‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರ ತಾಳಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದ್ದಾನೆ.
‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. ಬಾಂಡ್ ರವಿ ಮೂಲಕ ಮಾಸ್ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ಆಕ್ಷನ್ ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರೇಕ್ಷಕರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಡಿಸೆಂಬರ್ 9ರಂದು ತೆರೆ ಕಾಣುತ್ತಿದೆ.
ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ರೋಮ್ಯಾಂಟಿಕ್ ಸಾಂಗ್ ‘ಸಹಜ ಸಖಿ’ ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ.
ನರಸಿಂಹಮೂರ್ತಿ. ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಹೊಸ ತಂಡದ ಹೊಸ ಪ್ರಯತ್ನ “ಮಾಂಕ್ ದಿ ಯಂಗ್”. ಇತ್ತೀಚೆಗೆ ಈ ಚಿತ್ರದ ” ಕಣ್ ಗಳೆ ಸೋತು” ಎಂಬ ಹಾಡು ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ಹಿರಿಯ ನಟ ಸುಂದರರಾಜ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಸುಪ್ರೀತ್ ಫಲ್ಗುಣ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಸುಮಧುರ ಕಂಠದ ಗಾಯಕಿ ಐಶ್ವರ್ಯ ರಂಗರಾಜನ್ ಇಂಪಾಗಿ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಹೊರಬಂದಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಮೆಚ್ಚುಗೆ ಪಡೆಯುತ್ತಿದೆ. ಅಶ್ವಿನ್ ಶಾನ್ ಭಾಗ್ ಈ ಹಾಡನ್ನು ಬರೆದಿದ್ದಾರೆ.
ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅಶ್ವಿನ್ ಶಾನ್ ಭಾಗ್ ಬರೆದಿದ್ದಾರೆ. ಖ್ಯಾತ ಗಾಯಕಿಯರಾದ ಐಶ್ವರ್ಯ ರಂಗರಾಜನ್ ಹಾಗೂ ಸಾದ್ವಿನಿ ಕೊಪ್ಪ ಈ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುಪ್ರೀತ್ ಫಲ್ಗುಣ ಮಾಹಿತಿ ನೀಡಿದರು.
ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ, ಎಲ್ಲರ ಸಹಕಾರದಿಂದ ಚೆನ್ನಾಗಿ ಬಂದಿದೆ. ಹಾಡುಗಳಂತೂ ಅದ್ಭುತವಾಗಿದೆ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ.
ನಾಯಕ ಸರೋವರ್, ನಾಯಕಿ ಸೌಂದರ್ಯ ಗೌಡ, ನಟಿ ಉಷಾ ಭಂಡಾರಿ, ನಟ ಶಿವಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.
ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್, ಲಾಲ್ ಚಂದ್ ಖತಾರ್ ಐದು ಜನ ಸೇರಿ “ಮಾಂಕ್ ದಿ ಯಂಗ್” ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಐದು ಜನ ನಿರ್ಮಾಪಕರು ಮಾತನಾಡಿ, ತಮ್ಮ ನೂತನ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.
ಛಾಯಾಗ್ರಾಹಕ ಕಾರ್ತಿಕ್ ಶರ್ಮ, ನೃತ್ಯ ನಿರ್ದೇಶಕ ಹರ್ಷವರ್ಧನ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಾಡಿನ ಪ್ರಸಿದ್ದ ನೃತ್ಯಗಾರರು ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.
ಕನ್ನಡ ಚಿತ್ರರಂಗದಲ್ಲಿ ಏಳೆಂಟು ವರ್ಷಗಳಿಂದ ಸಾಹಿತಿ, ಸಂಗೀತ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುಕವಿ ಈಗ ನಿರ್ದೇಶಕರಾಗಿ ಟೆಂಪರ್ ಎನ್ನುವ ಚಲನಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಸೇರಿದಂತೆ 2 ಭಾಷೆಗಳಲ್ಲಿ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಮಾರಂಭದಲ್ಲಿ ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ, ಧ್ರುವರಾಜ್, ಬಸವರಾಜ್ ಬಣಕಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಮಕ್ಕಳನ್ನು ಚಿಕ್ಕವರಿದ್ದಾಗಲೇ ಸುಸಂಸ್ಕೃತರನ್ನಾಗಿ ಬೆಳೆಸದೆ ಹೋದರೆ ಮುಂದೆ ಅವರು ಹೇಗೆ ಸಮಾಜಕ್ಕೆ ಹೊರೆಯಾಗುತ್ತಾರೆ ಎನ್ನುವುದು ಚಿತ್ರದ ಒನ್ಲೈನ್ ಸ್ಟೋರಿ. ಮಕ್ಕಳ ಜೊತೆ ತಂದೆ-ತಾಯಿಯ ಬಾಂಧವ್ಯ ಹಾಗೂ ಸ್ನೇಹದ ಕುರಿತಾಗಿ ಉತ್ತಮ ಸಂದೇಶ ಕೂಡ ಚಿತ್ರದಲ್ಲಿದೆ ಎಂಬುದು ತಂಡದ ಮಾತು.
