Categories
ಸಿನಿ ಸುದ್ದಿ

ಪರಂವಃ ಸ್ಟುಡಿಯೋಸ್​ನ ಹೊಸ ಚಿತ್ರಕ್ಕೆ ಹೆಸರು ಸಿಕ್ತು: ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾಗೆ ವಿಹಾನ್ -ಅಂಕಿತಾ ಜೋಡಿ…


ಪರಂವಃ ಸ್ಟುಡಿಯೋಸ್​ನಡಿ ರಕ್ಷಿತ್​ ಶೆಟ್ಟಿ ನಿರ್ಮಿಸುತ್ತಿರುವ ಹೊಸ ಚಿತ್ರವು ಕಳೆದ ತಿಂಗಳಷ್ಟೇ ಘೋಷಣೆಯಾಗಿತ್ತು.

ವಿಹಾನ್​ ಗೌಡ ಮತ್ತು ಅಂಕಿತಾ ಅಮರ್​ ಅಭಿನಯದ ಈ ಚಿತ್ರದ ಹೆಸರನ್ನು ಚಿತ್ರತಂಡ ಹೇಳಿರಲಿಲ್ಲ. ಶನಿವಾರ ಸಂಜೆ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಿದ್ದು, ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಹೆಸರನ್ನು ಇಡಲಾಗಿದೆ.

ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜತೆಯಾಗಿರಬೇಕು ಎಂಬ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇದೆಲ್ಲದರ ಸಂಗಮವೇ ‘ಇಬ್ಬನಿ ತಬ್ಬಿದ ಇಳೆಯಲಿ’.

ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಚಿತ್ರ. ನಿನ್ನೆ, ಇಂದು ಮತ್ತು ನಾಳೆಯ ಪ್ರೀತಿಯನ್ನು ತೋರಿಸುವ ಚಿತ್ರ. ಪ್ರೇಕ್ಷಕರು ಚಿತ್ರವನ್ನು ನೋಡುತ್ತಾ, ಹಾಡುತ್ತಾ, ನಲಿಯುತ್ತಾ, ತಮ್ಮನ್ನೇ ತಾವು ಮರೆಯುವಂತಹ ಚಿತ್ರ.


ಕಾಲೇಜಿನಿಂದ ಪ್ರಾರಂಭವಾಗುವ ಈ ಕಥೆಯು ಪ್ರೌಡಾವಸ್ಥೆಯವಸ್ಥೆಯಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ.

ಈ ಹಿಂದೆ ರಕ್ಷಿತ್​ ಶೆಟ್ಟಿ ಅವರ ಸೆವೆನ್​ ಆಡ್ಸ್​ ಚಿತ್ರಕಥಾ ವಿಭಾಗದಲ್ಲಿ ಸಕ್ರಿಯವಾಗಿ ‘ಕಿರಿಕ್​ ಪಾರ್ಟಿ’ ಮತ್ತು ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು ‘ಕಥಾಸಂಗಮ’ ಚಿತ್ರದ ‘ರೇನ್​ಬೋ ಲ್ಯಾಂಡ್​’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ಕಥೆ ಹೊಸತನ ಕೇಳುವುದರಿಂದ, ಹೊಸ ಕಲಾವಿದರು ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ನಾಯಕ-ನಾಯಕಿಯಾಗಿ ವಿಹಾನ್​ ಮತ್ತು ಅಂಕಿತಾ ಅಮರ್​ ಆಯ್ಕೆಯಾಗಿದ್ದು, ಸದ್ಯದಲ್ಲೇ ಎರಡನೆಯ ನಾಯಕಿಯ ಅಧಿಕೃತ ಘೋಷಣೆಯಾಗಲಿದೆ.

ಇದೊಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಗಗನ್​ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್​ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್​ ಸೆಲ್ವರಾಜನ್​, ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ ‘ಕಥಾಸಂಗಮ’ ಚಿತ್ರದ ‘ಗಿರ್​ಗಿಟ್ಲೆ’ ಕಥೆಯನ್ನು ನಿರ್ದೇಶಿಸದ್ದ ಶಶಿಕುಮಾರ್​, ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಈ ಬಾರಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ಸ್-2022: ಅಪ್ಪು ನೆನಪಲ್ಲಿ ಪ್ರಶಸ್ತಿ ಪ್ರದಾನ…

ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು
ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

“SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ‌. ಮತ್ತೊಂದು ಕನ್ನಡ ಚಿತ್ರಗಳು ಈಗ ಪ್ಯಾನ್ ಇಂಡಿಯಾ ದಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿದೆ ಹಾಗಾಗಿ ಈ ಬಾರಿ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಇಲ್ಲಿ ಬಂದಿರುವ ಗಣ್ಯರಿಗೆ ಹಾಗೂ ಪ್ರಾಯೋಜಕರಿಗೆ ಧನ್ಯವಾದ ಎಂದರು “ಸೈಮಾ” ಅವಾರ್ಡ್ಸ್ ನ ಮುಖ್ಯಸ್ಥೆ ಬೃಂದಾ ಪ್ರಸಾದ್.

ಒಂದು ಪ್ರಶಸ್ತಿ ಸಮಾರಂಭವನ್ನು ಹತ್ತುವರ್ಷಗಳ ಕಾಲ ನಡೆಸುವುದು ಸುಲಭವಲ್ಲ. ಆ ನಿಟ್ಟಿನಲ್ಲಿ ನಾನು ಮೊದಲು ಇದರ ಉಸ್ತುವಾರಿ ಬೃಂದಾ ಪ್ರಸಾದ್ ಮತ್ತು ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಈ ಬಾರಿ ಹತ್ತನೇ ವರ್ಷದ “ಸೈಮಾ” ಅವಾರ್ಡ್ಸ್ ನನಗೆ ಪ್ರಿಯವಾದ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಖಷಿ ಎನ್ನುತ್ತಾರೆ ಖ್ಯಾತ ನಟ ರಾಣಾ ದಗ್ಗುಬಾಟಿ.

