ್ಟು ಭರ್ತಿಗೆ ಆದೇಶ ಬೇಡ ಎಂದು‌ ಮನವಿ‌ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತಾಡುವುದಾಗಿಯೂ ಹೇಳಿದ್ದಾರೆ. ಇದು ನಮಗೆ ದೊಡ್ಡ ಸಮಸ್ಯೆ ಆಗುತ್ತೆ. ಈ ನಿಯಮ ಕೈ ಬಿಡಿ. ಜನರು ಮುಂಜಾಗ್ರತೆ ವಹಿಸಿ ಸಿನಿಮಾ ನೋಡುತ್ತಿದ್ದಾರೆ. ದಯವಿಟ್ಟು ಈ ನಿಯಮ ಹಿಂಪಡೆಯಿರಿ ಎಂದು‌ ಮನವಿ ಮಾಡಿದ್ದಾರೆ.

ಏಪ್ರಿಲ್ 1ರಂದು “ಯುವರತ್ನ” ಬಿಡುಗಡೆಯಾಗಿದೆ. ಮೊದಲ ದಿನ ಭರ್ಜರಿ ಗಳಿಕೆ‌ ದಾಖಲೆ ಮಾಡಿದ ಚಿತ್ರಕ್ಕೆ ಈಗ ಶೇ.50 ರಷ್ಟು ನಿಯಮ ಎಷ್ಟು‌ ಸರಿ ಎಂಬುದು ಎಲ್ಲರ ಪ್ರಶ್ನೆ.
ಇದೇ ನಿಯಮ ಮುಂದುವರೆದ್ದಲ್ಲಿ ಖಂಡಿತವಾಗಿಯೂ ಸಿನಿಮಾರಂಗ ಮತಗತೆ ಮೇಲೇಳಲು ಪರದಾಡಬೇಕಾಗುತ್ತೆ.
ಅದೇನೆ ಇರಲಿ, ಕೊರೊನೊ ಅಲೆ ಮತ್ತೆ ಶುರುವಾಗದಿರಲಿ, ಎಲ್ಲವೂ ಈಗ ನಡೆದಂತೆ ನಡೆಯಲಿ ಎಂಬುದೇ ಆಶಯ.

Categories
ಆಡಿಯೋ ಕಾರ್ನರ್

ಮನದುಂಬಿ ಹೇಳುವೆನು ನೀ ಕೋಟಿಯಲಿ ಒಬ್ಬನೇ…! ಕೋಟಿಗೊಬ್ಬ 3 ಲಿರಿಕಲ್‌ ವಿಡಿಯೋಗೆ ಭರಪೂರ ಮೆಚ್ಚುಗೆ

ಸದ್ಯಕ್ಕೆ ಕನ್ನಡದಲ್ಲಿ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದು “ಕೋಟಿಗೊಬ್ಬ 3 ” ಹೌದು, ಕಿಚ್ಚ ಸುದೀಪ್‌ ಅಭಿನಯದ “ಕೋಟಿಗೊಬ್ಬ 3” ಸಿನಿಮಾ ಪ್ರೇಕ್ಷಕರ ಮುಂದೆ ಬರೋಕೆ ತಯಾರಿ ನಡೆಸಿದೆ. ಈಗಾಗಲೇ ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಾಕಷ್ಟು ಮೆಚ್ಚುಗೆ ಪಡೆದು ಕುತೂಹಲ ಮೂಡಿಸಿರುವ ಈ ಚಿತ್ರದ ಹೊಸ ಲಿರಿಕಲ್‌ ಹಾಡೊಂದು ಬಿಡುಗಡೆಯಾಗಿದ್ದು, ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಸಾಕಷ್ಟು ಮೆಚ್ಚುಗೆಯೂ ಸಿಕ್ಕಿದ್ದು, ಒಳ್ಳೆಯ ಕಾಮೆಂಟ್ಸ್‌ ಕೂಡ ಬರುತ್ತಿದೆ. ಇನ್ನು, ಈ ಹಾಡು ಕಿವಿಗಿಂಪೆನಿಸುವಂತಿದೆ. ಮಧುರವಾಗಿರುವ ಈ ಹಾಡನ್ನು ಬರೆದಿರೋದು ಯೋಗರಾಜ್‌ಭಟ್.‌ ಯೋಗರಾಜ್‌ ಭಟ್‌ ಅಂದಾಕ್ಷಣ, ಒಂದಷ್ಟು ಆಡು ಭಾಷೆ ಪದ ಬಳಕೆ ಮಾಡಿ ಹಾಡು ಗೀಚುವುದು ಕಾಮನ್‌ ಅಂದುಕೊಂಡಿದ್ದವರಿಗೆ, ಈ ಹಾಡು ನಿಜಕ್ಕೂ ಭಟ್ಟರ ಪದಗಳಲ್ಲೇ ಮೂಡಿ ಬಂದಿದೆಯಾ ಅನಿಸುವಷ್ಟರ ಮಟ್ಟಿಗೆ ಚೆನ್ನಾಗಿದೆ. ಒಂದೊಳ್ಳೆಯ ಮೆಲೋಡಿ ಸಾಂಗ್‌ ಇದಾಗಿದ್ದು, ಕೇಳುಗರು ಮತ್ತೆ ಮತ್ತೆ ಕೇಳಬೇಕೆನಿಸುವಷ್ಟರ ಮಟ್ಟಿಗೆ ಸಾಹಿತ್ಯ ಮೂಡಿಬಂದಿದೆ.