ಈ ವೇಳೆ ಮಾತನಾಡಿದ ನಿರ್ದೇಶಕ ಮಂಜುಕವಿ, ಕುಟುಂಬ ಸಮೇತ ನೋಡಬಹುದಾದ ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಇದಾಗಿದ್ದು, ಹೊಡಿ ಬಡಿ ಮಾತ್ರವಲ್ಲದೆ, ಒಂದೊಳ್ಳೆಯ ಸಂದೇಶವಿದೆ. ನ್ನ ಜೊತೆ ಕೆಲಸ ಮಾಡಿದ ನಿರ್ದೇಶಕ ತಂಡದ ಸಹಕಾರದಿಂದಲೇ ಚಿತ್ರ ಇಷ್ಟು ಅದ್ಭುತವಾಗಿ ಮೂಡಿಬಂದಿದೆ, ಮಾಸ್ ಸ್ಟೋರಿ ಜೊತೆಗೊಂದು ಪ್ರೇಮಕಥೆಯೂ ಇದೆ. ಬೆಂಗಳೂರು, ಮಂಡ್ಯ, ಮೈಸೂರು, ನಂಜನಗೂಡು, ಶ್ರೀರಂಗಪಟ್ಟಣ, ಚಿಕ್ಕಮಗಳೂರು ಹಾಗೂ ಕುಂದಾಪುರ ಸುತ್ತಮುತ್ತ 50 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ನಾಯಕ ಚಿಕ್ಕಹುಡುಗನಾಗಿದ್ದಾಗಿಂದಲೂ ಸಣ್ಣ ವಿಷಯಕ್ಕೂ ತಕ್ಷಣ ಕೋಪಗೊಂಡು ಟೆಂಪರ್ ಆಗುತ್ತಾನೆ. ತನ್ನ ಗುಣ ಆತನನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದು ಚಿತ್ರದ ಮೂಲಕ ಹೇಳಿದ್ದೇವೆ. ಗ್ಯಾರೇಜ್ ಮೆಕ್ಯಾನಿಕ್ ಆದ ನಾಯಕ ಊರ ಗೌಡನ ಮಗಳು ಗೀತಾಳನ್ನು ಲವ್ ಮಾಡುತ್ತಾನೆ. ಗೌಡನ ಅಟ್ಟಹಾಸವನ್ನು ಮುರಿದು ನಾಯಕ ಹೇಗೆ ತನ್ನ ಕುಟುಂಬ ಹಾಗೂ ತನ್ನ ಪ್ರೇಯಸಿಯನ್ನು ಕಾಪಾಡಿಕೊಳ್ಳುತ್ತಾನೆ ಎನ್ನುವುದೇ ಟೆಂಪರ್ ಚಿತ್ರದ ಎಳೆ.
ಚಿತ್ರದ ಕಥೆ, ಚಿತ್ರಕಥೆ ಹಾಗೂ 5 ಹಾಡುಗಳನ್ನು ನಾನೇ ಬರೆದಿದ್ದೇನೆ. ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಎಲ್ಲರೂ ಥೇಟರಿಗೆ ಬಂದು ಸಿನಿಮಾ ನೋಡಿ ಎಂದು ಪ್ರೇಕ್ಷಕರಿಗೆ ಮನವಿ ಮಾಡಿದರು. ಇನ್ನು ಈ ಚಿತ್ರದ ಮೂಲಕ ಆರ್ಯನ್ ಸೂರ್ಯ ಹಾಗೂ ಕಾಶಿಮಾ ರಫಿ ಮೊದಲಬಾರಿಗೆ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ನಾಯಕ ಆರ್ಯನ್ ಸೂರ್ಯ ಮಾತನಾಡಿ, ಮೊದಲಚಿತ್ರ ಆರಂಭದಲ್ಲಿ ಭಯ ಇತ್ತು. ತಬಲಾನಾಣಿ ಅವರು ಚೆನ್ನಾಗಿ ಮಾಡು ಎಂದು ಧೈರ್ಯ ತುಂಬಿದರು. ಆಕ್ಷನ್ ಚೆನ್ನಾಗಿ ಮಾಡಲು ಮಾಸ್ ಮಾದ ಅವರೇ ಕಾರಣ. ಮೆಕ್ಯಾನಿಕ್ ಆದ ನಾನು ಕೆಟ್ಟದ್ದನ್ನು ನೋಡಿದರೆ ತಕ್ಷಣ ಟೆಂಪರ್ ಆಗುತ್ತೇನೆ, ಅದರಿಂದ ಏನೇನೆಲ್ಲ ಆಯ್ತು ಅನ್ನೋದೆ ಕಥೆ ಎಂದು ಹೇಳಿದರು. ಕಾಶಿಮಾ ಒಂದು ನದಿಯ ಹೆಸರು, ಆ ನದಿಯಂತೆಯೇ ಸಪೂರ ದೇಹ ಹೊಂದಿರುವ ನಾಯಕಿ ತನ್ನ ಪಾತ್ರದ ಕುರಿತಂತೆ ಮಾತನಾಡುತ್ತ ಚಿತ್ರದಲ್ಲಿ ನಾನು ಒಬ್ಬ ಮೆಡಿಕಲ್ ಸ್ಟೂಡೆಂಟ್ ಹಾಗೂ ಊರಗೌಡನ ಮಗಳು. ಮೆಕ್ಯಾನಿಕ್ ಒಬ್ಬನನ್ನು ಲವ್ ಮಾಡುತ್ತೇನೆ, ಆ ವಿಷಯ ನಮ್ಮ ಮನೆಯಲ್ಲಿ ಗೊತ್ತಾದ ನಂತರ ಏನಾಗುತ್ತೆ ಅನ್ನೋದು ಚಿತ್ರದಲ್ಲಿದೆ ಎಂದು ಹೇಳಿದರು.
ನಟ ಮಿತ್ರ ಮಾತನಾಡಿ, ಮಂಜು ಪ್ರತಿಭಾವಂತ ಬರಹಗಾರ, ಸ್ನೇಹ ಮತ್ತು ಸಂಬಂಧದ ಸಾರವನ್ನು ಹೇಳುವ ಚಿತ್ರವಿದು. ಹಾಸ್ಯ ಇದ್ದರೂ ಮೆಚ್ಯೂರ್ ಆದಂಥ ಪಾತ್ರವನ್ನು ಮಾಡಿದ್ದೇನೆ ಎಂದು ಹೇಳಿದರು. ಶ್ರೀಬಾಲಾಜಿ ಎಂಟರ್ ಪ್ರೈಸಸ್ ಮೂಲಕ ವಿ. ವಿನೋದ್ಕುಮಾರ್ ಹಾಗೂ ಮೋಹನಬಾಬು ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪತ್ರಕರ್ತ ಧನು ಯಲಗಚ್ ಹಾಗೂ ಮಜಾಟಾಕೀಸ್ ಪವನ್ಕುಮಾರ್ ನಾಯಕನ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ತಬಲಾನಾಣಿ, ಸುಧಾ ಬೆಳವಾಡಿ ನಾಯಕನ ತಂದೆ, ತಾಯಿಯಾಗಿ ನಟಿಸಿದ್ದಾರೆ. ನಾಯಕನ ಬಾಲ್ಯದ ಪಾತ್ರವನ್ನು ಮಾಸ್ಟರ್ ಪವನ್ ಮೋರೆ ಮಾಡಿದ್ದಾರೆ. ಈ ಚಿತ್ರದಲ್ಲಿ ೫ ಹಾಡುಗಳಿದ್ದು ಆರ್.ಹರಿಬಾಬು ಸಂಗೀತ ಸಂಯೋಜನೆ ಮಾಡಿದ್ದಾರೆ. ಆರ್.ಕೆ.ಶಿವಕುಮಾರ್ ಅವರ ಕ್ಯಾಮರಾವರ್ಕ್ ಚಿತ್ರಕ್ಕಿದೆ.
