Categories
ಸಿನಿ ಸುದ್ದಿ

ಅಂತೂ ಇಂತೂ ಸಿನಿಮಾ ಮಂದಿಗೂ ಸಿಗಲಿದೆ ವ್ಯಾಕ್ಸಿನ್! ಮೇ 31ರಿಂದ ಚಿತ್ರರಂಗದವರಿಗಾಗಿ ವ್ಯಾಕ್ಸಿನ್ ಡ್ರೈವ್ ಶುರು…

ಒಂದು ಕಡೆ ಕೊರೊನಾ ಕಾಟ, ಇನ್ನೊಂದು ಕಡೆ ವ್ಯಾಕ್ಸಿನ್ ಗಾಗಿ ಪರದಾಟ…
ಇದು ಸದ್ಯದ ಪರಿಸ್ಥಿತಿ. ಹೌದು, ಈಗ ವ್ಯಾಕ್ಸಿನ್ ಕೊರತೆ ಹೆಚ್ಚಿದೆ. ಕೆಲವರಿಗೆ ಸಿಕ್ಕರೆ, ಇನ್ನೂ ಕೆಲವರಿಗೆ ಸಿಗುತ್ತಿಲ್ಲ. ಇದಕ್ಕೆ ಸಿನಿಮಾ ಮಂದಿಯೂ ಹೊರತಲ್ಲ. ಸರ್ಕಾರ ಎಲ್ಲರಿಗೂ ವ್ಯಾಕ್ಸಿನ್ ತಲುಪಿಸಲು ಹರಸಾಹಸ ಮಾಡುತ್ತಲೇ ಇದೆ. ಒಂದೊಂದು ಕ್ಷೇತ್ರದವರು ಸ್ವತಃ ಸರ್ಕಾರಕ್ಕೆ ಮನವಿ ಮಾಡಿ‌ ವ್ಯಾಕ್ಸಿನ್ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಈಗ ಕನ್ನಡ ಚಿತ್ರರಂಗ ಕೂಡ ಸರ್ಕಾರದ ಗಮನ ಸೆಳೆದಿದ್ದು, ಸಿನಿಮಾದ ಎಲ್ಲಾ ಕಲಾವಿದರಿಗೂ ವ್ಯಾಕ್ಸಿನ್ ವ್ಯವಸ್ಥೆ ಮಾಡಿದೆ.

ಮೇ 31, ಮತ್ತು ಜೂನ್ 1ರ ಸೋಮವಾರ ಮತ್ತು ಮಂಗಳವಾರ ಈ ಎರಡು ದಿನ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೂ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ “ಕೋವಿಡ್ ಶಿಲ್ಡ್” ಲಸಿಕೆಯನ್ನು ಉಚಿತವಾಗಿ ನೀಡಲಾತ್ತಿದೆ.
ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ಕಲಾವಿದರು ಇದರ ಉಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಲಾಗಿದೆ.


ಈ ಸಂದರ್ಭದಲ್ಲಿ ಹಾಜರಾಗುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು, ಮಾಸ್ಕ್ ಧರಿಸಿರಬೇಕು ಮತ್ತು
ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಬೇಕು.
ಮೇ 31 ರ ಬೆಳಗ್ಗೆ 11.30ಕ್ಕೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್,
ಸಂಸದೆ ಸುಮಲತಾ ಅಂಬರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದ ದೊಡ್ಡಣ್ಣ ಸೇರಿದಂತೆ ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿ ಹಾಗೂ ಬಿಬಿಎಂಪಿ ಕಮಿಷನರ್ ಕೂಡ ಹಾಜರಿರುತ್ತಾರೆ ಎಂದು
ನಿರ್ದೇಶಕಿ ರೂಪ ಅಯ್ಯರ್ ಶ್ರೀವತ್ಸ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಲವ್ ಮಿ ಆರ್ ಹೇಟ್ ಮಿ ಶೀರ್ಷಿಕೆ ಗೊಂದಲ! ಯಾರಿಗೆ ಸಲ್ಲುತ್ತೆ ಈ ಟೈಟಲ್?

ಇತ್ತೀಚೆಗಷ್ಟೇ ಡಾರ್ಲಿಂಗ್ ಕೃಷ್ಣ ಮತ್ತು ರಚಿತರಾಮ್ ಅಭಿನಯದ ಹೊಸ ಚಿತ್ರಕ್ಕೆ ‘ ಲವ್ ಮಿ ಆರ್ ಹೇಟ್ ಮಿ’ ಎಂದು ಹೆಸರಿಡಲಾಗಿದೆ ಅಂತ ಹೇಳಲಾಗಿತ್ತು.
ಈಗ ಆ ಚಿತ್ರದ ಶೀರ್ಷಿಕೆ ಕುರಿತು ತಕರಾರು ಎದ್ದಿದೆ. ಇನ್ನೊಂದು ತಂಡ ಆ ಶೀರ್ಷಿಕೆಯ ಹೆಸರಲ್ಲಿ ಚಿತ್ರ ಮಾಡಲು ಹೊರಟಿರುವ ಸುದ್ದಿ ಹೊರಬಿದ್ದಿದೆ.
ಹೌದು, ಈ ಕುರಿತಂತೆ ನಿರ್ದೇಶಕ ವಿ.ದೇವದತ್ತ ಅವರು ‘ಲವ್ ಮಿ ಆರ್ ಹೇಟ್ ಮಿ’ ಶೀರ್ಷಿಕೆಯಡಿ ಸಿನಿಮಾ ಮಾಡುತ್ತಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಆ ಬಗ್ಗೆ ಹೇಳಿರುವ ಅವರು, ಈ ಹಿಂದೆ “ಸೈಕೊ” ಎಂಬ ಕನ್ನಡ ಚಲನಚಿತ್ರವನ್ನು ನಿರ್ದೇಶಿಸಿದ್ದು ಈ ಚಿತ್ರದಿಂದಲೇ ನಾನು ಗುರುತಿಸಿಕೊಡಿದ್ದೇನೆ. ಈಗ “ಶ್ರೀ ವೆಂಕಟೇಶ್ವರ ಇಂಟರ್ ನ್ಯಾಷನಲ್” ಎಂಬ ಸಂಸ್ಥೆಯಡಿಯಲ್ಲಿ ಶ್ರೀ ರವಿಕಿರಣ್ ಬಿ. ಕೆ. ಅವರ ನಿರ್ಮಾಣದಲ್ಲಿ “ಲವ್ ಮಿ ಆರ್ ಹೇಟ್ ಮಿ” ಎಂಬ ಕನ್ನಡ ಚಲನಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದು, ಈ ಚಿತ್ರದ ಚಿತ್ರೀಕರಣಕ್ಕೆ ಸಂಬಂಧ ಪಟ್ಟಂತೆ ತಯಾರಿಯಲ್ಲಿ ಇರುವಾಗ ಕೋವಿಡ್ ಸಮಸ್ಯೆಯಿಂದ ಉಂಟಾದ ಲಾಕ್ಡೌನ್ ನಿಂದಾಗಿ ಚಿತ್ರೀಕರಣವನ್ನು ಮುಂದೂಡಬೇಕಾಯಿತು, ಈ ಸಂದರ್ಭದಲ್ಲಿ “ಆಕ್ಷನ್ ಕಟ್ ಎಂಟರ್ಟೈನ್ಮೆಂಟ್ ” ಎಂಬ ಬ್ಯಾನರ್ ಅಡಿಯಲ್ಲಿ ಶ್ರೀ ದೀಪಕ್ ಗಂಗಾಧರ್ ರವರು ನಟರಾದ ಡಾರ್ಲಿಂಗ್ ಕೃಷ್ಣ ಹಾಗೂ ರಚಿತಾ ರಾಮ್ ಅಭಿನಯದಲ್ಲಿ “ಲವ್ ಮಿ ಆರ್ ಹೇಟ್ ಮಿ” ಎಂಬ ನಮ್ಮ ಸಂಸ್ಥೆಯ ಶೀರ್ಷಿಕೆಯಡಿಯಲ್ಲಿ ಕನ್ನಡ ಚಿತ್ರವನ್ನು ನಿರ್ಮಾಣ ಮಾಡ ಹೊರಟಿರುವುದು ವಿವಿಧ ಮಾಧ್ಯಮಗಳ ಮೂಲಕ ಈ ದಿನ ನಮ್ಮ ಗಮನಕ್ಕೆ ಬಂದಿರುತ್ತದೆ.