“ಯಾತಕೆ ನಿನ್ನನೆ ಬಯಸಿದೆ ಹೃದಯ, ನಿನ್ನಲಿ ಏನಿದೆಯೋ ಮಹರಾಯ ಮಾಮೂಲಿ ಅಲ್ಲ ನೀನು ಮನದುಂಬಿ ಹೇಳುವೆನು ನೀ ಕೋಟಿಯಲಿ ಒಬ್ಬನೇ….” ಎಂದು ಸಾಗುವ ಈ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ. ಒಂದೊಳ್ಳೆಯ ಲಿರಿಕಲ್‌ ವಿಡಿಯೋ ಇದಾಗಿದ್ದು, ಆನಂದ್‌ ಆಡಿಯೋ ಯುಟ್ಯೂಬ್‌ ಚಾನೆಲ್‌ನಲ್ಲಿ ಸದ್ಯಕ್ಕೆ ಹಾಡು ಟ್ರೆಂಡಿಂಗ್‌ನಲ್ಲಿರುವುದಂತೂ ನಿಜ. ಕಿಚ್ಚ ಸುದೀಪ್‌ ಅಭಿನಯದ ಈ ಚಿತ್ರದಲ್ಲಿ ನಾಯಕಿಯಾಗಿ ಮಡೋನಾ ಸೆಬಾಸ್ಟಿನ್‌ ಇದ್ದಾರೆ. ಜೊತೆಯಲ್ಲಿ ಶ್ರದ್ಧಾದಾಸ್, ರವಿಶಂಕರ್‌ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಇನ್ನು, ಶಿವಕಾರ್ತಿಕ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೂರಪ್ಪ ಬಾಬು ಅವರು ದೊಡ್ಡ ಮಟ್ಟದಲ್ಲೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಚಿತ್ರಕ್ಕೆ ಪ್ರವೀಣ್‌ ಆಂಟೋನಿ ಸಂಕಲನವಿದೆ. ಕನಾಲ್‌ ಕಣ್ಣನ್‌, ವಿಜಯ್‌ ಇತರರು ಭರ್ಜರಿ ಸ್ಟಂಟ್‌ ಕಂಪೋಸ್‌ ಮಾಡಿದ್ದಾರೆ. ಸುದೀಪ್‌ ಅಭಿಮಾನಿಗಳ ಪಾಲಿಗೆ ಈ ಹಾಡು ಎವರ್‌ಗ್ರೀನ್‌ ಆಗುವುದಂತೂ ನಿಜ. ಅಷ್ಟರಮಟ್ಟಿಗೆ ಸಾಂಗ್‌ ಮೂಡಿಬಂದಿದೆ. “ಪೈಲ್ವಾನ್”‌ ಚಿತ್ರದ ಬಳಿಕ ಸುದೀಪ್‌ ಅವರು “ಕೋಟಿಗೊಬ್ಬ 3” ಸಿನಿಮಾದಲ್ಲಿ ನಟಿಸಿದ್ದಾರೆ. ಹೆಚ್ಚು ಕಮ್ಮಿ ಒಂದುವರೆ ವರ್ಷದ ನಂತರ ಬರುತ್ತಿರುವ ಸಿನಿಮಾ ಆಗಿರುವುದರಿಂದ ಸಹಜವಾಗಿಯೇ ಸುದೀಪ್‌ ಫ್ಯಾನ್ಸ್‌ಗೆ ನಿರೀಕ್ಷೆ ಹೆಚ್ಚಿದೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ್ದ ಚಿತ್ರರಂಗ ಕೂಡ ಈಗ ಮೆಲ್ಲನೆ ಚೇತರಿಸಿಕೊಳ್ಳುತ್ತಿದೆ.