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ರವರು ಜಂಟಿಯಾಗಿ ನಿರ್ಮಿಸಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ ‘ಪದವಿಪೂರ್ವ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಫ್ರೆಂಡ್ಶಿಪ್ ಸಾಂಗ್ ಮೂಲಕ ಈಗಾಗಲೇ ಭರ್ಜರಿ ಸದ್ದು ಮಾಡಿರುವ ಚಿತ್ರ ಡಿಸೆಂಬರ್ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶರತ್ ಲೋಹಿತಾಶ್ವ, ರಂಗಾಯಣ ರಘು, ರಾಮಾರಾಮಾರೆ ಖ್ಯಾತಿಯ ನಟರಾಜ್ ಭಟ್ ನಟಿಸಿದ್ದು ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ಪ್ರಭು ಮುಂದ್ಕುರ್, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ವಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕಣ್ಚಳಕ ಹಾಗು ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಇನ್ನಷ್ಟು ಶ್ರೀಮಂತಗೊಳಿಸಿದೆ.
ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ. ಅಂತಹುದೇ ವಿಭಿನ್ನ ಕಥೆಯ “ಇನಾಮ್ದಾರ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಸಾಕಷ್ಟು ಕುತೂಹಲ ಹುಟ್ಟಿಸಿದೆ.
ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್” ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ ಸಂಘರ್ಷದ ಕಥೆ. “ಇನಾಮ್ದಾರ್” ಚಿತ್ರಕ್ಕೆ “ಕಪ್ಪು ಸುಂದರಿಯ ಸುತ್ತ” ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ತಾವು ಕೂಡ ಒಂದು ಪಾತ್ರ ಮಾಡಿರುವುದಾಗಿ ಹೇಳಿದರು.
ನನ್ನದು ಈ ಚಿತ್ರದಲ್ಲಿ ಕಾಡಿನ ನಾಯಕನ ಪಾತ್ರ. ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಬಣ್ಣ ಹಾಕಲು ಎರಡು ಗಂಟೆ ಹಿಡಿಸಿದರೆ, ತೆಗೆಯಲು ಐದು ಗಂಟೆ ಹಿಡಿಸುತ್ತಿತ್ತು ಎಂದು ಚಿತ್ರೀಕರಣದ ಅನುಭವವನ್ನು ಪ್ರಮೋದ್ ಶೆಟ್ಟಿ ಹಂಚಿಕೊಂಡರು.
ಅಭಿನಯದ ಅನುಭವವಿಲ್ಲದ ನನಗೆ ಅಭಿನಯ ಹೇಳಿಕೊಟ್ಟವರು ನಿರ್ದೇಶಕರು. ನನ್ನ ಅಭಿನಯ ಚೆನ್ನಾಗಿ ಬಂದಿದ್ದರೆ, ಅದಕ್ಕೆ ನಿರ್ದೇಶಕರೆ ಕಾರಣ ಎಂದರು ನಿರಂಜನ್ ಛತ್ರಪತಿ.
ನಿರ್ದೇಶಕ ಸಂದೇಶ್ ನನ್ನ ಆತ್ಮೀಯ ಸ್ನೇಹಿತ. ಚಿತ್ರದ ಟೀಸರ್ ನೋಡಿ ಖುಷಿಯಾಗಿದೆ. ಚಿತ್ರ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ ಎಂದರು ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು.
ನಾಯಕಿಯರಾದ ಚಿರಶ್ರೀ ಅಂಚಿನ್, ಎಸ್ತರ್ ನರೋನ್ಹಾ, ಚಿತ್ರದಲ್ಲಿ ನಟಿಸಿರುವ ಎಂ.ಕೆ.ಮಠ, ರಘು ಪಾಂಡೇಶ್ವರ ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ರಾಕಿ ಸೋನು, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ಮೇಹು ಹಾಗೂ ನೃತ್ಯ ನಿರ್ದೇಶಕಿ ಗೀತಾ ಸಾಯಿ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.