ನನಗೆ “ಸೈಮಾ” ಬರೀ ಪ್ರಶಸ್ತಿ ಅಲ್ಲ. ಅದೊಂದು ನೆನಪು. ನಾನು ಮೊದಲ ಬಾರಿ ಈ ಪ್ರಶಸ್ತಿ ಸ್ವೀಕರಿಸಲು ಮಲೇಷಿಯಾ ಗೆ ಹೋಗಿದ್ದು ನನ್ನ ಹೃದಯದಲ್ಲಿ ಇನ್ನೂ ಹಸಿರಾಗಿದೆ. ಈ ಬಾರಿ ನಮ್ಮ ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿರುವುದು ಹೆಚ್ಚು ಖುಷಿ ತಂದಿದೆ. ನಿಮ್ಮೆಲ್ಲರಿಗೂ ನಮ್ಮೂರಿಗೆ ಆತ್ಮೀಯ ಸ್ವಾಗತ. ಪದೇಪದೇ ಬೆಂಗಳೂರಿನಲ್ಲೇ ಈ ಸಮಾರಂಭ ಮಾಡಬೇಕು ಅನಿಸಬೇಕು. ಆ ಮಟ್ಟದಲ್ಲಿ ಈ ಸಮಾರಂಭ ಯಶಸ್ವಿಯಾಗಲಿ‌ ಎಂದು ನಟ ಡಾಲಿ ಧನಂಜಯ ಹಾರೈಸಿದರು.

ನನಗೆ ಬೆಂಗಳೂರು ತುಂಬಾ ಇಷ್ಟ. ಸಾಕಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿದ್ದೇನೆ.. ಚಿತ್ರೀಕರಣ ಸಮಯದಲ್ಲಿ ಹಲವು ದಿನಗಳನ್ನು ಇಲ್ಲೇ ಕಳೆದಿದ್ದೇನೆ. ಈ ಬಾರಿ ಅಪ್ಪು ಅವರ ಸ್ಮರಣೆಯೊಂದಿಗೆ ಈ ಸಮಾರಂಭ ನಡೆಯುತ್ತಿದೆ ಎಂದು ನಟಿ ಶಾನ್ವಿ ಶ್ರೀವಾಸ್ತವ್ ತಿಳಿಸಿದರು.

ನಟಿಯರಾದ ಫರಿಯಾ ಅಬ್ದುಲ್ಲಾ, ಶ್ರೀಲೀಲ ಹಾಗೂ ಕೆಲವು ಪ್ರಾಯೋಜಕರು ಸಹ “ಸೈಮಾ” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ರಿಪ್ಪರ್ ಸಿನಿಮಾಗೆ ವೀರೇಂದ್ರ ಹೆಗ್ಗಡೆ ಸಾಥ್: ಪೋಸ್ಟರ್ ರಿಲೀಸ್ ಮಾಡಿ ಹಾರೈಕೆ…

ಕೃಷ್ಣ ಬೆಳ್ತಂಗಡಿ ನಿರ್ದೇಶನದ ಎರಡನೇ ಚಿತ್ರ ರಿಪ್ಪರ್. ಇದರ ಮೊದಲು ಪೋಸ್ಟರ್ ಅನ್ನು ನೂತನ ರಾಜ್ಯಸಭಾ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದ್ದಾರೆ.
ಸಿನಿಮಾ, ನಿರ್ಮಾಣ, ಚಿತ್ರೀಕರಣ, ಸ್ಥಳಗಳು, ಕಲಾವಿದರು ಹೀಗೆ ಅನೇಕ ವಿಚಾರಗಳನ್ನು ನಿರ್ದೇಶಕ ಕೃಷ್ಣ ಬೆಳ್ತಂಗಡಿ ಇವರಿಂದ ಪಡೆದ ಹೆಗ್ಗಡೆಯವರು ಸಿನಿಮಾದ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಸಿನಿಮಾದ ದಕ್ಷಿಣ ಕನ್ನಡ ವಿಭಾಗ ನಿರ್ವಹಕರದ ಬಿ.ಹೆಚ್. ರಾಜು ಈ ವೇಳೆ ಉಪಸ್ಥಿತರಿದ್ದರು.
ರಿಪ್ಪರ್ ಚಲನಚಿತ್ರವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನೈಜ ಘಟನೆಯೊಂದರಿಂದ ಪ್ರೇರಿತವಾದ ಸಿನಿಮಾವಾಗಿದ್ದು, ಜಿಕೆ ರಿಯಲ್ ಇಮೇಜಸ್ ಮತ್ತು ಶ್ರೀ ಗುರುರಾಯ ಪ್ರೊಡಕ್ಷನ್ಸ್ ಇವರಿಂದ ನಿರ್ಮಾಣವಾಗಿದೆ.


ಕೌಸ್ತುಬ್ ಜಯರಾಮ್, ಅಮುಲ್ ಗೌಡ, ಶ್ರೀರಾಮ್, ಸಾನ್ವಿ, ಅರ್ಪಿತಾ ಬಿ.ಜಿ, ಶಿವಕುಮಾರ್ ಆರಾಧ್ಯ, ಗಜಾನನ ಹೆಗ್ಡೆ ಇವರುಗಳು ಪ್ರಮುಖ ತಾರಾಗಣದಲ್ಲಿ ಇದ್ದಾರೆ.

Categories
ಸಿನಿ ಸುದ್ದಿ

ಕಿರಣ್ ರಾಜ್ ಈಗ ಶೇರ್! ಕಂಠೀರವ ಸ್ಟುಡಿಯೋದಲ್ಲಿ ಪ್ರಸಿದ್ಧ ಸಿನಿಮಾಗೆ ಚಾಲನೆ

“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ. ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್ ಮಾಡಿದರು. ಗಣ್ಯರು ಮುಹೂರ್ತ ಸಮರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಶೇರ್” ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾನೆ. ಎರಡು ಗುಂಪುಗಳೂ ಇರುತ್ತದೆ. ಒಂದು ಗುಂಪಿನವರು ಅನಾಥಾಶ್ರಮವನ್ನೇ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲಿ ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ.

“ಕಿರಣ್ ರಾಜ್ ಚಾಕೊಲೇಟ್ ಹೀರೋ ಅಂತ ಪ್ರಸಿದ್ದ್. ಅವರಿಗೆ ರಗಡ್ ಲುಕ್ ಸರಿ ಹೊಂದುವುದೆ?” ಅಂತ ಅನೇಕರು ಕೇಳಿದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಭರ್ಜರಿ ಗಂಡು” ಚಿತ್ರ ಸಹ ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಚಿತ್ರದಲ್ಲಿ ಮುಂದುವರೆಯಲಿದೆ. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆಗಸ್ಟ್ 22 ರಿಂದ‌ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರಸಿದ್ಧ್ “ಶೇರ್” ಬಗ್ಗೆ ಮಾಹಿತಿ ನೀಡಿದರು.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ‌ ಚಿತ್ರದಲ್ಲಿ ನಟಿಸಲು ಖುಷಿಯಾಗಿದೆ. ಇದಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿದ್ದೀನಿ. “ಭರ್ಜರಿ ಗಂಡು” ಚಿತ್ರದಲ್ಲೂ ಸಾಹಸ ಸನ್ನಿವೇಶಗಳು ಭರ್ಜರಿಯಾಗಿ ಮೂಡಿಬಂದಿದೆ ಎಂದು ನಾಯಕ ಕಿರಣ್ ರಾಜ್ ತಿಳಿಸಿದರು.