ಈಗಾಗಲೇ ಸ್ಟಾರ್‌ ನಟರ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪುನಃ ಚೈತನ್ಯ ತುಂಬಿಕೊಡುತ್ತಿವೆ. ಈ ನಿಟ್ಟಿನಲ್ಲೀಗ “ಕೋಟಿಗೊಬ್ಬ 3” ಸಿನಿಮಾ ಕೂಡ ತೆರೆಗೆ ಬರಲು ಸಜ್ಜಾಗುತ್ತಿದೆ. “ಕೋಟಿಗೊಬ್ಬ” ದೊಡ್ಡ ಸಕ್ಸಸ್‌ ಕಂಡ ಸಿನಿಮಾ. ಆ ಬಳಿಕ ಕೋಟಿಗೊಬ್ಬ ಸೀರೀಸ್‌ ಶುರುವಾಯ್ತು. ಸುದೀಪ್‌ ಕೂಡ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸಿಲ್ಲ ಎಂಬ ನಂಬಿಕೆ ಎಲ್ಲರಲ್ಲೂ ಇದೆ. ಆ ನಂಬಿಕೆಯಲ್ಲೇ ಈಗ “ಕೋಟಿಗೊಬ್ಬ 3” ಸಿನಿಮಾ ಕೂಡ ದೊಡ್ಡ ಯಶಸ್ಸು ತಂದುಕೊಡುತ್ತದೆ ಎಂದೇ ಅವರ ಅಭಿಮಾನಿಗಳು ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.

Categories
ಸಿನಿ ಸುದ್ದಿ

ಶಿಕ್ಷಣ ಮಾಫಿಯಾ ವಿರುದ್ಧ ಯುವರತ್ನನ ಹೋರಾಟ, ನೋಡುವ ಪ್ರೇಕ್ಷಕನಿಗೂ ಕೊಡ್ತಾನೆ ಒಂದಷ್ಟು ಪೇಚಾಟ!

ಯುವರತ್ನ ಚಿತ್ರ ವಿಮರ್ಶೆ

ಯುವರತ್ನ ಸ್ಟಾರ್‌ ಕಥೆಯಾ ಅಥವಾ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರಾ? ಸಿನಿಮಾ ನೋಡಿ ಹೊರ ಬಂದ ಪ್ರೇಕ್ಷಕರು ಹೀಗೊಂದು ಜಡ್ಜ್‌ ಮೆಂಟ್‌ಗೆ ಬರೋದು ಅಷ್ಟು ಸುಲಭ ಇಲ್ಲ. ಯಾಕಂದರೆ, ಯುವರತ್ನ ಪುನೀತ್‌ ರಾಜ್‌ಕುಮಾರ್‌ ಸಿನಿಮಾ ಅನ್ನೋದು ಎಷ್ಟು ಸತ್ಯವೋ, ಹಾಗೆಯೇ ಪುನೀತ್‌ ರಾಜ್‌ಕುಮಾರ್‌ ಯುವರತ್ನದ ಸ್ಟಾರ್‌ ಅನ್ನೋದು ಅಷ್ಟು ಸತ್ಯ. ಹೌದು, ಯುವರತ್ನ ಇರೋದೇ ಹಾಗೆ. ಮಾಸ್‌, ಕ್ಲಾಸ್‌ ಅಂತ ಎರಡು ಮಿಕ್ಸ್‌ ಆದ ಒಂದು ಸಿನಿಮಾ ಹೇಗಿರಬೇಕೋ ಹಾಗೆಯೇ ಈ ಚಿತ್ರವೂ ಇದೆ. ಈಗಾಗಲೇ ಇದು ಜನಪ್ರಿಯತೆ ಪಡೆದುಕೊಂಡಂತೆ ಪಕ್ಕಾ ಪವರ್‌ ಪ್ಯಾಕ್ಡ್‌ ಸಿನಿಮಾ. ಮುಖ್ಯವಾಗಿ ಯುವ ಜನರೇ ಇದರ ಟಾರ್ಗೆಟ್.