ಕನ್ಮಡ ಚಿತ್ರರಂಗಕ್ಕೆ ಮತ್ತೊಬ್ಬ ಚೆಲುವೆಯ ಆಗಮನವಾಗುತ್ತಿದೆ. ಹೌದು, ಈಗಾಗಲೇ ಹಲವು ಸ್ಟಾರ್ ನಟರ ಮಕ್ಕಳು ಕನ್ನಡ ಸಿನಿ ಜಗತ್ತಿಗೆ ಕಾಲಿಟ್ಟಾಗಿದೆ. ಆ ಸಾಲಿಗೆ ಬ್ಯೂಟಿಫುಲ್ ಹೊಸ ನಾಯಕಿಯ ಆಗಮನಾವಗುತ್ತಿದೆ. ಅದು ಬೇರಾರೂ ಅಲ್ಲ, ಲವ್ಲಿ ಸ್ಟಾರ್ ಪ್ರೇಮ್ ಅವರ ಮಗಳು ಅಮೃತ ಪ್ರೇಮ್
ಇದು ಎಲ್ಲರಿಗೂ ಅಚ್ಚರಿ ಆಗಬಹುದು. ಆದರೂ ಇದು ನಿಜ. ಪ್ರೇಮ್ ಪುತ್ರಿ ಆಮೃತ ಅವರು ಸಿನಿಮಾಗೆ ಕಾಲಿಡುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ಯಾಕೆಂದರೆ, ಲವ್ಲಿ ಪ್ರಿನ್ಸಸ್ ಗೆ ತಾನೊಬ್ಬ ಡಾಕ್ಟರ್ ಆಗಬೇಕೆಂಬ ಆಸೆ ಇತ್ತು. ಅದರಂತೆಯೇ ಅಮೃತ ಅವರ ಪ್ರೀತಿಯ ಅಪ್ಪ ಪ್ರೇಮ್ ಕೂಡ ಮಗಳ ಆಸೆಯಂತೆಯೇ ಓದಿಸುವತ್ತ ಚಿತ್ತ ಹರಿಸಿದ್ದರು. ಮೆಡಿಕಲ್ ವಿಷಯಕ್ಕೆ ಸಂಬಂಧಿಸಿದಂತೆಯೇ ಅಮೃತ ಬಯೋಮೆಡಿಕಲ್ ಕೋರ್ಸ್ ಮಾಡುತ್ತಿದ್ದರು.
ಮಗಳ ಸಿನಿಮಾಗೆ ಪ್ರೇಮ್ ಟ್ವೀಟ್…
ಹಾಗೊಮ್ಮೆ ಸಡನ್ ಆಗಿ ಪ್ರೇಮ್ ಅವರ ಬಳಿ ಮಗಳನ್ನು ಸಿನಿಮಾ ನಾಯಕಿ ಕುರಿತ ವಿಷಯ ಚರ್ಚೆ ಆಗುತ್ತೆ. ಸರಿ, ಪ್ರೇಮ್ ಕೂಡ, ಮಗಳ ಬಳಿ ಬಂದು ಮಗಳೇ ಹೀಗೊಂದು ಒಳ್ಳೆಯ ಬ್ಯಾನರ್ ಮತ್ತು ಕಥೆ ಇರುವ ಸಿನಿಮಾಗೆ ಆಫರ್ ಬಂದಿದೆ ಮಾಡ್ತೀಯ ಅಂದಿದ್ದಾರೆ. ಮಗಳು ಅಮೃತ ಕೂಡ ಹಿಂದೆ ಮುಂದೆ ನೋಡದೆ, ಯೆಸ್ ಪಪ್ಪಾ ಅಂತ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಅಂದಹಾಗೆ, ಪ್ರೇಮ್ ಪುತ್ರಿಗೆ ಅಂಥದ್ದೊಂದು ಅವಕಾಶ ಸಿಕ್ಕಿದ್ದು, ಡಾಲಿ ಧನಂಜಯ್ ಅವರ ಡಾಲಿ ಫಿಲಂಸ್ ಬ್ಯಾನರ್ ಚಿತ್ರ. ಹೆಸರು ‘ಟಗರು ಪಲ್ಯ’ ಇದು ಡಾಲಿ ಧನಂಜಯ ನಿರ್ಮಾಣದ ಸಿನಿಮಾ. ಚಿತ್ರವನ್ನು ಉಮೇಶ್ ಕೆ. ಕೃಪ ನಿರ್ದೇಶಿಸುತ್ತಿದ್ದಾರೆ.
ಇದೊಂದು ಹಳ್ಳಿ ವಾತಾವರಣದಲ್ಲಿ ನಡೆಯೋ ಕಥೆ. ಅದರಲ್ಲೂ ಮಹಿಳಾ ಪ್ರಧಾನ ಕಥೆ ಆಗಿರುವುದರಿಂದ ಮಿಸ್ ಆಗಬಾರದು ಅಂತ ಪ್ರೇಮ್ ಕೂಡ ಮಗಳಿಗೆ ಸಾಥ್ ನೀಡಿದ್ದಾರೆ. ಕಥೆಯ ಒನ್ ಲೈನ್ ಕೇಳಿಯೇ ಅಮೃತ ಕೂಡ ನಟಿಸಲು ಒಪ್ಪಿದ್ದಾರೆ.
ಸದ್ಯ ಅಮೃತ ಅವರು ಕಳೆದ ಹತ್ತು ದಿನಗಳಿಂದ ಚಿತ್ರತಂಡದ ವರ್ಕ್ ಶಾಪ್ ನಲ್ಲಿ ತೊಡಗಿಕೊಂಡಿದ್ದಾರೆ. ಯಶಸ್ವಿನಿ ಎನ್ನುವವರು ಅಮೃತಗೆ ತರಬೇತಿ ನೀಡುತ್ತಿದ್ದಾರೆ. ಡಿಸೆಂಬರ್ 1 ರಿಂದ ‘ಟಗರು ಪಲ್ಯ’ ಚಿತ್ರಕ್ಕೆ ಚಾಲನೆ ಸಿಗಲಿದೆ. ಬಹುತೇಕ ಕರ್ನಾಟಕದಲ್ಲೇ ಚಿತ್ರೀಕರಣ ನಡೆಯಲಿದೆ.
ಅದೇನೆ ಇರಲಿ, ಲವ್ಲಿ ಸ್ಟಾರ್ ಕೂಡ ಸಕ್ಸಸ್ ಸಿನಿಮಾ ಕೊಡುವ ಮೂಲಕ ಚಿತ್ರರಂಗದ ಬೇಡಿಕೆ ನಟರಾಗಿದ್ದಾರೆ. ಈಗ ಲವ್ಲಿ ಪ್ರಿನ್ಸಸ್ ಕಲರವ ಶುರುವಾಗುತ್ತಿದೆ. ಅಮೃತ ಪ್ರೇಮ್ ಅವರ ಹೊಸ ಜರ್ನಿ ಚೆನ್ನಾಗಿರಲಿ ಅನ್ನೋದು ಸಿನಿಲಹರಿ ಆಶಯ.