ನಾನು‌ ಮೂಲತಃ ಬೀದರ್ ನವನು. ಅಲ್ಲೇ ವಕೀಲನಾಗಿ ಕಾರ್ಯ ನಿರ್ವಿಸುತ್ತಿದ್ದೇನೆ. ರಾಜಕೀಯದಲ್ಲೂ ಇದ್ದೀನಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಸುದರ್ಶನ್ ಸುಂದರರಾಜ್.

ಚಿತ್ರದ ನಾಯಕಿ ಸುರೇಖ ಹಾಗೂ ಪೊಲೀಸ್ ಅಧಿಕಾರಿಯಾಗಿಕಾಣಿಸಿಕೊಳ್ಳುತ್ತಿರುವ ತನೀಶಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಿಟ್ಟಿ ಕೌಶಿಕ್ ಛಾಯಾಗ್ರಹಣದ ಬಗ್ಗೆ ಹಾಗೂ ಗುಮ್ಮಿನೇನಿ‌ ವಿಜಯ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ಎನ್. ಕುಮಾರ್ ಬ್ಯಾನರ್ ನಲ್ಲಿ ಗಿರಿರಾಜ್ ಸಿನಿಮಾ: ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನದ ಚಿತ್ರ…

ಎನ್. ಕುಮಾರ್. ಕನ್ನಡ ಚಿತ್ರರಂಗದಲ್ಲಿ ಬಹು ದೊಡ್ಡ‌ ಹೆಸರಿದು. ಯಶಸ್ವಿ ವಿತರಕರಾಗಿ, ನಿರ್ಮಾಪಕರಾಗಿ ಈಗಾಗಲೇ ಗಟ್ಟಿನೆಲೆ ಕಂಡಿರುವ ಎನ್.ಕುಮಾರ್, ಸ್ಟಾರ್ ನಟರ ಸಾಲು ಸಾಲು ಯಶಸ್ವಿ ಸಿನಿಮಾ‌ಗಳನ್ನು‌ ನಿರ್ಮಿಸುವ ಮೂಲಕ ತಮ್ಮದೇ ಛಾಪು ಮೂಡಿಸಿದವರು. ಸಿಂಪಲ್ ವ್ಯಕ್ತಿಯಾಗಿ, ಪಕ್ಕಾ ಸಿನಿಮಾ ಉದ್ಯಮಿಯಾಗಿ, ಒಳ್ಳೆಯ ವಾಗ್ಮಿಯೂ ಆಗಿ ಸಿನಿಮಾ ಮಂದಿಗೆ ಹತ್ತಿರವಾದವರು.

ಸದಾ ಸಿನಿಮಾ ಚಟುವಟಿಕೆಯಲ್ಲೇ ನಿರತರಾಗಿರುವ ಎಂ.ಎನ್.ಕುಮಾರ್ ಅವರು ಸಿನಿಮಾ ಬಿಟ್ಟು ಬೇರೆ ಧ್ಯಾನ ಮಾಡಿದವರಲ್ಲ. ವಿತರಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಯಶಸ್ವಿ ಸಿನಿಮಾಗಳನ್ನು‌ ಕಟ್ಟಿಕೊಟ್ಟಿರುವ ಎನ್.ಕುಮಾರ್ ಈಗ ಮತ್ತೊಂದು ಸಿನಿಮಾ ನಿರ್ಮಾಣ ಮಾಡುವ ತಯಾರಿಯಲ್ಲಿದ್ದಾರೆ.

ಹೌದು, ಸ್ಟಾರ್ ನಟರು ಸೇರಿದಂತೆ ಅನೇಕ ಹೊಸಬರನ್ನೂ ಪ್ರೀತಿಯಿಂದ ಕಾಣುವ ಕುಮಾರ್, ಪಕ್ಕಾ ಸಿನಿಮಾ ವ್ಯಾಕರಣವನ್ನು ಬಲ್ಲವರು. ಆ ಕಾರಣಕ್ಕೆ ಸಿನಿಮಾ ಬಿಜಿನೆಸ್ ಮಾಡೋದು ಹೇಗೆ ಎಂಬುದನ್ನೂ ತೋರಿಸಿ ಗೆದ್ದವರು.
ಅಂದಹಾಗೆ, ಈ ಬಾರಿ ಎನ್. ಕುಮಾರ್ ವಿಶೇಷ ಕಥಾವಸ್ತು ಹಿಡಿದು ಒಂದೊಳ್ಳೆಯಬಸಿನಿಮಾ‌ಮಾಡುವ ಉತ್ಸಾಹದಲ್ಲಿದ್ದಾರೆ. ಅವರ ಉತ್ಸಾಹಕ್ಕೆ ಕಾರಣ, ಯಶಸ್ವಿ ಮತ್ತು ಸೂಕ್ಷ್ಮ ಸಂವೇದನೆ ನಿರ್ದೇಶಕ ಬಿ.ಎಂ.ಗಿರಿರಾಜ್.

ನಿಜ, ಬಿ.ಎಂ. ಗಿರಿರಾಜ್ ಅವರೀಗ ಎನ್. ಕುಮಾರ್ ಅವರ ಬ್ಯಾನರ್ ನಲ್ಲಿ ಹೊಸ ತರಹದ ಕಥೆ ಹೆಣೆದು ಸಿನಿಮಾ ಮಾಡಲು ಅಣಿಯಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಅಂದಾಗಲೇ ಸಿನಿಮಾ ಅರ್ಧ ಗೆದ್ದಂತೆ ಅನ್ನೋದು ಎಲ್ಲರಿಗೂ ಗೊತ್ತು. ಅಂದಹಾಗೆ, ಗಿರಿರಾಜ್ ಅವರು ಹೇಳಿದ ಕಥೆ ಮೆಚ್ಚಿಕೊಂಡು ದೊಡ್ಡಮಟ್ಟದಲ್ಲೇ ಸಿನಿಮಾ ನಿರ್ಮಾಣ‌ ಮಾಡಲು ರೆಡಿಯಾಗಿರುವ ಕುಮಾರ್, ಅದೊಂದು ಹೊಸ ಬಗೆಯ ಸಿನಿಮಾ ಅಗುವುದರಿಂದ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಚಿತ್ರ ಕೊಡಬೇಕೆಂಬ ತಯಾರಿಯಲ್ಲಿದ್ದಾರೆ.