‌ಹಾಗಂತ ಬರೀ ಯೂತ್‌ಗಷ್ಟೇ ಸಿಮೀತವಾದ ಕಥೆ ಇದಲ್ಲ, ಮಕ್ಕಳ ಭವಿಷ್ಯ ಹಾಗಿರಬೇಕು, ಹೀಗಿರಬೇಕು ಅಂತೆಲ್ಲ ಕನಸು ಕಾಣುವ ಪ್ರತಿಯೊಬ್ಬ ತಂದೆ-ತಾಯಿ ಕೂಡ ನೋಡಲೇಬೇಕಾದ ಸಿನಿಮಾ. ಯಾಕಂದ್ರೆ ಈ ಸಿನಿಮಾ ಕಥೆ ಇರೋದೆ ಎಜುಕೇಷನ್‌ ಮಾಫಿಯಾ ಕುರಿತು. ಶಿಕ್ಷಣ ಅನ್ನೋದು ಇವತ್ತು ಪ್ರತಿಯೊಬ್ಬರಿಗೂ ಅತ್ಯಗತ್ಯ. ಹಾಗಂತ ಅದೀಗ ಪುಕ್ಕಟ್ಟೆ ಸಿಗುತ್ತಿಲ್ಲ. ಅದು ಕೂಡ ಬಿಸಿನೆಸ್.‌ ಅದನ್ನೇ ಬಂಡವಾಳವಾಗಿಸಿಕೊಂಡವರು ಸರ್ಕಾರಿ ಕಾಲೇಜುಗಳನ್ನು ಹೇಗೆ ಮುಗಿಸುವ ಸಂಚು ರೂಪಿಸುತ್ತಾರೆ ಎನ್ನುವುದರ ಸುತ್ತವೇ ಯುವರತ್ನದ ಕಥೆ ಹೆಣೆದಿದ್ದಾರೆ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್.

ಕಥೆ ತುಂಬಾ ಪ್ರಸ್ತುತವಾದದ್ದು. ಅಂದರೆ ಸಮಕಾಲೀನ ವಿಷಯ. ಅದನ್ನು ಒಂದು ಕಥೆಯಾಗಿಸಿ, ಅಚ್ಚುಕಟ್ಟಾಗಿ ನಿರೂಪಿಸಿರುವುದೇ ವಿಶೇಷ. ಅದರೆ, ತಾವಂದುಕೊಂಡಿದ್ದೆನ್ನೆಲ್ಲಾ ಸಿನಿಮಾದಲ್ಲಿ ತೋರಿಸಬೇಕೆನ್ನುವ ನಿರ್ದೇಶಕರ ಹಂಬಲವನ್ನು ಪ್ರೇಕ್ಷಕ ತಡೆದುಕೊಳ್ಳುವುದು ಕೊಂಚ ಕಷ್ಟವಂತೂ ಹೌದು. ಒಂದಷ್ಟು ಲ್ಯಾಗ್‌ ಎನಿಸಿದ ಹಾಗನಿಸುತ್ತೆ. ಮೊದಲರ್ಧ ಸರಾಗವಾಗಿಯೇ ಸಾಗುವ ಸಿನಿಮಾ, ದ್ವಿತಿಯಾರ್ಧ ಕೊಂಚ ಭಾರವೇನೋ ಎಂಬ ಭಾಸವಾಗುತ್ತದೆ. ಯವರತ್ನ ಪವರ್ ಪ್ಯಾಕ್ಡ್ ಚಿತ್ರ ಎಂಬುದನ್ನು ಮುಲಾಜಿಲ್ಲದೆಯೇ ಹೇಳಿಬಿಡಬಹುದು. ಪವರ್ ಇದ್ಮೇಲೆ ಕಂಪ್ಲೀಟ್ ಫ್ಯಾಮಿಲಿ ಪ್ಯಾಕ್ ಇದ್ದೇ ಇರುತ್ತೆ‌ ಅನ್ನೋದ್ರಲ್ಲಿ ಎರಡು ಮಾತಿಲ್ಲ.