ಹೊಂಬಾಳೆ ಫಿಲಂಸ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಹಾಗು ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿ, ನಾಯಕಿ ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್ ಫಾಸಿಲ್, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿದ್ಣದಾರೆ.
‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಫಹಾದ್ ಫಾಸಿಲ್ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್ ಕುಮಾರ್, ಜಾಯ್ ಮ್ಯಾಥ್ಯೂ, ದೇವ್ ಮೋಹನ್, ಅನು ಮೋಹನ್ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣವಿದೆ.
ಚಿತ್ರ : ಖಾಸಗಿ ಪುಟಗಳು ನಿರ್ದೇಶನ : ಸಂತೋಷ್ ಶ್ರೀಕಂಠಪ್ಪ ನಿರ್ಮಾಣ : ಮಂಜು, ವೀಣಾ , ಮಂಜುನಾಥ್ ಸಂಗೀತ : ವಾಸುಕಿ ವೈಭವ್ ಛಾಯಾಗ್ರಾಹಕ : ವಿಶ್ವಜಿತ್ ರಾವ್ ತಾರಾಗಣ : ವಿಶ್ವ , ಲಿಯೋನಿಲ್ಲಾ ಶ್ವೇತಾ ಡಿಸೋಜಾ, ಚೇತನ್ ದುರ್ಗ ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್, ಮೋಹನ್ ಜುನೇಜ ಇತರರು.
ಸಿನಿಮಾ ಅಂದರೆ, ಕಿವಿಗೆ ಇಂಪೆನಿಸಬೇಕು, ಕಣ್ಣಿಗೂ ತಂಪೆನಿಸಬೇಕು ಇವೆರೆಡರ ಹೊರತಾಗಿ ಹೃದಯಕ್ಕೆ ನಾಟುವಂತಿರಬೇಕು. ಜೊತೆಗೆ ಮತ್ತೆ ಮತ್ತೆ ಕಾಡುವ ಹಾಗು ನೋಡುವಂತಿರಬೇಕು. ಈ ಮೇಲಿನ ಎಲ್ಲಾ ಅರ್ಹತೆಗಳಿರುವ ಅನೇಕ ಸಿನಿಮಾಗಳು ಬಂದಿವೆ. ಅಂತಹ ಗುಣಗಳಿರುವ ಸಿನಿಮಾ ಸಾಲಿಗೆ ‘ಖಾಸಗಿ ಪುಟಗಳು’ ಸಿನಿಮಾವೂ ಸೇರಿದೆ.
ಅವರಿಬ್ಬರದು ಮೊದಲ ನೋಟಕ್ಕೆ ಬಿದ್ದ ಪ್ರೀತಿ. ಆ ಪ್ರೀತಿ ಮೇಲೆ ಯಾರ ಕಣ್ಣೂ ಬೀಳಲ್ಲ. ಗೆಳೆಯರ ಸಾಥ್ ಒಂದಷ್ಟು ಮನ್ ಕೀ ಬಾತ್ ಫಲಿಸುವ ಪ್ರೀತಿಯ ತಾಕತ್ತು. ಕರಾವಳಿಯ ಹಿನ್ನೆಲೆಯಲ್ಲಿ ಅರಳುವ ಸುಂದರ ಪ್ರೇಮ ಕಾವ್ಯ ಇಡೀ ಸಿನಿಮಾದ ಹೈಲೆಟ್. ಅವಳು ಮತ್ತು ಅವನ ನಡುವೆ ನಿಷ್ಕಲ್ಮಷ ಪ್ರೀತಿ. ಅದಮ್ಯ ನಂಬಿಕೆ, ನಿಟ್ಟಿರಲಾರದ ಗಟ್ಟಿ ಗೆಳೆತನ, ಲವಲವಿಕೆ ತುಂಬಿರುವ ಕಾಲೇಜ್ ಲೈಫು, ಅಲ್ಲಲ್ಲಿ ನೋವು, ನಲಿವು… ಇದು ಸಿನಿಮಾದೊಳಗಿನ ಹೂರಣ.
ಮುಗ್ಧ ಮನಸುಗಳ ಮೇಲಿನ ಪ್ರೀತಿ ಸುತ್ತವೇ ತಿರುಗುವ ಭೂಮಿ, ಸೂರ್ಯನ ಪ್ರೇಮಕ್ಕೆ ಜೈ ಅನ್ನದಿರಲಾರದು. ಅಷ್ಟರಮಟ್ಟಿಗೆ ನಿರ್ದೇಶಕರು ಇಲ್ಲೊಂದುಪ್ರೇಮ ದೃಶ್ಯ ಕಾವ್ಯ ಕಟ್ಟಿಕೊಟ್ಟಿದ್ದಾರೆ. ಸಿನಿಮಾ ನೋಡುವ ಪ್ರತಿಯೊಬ್ಬರಲ್ಲೂ ತಮ್ಮ ಕಾಲೇಜು ದಿನಗಳ ಪ್ರೀತಿ ಪ್ರೇಮದ ಛಾಯೆ ಹಾಗೊಮ್ಮೆ ಹಾದು ಹೋಗದೆ ಇರದು. ಇಲ್ಲಿ “ಖಾಸಗಿ ಪ್ರೀತಿಯ ವಿಷಯಗಳದ್ದೇ ದರ್ಬಾರು. ಅಂತಹ ಅದೆಷ್ಟೋ ಸೂಕ್ಷ್ಮ ಸಂವೇದನೆಯ ವಿಷಯಗಳು ಖಾಸಗಿ ಪುಟಗಳಲ್ಲಿ ದಾಖಲಾಗಿ, ಕಣ್ ಒದ್ದೆಯಾಗಿಸುವಂತೆ ಮಾಡುತ್ತವೆ.