ಈ ಶೀರ್ಷಿಕೆಯು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಯಲ್ಲಿ ನಮ್ಮ ಸಂಸ್ಥೆಯ ಹೆಸರಿನಲ್ಲಿ ದಿನಾಂಕ: ನವೆಂಬರ್ 30, 2020 ರಂದು ನೋಂದವಣೆಗೊಂಡಿದ್ದು, ಈ ಸಂಬಂಧ ಅನುಮತಿಯನ್ನು ಪಡೆದಿರುತ್ತೇವೆ ಹಾಗೂ ಈ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಿಂದ ದಿನಾಂಕ ಜನವರಿ, 4, 2021 ರಂದು ಸೂಕ್ತ ಅನುಮತಿಯನ್ನು ಪಡೆದಿರುತ್ತೇವೆ.

ಲಾಕ್ ಡೌನ್ ಮುಗಿದ ನಂತರ ಈ ಚಿತ್ರಕ್ಕೆ ಸಂಬಂದ ಪಟ್ಟ ಪ್ರಕಟಣೆಗಳನ್ನು ಮಾಧ್ಯಮಗಳಿಗೆ ನೀಡಿ ಪ್ರಚಾರವನ್ನು ಪ್ರಾರಂಭಿಸಬೇಕೆಂಬ ಯೋಜನೆಯಲ್ಲಿರುವಾಗ, ಈ ಘಟನೆ ನಡೆದಿರುತ್ತದೆ. ಮೇಲ್ಕಂಡ ವಿಷಯಕ್ಕೆ ಸ್ಪಷ್ಟನೆಯನ್ನು ನೀಡುತ್ತಾ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ತಮ್ಮ ಅವಾಗಹನೆಗಾಗಿ ನೀಡುತ್ತಿದ್ದೇವೆ ಹಾಗೂ ತಮ್ಮಿಂದ ಸೂಕ್ತ ಸಹಕಾರವನ್ನು ಬಯಸುತ್ತಿದ್ದೇವೆ’ ಎಂದಿದ್ದಾರೆ ನಿರ್ದೇಶಕರು.

ಸದ್ಯ ವಾಣಿಜ್ಯ ಮಂಡಳಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ಸಿನಿಮಾಗೂ ಅದೇ ಹೆಸರಿಡಲಾಗಿದೆ. ಮುಂದೆ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

Categories
ಸಿನಿ ಸುದ್ದಿ

H/34 ಪಲ್ಲವಿ ಟಾಕೀಸ್ ಚಿತ್ರದ ಸಾಂಗ್ ರಿಲೀಸ್; ಇದು ತಿಲಕ್ ನಟನೆಯ ಹಾರರ್ ಚಿತ್ರ!

ತಿಲಕ್ ಅಭಿನಯದ “H/34 ಪಲ್ಲವಿ ಟಾಕೀಸ್” ಚಿತ್ರದ “ಬರೆವೆ ಬರೆವೆ ಒಲವ ಕವನ…” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶ್ರೀನಿವಾಸ್ ಚಿಕ್ಕಣ್ಣ(ಸೀನಿ) ಬರೆದಿರುವ ಈ ಹಾಡನ್ನು ಬಾಲಿವುಡ್‌ ನ ಜನಪ್ರಿಯ ಗಾಯಕ ಅಂಕಿತ್ ತಿವಾರಿ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿರುವ ಈ ಹಾಡಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ.

ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಜೂನ್ ಎರಡನೇ ವಾರದಲ್ಲಿ ಓ ಟಿ ಟಿ ಫ್ಲಾಟ್ ಫಾರಂ ಮೂಲಕ ಚಿತ್ರ ಬಿಡುಗಡೆಯಾಗಲಿದ್ದು,
ಕಾಲಭೈರವ ಆರ್ಟ್ಸ್ ಬ್ಯಾನರ್ ನಲ್ಲಿ ಮಂಜುನಾಥ್ ಕೆ, ಹಾಗು ರವಿಕಿರಣ್ ಎಂ ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ (ಸೀನಿ) ನಿರ್ದೇಶಿಸಿದ್ದಾರೆ.


ಈ ಹಿಂದೆ “6 ನೇ ಮೈಲಿ” ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ. ಹಾರರ್ ಹಾಗು ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ ರಾವ್ ಸಂಕಲನ ಈ ಚಿತ್ರಕ್ಕಿದೆ.

ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. ಸಚೇಂದ್ರ ಪ್ರಸಾದ್, ಅವಿನಾಶ್, ಸುಧಾ ಬೆಳವಾಡಿ, ಅಚ್ಯುತಕುಮಾರ್, ಪದ್ಮಜಾರಾವ್, ಕುರಿ ಪ್ರತಾಪ್, ವಿಶ್ವ, ಅಮೃತ ಮಯೂರಿ, ರಾಜೇಶ್ವರಿ, ರಾಕ್ ಲೈನ್ ಸುಧಾಕರ್, ಅಜಯ್ ರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ಲವ್ ಮಿ ಆರ್ ಹೇಟ್ ಮಿ… ಅಂತಿದಾರೆ ಡಾರ್ಲಿಂಗ್ ಕೃಷ್ಣ! ಅಚ್ಚರಿ ಬೇಡ, ಇದು ಅವರ ಹೊಸ ಸಿನಿಮಾ ಹೆಸರು!!

ಲವ್ ಮಿ ಆರ್ ಹೇಟ್ ಮಿ… ಕಿಸ್ ಮಿ ಆರ್ ಕಿಲ್ ಮಿ…. ಓ ಡಾರ್ಲಿಂಗ್ ಪ್ಲೀಸ್ ಡು ಸಂಥಿಂಗ್ ಟು ಮಿ….’

ಅರೇ, ಇದೇನಪ್ಪಾ ಡಾ.ರಾಜಕುಮಾರ್ ಅಭಿನಯದ ‘ಶಂಕರ್ ಗುರು’ ಹಾಡಲ್ವಾ ಅನ್ನೋ ಅಚ್ಚರಿ ಆಗಬಹುದು. ಇಷ್ಟಕ್ಕೂ ಇಲ್ಲಿ ಹೇಳಹೊರಟಿರೋದ ಸಿನಿಮಾ ಬಗ್ಗೆ.


ಹೌದು, ಡಾರ್ಲಿಂಗ್ ಕೃಷ್ಣ ಅಭಿನಯದ ಹೊಸ ಚಿತ್ರದ ಹೆಸರಿದು. ‘ಲವ್ ಮಿ ಆರ್ ಹೇಟ್ ಮಿ’ ಈ ಮೂಲಕ ಹೊಸ ಕಥಾಹಂದರದ ಸಿನಿಮಾಗೆ ಸಜ್ಜಾಗಿದ್ದಾರೆ ಕೃಷ್ಣ.

ಈ ಸಿನಿಮಾಗೆ ದೀಪಕ್ ಗಂಗಾಧರ್ ನಿರ್ದೇಶಕರು. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ರಚಿತಾರಾಮ್ ನಟಿಸುತ್ತಿದ್ದಾರೆ. ಶ್ರೀಧರ್ ಸಂಭ್ರಮ್ ಸಂಗೀತವಿದೆ. ಕೆ.ಎಮ್.ಪ್ರಕಾಶ್ ಅವರ ಸಂಕಲನವಿದೆ. ಸದ್ಯ ಶುಕ್ರವಾರ ಚಿತ್ರದ ಶೀರ್ಷಿಕೆ ರಿಲೀಸ್ ಆಗಿದೆ.


ಸಿನಿಮಾ ಯಾವಾಗ ಶುರು, ಕಥೆ ಏನು, ಯಾರೆಲ್ಲಾ ಇರಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.

Categories
ಸಿನಿ ಸುದ್ದಿ

ಕೊರೊನಾ ವಿರುದ್ಧ ಗೆಲ್ಲಲು ದುನಿಯಾ ವಿಜಯ್‌ ಹೇಳಿದ ಅನುಭವದ ಪಾಠವಿದು!

‘ಅದೆಲ್ಲಿತ್ತೋ ಏನೋ, ಈ ಕೊರೊನಾ ಸಂಬಂಧಗಳ ನಡುವೆಯೇ ದೊಡ್ಡ ಕಂದಕ ಸೃಷ್ಟಿಸಿದೆ. ಕೊರೊನಾ ಪಾಸಿಟಿವ್‌ ಅಂದಾಕ್ಷಣ, ಅಪ್ಪ, ಅಮ್ಮ, ಮಕ್ಕಳು ಎನ್ನದೇ ಮಾರು ದೂರ ಹೋಗಿ ನಿಲ್ಲುವಂತಹ ಅಮಾನವೀಯ ಘಟನೆಗಳು ಕಣ್ಣೆದುರೆ ನಡೆದು ಹೋಗಿವೆ. ಇದಕ್ಕೆ ಮುಖ್ಯ ಕಾರಣ ಜೀವ ಭಯ. ಕೊರೊನಾ ಪಾಸಿಟಿವ್ ಬಂದವರನ್ನು ಮುಟ್ಟಿದರೆ, ಅವರ ಹತ್ತಿರ ಹೋದರೆ ಆ ಕಾಯಿಲೆ ಬೇರೆಯವರೆಗೂ ಬರುತ್ತೆ ಅಂತ ಆರಂಭದಿಂದ ದೊಡ್ಡ ಸುದ್ದಿ ಆಗಿದ್ದು, ನಾನಾ ಅವಾಂತರಗಳನ್ನು ಸೃಷ್ಟಿಸಿದ್ದು ನಿಮಗೆಲ್ಲ ಗೊತ್ತೇ ಇದೆ. ಎಷ್ಟೋ ಜನ ಬೀದಿ ಹೆಣ ಆಗಿ ಹೋಗಿದ್ದಾರೆ. ಇಂತಹ ಅಮಾನವೀಯ ಘಟನೆಗಳ ನಡುವೆ ಇತರರಿಗೂ ಸ್ಪೂರ್ತಿಯಾಗಬಲ್ಲಂತಹ ಘಟನೆಗೆ ಕನ್ನಡದ ನಟ ದುನಿಯಾ ವಿಜಯ್‌ ಸಾಕ್ಷಿಯಾಗಿದ್ದಾರೆ.