ಅಂದಹಾಗೆ, ಯುವರತ್ನ ಹೈವೋಲ್ಟೇಜ್ ಆಕ್ಷನ್ ಸೀಕ್ವೆನ್ಸ್ ಜೊತೆ ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನು ಹೊತ್ತು ಬಂದಿದೆ. ಈ ಹಿಂದೆ ಅದನ್ನು ಟೀಸರ್ ಮತ್ತು ಟ್ರೇಲರ್ ಸಾಬೀತುಪಡಿಸಿತ್ತು. ಇದೀಗ ಸಿನಿಮಾ ತೆರೆಕಂಡಿದ್ದು ಯುವರತ್ನ ಸಮಾಜಕ್ಕೆ‌ ಮಾದರಿ ಚಿತ್ರ ಎಂಬುದಂತೂ ಪಕ್ಕಾ. ಅಭಿ ಸಿನಿಮಾ ನಂತರ ಕಾಲೇಜ್ ಹುಡುಗನ ಪಾತ್ರಕ್ಕೆ ಬಣ್ಣ ಹಚ್ಚಿರುವ ಅಪ್ಪು, ಪವರ್ ಆಫ್ ಯೂತ್ ಅನ್ನೋದನ್ನ ಮತ್ತೆ ಇಲ್ಲಿ ಸಾಬೀತುಪಡಿಸಿದ್ದಾರೆ. ಲಾಸ್ಟ್ ಬೆಂಚ್ ಸ್ಟುಡೆಂಟ್ ಪವರ್ ಏನು‌ ಎಂಬುದನ್ನು ಇಲ್ಲಿ ಅಪ್ಪು ಪ್ರೂ ಮಾಡಿ ತೋರಿಸಿದ್ದಾರೆ. ಅಪ್ಪು ಯುವರತ್ನನ ರೂವಾರಿ. ಅವರಿಗೆ ನಾಯಕಿ ಸಯೇಶಾ. ಅವರ ಸುತ್ತ ಪ್ರಕಾಶ್‌ ರೈ, ಸಾಯಿ ಕುಮಾರ್‌, ಅವಿನಾಶ್‌, “ಡಾಲಿ” ಧನಂಜಯ್‌, ದಿಗಂತ್‌, ಸೋನುಗೌಡ, ರಂಗಾಯಣ ರಘು, ಸಾಧು ಕೋಕಿಲ, ಕುರಿ ಪ್ರತಾಪ್‌, ರಾಜೇಶ್‌ ನಟರಂಗ, ಸುಧಾರಾಣಿ, ಅರುಣ ಬಾಲರಾಜ್‌, ಕಾಕ್ರೋಚ್‌ ಸುಧಿ, ಅರುಗೌಡ ಹೀಗೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಒಂದು ರೀತಿ ಅಗತ್ಯಕ್ಕಿಂತಲೂ ಹೆಚ್ಚೇ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಇಷ್ಟಾದರೂ ಪ್ರತಿಯೊಂದು ಪಾತ್ರವೂ ಇಲ್ಲಿ ಹೈಲೈಟ್‌ ಎನಿಸುತ್ತದೆ. ಅವರೆಲ್ಲ ಏನೆಲ್ಲ ಪಾತ್ರಗಳಲ್ಲಿ ಹೇಗೆಲ್ಲ್‌ ರಂಜಿಸುತ್ತಾರೆ ಅನ್ನೋದನ್ನು ನೀವು ಚಿತ್ರದಲ್ಲೇ ನೋಡ್ಬೇಕು.
ಯುವರತ್ನನಿಗೆ ಪವರ್ ತುಂಬಿರುವುದು ದೊಡ್ಮನೆ ರಾಜಕುಮಾರ.