ಪ್ರತಿಯೊಬ್ಬರ ಲೈಫಲ್ಲೂ ಒಂದೊಂದು ಖಾಸಗಿ ವಿಷಯ ಕಾಮನ್. ಚಿತ್ರದ ಹೀರೋ ಸೂರ್ಯನ ಫ್ಲ್ಯಾಶ್ ಬ್ಯಾಕ್ ಕಥೆ ಚಿತ್ರವನ್ನು ನೋಡಿಸಿಕೊಂಡು ಹೋಗುತ್ತದೆ. ಕಾಲೇಜು ಓದುವ ಸೂರ್ಯನಿಗೆ ಅದೇ ಕಾಲೇಜಿಗೆ ಓದಲು ಬರುವ ಭೂಮಿ ಇಷ್ಟವಾಗುತ್ತಾಳೆ. ಆ ಇಷ್ಟ ಪ್ರೀತಿಗೆ ತಿರುಗಿ ಇನ್ನೇನು ಗಟ್ಟಿಮೇಳಕ್ಕೆ ಸಜ್ಜಾಗುತ್ತಾರೆ. ನೋಡುಗರಿಗೆ ಅದೆಂಥಾ ಪ್ರೀತಿ ಮಾಯೆ ಅಂತೆನಿಸಿ, ಮಂದಹಾಸ ಬೀರುತ್ತಲೇ ಇಡೀ ಸಿನಿಮಾ ಕಥೆಯೊಳಗೆ ತಲ್ಲೀನರಾಗುವಷ್ಟರ ಮಟ್ಟಿಗೆ ಸೂರ್ಯ, ಭೂಮಿ ಆವರಿಸಿಕೊಳ್ಳುತ್ತಾರೆ. ಅವರೊಂದಿಗೆ ಸೂರ್ಯನ ಗೆಳೆಯರ ತುಂಟಾಟ, ಕಚಗುಳಿ ಮಾತು ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತದೆ.
ಕಾಲೇಜು ಅಂದಮೇಲೆ ತರಲೆ, ರಗಳೆ ಸಹಜ. ಅದು ಇಲ್ಲೂ ಇದೆ. ಫಸ್ಟ್ ಬೆಂಚ್ ಸ್ಟೂಡೆಂಟ್ ಹಾಗು ಲಾಸ್ಟ್ ಬೆಂಚ್ ಸ್ಟೂಡೆಂಟ್ ಬಗ್ಗೆ ಗುಣಗಾನವೂ ಇದೆ.
ಇಲ್ಲಿ ಪ್ರೀತಿ ಗೀತಿ ಇತ್ಯಾದಿಯ ಜೊತೆಗೊಂದು ಭಾವನಾತ್ಮಕ ಬೆಸುಗೆ ಇದೆ. ಅದು ಏನು ಅನ್ನೋದಕ್ಕೆ ಸಿನಿಮಾ ನೋಡಲೇಬೇಕು. ಅಲ್ಲಲ್ಲಿ ನಗು ಜೊತೆ ಭಾವುಕತೆಯೂ ತುಂಬಿದೆ. ಕೆಲ ಸನ್ನಿವೇಶಗಳು ಎದೆಭಾರವಾಗಿಸುತ್ತ ಹೋಗುತ್ತೆ. ಅಲ್ಲಲ್ಲಿ ಕೆಲವು ಟ್ವಿಸ್ಟು ಟೆಸ್ಟುಗಳ ನಡುವೆ ಸಿನಿಮಾ ಕಾಡುತ್ತಲೇ ಹೋಗುತ್ತೆ. ಮೊದಲರ್ಧ ಒಂದು ರೀತಿ ಕಾಡಿದರೆ, ದ್ವಿತಿಯಾರ್ಧ ಕಾಡುವ ರೀತಿಯೇ ಬೇರೆ. ಈ ಕಾಡುವಿಕೆಯ ಅನುಭವ ನಿಮಗೂ ಆಗಬೇಕಾದರೆ ಮಿಸ್ ಮಾಡದೆ ಹೊಸಬರ ಖಾಸಗಿ ಪ್ರೀತಿಗೆ ಜೈ ಅಂದು ಬನ್ನಿ.
ಇನ್ನು, ನಿರ್ದೇಶಕ ಸಂತೋಷ್ ಶ್ರೀಕಂಠಪ್ಪ ಅವರಿಗೆ ಪ್ರೀತಿಯ ಬಡಿತ ಹೇಗಿರುತ್ತೆ ಅನ್ನುವುದರ ಅರಿವಿದೆ. ಅದನ್ನು ಚೆಂದವಾಗಿ ಕಟ್ಟಿ ಕೊಟ್ಟಿದ್ದಾರೆ. ಪ್ರೀತಿ ವಿಷಯದ ಜೊತೆ ಕಥೆಯ ಖಾಸಗಿ ಪುಟದಲ್ಲಿ ಅಪ್ಪ ಮಗಳ ಪ್ರೀತಿ, ಅಪ್ಪ ಮಗನ ಬಾಂಧವ್ಯ, ಗೆಳೆಯರ ಸಹಕಾರ, ಉಪನ್ಯಾಸಕರ ಪ್ರೋತ್ಸಾಹ ಒಂದಷ್ಟು ದುಗುಡ- ದುಮ್ಮಾನಗಳನ್ನು ಬ್ಯಾಲೆನ್ಸ್ ಮಾಡಿ ಚೆಂದದ ಪ್ರೀತಿಯ ‘ಪುಟ’ ವಿನ್ಯಾಸ ಮಾಡಿದ್ದಾರೆ.
ಸಿನಿಮಾದ ಮತ್ತೊಂದು ಹೈಲೆಟ್ ಅಂದರೆ, ಅದು ವಿಶ್ವಜಿತ್ ರಾವ್ ಅವರ ಕ್ಯಾಮೆರಾ ಕೈಚಳಕ. ಇಡೀ ಪ್ರೀತಿಯ ಪುಟವನ್ನು ಕರಾವಳಿಯ ನೇಸರದಲ್ಲಿ ಅದ್ಭುತ ಎನಿಸುವಂತೆ ಹಿಡಿದಿಟ್ಟಿದ್ದಾರೆ. ಪ್ರತಿ ಫ್ರೇಮ್ ಕೂಡ ಕಣ್ಣಿಗೆ ಇಷ್ಟವಾಗುವಂತೆ ತಮ್ಮ ಕ್ಯಾಮೆರಾ ಕೆಲಸ ತೋರಿಸಿದ್ದಾರೆ.