ಹೌದು, ಆ ಘಟನೆ ಏನು ಅಂತ ಅವರದೇ ಮಾತುಗಳು ಇಲ್ಲಿವೆ ಕೇಳಿ…

ಓವರ್‌ ಟು ದುನಿಯಾ ವಿಜಯ್…‌

‘ಸುಮಾರು ಒಂದು ತಿಂಗಳಿಂದ ನನ್ನ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಮನುಷ್ಯ ಯಾವಾಗಲೂ ಪಾಸಿಟಿವ್ ಆಗಿರಬೇಕು ಅಂತಾರೆ. ನಾನು ಜೀವನದಲ್ಲಿ ಇರೋದು ಯಾವಾಗಲೂ ಹಾಗೇನೆ.ಆದರೆ ಒಂದು ದಿನ ನನ್ನ ಜನ್ಮದಾತರಿಬ್ಬರಿಗೂ ಕೊರೊನಾ ಪಾಸಿಟಿವ್ ಆಗಿದೆ ಎಂದಾಗ ಒಂದು ಕ್ಷಣ ನಲುಗಿದೆ. ಮತ್ತೆ ಮರುಕ್ಷಣ ಕಾರ್ಯಶೀಲನಾದೆ. ಬಿಯು ನಂಬರ್ ಬರೋವರೆಗೂ ನಮ್ಮ ತಂದೆ ತಾಯಿಗೆ ಬೆಡ್ ಸಿಗಲ್ಲ ಎಂಬ ವಿಷಯ ನನಗೆ ತಿಳಿಯಿತು. ನನ್ನ ತಂದೆಗೆ 80 ವರ್ಷ ವಯಸ್ಸು, ನನ್ನ ತಾಯಿಗೆ 76 ವರ್ಷ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಯೋಚಿಸಿಕೊಂಡು ಕೋರುವ ಸಮಯ ಇದಲ್ಲ ಎಂದು ತಿಳಿದ ನಾನು, ನನ್ನ ಆತ್ಮೀಯ ವೈದ್ಯ ವಿದ್ಯಾನಂದ ರನ್ನು ಸಂಪರ್ಕಿಸಿದೆ. ಆಗ ಅವರು ಬೆಡ್ ಗೆ ಕಾಯದೆ ಟ್ರೀಟ್ಮೆಂಟ್ ಆರಂಭಿಸಲು ಹೇಳಿದರು.

ಅಂದು ಡಾಕ್ಟರ್ ಜೊತೆ ಸಾಯಂಕಾಲ ಮಾತನಾಡಿ ನಂತರ ರಾತ್ರಿ ಒಬ್ಬನೇ ಯೋಚಿಸುತ್ತಾ ಕುಳಿತಾಗ ‘ನಿಮ್ಮ ತಂದೆ-ತಾಯಿಗೆ ಬಂದಿರುವ ಕೊರೊನಾ, ಅವರನ್ನು ಆರೈಕೆ ಮಾಡುವ ಸಮಯದಲ್ಲಿ ನಿನಗೂ ಬಂದು ಸಾಯುವೆನೆಂಬ ಭಯವೇ’ ಎಂಬ ಪ್ರಶ್ನೆಯನ್ನು ನನ್ನ ಆತ್ಮಸಾಕ್ಷಿ ನನ್ನ ಮುಂದಿಟ್ಟಿತು. ಮರುಕ್ಷಣದಲ್ಲೇ ನನ್ನ ಆತ್ಮಸಾಕ್ಷಿಗೆ ನನ್ನ ಉತ್ತರ ನಗುವಾಗಿತ್ತು. ಅವರೇ ನೀಡಿದ ಈ ಜನ್ಮ ಅವರ ಆರೈಕೆ ಸಂದರ್ಭದಲ್ಲಿ ಹೋದರೆ ಅದಕ್ಕಿಂತ ಅದೃಷ್ಟ ಇನ್ನೇನಿದೆ ಎಂದುಕೊಂಡು. ಸುಮಾರು 15 ಗಂಟೆಗಳ ನಂತರ. ಅಂದರೆ ಮರುದಿನ ಬೆಳಗ್ಗೆ 9 ರ ಮುಂಜಾನೆಗೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು. ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೊನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು.

ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೊನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವಿಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ. ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ. ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು.

‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ನಮ್ಮ ತಂದೆ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಾ ಬಂದರು. ನಾನು ನಿಮ್ಮೆಲ್ಲರ ಬಳಿ ಕೇಳಿಕೊಳ್ಳುವುದಿಷ್ಟೆ. ಕೊರೊನಾ ಬಂತು ಎಂದು ಧೃತಿಗೆಡಬೇಡಿ, ತಂದೆ-ತಾಯಿಯರನ್ನು ಕೈ ಬಿಡಬೇಡಿ. ನನ್ನ ತಂದೆ-ತಾಯಿ ಬದುಕಿದ್ದಾರೆ ಎಂಬ ಖುಷಿಯಿಂದ ಈ ಘಟನೆಯನ್ನು ಹಂಚಿಕೊಳ್ಳುತ್ತಿಲ್ಲ, ಎಷ್ಟೋ ಜನ ನನ್ನ ರೀತಿ ಸೇವೆ ಮಾಡಿ ತಂದೆ ತಾಯಿಯನ್ನು ಕಳೆದುಕೊಂಡವರಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ಸಕಾರಾತ್ಮಕವಾಗಿ ಯೋಚಿಸಿ ಈ ಕೊರೊನಾ ವಿರುದ್ಧ ಗೆಲ್ಲೋಣ. ಜತೆಗೆ ನನ್ನ ಜೀವನದಲ್ಲಿ ನಡೆದ ಈ ಘಟನೆ ಕೆಲವರಿಗೆ ಸ್ಪೂರ್ತಿಯಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹಂಚಿಕೊಂಡಿದ್ದೇನೆ. ಏನಾದರೂ ತಪ್ಪಾಗಿದ್ದರೆ ಕ್ಷಮೆಯಿರಲಿ ಇಂತಿ ನಿಮ್ಮ ವಿಜಯ್ .

ನಟ ದುನಿಯಾ ವಿಜಯ್‌ ಇದಿಷ್ಟು ಮಾತನ್ನು ಬಲವಾದ ಕಾರಣಕ್ಕಾಗಿಯೇ ಹಂಚಿಕೊಂಡಿದ್ದಾರೆ. ಕೊರೊನಾ ಪಾಸಿಟಿವ್‌ ಅಂದಾಕ್ಷಣ, ಮನೆಯವರೇ ಸೋಂಕಿತರನ್ನು ಒಂಥರ ನಿಕೃಷ್ಟವಾಗಿ ನೋಡಿಕೊಳ್ಳುವ ಘಟನೆಗಳು ನಡೆದಿವೆ. ವಯಸ್ಸಾದವರಂತೂ ದಾರಿ ಕಾಣದೆ ಎಷ್ಟೋ ಜನ ಹಾಸಿಗೆಯಲ್ಲಿ ಕಣ್ಣು ಮುಚ್ಚಿದ್ದಾರೆ. ಹಾಗೆ ನೋಡಿದರೆ ಸರಿಯಾದ ಆರೈಕೆ ಸಿಕ್ಕರೆ ಕೊರೊನಾ ಗೆಲ್ಲುವುದು ಸುಲಭವಿದೆ.