ಸದ್ಯ ಗಿರಿರಾಜ್ ಅವರ ಹೊಸ ಕಥೆಗೆ ಎಂ.ಎನ್.ಕುಮಾರ್ ನಿರ್ಮಾಪಕರು. ಇನ್ನು ಗಿರಿರಾಜ್ ಕೂಡ ಹಲವು ಸೂಕ್ಷ್ಮ ಕಥೆಗಳನ್ನು ಆಯ್ಕೆ ಮಾಡಿಕೊಂಡು ಸಿನಿಮಾ ಮಾಡಿ ಈಗಾಗಲೇ ಗೆದ್ದಿದ್ದಾರೆ. ಈಗ ಕುಮಾರ್ ಬ್ಯಾನರ್ ನಲ್ಲಿ ಹೊಸ ರೀತಿಯ ಕಥೆ ಮಾಡಿ ಮತ್ತೊಂದು ಗೆಲುವಿಗೆ ಅಣಿಯಾಗುತ್ತಿರುವುದೇ ಈ ಹೊತ್ತಿನ ಸುದ್ದಿ.

ಅದೇನೆ ಇರಲಿ, ಕನ್ನಡ ಸಿನಿಮಾರಂಗ ಈಗಾಗಲೇ ಭಾರತೀಯ ಚಿತ್ರರಂಗದಲ್ಲೇ ಮೊದಲ ಮೆಟ್ಟಿಲ ಮೇಲೆ ನಿಂತು ಬೀಗುತ್ತಿದೆ. ಈ ನಡುವೆ ಒಳ್ಳೆಯ ಸಿನಿಮಾಗಳೂ ಸೆಟ್ಟೇರುತ್ತಿವೆ. ಈಗ ಗಿರಿರಾಜ್ ಹಾಗು ಕುಮಾರ್ ಕಾಂಬಿನೇಷನ್ ಸಿನಿಮಾ ಕೂಡ ರೆಡಿಯಾಗಲಿದೆ. ಚಿತ್ರದ ಹೀರೋ, ಹೀರೋಯಿನ್ ಸೇರಿದಂತೆ ಯಾರೆಲ್ಲ ಇರುತ್ತಾರೆ ಅನ್ನೋದಕ್ಕೆ ಇಷ್ಟರಲ್ಲೇ ಮಾಹಿತಿ‌ ಸಿಗಲಿದೆ. ಅಂತೂ ಹೊಸದೊಂದು ಪ್ಯಾನ್ ಇಂಡಿಯಾ ಲೆವೆಲ್ ಸಿನಿಮಾ ಸೌಂಡು‌ ಮಾಡೋಕೆ ರೆಡಿಯಾಗುತ್ತಿದೆ ಅನ್ನೋದೆ ಖುಷಿಯ ವಿಷಯ.

Categories
ಸಿನಿ ಸುದ್ದಿ

ವಂದೇ ಮಾತರಂ ಹಾಡಲ್ಲಿ ಸ್ಟಾರ್ಸ್ ಸಮಾಗಮ: ಜಗ್ಗೇಶ್ ನಿರ್ಮಾಣ- ಸಂತೋಷ್ ಆನಂದರಾಮ್ ನಿರ್ದೇಶನ…

ಭವ್ಯ ಪರಂಪರೆ ಹೊಂದಿರುವ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ದೇಶದಾದ್ಯಂತ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ ರಂಗದ ಗಣ್ಯರ ಸಮಾಗಮದಲ್ಲಿ ಮೂಡಿಬಂದಿರುವ “ವಂದೇ ಮಾತರಂ” ಎಂಬ ಅದ್ಭುತ ಗೀತೆ ಬಿಡುಗಡೆಯಾಗಿದೆ.

ಹೆಸರಾಂತ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ. ಕಿಚ್ಚ ಸುದೀಪ, ಶಿವರಾಜಕುಮಾರ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್,ಅನಂತನಾಗ್,
ಅರ್ಜುನ್ ಸರ್ಜಾ, ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ನನಗೆ ಚಿಕ್ಕ ವಯಸ್ಸಿನಿಂದಲೂ “ಮಿಲೇ ಸುರ್ ಮೇರಾ ತುಮಾರ” ಹಾಡೆಂದರೆ ಬಹಳ ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕೆಂಬ ಆಸೆಯಿತ್ತು. ಈಗ ಆ ಆಸೆ ಈಡೇರಿದೆ. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದೆ. ಸಂತೋಷ್ ಆನಂದ್ ರಾಮ್ ಸೊಗಸಾಗಿ ನಿರ್ದೇಶನ ಮಾಡಿದ್ದಾರೆ.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಈ ಹಾಡಿನ‌ ನಿರ್ಮಾಣ ಆರಂಭವಾದಾಗ ನನ್ನ ಎಲ್ಲಾ ಕನ್ನಡ ಚಿತರಂಗದ ನಾಯಕ ಮಿತ್ರರನ್ನು ಫೋನ್ ಮೂಲಕ ಸಂಪರ್ಕಿಸಿ, ಈ ವಿಷಯ ಹೇಳಿದಾಗ ಬಹಳ ಪ್ರೀತಿಯಿಂದ ಬಂದು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳ ಗಣ್ಯರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವು ಮಂತ್ರಿಗಳು ಈ ಹಾಡನ್ನು ಮೆಚ್ಚಿ ಶೇರ್ ಮಾಡಿದ್ದಾರೆ. ತಾವು ಕೂಡ ಈ ಹಾಡನ್ನು ಶೇರ್ ಮಾಡುವ ಮೂಲಕ ಹೆಚ್ಷಿನ ಜನರಿಗೆ ತಲುಪಿಸಿ ಎಂದು ಜಗ್ಗೇಶ್ ವಿನಂತಿಸಿದ್ದಾರೆ. ಪ್ರಧಾನಮಂತ್ರಿಗಳಿಗೂ ಈ ಹಾಡನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.

“ವಂದೇ ಮಾತರಂ” ಎಂದರೆ ಜಾತಿಮತಧರ್ಮ ಎಲ್ಲವನ್ನೂ ದಾಟಿ ನಾವೆಲ್ಲರೂ ಭಾರತಮಾತೆಯ ಮಕ್ಕಳು ಎನ್ನುವ ಸಾರಾಂಶ. ಭಾರತವನ್ನು ಯಾವ ರೀತಿಯಲ್ಲಿ ವಿವರಿಸಬಹುದು ಎಂದು ಹೋದಾಗ, ಅಲ್ಲಿ ನಾವು ಗೋಮಾತೆಯನ್ನು ತಾಯಿಯ ತರಹ ಪೂಜಿಸುತ್ತೇವೆ. ಆ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೂಲಕ ಹಾಡು ಆರಂಭವಾಗುತ್ತದೆ ಅಲ್ಲಿ ಸುದೀಪ್ ಇದ್ದಾರೆ.