ಈ ಸಿನಿಮಾ ಇಷ್ಟವಾಗೋಕೆ ಮತ್ತೊಂದು ಕಾರಣ, ಹಿನ್ನೆಲೆ ಸಂಗೀತ ಮತ್ತು ಹಾಡು. ವಾಸುಕಿ ವೈಭವ್ ಅವರ ಸಂಗೀತದ ವೈಭವ ಇಲ್ಲೂ ಅರಳಿದೆ. ಕಥೆಗೆ ಪೂರಕವಾಗಿ ರಾಕೇಶ್ ಆಚಾರ್ಯ ಅವರ ಹಿನ್ನೆಲೆ ಸಂಗಿತ ಹರಿದಾಡಿದೆ.
ಇನ್ನು, ಇಡೀ ಸಿನಿಮಾವನ್ನು ನಾಯಕ ವಿಶ್ವ ಹೆಗಲ ಮೇಲೆ ಹೊತ್ತಿದ್ದಾರೆ. ನಟನೆ, ಫೈಟು ಎರಡರಲ್ಲೂ ಇಷ್ಟವಾಗುತ್ತಾರೆ. ಮುಗ್ಧ ಪ್ರೇಮಿಯಾಗಿ ಕೊನೆಯವರೆಗೂ ಕಾಡುತ್ತಾರೆ.
ನಾಯಕಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ಕೂಡ ಗಮನ ಸೆಳೆಯುತ್ತಾರೆ. ಸಿನಿಮಾ ವೇಗಕ್ಕೆ ಗೆಳೆಯರಾಗಿ ಕಾಣಿಸಿಕೊಂಡಿರುವ ಚೇತನ್ ದುರ್ಗ, ಶ್ರೀಧರ್ ಗಂಗಾವತಿ, ನಂದ ಗೋಪಾಲ್ ಇಷ್ಟವಾಗುತ್ತಾರೆ.
ಒಟ್ಟಾರೆ ‘ಖಾಸಗಿ ಪುಟಗಳ’ನ್ನು ನೋಡಿ ಹೊರಬಂದವರಿಗೆ ಎದೆಯ ಪುಟದಲ್ಲಿ ಅಡಗಿ ಕೂತ ಒಂದೊಂದೆ ವಿಷಯಗಳು ಮತ್ತೆ ಮತ್ತೆ ನೆನಪಾಗದೇ ಇರದು…
ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಚಿತ್ರಗಳ ಇವೆಂಟ್ ಮಾಡುತ್ತಿರುವ ನವರಸನ್, ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಮಾಗಡಿ ರಸ್ತೆಯ ಜಿ.ಟಿ ಮಾಲ್ ನ ನಾಲ್ಕನೇ ಮಹಡಿಯಲ್ಲಿ “MMB LAGACY” ಎಂಬ ಸುಂದರ ಸಭಾಂಗಣವನ್ನು ಆರಂಭಿಸಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟ ವಿನೋದ್ ಪ್ರಭಾಕರ್, ನಿಶಾ ವಿನೋದ್ ಪ್ರಭಾಕರ್, ಖ್ಯಾತ ಗಾಯಕ ಅಲೋಕ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ನಟ ತಬಲನಾಣಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನವರಸನ್ “MMB LAGACY” ಕುರಿತು ಮಾಹಿತಿ ನೀಡಿದರು.
ನಾನು ಮೈ ಮೂವೀ ಬಜಾರ್ ಮೂಲಕ ಕೆಲವು ವರ್ಷಗಳಿಂದ ಸಾಕಷ್ಟು ಚಿತ್ರಗಳ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆದಿದೆ. ಅಲ್ಲಿ ಊಟದ ವೆಚ್ಚ ಸಾವಿರ, ಎರಡು ಸಾವಿರ ಹೀಗಿರುತ್ತದೆ. ಅಲ್ಲಿ ಒಂದು ಸಮಾರಂಭ ಮಾಡಲು ನಾಲ್ಕೈದು ಲಕ್ಷ ಖರ್ಚಾಗುತ್ತದೆ. ಎಲ್ಲಾ ನಿರ್ಮಾಪಕರಿಗೂ ಅಷ್ಟು ಖರ್ಚು ಮಾಡವುದಕ್ಕೆ ಆಗುವುದಿಲ್ಲ. ಹಾಗಾಗಿ ನಾನು ಕೆಲವು ಸ್ನೇಹಿತರೊಂದಿಗೆ ಚರ್ಚಿಸಿ, ನಿರ್ಮಾಪಕರಿಗೆ ಅನುಕೂಲವಾಗುವಂತಹ ಒಂದು ವಿಶಾಲವಾದ ಸಭಾಂಗಣ ತೆರೆಯಲು ತೀರ್ಮಾನಿಸಿದೆ.
ಸ್ಥಳ ಹುಡುಕುತ್ತಿದ್ದಾಗ ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್ ಅವರು ನಿಮಗೆ ಅನುಕೂಲವಾದರೆ, ಈ ಸ್ಥಳದಲ್ಲೇ ಆರಂಭಿಸಿ ಎಂದರು. ಕಳೆದ ಆರು ತಿಂಗಳಿನಿಂದ ಸುಮಾರು ಮೂರುವರೆ ಕೋಟಿಗೂ ಅಧಿಕ ಖರ್ಚಿನಲ್ಲಿ “MMB LAGACY” ಯನ್ನು ನಿರ್ಮಾಣ ಮಾಡಿದ್ದೇನೆ. ಈ ಜಾಗ ಯಾವುದೇ ಫೈವ್ ಸ್ಟಾರ್ ಹೋಟೆಲ್ ಗೆ ಕಡಿಮೆ ಇಲ್ಲದಂತೆ ನಿರ್ಮಾಣವಾಗಿದೆ. ಆಧುನಿಕ ಸೌಂಡ್ ಸಿಸ್ಟಮ್, ಎಲ್ ಇ ಡಿ, ನವೀನವೀನ ಲೈಟಿಂಗ್ ವ್ಯವಸ್ಥೆ ಎಲ್ಲವೂ ಇಲ್ಲಿ ಲಭ್ಯವಿದೆ.