ಇಂಟರ್ವೆಲ್‌ವರೆಗೆ ಫುಲ್ ಪವರ್ ಫುಲ್. ಇಂಟರ್ವೆಲ್‌ ನಂತರ ಸಿನಿಮಾ ವೇಗ ಕೊಂಚ ಮಂದಗತಿಯಲ್ಲಿ ಸಾಗುತ್ತದೆ. ಯುವರತ್ನ ಲ್ಯಾಗ್ ಎನಿಸೋಕೂ ಶುರುವಾಗುತ್ತೆ. ಆದರೂ ಅಲ್ಲಲ್ಲಿ ಕಾಣುವ ಹಾಡುಗಳು, ಸ್ಟಂಟ್‌ಗಳು ಅವೆಲ್ಲವನ್ನೂ ಪಕ್ಕಕ್ಕೆ ಸರಿಸುತ್ತದೆ. ಯೂಥ್‌ಗೆ ಇಲ್ಲಿ ಮನರಂಜನೆಗಂತೂ ಮೋಸ ಆಗೋದಿಲ್ಲ. ಸಯೇಶಾ ಮತ್ತು ಪುನೀತ್‌ ಅವರ ಕೆಮಿಸ್ಟ್ರಿ ಅಷ್ಟೇನು ಕಿಕ್ ಕೊಡಲ್ಲ ಅನ್ನೋದು ಬಿಟ್ಟರೆ, ಸಂಭಾಷಣೆಯಲ್ಲಿ ಧಮ್‌ ಇದೆ. ಚಿತ್ರಕಥೆ ಕೂಡ ವೇಗದಲ್ಲಿದೆ. ಚಂದದ ನಿರೂಪಣೆಯೂ ಇದೆ. ಭರ್ಜರಿ ಮೇಕಿಂಗ್‌ ಕೂಡ ಇಷ್ಟವಾಗುತ್ತದೆ. ಇವೆಲ್ಲವನ್ನೂ ಅಂದಗಾಣಿಸಿರೋದು ಕ್ಯಾಮರಾ ಕೈಚಳಕ‌. ಕೆಲವು ಹಾಸ್ಯ ದೃಶ್ಯಗಳಲ್ಲಿ ಕತ್ತರಿ ಪ್ರಯೋಗ ಮಾಡಬಹುದಿತ್ತು. ಅನಗತ್ಯ ದೃಶ್ಯಕ್ಕೆ ಕತ್ತರಿ ಬಿದ್ದಿದ್ದರೆ, “ಯುವರತ್ನ” ಇನ್ನಷ್ಟು ಶೈನ್‌ ಆಗಿರುತ್ತಿದ್ದ. ಆದರೂ, ಇಲ್ಲಿ ಕೊಟ್ಟ ಕಾಸಿಗೆ ಮೋಸವಂತೂ ಇಲ್ಲ.