ಅದನ್ನೀಗ ನಟ ದುನಿಯಾ ವಿಜಯ್‌ ಮಾಡಿ ತೋರಿಸಿದ್ದಾರೆ. ಅದು ಇತರರಿಗೂ ಸ್ಪೂರ್ತಿ ಆಗಲಿ ಅಂತ ಇದನ್ನು ಹಂಚಿಕೊಂಡಿದ್ದಾರೆ. ಅವರ ಆಶಯದಂತೆ ಇದು ಇತರರಿಗೂ ಸ್ಪೂರ್ತಿ ಆಗಲಿ.

Categories
ಸಿನಿ ಸುದ್ದಿ

ನಟ ಉಪೇಂದ್ರ ಅವರಿಗೆ ಟ್ವಿಟ್ಟರ್‌ ನಲ್ಲಿ 1 ಮಿಲಿಯನ್‌ ಫಾಲೋವರ್ಸ್‌!

ಸಿನಿಮಾ ಜತೆಗೆ ‘ಉತ್ತಮ ಪ್ರಜಾಕೀಯ’ ಪಕ್ಷದ ಮೂಲಕ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯವಾಗಿರುವ ನಟ ಉಪೇಂದ್ರ ಸಾಮಾಜಿಕ ಜಾಲ ತಾಣದಲ್ಲೂ ಅಷ್ಟೇ ಸಕ್ರಿಯವಾಗಿದ್ದಾರೆನ್ನುವುದು ನಿಮಗೂ ಗೊತ್ತು. ರಾಜಕೀಯ ಸೇರಿದಂತೆ ಪ್ರಚಲಿತ ವಿದ್ಯಮಾನಗಳಿಗೆ ಅವರು ಹೆಚ್ಚಾಗಿ ಸೋಷಲ್‌ ಮೀಡಿಯಾದಲ್ಲಿಯೇ ರಿಯಾಕ್ಟ್‌ ಮಾಡುತ್ತಾ ಬರುತ್ತಿದ್ದಾರೆ. ಆ ಮಟ್ಟಿಗೆ ಸೋಷಲ್‌ ಮೀಡಿಯಾದಲ್ಲಿ ಸಕ್ರಿಯವಾಗಿರುವ ಕನ್ನಡದ ಸ್ಟಾರ್‌ ನಟರ ಪೈಕಿ ಅವರು ಒಬ್ಬರು. ಇದೀಗ ರಿಯಲ್ ಸ್ಟಾರ್ ಟ್ವಿಟ್ಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಮತ್ತೊಂದು ಸಾಧನೆ ಮೂಲಕ ಸುದ್ದಿಯಲ್ಲಿದ್ದಾರೆ. ಈಗಾಗಲೇ ಟ್ವಿಟ್ಟರ್‌ ನಲ್ಲಿ ಅತೀ ಹೆಚ್ಚು ಫಾಲೋವರ್ಸ್‌ ಹೊಂದಿರುವ ಖ್ಯಾತಿ ನಟ ಕಿಚ್ಚ ಸುದೀಪ್‌ ಅವರದ್ದು. ಅದು ಬಿಟ್ಟರೆ ಈಗ ಎರಡನೇ ಸ್ಥಾನ ಉಪೇಂದ್ರ ಅವರದ್ದು. ಸುದೀಪ್ ಅವರಿಗೆ ಟ್ವಿಟ್ಟರ್‌ನಲ್ಲಿ 2.5 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಈಗ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಉಪೇಂದ್ರ ಅವರಿಗೆ 1 ಮಿಲಿಯನ್‌ ಫಾಲೋವರ್ಸ್.‌

ಇನ್ನು ರಾಜ್ಯದಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ ದರ್ಶನ್‌ ಅವರಿಗೆ ಟ್ವಿಟ್ಟರ್‌ ನಲ್ಲಿ 879 ಕೆ ಫಾಲೋವರ್ಸ್ ಇದ್ದಾರೆನ್ನುವುದು ಅಚ್ಚರಿ.

ನಟ ಉಪೇಂದ್ರ ಟ್ವಿಟ್ಟರ್ ನಲ್ಲಿ ದಿಢೀರ್‌ ಈ ಮಟ್ಟದಲ್ಲಿ ಫಾಲೋವರ್ಸ್‌ ಹೊಂದಿರುವುದಕ್ಕೂ ಕಾರಣವಿದೆ. ಅವರೀಗ ಬರೀ ನಟರು ಮಾತ್ರವಲ್ಲ, ರಾಜಕಾರಣಿಯೂ ಹೌದು. ತಮ್ಮದೇ ‘ಉತ್ತಮ ಪ್ರಜಾಕೀಯ’ ಪಕ್ಷದ ಮೂಲಕ ಸದಾ ಚಟುವಟಿಕೆಗಳಲ್ಲಿರುತ್ತಾರೆ. ಅದು ಕೂಡ ಅವರ ಜನಪ್ರಿಯತೆ ಹೆಚ್ಚಾಗುವಂತೆ ಮಾಡಿದೆ.

Categories
ಸಿನಿ ಸುದ್ದಿ

ನಿರ್ದೇಶಕ ಆರ್. ಚಂದ್ರು ಅವರ ಮಾನವೀಯ ಕಹಾನಿ ; ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಿದ ಕಬ್ಜ ಟೀಮ್‌

ಕನ್ನಡ ಚಿತ್ರರಂಗದ ಸ್ಟಾರ್‌ ನಿರ್ದೇಶಕ ಆರ್‌.ಚಂದ್ರು, ಸಿನಿಮಾ ಚಟುವಟಿಕೆಗಳ ಆಚೆ ಈಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗೆ ಧಾವಿಸಿದ್ದಾರೆ. ನಟ ಉಪೇಂದ್ರ ಅವರ ಸಹಯೋಗದೊಂದಿಗೆ ಈಗ ಸಿನಿಮಾ ರಂಗದ ಮಾಧ್ಯಮದ ಮಿತ್ರರಿಗೆ ಫುಡ್‌ ಕಿಟ್‌, ತರಕಾರಿ ವಿತೆಇಸಿ ಮಾನವೀಯತೆ ಮೆರೆದಿದ್ದಾರೆ. ಹಾಗೆಯೇ ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೂ ನೆರವಿನ ಹಸ್ತ ಚಾಚಿದ್ದು, ತಮ್ಮಿಂದ ಸಾಧ್ಯವಾದಷ್ಟು ಸಹಾಯವಾಗುವ ಉದ್ದೇಶ ಹೊಂದಿದ್ದಾರೆ.