ಹೀಗೆ ಭಾರತದ ಹಿರಿಮೆಯನ್ನು ಈ ಹಾಡಿನಲ್ಲಿ ತೋರಿಸುವ ಪ್ರಯತ್ನವನ್ನು ಹಿರಿಯ ನಟರಾದ ಅನಂತನಾಗ್, ರವಿಚಂದ್ರನ್, ರಮೇಶ್ ಅರವಿಂದ್, ಜಗ್ಗೇಶ್, ಅರ್ಜುನ್ ಸರ್ಜಾ ಹಾಗೂ ಯುವ ಪ್ರತಿಭೆಗಳಾದ ಗಣೇಶ್, ಶ್ರೀಮುರಳಿ, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ಧನಂಜಯ ಅವರ ಮೂಲಕ ಮಾಡಿದ್ದೇವೆ. ಚಿತ್ರರಂಗದ ನಟರಷ್ಟೇ ಅಲ್ಲದೇ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಮುಂತಾದವರು ಭಾರತದ ಭವ್ಯ ಪರಂಪರೆಯನ್ನು ಬಿಂಬಿಸುವ ಈ ಹಾಡಿನಲ್ಲಿ ಭಾಗಿಯಾಗಿದ್ದಾರೆ‌. ನಾಲ್ಕುವರೆ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಮುಗಿದಿದೆ. ಸಹಕಾರ ನೀಡಿದ ನನ್ನ ತಂಡಕ್ಕೆ ಹಾಗೂ ಅಭಿನಯಿಸಿರುವ ಗಣ್ಯರಿಗೆ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್.

Categories
ಸಿನಿ ಸುದ್ದಿ

ಸ್ವಾತಂತ್ರ್ಯ ದಿನಕ್ಕೆ ಕಾಂತಾರ ಹಾಡು: ಮೊದಲ ಹಾಡಲ್ಲಿ ಜಾನಪದ ಸೊಗಡು…

ಕನ್ನಡ ಚಿತ್ರರಂಗಕ್ಕೆ ಕೆ‌.ಜಿ.ಎಫ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಸಿರುವ “ಕಾಂತಾರ” ಚಿತ್ರದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ನಟ – ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸಿರುವುಲ್ಲದೆ, ನಾಯಕರಾಗಿಯೂ ನಟಿಸಿದ್ದಾರೆ.

ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ ಮನಮೋಹಕ ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿ ಹಿಡಿಯಲಾಗಿದೆ.

ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ಶಿವ 143… ಇದು ರಾಜ್ ಮೊಮ್ಮಗನ ಸಿನಿಮಾ: ಧೀರನ್ ರಾಮಕುಮಾರ್ ಚಿತ್ರ ಆಗಸ್ಟ್ 26ಕ್ಕೆ ರಿಲೀಸ್

ನಟ ಸಾರ್ವಭೌಮ ಡಾ.ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಆಗಸ್ಟ್ 26 ರಂದು‌ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ. ನಾಯಕನ ಪರಿಚಯಿಸುವ ಟೀಸರ್ ಗೂ ಅಪಾರ ಜನಮನ್ನಣೆ ದೊರಕಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾ. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಆನಂತರ ದೊಡ್ಡ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಿದ್ದವಾಗಿದ್ದವು. ನಾವು ಸೂಕ್ತ ಸಮಯ ನೋಡಿ, ಇದೇ ಆಗಸ್ಟ್ 26 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದು
ರೌಡಿಸಂ ಸಿನಿಮಾ ಅಲ್ಲ. ವಿಭಿನ್ನ ಪ್ರೇಮಕಥೆಯ ಚಿತ್ರ. ಜಯಣ್ಣ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ಹಾಗೂ ಧೀರನ್ ಅವರ ಕುಟುಂಬದವರು ಕುಳಿತು, ಧೀರನ್ ಅವರಿಗೆ ಇಂತಹುದೇ ಕಥೆ ಇದ್ದರೆ ಚೆನ್ನ ಎಂದು ತಿರ್ಮಾನಿಸಿದ್ದರು. ನಾನು ಆನಂತರ ತಂಡ ಸೇರಿಕೊಂಡೆ. ಧೀರನ್ ಅವರಿಗೆ ಈ ಮಾಸ್ ಲುಕ್ ಸರಿ ಹೊಂದುವುದೊ, ಇಲ್ಲವೋ? ಎಂಬ ಯೋಚನೆಯಿತ್ತು. ಅವರ ನಟನೆ ನೋಡಿ ಅದು ದೂರಾಯಿತು. ನಾಯಕಿ ಮಾನ್ವಿತ ಕಾಮತ್ ಹಾಗೂ ಚರಣ್ ರಾಜ್ ಅವರ ಅಭಿನಯ‌ ಕೂಡ ತುಂಬಾ ಚೆನ್ನಾಗಿದೆ. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಕಾಮಿಡಿ ಮೋಡಿ ಮಾಡಲಿದೆ ಎಂದು ನಿರ್ದೇಶಕ ಅನಿಲ್ ಕುಮಾರ್ ಚಿತ್ರದ ಬಗ್ಗೆ ವಿವರಣೆ ನೀಡಿದರು.

ನಾನು ನಮ್ಮ ಕುಟುಂಬದವರ ಬಳಿ ಈ ಸಿನಿಮಾ ಕಥೆ ಬಗ್ಗೆ ಚರ್ಚಿಸಿದಾಗ ನಿನಗೆ ಸರಿ ಹೊಂದುವುದಾದರೆ ಮಾಡು ಎಂದರು. ನನಗೂ ಈ ಕಥೆ ಇಷ್ಟವಾಗಿತ್ತು. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಕೊರೋನ ಕಾರಣದಿಂದ ಬಿಡುಗಡೆ ತಡವಾಗಿದೆ. ಶಿವಣ್ಣ ಮಾಮ ಹಾಗೂ ಗೀತಾ ಆಂಟಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಭೇಟಿ‌ ನೀಡಿ ಶುಭ ಹಾರೈಸಿದ್ದರು. ರಾಘಣ್ಣ ಮಾಮ ಅವರ ಹಾರೈಕೆ ಸದಾ ಇದೆ. ಇನ್ನೂ ಯಾರ ಬಳಿಯು ಹೇಳದ ವಿಷಯವೊಂದು ಇಂದು ಹೇಳುತ್ತಿದ್ದೇನೆ. ಮೈಸೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇ ಅಪ್ಪು ಮಾಮ‌ “ಜೇಮ್ಸ್” ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಾಹಸ ನಿರ್ದೇಶಕ ರವಿವರ್ಮ ಅವರು ಎರಡೂ ಚಿತ್ರಗಳಿಗೂ ಸಾಹಸ ಸಂಯೋಜನೆ ಮಾಡುತ್ತಿದ್ದರು‌. ನಾನು ಪಾಲ್ಗೊಂಡ ಸಾಹಸ ದೃಶ್ಯವೊಂದರ ತುಣುಕನ್ನು ಅವರು, ಅಪ್ಪು ಮಾಮ ಅವರಿಗೆ ತೋರಿಸಿದರಂತೆ.