ಪುನೀತ್‌ ನಟನೆ ಇಲ್ಲಿ ಗಮನಸೆಳೆಯುತ್ತೆ. ಅದಕ್ಕಿಂತಲೂ ಹೆಚ್ಚಾಗಿ ಒಬ್ಬ ಸ್ಟುಡೆಂಟ್‌ ಆಗಿ ಇಷ್ಟವಾಗುತ್ತಾರೆ. ಡ್ಯಾನ್ಸ್‌ನಲ್ಲೂ ಮೋಡಿ ಮಾಡಿದ್ದಾರೆ. ಇಲ್ಲೂ ಕೂಡ ಸಿಗ್ನೇಚರ್‌ ಸ್ಟೆಪ್‌ ಇದೆ. ಅದನ್ನು ಹೇಳುವುದಕ್ಕಿಂತ ನೋಡಿ ಅನ್ನುವುದೇ ಒಳಿತು. ಸಯೇಶಾ ಅಂದವಾಗಿದ್ದಾರೆ ಅನ್ನೋದು ಬಿಟ್ಟರೆ, ನಟನೆಗೆ ಹೆಚ್ಚು ಜಾಗ ಗಿಟ್ಟಿಸಿಕೊಂಡಿಲ್ಲ. ಹಾಗಾಗಿ ಅವರ ನಟನೆ ಬಗ್ಗೆ ಹೆಚ್ಚು ಹೇಳುವುದು ಕಷ್ಟ. ಇಡೀ ಸಿನಿಮಾದಲ್ಲಿ ಮತ್ತೊಂದು ವಿಶೇಷತೆ ಅಂದರೆ ಅದು ಪ್ರಕಾಶ್‌ ರೈ. ಅವರು ಚಿತ್ರದುದ್ದಕ್ಕೂ ಕಾಣಿಸಿಕೊಂಡಿದ್ದಾರೆ. ಚಿತ್ರದ ಕೇಂದ್ರಬಿಂದು ಅಂದರೂ ತಪ್ಪಿಲ್ಲ. ಅವರ ಸುತ್ತ ಸಾಗುವ ಯುವರತ್ನ ಚಿತ್ರದಲ್ಲಿ ಕಾಣಿಸಿಕೊಂಡಿರುವ ಪ್ರತಿ ಪಾತ್ರಗಳು ತಮ್ಮದೇ ಛಾಪು ಮೂಡಿಸಿವೆ. ತಮನ್‌ ಸಂಗೀತದ ಹಾಡುಗಳಲ್ಲಿ ಎರಡು ಪರವಾಗಿಲ್ಲ. ಹಿನ್ನೆಲೆ ಸಂಗೀತ ಕೂಡ ಸುಮ್ಮನೆ ನೋಡಿಸಿಕೊಂಡು ಹೋಗುತ್ತೆ. ಸಂಕಲನ ಕೂಡ ಚಿತ್ರದ ವೇಗಕ್ಕೆ ಹೆಗಲು ಕೊಟ್ಟಿದೆ. ಇನ್ನು ಒಂದೊಂದು ಫೈಟ್‌ ಕೂಡ ಅಷ್ಟೇ ಅದ್ಧೂರಿಯಾಗಿ ಮೂಡಿಬಂದಿವೆ. ಅದೇನೆ ಇದ್ದರೂ, ಯುವರತ್ನ ಒಂದೇ ವರ್ಗಕ್ಕಂತೂ ಸೀಮಿತವಲ್ಲ ಅನ್ನುವುದನ್ನು ಸಿನಿಮಾ ನೋಡಿದವರಿಗೆ ಗೊತ್ತಾಗುತ್ತೆ. ಯುವರತ್ನ ಯಾವುದರ ವಿರುದ್ಧ ಹೋರಾಡುತ್ತಾನೆ, ಯಾರ ವಿರುದ್ಧ ಗುಡುಗುತ್ತಾನೆ ಎಂಬ ಕುತೂಹಲವಿದ್ದರೆ ಒಮ್ಮೆ ಯುವರತ್ನನನ್ನು ಕಣ್ತುಂಬಿಕೊಳ್ಳಿ.

ಚಿತ್ರ : ಯುವರತ್ನ * ನಿರ್ದೇಶಕ : ಸಂತೋಷ್‌ ಆನಂದ ರಾಮ್‌ * *ನಿರ್ಮಾಪಕ : ವಿಜಯ್‌ ಕಿರಗಂದೂರು * ತಾರಾಗಣ : ಪುನೀತ್‌, ಸಯ್ಯೇಶಾ, ಪ್ರಕಾಶ್‌ ರೈ, ಅವಿನಾಶ್‌, ಡಾಲಿ ಧನಂಜಯ್‌, ಸಾಯಿಕುಮಾರ್‌, ದಿಗಂತ್‌, ಸೋನುಗೌಡ ಇತರರು.

error: Content is protected !!