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ತಮ್ಮ ಊರಿನ ತೋಟದ ಮನೆಯಲ್ಲಿದ್ದ ನಿರ್ದೇಶಕ ಆರ್. ಚಂದ್ರು, ಅಲ್ಲಿಂದಲೇ ತಮ್ಮದೇ ತೋಟ ಹಾಗೂ ಅಕ್ಕಪಕ್ಕದ ರೈತರು ಬೆಳೆದ ತರಕಾರಿಗಳನ್ನು ಖರೀದಿ ಮಾಡುವ ಮೂಲಕ ಅವುಗಳನ್ನು ಸಂಕಷ್ದಟದಲ್ಲಿರುವವರಿಗೆ ವಿತರಣೆ ಮಾಡಿದ್ದಾರೆ. ಇದಕ್ಕೆ ನಟ ಉಪೇಂದ್ರ ಕೂಡ ಸಾಥ್‌ ನೀಡಿದ್ದಾರೆ. ಈಗಾಗಲೇ ಉಪೇಂದ್ರ ಅವರು ತಮ್ಮ ʼಉತ್ತಮ ಪ್ರಜಾಕೀಯʼ ಪಕ್ಷದ ಮೂಲಕ ಕನ್ನಡ ಚಿತ್ರರಂಗ ವಿವಿಧ ವಿಭಾಗಗಳಲ್ಲಿನ ಕಾರ್ಮಿಕರಿಗೆ ಫುಡ್‌ ಕಿಟ್‌ ವಿತರಣೆ ಮಾಡಿದ್ದಾರೆ. ಹಾಗೆಯೇ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ನೊಂದ ರೈತರಿಂದ ತರಕಾರಿ ಖರೀದಿ ಮಾಡುವ ಮೂಲಕ ರೈತರಿಗೂ ತಮ್ಮದೇ ರೀತಿಯಲ್ಲಿ ಬೆಂಬಲವಾಗಿ ನಿಂತಿದ್ದಾರೆ. ಈಗ ನಿರ್ದೇಶಕ ಆರ್. ಚಂದ್ರು ಜತೆಗೆ ಸೇರಿಕೊಂಡು ಸಿನಿಮಾ ಪತ್ರಕರ್ತರ ನೆರವಿಗೆ ಧಾವಿಸಿರುವುದು ವಿಶೇಷ.

ʼ ಇದು ದಾನ, ನೆರವು, ಸಹಾಯ ಎನ್ನುವುದಕ್ಕಿಂತ ಇದೊಂದು ಮನುಷ್ಯತ್ವದ ಕೆಲಸ. ನಾವೇನೆ ಆಗಿದ್ದರೂ, ಮೊದಲು ಮನುಷ್ಯರಾಗಿರಬೇಕು. ನಟ ಉಪೇಂದ್ರ ಅವರು ನಂಗೆ ವಿಚಾರದಲ್ಲಿ ಸ್ಪೂರ್ತಿ. ಅವರು ಮೊನ್ನೆಯಷ್ಟೇ ನಂಗೆ ಕಾಲ್‌ ಮಾಡಿ, ಚಂದ್ರು ಕೊರೊನಾ ಎರಡನೇ ಅಲೆಯಲ್ಲಿ ತುಂಬಾ ಜನ ಸಂಕಷ್ಟದಲ್ಲಿದ್ದಾರೆ. ಅವರಿಗೆ ನಮ್ಮಿಂದಾದ ಏನಾದರೂ ಸಹಾಯ ಮಾಡ್ಬೇಕು. ನಮ್ಮ ಕೆಲಸಕ್ಕೆ ನೀವು ಕೈಜೋಡಿಸಿದ್ರೆ ಚೆನ್ನಾಗಿರುತ್ತೆ ಅಂದಾಕ್ಷಣವೇ ಸರ್‌, ನೀವು ಕೇಳಬೇಕಿಲ್ಲ ಮಾಡೋಣ ಅಂತ ಹೇಳಿ ಊರಿನಿಂದ ಹೊರಟು ಬಂದೆ. ಇಲ್ಲಿಗೆ ಬಂದಾಗ ನಂಗೆ ತಕ್ಷಣಕ್ಕೆ ಅನಿಸಿದ್ದು ನಮ್ಮೊಂದಿಗೆ ಸದಾ ಸಿನಿಮಾ ರಂಗಕ್ಕೆ ಕೆಲಸ ಮಾಡುವ ಮಾಧ್ಯಮ ಮಿತ್ರರ ಸಂಕಷ್ಟ. ಅವರಿಗೆ ನನ್ನಿಂದಾದ ಸಹಾಯ ಮಾಡುವೆ ಅಂದೆ. ಇಲ್ಲಿ ನಾನು ನೆಪ ಮಾತ್ರ. ದೇವರು ನಮಗೆ ಕೊಡುವ ಶಕ್ತಿ ಕೊಟ್ಟಾಗ ಅದನ್ನು ಕಷ್ಟದಲ್ಲಿದ್ದವರಿಗೆ ನೀಡಬೇಕುʼ ಎನ್ನುತ್ತಾರೆ ನಿರ್ದೇಶಕ ಆರ್‌ .ಚಂದ್ರು.

ಕನ್ನಡ ಚಿತ್ರರಂಗದ ಯಶಸ್ವಿ ಯುವ ನಿರ್ದೇಶಕ ಆರ್‌. ಚಂದ್ರು, ಅವರೇ ಹೇಳುವ ಹಾಗೆ ಉದಾರವಾದಿ. ದೊಡ್ಡ ಸಕ್ಸಸ್‌ ನಡುವೆಯೇ ಸರಳಜೀವಿ. ನಿರ್ದೇಶನದ ಆಚೆ ನಿರ್ಮಾಪಕರಾಗಿಯೂ ದೊಡ್ಡ ಗೆಲವು ಕಂಡಾಗಲೂ ಪ್ರತಿಯೊಬ್ಬರ ಜತೆಗೂ ಒಳ್ಳೆಯ ಸ್ನೇಹ ಇಟ್ಟುಕೊಂಡ ಅಪರೂಪ ಮನುಷ್ಯ. ಕಷ್ಟ ಅಂದಾಗ ಎಲ್ಲರಿಗೂ ನೆರವಾಗಿದ್ದಾರೆ. ಅದು ಸಿನಿಮಾ ರಂಗದಲ್ಲಿನ ಅನೇಕರಿಗೂ ಗೊತ್ತಿದೆ. ಸದ್ಯಕ್ಕೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಉಪೇಂದ್ರ ಅಭಿನಯದಲ್ಲಿ ‘ಕಬ್ಜ’ ದಂತಹ ಬಿಗ್‌ ಬಜೆಟ್‌ ನ ಪ್ಯಾನ್‌ ಇಂಡಿಯಾ ಸಿನಿಮಾ ನಿರ್ಮಾಣದ ಒತ್ತಡದಲ್ಲಿದ್ದರೂ, ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಾರೆ. ಕೊರೊನಾ ಮೊದಲ ಅಲೆ ಶುರುವಾಗಿ ಆಗಲೂ ಸಿನಿಮಾ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದಾಗ ತಮ್ಮಿಂದಾದ ಸಹಾಯ ಮಾಡಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಿದ್ದಾರೆ. ಇದೆಲ್ಲ ಯಾಕೆ? ಹೀಗೆ ?