ಅದನ್ನು ನೋಡಿದ ಅಪ್ಪು ಮಾಮ, ಸ್ನೇಹಿತರೊಬ್ಬರ ಬಳಿ ಅವನ ಕಣ್ಣು ನೋಡಿ ಎಷ್ಟು ಚೆನ್ನಾಗಿದೆ. ನಮ್ಮ ಕುಟುಂಬದಿಂದ ಒಳ್ಳೆಯ ಹೀರೋ ಬರುತ್ತಿದ್ದಾನೆ ಎಂದು ತುಂಬಾ ಸಂತೋಷಪಟ್ಟಿದ್ದರಂತೆ. ಈ ವಿಷಯವನ್ನು ನನಗೆ ಎಷ್ಟೋ ದಿನಗಳ ಬಳಿಕ ಆ ಸ್ನೇಹಿತರು ಹೇಳಿದರು. ಅಶ್ವಿನಿ ಆಂಟಿ ‌ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಅವರು ಬಿಡುಗಡೆ ಮಾಡಿಕೊಟ್ಟಿದ್ದು ನನಗೆ ಅಪ್ಪು ಮಾಮ ಬಿಡುಗಡೆ ಮಾಡಿದಷ್ಟೇ ಖುಷಿಯಾಗಿದೆ. ಅವರಿಗೆ ನನ್ನ ಧನ್ಯವಾದ ಎಂದರು ನಾಯಕ ಧೀರನ್.

ಛಾಯಾಗ್ರಹಕ ಶಿವ ಛಾಯಾಗ್ರಹಣದ ಬಗ್ಗೆ ಮಾತನಾಡಿದರು.

ಜಯಣ್ಣ, ಭೋಗೇಂದ್ರ ಹಾಗೂ ಡಾ.ಸೂರಿ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Categories
ಸಿನಿ ಸುದ್ದಿ

ಕಿರುತೆರೆ ಕಲಾವಿದರ ಕ್ರಿಕೆಟ್ ಪ್ರೀತಿ: ಆಗಸ್ಟ್ 18ರಿಂದ ಮೂರು ದಿನಗಳ ಟಿಪಿಎಲ್…

ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗುತ್ತಿದ್ದು, ಆಗಸ್ಟ್ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರಿಗೆ ಸಹಾಯಾರ್ಥ ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕ ಸುನಿಲ್ ಕುಮಾರ್ ಬಿ ಆರ್.

ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಮಾತಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದೆ. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು.

ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡುತ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.

ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಏಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲಿಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

Categories
ಸಿನಿ ಸುದ್ದಿ

ಅಂದದ ಗಾಳಿಪಟದಲ್ಲಿ ತಮಾಷೆ ಹತಾಷೆ ನಿರಾಸೆ

ವಿಜಯ್ ಭರಮಸಾಗರ

ಚಿತ್ರ ವಿಮರ್ಶೆ- ರೇಟಿಂಗ್ 4 / 5

ನಿರ್ದೇಶನ : ಯೋಗರಾಜ ಭಟ್

ನಿರ್ಮಾಣ: ಉಮಾ ಎಂ. ರಮೇಶ್ ರೆಡ್ಡಿ

ತಾರಾಗಣ: ಗಣೇಶ್, ದಿಗಂತ್, ಪವನ್ ಕುಮಾರ್, ಅನಂತ್ ನಾಗ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಸುಧಾ ಬೆಳವಾಡಿ ಇತರರು.

ಕನಸಿಗೂ ಮತ್ತು ಸಂಬಂಧಕ್ಕೂ ರಿಯಾಲಿಟಿ ಇರಲ್ಲ. ಕನಸು ಇದ್ದಂಗೆ ಬದುಕಾಗಲ್ಲ…’ ಅವನು ಈ ಡೈಲಾಗ್ ಹೇಳುವ ಹೊತ್ತಿಗೆ ಆ ಮೂವರು ಗೆಳೆಯರ ಲೈಫಲ್ಲಿ ತಮಾಷೆ, ಹತಾಶೆ ಮತ್ತ ನಿರಾಸೆ ಎಂಬ ಕಾರ್ಮೋಡ ಕವಿದಿರುತ್ತೆ. ಆ ಕಾರ್ಮೋಡ ಸರಿದ ಮೇಲೆ ಒಂದಷ್ಟು ಜೋರು ಮಳೆ ಸುರಿದು ಎಲ್ಲವೂ ನಿರಾಳವೆನಿಸುತ್ತೆ… ಇದಿಷ್ಟು ಹೇಳಿದ ಮೇಲೆ ಭಟ್ಟರ ಗಾಳಿಪಟದ ಎತ್ತರ ಎಷ್ಟಿದೆ ಅನ್ನೋದನ್ನು ಊಹಿಸಿಕೊಳ್ಳಿ.

ಈ ಗಾಳಿಪಟ ಕಣ್ಣಿಗೆ ಕಾಣುವಷ್ಟೇ ಹಾರಿದೆ. ನಿರ್ದೇಶಕ ಎಂಬ ಸೂತ್ರದಾರನಿಗೆ ಎಷ್ಟು ಹಾರಿಸಬೇಕೆಂಬ ಕಲ್ಪನೆ ಇದ್ದುದರಿಂದಲೋ ಏನೋ, ಗಾಳಿಪಟದ ಪ್ರತಿಯೊಂದು ಚಿತ್ರಪಟ ಪಟಪಟನೆ ಕಣ್ಮುಂದೆ ಹಾದು ಹೋಗಿ ನಿಚ್ಚಳ ಭಾವ ತೃಪ್ತಿಗೆ ಕಾರಣವಾಗುತ್ತೆ.