ನಿರ್ಮಾಪಕರಿಗೆ ಹೊರೆಯಾಗದಂತೆ ದರ ನಿಗದಿ ಪಡಿಸಿದ್ದೇವೆ. ಪತ್ರಿಕಾಗೋಷ್ಠಿ, ಆಡಿಯೋ, ಟೀಸರ್, ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಪ್ರೀ ರಿಲೀಸ್ ಇವೆಂಟ್ ಮುಂತಾದ ಸಮಾರಂಭಗಳನ್ನು ಇಲ್ಲಿ ನಡೆಸಬಹುದು. ಸುಮಾರು 200ಜನ ಆರಾಮವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುಬಹುದು. ಸುಸಜ್ಜಿತ ಸಭಾಂಗಣ, ಊಟದ ಹಾಲ್ ಇದೆ. ಊಟ, ತಿಂಡಿ ಹಾಗೂ ಸಾಭಾಂಗಣದ ವೆಚ್ಚ ಎಲ್ಲವೂ ಕೈಗೆಟುಕುವ ಬೆಲೆಯಲ್ಲೇ ನಿಗದಿ ಮಾಡಲಾಗಿದೆ.
ಸಿನಿಮಾ ಕಾರ್ಯಕ್ರಮಗಳಲ್ಲದೆ ಹುಟ್ಟುಹಬ್ಬ ಮುಂತಾದ ಕಾರ್ಯಕ್ರಮಗಳನ್ನು ಇಲ್ಲಿ ಮಾಡಿಕೊಳ್ಳಬಹುದು. ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ ಅನುಕೂಲವಾಗಲೆಂದೆ ತೆರೆದಿರುವ “MMB LAGACY” ಯನ್ನು ತಾವೆಲ್ಲರು ಬಳಸಿಕೊಳ್ಳಬೇಕೆಂದು ನವರಸನ್ ಮನವಿ ಮಾಡಿದರು.
ಸೌರಭ್ ಕುಲಕರ್ಣಿ ನಿರ್ದೇಶನದ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು, A2 music ಮೂಲಕ ಬಿಡುಗಡೆಯಾಗಿದೆ.
ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಮೊದಲಪ್ರತಿ ಸಿದ್ದವಾಗಿದೆ. “ಸಿರಿ ಲಂಬೋದರ ವಿವಾಹ” ಕಮರ್ಷಿಯಲ್ ಎಂಟರ್ಟೈನ್ಮೆಂಟ್ ವಿತ್ ಎ ಸಸ್ಪೆನ್ಸ್ ಥ್ರಿಲ್ಲರ್ ಎನ್ನಬಹುದು. ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕ, ನಾಯಕಿ ಅಲ್ಲ. ಮತ್ತೆ “ಸಿರಿ ಹಾಗೂ ಲಂಬೋದರ” ಯಾರು ಎಂದು ತಿಳಿಯಲು ಚಿತ್ರ ನೋಡಬೇಕು. ರಂಗಭೂಮಿ ಕಲಾವಿದರೇ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ. ಮತ್ತೊಂದು ಖುಷಿಯ ವಿಚಾರವೆಂದರೆ, ಡಿಸೆಂಬರ್ ನಲ್ಲಿ ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ.
ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೀವಿ. ಟೀಸರ್ ಬಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಧನ್ಯವಾದ ಎಂದರು ಸೌರಭ್ ಕುಲಕರ್ಣಿ.
“ಸಿರಿ ಲಂಬೋದರ ವಿವಾಹ” ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಚಿತ್ರವೆಂದರು ನಟ ಸುಂದರ್ ವೀಣಾ.
ನಾವು ಇಡೀ ತಂಡ ಮೂಲತಃ ರಂಗಭೂಮಿ ಅವರು. ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಒಳ್ಳೆಯ ಚಿತ್ರ ಮಾಡಿರುವ ಖಷಿಯಿದೆ. ನಾನು ಈ ಚಿತ್ರದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಅಂಜನ್ ಎ ಭಾರದ್ವಾಜ್.
ನಾನು ಈ ಹಿಂದೆ ಬಿ.ಸುರೇಶ್ ಅವರ “ದೇವರ ನಾಡಲ್ಲಿ” ಚಿತ್ರದಲ್ಲಿ ಅಭಿನಿಯಿಸಿದ್ದೆ. ಆನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸೌರಭ್ ಹಾಗೂ ತಂಡದವರು ಮಾಡಿರುವ ಕಥೆ ಚೆನ್ನಾಗಿದೆ. ನನ್ನ ಪಾತ್ರಕೂಡ ಅಷ್ಟೆ ಚೆನ್ನಾಗಿದೆ ಎನ್ನುತ್ತಾರೆ ನಾಯಕಿ ದಿಶಾ ರಮೇಶ್.
ಛಾಯಾಗ್ರಾಹಕ ಕಿಟ್ಟಿ ಕೌಶಿಕ್ , ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್ ಹಾಗೂ ಕಾರ್ಯಕಾರಿ ನಿರ್ಮಾಪಕಿ ನಮ್ರತಾ ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಿರಿಯ ನಟ ಮಂಡ್ಯ ರಮೇಶ್ ಚಿತ್ರತಂಡಕ್ಕೆ ಶುಭ ಕೋರಿದರು.
Versato ventures, pavamana creations, Fouress network selutions & Dhupada drushya ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಅಂಜನ್ ಎ ಭಾರದ್ವಾಜ್, ದಿಶಾ ರಮೇಶ್, ರಾಜೇಶ್ ನಟರಂಗ, ಸುಂದರ್ ವೀಣಾ, ಪಿ.ಡಿ.ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.