ʼ ನಂಗೆ ಕಷ್ಟ ಅಂತ ಅಂದವರಿಗೆ ಏನಾದರೂ ಸಹಾಯ ಮಾಡಬೇಕು ಅಂತ ಬಾಲ್ಯದಿಂದಲೂ ಅನಿಸುತ್ತಿತ್ತು. ಆಗ ಜೇಬಲ್ಲಿ ದುಡಿರಲಿಲ್ಲ. ಈಗ ಇದೆ. ಹಾಗಂತ ದಾನ ಶೂರ ಕರ್ಣ ಅಲ್ಲ, ದೊಡ್ಡ ಶ್ರೀಮಂತನೂ ಅಲ್ಲ. ನಾನು ಕೂಡ ನಿಮ್ಮ ಹಾಗೆಯೇ ಸಾಮಾನ್ಯ. ಆದರೆ, ನನಗೆ ಊಟಕ್ಕೆ ಆಗಿ, ಇತತರಿಗೂ ಸಹಾಯ ಮಾಡಬಹುದಾಷ್ಟು ಶಕ್ತಿ ನಾನು ನಂಬಿದ ದೇವರಿಂದ ಸಿಕ್ಕಿದೆ. ಅದರಲ್ಲಿಯೇ ಈಗ ಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದೇನೆ. ಇದರಲ್ಲಿ ಒಂಥರ ಖುಷಿ ಇದೆ. ನೆಮ್ಮದಿ ಇದೆ. ಹಾಗೆ ನೋಡಿದರೆ ಇದು, ಒಂದ್ರೀತಿ ಉಪೇಂದ್ರ ಅವರ ಕೊಡುಗೆಯೂ ಹೌದು. ಒಂದ್ಸಲ ಮಡಿಕೇರಿಯಲ್ಲಿ ಪ್ರವಾಹ ಬಂದಾಗ ಒಂದು ರಾತ್ರಿ ಸುಮಾರು ಎರಡು ಗಂಟೆಗೆ ಉಪೇಂದ್ರ ಅವರು ನಂಗೆ ಕಾಲ್‌ ಮಾಡಿದ್ರು. ಅವತ್ತು ಅವರು ನೊಂದವರ ಪರವಾಗಿ ಮಿಡಿದ ಕಳ ಕಳಿ ನನ್ನನ್ನು ಬಡಿದೆಬ್ಬಿಸಿತು. ಅಲ್ಲಿಂದ ಜನರ ಕಷ್ಟಕ್ಕೆ ಒಂದಷ್ಟು ದುಡಿಮೆಯನ್ನು ಮೀಸಲಾಗಿಡಬೇಕೆಂದು ನಿರ್ಧರಿಸಿದೆʼ ಎನ್ನುತ್ತಾರೆ ನಿರ್ದೇಶಕ ಹಾಗೂ ನಿರ್ಮಾಪಕ ಆರ್. ಚಂದ್ರು.

ಅದೇನೆ ಇರಲಿ, ಸಂಕಷ್ಟದ ಸಮಯದಲ್ಲೂ ಹಲವರ ಸಹಾಯಕ್ಕೆ ನಿಂತ ನಿರ್ದೇಶಕ ಆರ್. ಚಂದ್ರು ಅವರಿಗೆ ಒಳ್ಳೆಯದಾಗಲಿ ಎನ್ನುವುದು ನೀಡಲಿ ಎನ್ನುವುದು ‘ಸಿನಿಲಹರಿ’ ಆಶಯ.

Categories
ಸಿನಿ ಸುದ್ದಿ

ಅಮೃತಮತಿಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ; ಮೊದಲ ಸಲ ಸ್ಕ್ರಿಪ್ಟ್ ಗೆ ಪ್ರಶಸ್ತಿ ಪಡೆದ ಬರಗೂರು

ಹದಿಮೂರನೇ ಶತಮಾನದ ಕನ್ನಡ ಕವಿ ಜನ್ನನ ಯಶೋಧರ ಚರಿತೆ’ಯನ್ನು ಆಧರಿಸಿ ಮರು ವ್ಯಾಖ್ಯಾನದ ಮೂಲಕ ಮರು ಸೃಷ್ಟಿರೂಪದಲ್ಲಿ ನಿರ್ಮಾಣಗೊಂಡಅಮೃತ ಮತಿ’ ಕನ್ನಡ ಚಿತ್ರಕ್ಕೆ ವಿದೇಶಿ ಅಂತರರಾಷ್ಟ್ರೀಯ
ಚಿತ್ರೋತ್ಸವಗಳಲ್ಲಿ ಅಪಾರ ಮನ್ನಣೆ ಸಿಗುತ್ತಿದೆ.
ಇಲ್ಲಿಯವರೆಗೆ ಹತ್ತು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ
ಆಯ್ಕೆಯಾಗಿದೆ. ಇತ್ತೀಚೆಗೆ ಜರುಗಿದ ಲಾಸ್ ಏಂಜಲೀಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವ’ದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿದ್ದ,ಅಮೃತಮತಿ’ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.


ಜೊತೆಗೆ ಚಿತ್ರಕತೆ (ಸ್ಕ್ರಿಪ್ಟ್) ರಚನೆಗಾಗಿ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ’ಗೆ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಲಭ್ಯವಾಗಿತ್ತು. ನಾಯಕಿ ಪಾತ್ರದ ಹರಿಪ್ರಿಯ ಅವರು ಎರಡು ಚಿತ್ರೋತ್ಸವಗಳಲ್ಲಿ ಅತ್ಯುತ್ತಮನಟಿ’ ಪ್ರಶಸ್ತಿ ಪಡೆದಿದ್ದರು.