ಯೋಗರಾಜ ಭಟ್ ಶೈಲಿಯ ಸಿನಿಮಾ ಸಾಲಿಗೆ ಇದೂ ಸೇರಿದೆ. ಅವರ ಹಿಂದಿನ ಸಿನಿಮಾಗಳಲ್ಲಿದ್ದ ಮಾತು-ಮಂಥನ ಇಲ್ಲೂ ಇದೆ. ಅದೇ ಹಸಿ ಪ್ರೀತಿ, ಅದೇ ತುಂಟಾಟ, ತಮಾಷೆ, ‘ನಾಟು’ವ ನಾಟಿ ಮಾತುಗಳು, ಬೈಗುಳ, ಜಗಳ, ಮಳೆ, ತಂಗಾಳಿ ಇತ್ಯಾದಿಯ ಭಟ್ಟರ ‘ಸಿನಿಮಾ ವ್ಯಾಕರಣ’ ಇಲ್ಲೂ ಇದೆಯಾದರೂ, ಅವೆಲ್ಲಕ್ಕಿಂತಲೂ ಈ ಬಾರಿ ಅವರ ಈ ಸಿನಿಮಾದಲ್ಲಿ ಒಂದಷ್ಟು ಮಜವಿದೆ, ತುಸು ಹೆಚ್ಚೇ ತುಂಟಾಟವಿದೆ, ಪದಪುಂಜಗಳ ಕಣಜವಿದೆ. ಪರಿಮಿತಿ ಇರದ ಪರಿಸರದ ಅಂದವಿದೆ. ಈ ಎಲ್ಲವೂ ಸಿನಿಮಾದ ಚಂದವನ್ನು ಹೆಚ್ಚಿಸಿದೆ.

ಭಟ್ಟರಿಗೆ ಈಗಿನ ಮತ್ತು ಮುಂದಿನ ಪೀಳಿಗೆಯ ಹುಡುಗ, ಹುಡುಗಿಯರ ನಾಡಿಮಿಡಿತ ಗೊತ್ತಿದೆ. ಆ ಕಾರಣಕ್ಕೆ ಇಂಥದ್ದೊಂದು ಸಿನಿಮಾ‌ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಎರಡುವರೆ ತಾಸು ಕೂರಿಸುವ ತಾಕತ್ತು ಈ ಕಥೆಗಿದೆಯಾದರೂ, ಕಥೆಯ ಅಲ್ಲ್ಲಿಲಿ ಆಚೀಚೆ ಹಳ್ಳ- ಕೊಳ್ಳಗಳು ಎದುರಾಗಿವೆ. ಅಷ್ಟಾದರೂ ಕಿವಿಗಿಂಪೆನಿಸೋ ಹಾಡು ಎದುರಾಗಿ ಮನೋಲ್ಲಾಸಕ್ಕೆ ಕಾರಣವಾಗುತ್ತೆ.

ಸಿನಿಮಾ ಕಥೆ ಬಗ್ಗೆ ಯಾವ ತಕರಾರಿಲ್ಲ. ಒಂದಷ್ಟು ದೃಶ್ಯಗಳಿಗೆ ಕತ್ತರಿ ಹಾಕಬಹುದಿತ್ತು. ಇನ್ನಷ್ಟು ಬಿಗಿಯಾದ ನಿರೂಪಣೆ ಬೇಕಿತ್ತು. ಇನ್ನು, ಸುಂದರ ತಾಣಗಳ ಮಧ್ಯೆ ನೋಡುಗರ ಮನಸ್ಸನ್ನು ಜೋರು ಮಳೆಗೆ ಮೈವೊಡ್ಡಿ ಸಂಭ್ರಮಿಸಿದಷ್ಟೇ ಅನುಭವ ಕಟ್ಟಿಕೊಟ್ಟಿದ್ದಾರೆಂಬ ಸಮಾಧಾನ. ಮೊದಲರ್ಧ ತುಂಟಾಟ, ತಮಾಷೆಯಲ್ಲೇ ಸಾಗುವ ಕಥೆಯಲ್ಲಿ ಸಣ್ಣ ಸಣ್ಣ ತಿರುವುಗಳಿವೆ. ಅವನ್ನು ದಾಟಿ ಬರಲು ಸಣ್ಣ ಅಯಾಸವೆನಿಸಿದರೂ ಭಟ್ಟರ ಹಾಡು ಕಚಗುಳಿ ಇಡುವ ಮಾತುಗಳು ಮತ್ತದೇ ಉತ್ಸಾಹ ತುಂಬುತ್ತೆ.


ದ್ವಿತಿಯಾರ್ಧ ಕಥೆ ಮತ್ತೊಂದು ಪಯಣದತ್ತ ಸಾಗುತ್ತೆ. ಅಲ್ಲೂ ತಮಾಷೆ, ಹತಾಶೆ ನಿರಾಸೆಯ ಕಾರ್ಮೋಡದ ಛಾಯೆ ಆವರಿಸುತ್ತೆ. ಪ್ರೀತಿ ಜಗಳ ಕೋಪ ತಾಪ ಹುಡುಕಾಟ ಒದ್ದಾಟಗಳ ಮಧ್ಯೆ ಎದೆಭಾರವೆನಿಸೋ ಸನ್ನಿವೇಶಗಳು ಸ್ವಲ್ಪಮಟ್ಟಿಗೆ ಕಣ್ಣುಗಳನ್ನು ಒದ್ದೆಯಾಗಿಸುತ್ತವೆ. ಉಳಿದಂತೆ ಇಲ್ಲಿ ಭಾವನೆಗಳು ಗರಿಗೆದರಿವೆ, ಭಾವುಕತೆಯೂ ಹರಿದಾಡಿದೆ, ಕಳೆದು ಹೋದ ಮಗನ ಹಂಬಲ, ಪ್ರೀತಿ ಪಡೆಯೋ ಚಡಪಡಿಕೆ, ಗೆಳೆತನದ ಬದ್ಧತೆ, ಅಪ್ಪ,ಅಮ್ಮನ ವಾತ್ಸಲ್ಯ ಹೀಗೆ ಎಲ್ಲದರ ಸುತ್ತವೂ ಕಥೆ ಗಿರಕಿ ಹೊಡೆದು ನೋಡುಗನ ಮನಸ್ಸನ್ನು ಗಾಳಿಪಟದೆತ್ತರದಷ್ಟು ಹಾರಿಸುವ ಪ್ರಯತ್ನಕ್ಕೆ ಭಟ್ಟರು ಸಾಕ್ಷಿಯಾಗುತ್ತಾರೆ.