“ನಾನು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಚಿತ್ರ ಪ್ರಶಸ್ತಿ ಪಡೆದಿವೆ. ನನಗೆ ನಿರ್ದೇಶನಕ್ಕಾಗಿ ನೀಡುವ
ರಾಜ್ಯದ ಉನ್ನತ ಮನ್ನಣೆಯಾದ ಪುಟ್ಟಣ್ಣ ಕಣಗಾಲ್’ ಪ್ರಶಸ್ತಿ ಬಂದಿದೆ. ನಾನು ರಚಿಸಿದ ಕತೆ, ಗೀತೆ, ಸಂಭಾಷಣೆಗಳಿಗೂ ಪ್ರಶಸ್ತಿಗಳು ಲಭ್ಯವಾಗಿವೆ. ಆದರೆ ಇಲ್ಲಿಯವರೆಗೆ ನಾನು ರಚಿಸಿದ ಚಿತ್ರಕತೆಗೆ (ಸ್ಕ್ರಿಪ್ಟ್) ಒಂದೂ ಪ್ರಶಸ್ತಿ ಬಂದಿರಲಿಲ್ಲ. ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಚಿತ್ರಕತೆಗಾಗಿ ನನಗೆ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷ ತಂದಿದೆ. ಇದನ್ನು ನಮ್ಮ ಚಿತ್ರತಂಡಕ್ಕೆ ಅರ್ಪಿಸುತ್ತೇನೆ. ಈ ಮೂಲಕ ಇಡೀ ಚಿತ್ರತಂಡದ ಸಹಕಾರವನ್ನು ಗೌರವಿಸುತ್ತೇನೆ' ಎಂದು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಪ್ರತಿಕ್ರಿಯಿಸಿದ್ದಾರೆ.

ಅಮೃತಮತಿ’ ಚಿತ್ರವು ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಸಂಸ್ಥೆಯ ಪುಟ್ಟಣ್ಣನವರಿಂದ ನಿರ್ಮಾಣಗೊಂಡಿದೆ.
ಚಿತ್ರದಲ್ಲಿ ಹರಿಪ್ರಿಯ, ಕಿಶೋರ್, ತಿಲಕ್, ಸುಂದರರಾಜ್, ಪ್ರಮೀಳಾ ಜೋಷಾಯ್, ಸುಪ್ರಿಯಾರಾವ್, ಅಂಬರೀಶ್
ಸಾರಂಗಿ, ವತ್ಸಲಾ ಮೋಹನ್ ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಾಗರಾಜ್ ಆದವಾನಿ
ಛಾಯಾಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನವಿದೆ.
ಮುಂಬೈನ ಸಂಸ್ಥೆಯೊಂದು ಪ್ರದರ್ಶನದ ಹಕ್ಕುಗಳನ್ನು ಪಡೆದಿದ್ದು ಕೊರೊನಾ ಕಡಿಮೆಯಾದ ಮೇಲೆ ‘ಅಮೃತಮತಿ’ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಫಿಲ್ಮ್ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮನವಿ

ಕೊವಿಡ್ -19 ಲಾಕ್ ಡೌನ್ ಹಿನ್ನಲೆಯಲ್ಲಿ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್ ಡೌನ್ ಗೆ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಲಕ್ಷಾಂತರ ಕಾರ್ಮಿಕರು ದಿನಗೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರ ಕುಟುಂಬ ಇಂದು ಬೀದಿಗೆ ಬೀಳುವಂತಾಗಿದೆ. ಆದ್ದರಿಂದ ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು‌ ಮನವಿಯಲ್ಲಿ ಕೋರಿದ್ದಾರೆ.
2020ರ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6000ಕುಟುಂಬಗಳಿಗೆ ತಲಾ 3000 ರು. ಮೌಲ್ಯದ ದಿನಸಿ ಪಡಿತರ ರಿಲೆಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ. ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಟ ತಲಾ₹ 5000 ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಕನಿಷ್ಟ ಆಸರೆ ಆದಂತಾಗುತ್ತದೆ ಎಂದು ಅವರು ಕೋರಿದ್ದಾರೆ.
ನಿಯೋಗದಲ್ಲಿದ್ದ ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರು, ಚಿತ್ರೋದ್ಯಮ ಸಾಕಷ್ಟು ಮಂದಿನ ಕೋವಿಡ್ ಲಸಿಕೆ ಪಡೆದಿಲ್ಲ. ಕೆಲವರು ವಯಸ್ಸಿನ ಕಾರಣ ಸರದಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದೆ ಲಸಿಕೆ ಮೊದಲು ಡೋಸ್ ಪಡೆದಿರುವುದಿಲ್ಲ. ಆದ್ದರಿಂದ ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ ಅವರು ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ಮನವಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್ ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ಪುರಾಣಿಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡೆಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ, ವಿಶೇಷವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ನಿರ್ಮಾಪಕ ಸಂಘದ ಅಧ್ಯಕ್ಷರಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಮತ್ತೊಂದು ಸಿನಿಮಾಗೆ ಅಣಿ ; ಕನ್ನಡ, ತೆಲುಗಲ್ಲೂ ಚಿತ್ರ ರಿಲೀಸ್

‘ದಿಯಾ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಮೋಡಿ ಮಾಡಿದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ, ಇದೀಗ ಮತ್ತೊಂದು ಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅಂದಹಾಗೆ, ಆ ಚಿತ್ರದ ಹೆಸರು ‘ಅಣಿ ಮುತ್ತುಗಳು’.

ಹೌದು, ಮೂಲ ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಟಾಲಿವುಡ್​ನ ಮೊದಲ ಪ್ರಾಜೆಕ್ಟ್ನಲ್ಲಿ ವಿಶೇಷವಾದ ಪಾತ್ರವನ್ನು ನಿರ್ವಹಿಸಿದ್ದಾರೆ ದೀಕ್ಷಿತ್.
ಚಿತ್ರಮಂದಿರ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ ‘ಅಣಿ ಮುತ್ತುಗಳು’ ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್’ರಾವ್ ನಟಿಸಿದ್ದಾರೆ.

ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥಾಹದರ ಈ ಚಿತ್ರದ್ದು. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣು ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್​ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.


ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್​ಡೌನ್​ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ಬರಲಿದೆ.

error: Content is protected !!