ಕಥೆ ಏನು…?

ಅದು ‘ನೀರುಕೋಟೆ’ ಕನ್ನಡ‌ ವಿಶ್ವವಿದ್ಯಾಲಯ. ಹೆಸರಿಗೆ ತಕ್ಕಂತೆ ಸದಾ ಮಳೆ ಸುರಿಯೋ ಊರು. ಆ ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆಯಬೇಕೆಂದು ಸೇರುವ ಮೂವರು ತರಲೆ‌ ಗೆಳೆಯರು. ಜವಾಬ್ದಾರಿ ಇರದ ಹುಡುಗ, ಆಕಾಶದೆತ್ತರದಷ್ಟೇ ಗೆಳೆತನ, ಎತ್ತರದಲ್ಲಿ ಹಾರಾಡುವ ಗಾಳಿಪಟದಷ್ಟೇ ಎತ್ತರದ ಪ್ರೀತಿ, ಬಾಚಿ ಹಿಡಿದು ತಬ್ಬುವಷ್ಟು ಪ್ರೀತಿ, ಕೋಪಿಸಿಕೊಳ್ಳುವಷ್ಟು ತಮಾಷೆ, ಬೊಗಸೆಯಷ್ಟು ಹತಾಶೆ, ಹಿಡಿಯಷ್ಟು ನಿರಾಸೆ… ಇವೆಲ್ಲದರ ಜೊತೆ ಹಳೆಯ ನೆನಪುಗಳ ಗುಚ್ಛ. ಎಂಎಲ್ಎ ಮತ್ತು ಕಾದಂಬರಿಕಾರ್ತಿ ಮಗ ಗಣಿ. ಅವನಿಗೆ ಕನ್ನಡ ಅಷ್ಟಾಗಿ ಬರಲ್ಲ. ಹೆತ್ತವರಿಗೆ ಕನ್ನಡ‌ ಸ್ನಾತಕೋತ್ತರ ಪದವಿ ಕೊಡಿಸೋ ಆಸೆ.

ನೀರುಕೋಟೆ ಕಾಲೇಜಿನಲ್ಲಿ ಜೊತೆಯಾಗೋ ಮೂವರು ಗೆಳೆಯರು, ಅವರ ತರಲೆ, ರಗಳೆ, ಪ್ರೀತಿ, ಜಗಳದೊಂದಿಗೆ ಸುಂದರ ಪಯಣ. ಅಲ್ಲೊಂದಷ್ಟು ಕಾಡುವ ಪ್ರೀತಿ ಗೀತಿ ಇತ್ಯಾದಿಯೊಂದಿಗೆ ಭಾವನಾತ್ಮಕ ಸಂಬಂಧದ ಬೆಸುಗೆ. ಜಾಲಿಯಾಗಿಯೇ ಸಾಗುವ ಮೊದಲರ್ಧ. ದ್ವಿತಿಯಾರ್ಧ ಒಂದಷ್ಟು ಖುಷಿ ಮತ್ತು ದುಃಖದೊಂದಿಗೆ ಮುಕ್ತಾಯ. ಇಲ್ಲಿ ಕೊಟ್ಟ ಕಾಸಿಗೆ ಮೋಸವಿಲ್ಲ. ಒಂದು ಮನರಂಜನೆಯ ಸಿನಿಮಾವಾಗಿ ಇಷ್ಟವಾಗುತ್ತೆ.

ಯಾರು ಹೇಗೆ..?


ಕಾಲೇಜ್ ನ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಅಗಿ ಗಣೇಶ್, ದಿಗಂತ್, ಪವನ್ ಕುಮಾರ್ ಒಬ್ಬರಿಗೊಬ್ಬರು ಹಠಕ್ಕೆ ಬಿದ್ದವರಂತೆ ನಟಿಸಿದ್ದಾರೆ.
ಗಣೇಶ್ ಎಂದಿಗಿಂತಲೂ ಮುದ್ದಾಗಿ ಕಾಣುವುದರ ಜೊತೆ ನಟನೆಯಲ್ಲಿ ನಗಿಸಿ ಭಾವುಕತೆ ಹೆಚ್ಚಿಸುತ್ತಾರೆ. ದಿಗಂತ್ ಅವರಿಗೆ ಇಲ್ಲಿ ಹೆಚ್ಚು ಸ್ಕೋರ್ ಕೊಡಬಹುದು. ಅವರಿಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಾರೆ. ಪವನ್ ಕುಮಾರ್ ಕೂಡ ಪಾಪದ ಹುಡುಗನಾಗಿ ಇಷ್ಟವಾಗುತ್ತಾರೆ. ಇವರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ನಾಯಕಿಯರ ಪರ್ಫಾರ್ಮೆನ್ಸ್ ಕೂಡ ಚೆನ್ನಾಗಿದೆ. ಅನಂತ್ ನಾಗ್ ಇಡೀ ಸಿನಿಮಾದ ಕೇಂದ್ರ ಬಿಂದು. ಉಳಿದಂತೆ ರಂಗಾಯಣ ರಘು, ಸುಧಾ ಬೆಳೆವಾಡಿ, ಶ್ರೀನಾಥ್ ಎಲ್ಲರೂ ಗಮನ ಸೆಳೆಯುತ್ತಾರೆ.

ಸಂತೋಷ್ ರೈ ಪಾತಾಜೆ ಅವರ ಕ್ಯಾಮೆರಾ ಕೈಚಳಕ ಎತ್ತರದ ಗಾಳಿಪಟದಷ್ಟೇ ಅಂದವಾಗಿದೆ. ಅರ್ಜುನ್ ಜನ್ಯ ಸಂಗೀತವೂ ಇಲ್ಲಿ ಸ್ಕೋರ್‌ ಮಾಡಿದೆ. ಜಯಂತ್ ಕಾಯ್ಕಿಣಿ ಮತ್ತು ಭಟ್ಟರ ಹಾಡು ಗುನುಗುವಂತಿವೆ. ‘ನೀನು ಬಗೆಹರಿಯದ ಹಾಡು ಮತ್ತು ‘ದೇವ್ಲೆ ದೇವ್ಲೆ’ ಹಾಡುಗಳಲ್ಲಿ ಹೊಸತನವಿದೆ.

ಕೊನೇಮಾತು: ಪ್ರಾಯಶಃ ಇದು ಲೈಫಲ್ಲಿ ಜವಾಬ್ದಾರಿ ಇರದ ಹುಡುಗರ ಪಾಲಿಗೆ ಕಾಡುವ ಸಿನಿಮಾ ಆಗಬಹುದೇನೋ?

error: Content is protected !!